Home / ಕವನ / ಕವಿತೆ / ಹೃಷೀಕೇಶಕ್ಕೆ

ಹೃಷೀಕೇಶಕ್ಕೆ

ಋಷಿಗಳಿದ್ದರು ಹೃಷೀಕೇಶದಲಿ ವಿವಿಧ ವೇಷದಲಿ
ಗಡ್ಡಕೂದಲ ಬಿಟ್ಟವರು ಕಾಷಾಯ ತೊಟ್ಟವರು
ಕೆಲರು ತಲೆ ಮರೆಸಿ ಯಾರು ಯಾರನೊ ಅರಸಿ
(ಪ್ರತಿಯೊಂದು ತಲೆ ಹುಡುಕದೇ ತನ್ನ ನೆಲೆ?)
ತಮಾಲವೃಕ್ಷಚ್ಛಾಯೆ ಆಹ ತಣ್ಣನೆ ಹಾಯೆ
ಇದು ಧ್ಯಾನಾಸಕ್ತಿಯೊ ಕೇವಲ ಧೂಮಪಾನಾಸಕ್ತಿಯೊ
ಹೇಳುವುದು ಹೇಗೆ ಅಂಥ ದಟ್ಟದ ಹೊಗೆ!

ಬಣ್ಣಿಸಲೆಂತು ಲಕ್ಷ್ಮಣಜೂಲವೆಂಬ ಮಾಯಾಜಾಲ
ಸುರನದಿಯ ಮೇಲೆ ತೂಗಿ ತೊನೆವುಯ್ಯಾತಿ
ಬೆಟ್ಟ ಕಣಿವೆಯ ಗಾಳಿಗಿದು ಕುಣಿವ ಜೋಕಾಲಿ
ಮನಸು ಡೋಲಾಯಮಾನ ಹೆಜ್ಜೆ ಜೋಪಾನ
ನೋಡಬಾರದು ಕೆಳಗೆ ಗಂಗೆ ಕರೆವಳು ಒಳಗೆ
ಕಂಡವರು ಯಾರವಳ ಅಂತರಂಗದ ಆಳ!
ಅಡಿಯ ಮುಂದೆಯ ಸ್ವರ್ಗ–ಇದೊಂದೆ ಮಾರ್ಗ

ದಾಟು ಎಂದೊಡೆ ಅದರ ಅರ್ಥಕಿನ್ನೆಷ್ಟು ಪದರ!
ಜೂಲ ದಾಟಲು ನಾವು ಏನೇನ ದಾಟಿದೆವು?
ದಾಟಿದೆವೆ ಸಂಸಾರವೆಂಬ ಮಹಾಸಾಗರವ?
ದಾಟದೆವೆ ಮರ್ತ್ಯವನು ದಾಟಿದೆವೆ ಮೃತ್ಯುವನು?
ದಕ್ಷಿಣದೇಶದಿಂದ ಬಂದು ಉತ್ತರಕೆ ಸಂದು
ಸೇರಿ ಅಪರಂಪಾರ ಹೊಂದಿ ರೂಪಾಂತರ
ಫಲಬಿಟ್ಟ ಶ್ರಮವೆ ನಮ್ಮ ಸ್ವರ್ಗಾಶ್ರಮವೆ!

ಎಲಲ ಯಾರಿವನು ವಲಲ! ಇವನೆ ಛೋಟಿವಾಲ
ಕುಳಿತಿರುವ ಹೇಗೆ ನೋಡಿ ಹಾಕಿ ಜನರಿಗೆ ಮೋಡಿ
ಮೈಯೆಲ್ಲ ಬಣ್ಣದ ಹಿಟ್ಟು ಸಟೆದು ನಿಂತಿದೆ ಜುಟ್ಟು
ಸೊಂಟದಲಷ್ಟೆ ಬಟ್ಟೆ ಉಳಿದುದೆಲ್ಲವು ಹೊಟ್ಟೆ
ಜೀವಂತ ಜಾಹೀರು ಖಾನಾವಳಿಯ ಎದುರು
ಮೊದಲಿಗೆ ತಿಂಡಿತೀರ್ಥ ನಂತರವೆ ಪರಮಾರ್ಥ
ಕೊನೆ ಮೊದಲಿಲ್ಲದ ವೃತ್ತ ಕವಿಯುತಿತ್ತು ಸುತ್ತ

ಒಬ್ಬಾತನಿಂತೆಂದ : “ಸುರಲೋಕದಿಂದ
ಗಂಗೆಯನು ತಂದವರು ನನ್ನದೇ ಪೂರ್ವಜರು
ದಾಖಲೆಯಿಲ್ಲ ಏನಿಲ್ಲ, ನನ್ನ ಗತಿ ಯಾರಿಗು ಸಲ್ಲ
ಅನಿಶ್ಚಿತತೆಯ ದಿಗಿಲು ಎಲ್ಲಕಿಂತಲು ಮಿಗಿಲು!”
ಉರಿಯುತಿತ್ತವನ ಕಣ್ಣುಗಳಲಿ ಭಗೀರಥತನ
ಕಾಯುತಿರುವಂತಿತ್ತು, ನಡು ಮಧ್ಯಾಹ್ನದ ಹೊತ್ತು
ಗಂಗಾನದಿಯ ತೀರ ಕೊನೆಯ ಅವತಾರ

ಆಮೇಲೆ ನಡೆದೆವು ನಾವು ನದಿಯ ತಾವು
ಇಳಿದು ಸೋಪಾನಗಳ ಇಳಿಸಿದೆವು ಪಾದಗಳ
ಅರೆ! ಎಂಥ ಸಳೆತ ಈ ನೀರಿಗೆಷ್ಟು ಶೀತ!
ಹಿಮದ ಕಂದರ ಇಳಿದು ಬಂದ ನದಿಯೆ ಸರಿ ಇದು
ಕೊರೆಯುವುದು ಕೆಳಗೆ ಮೇಲೆಯೋ ಬಿಸಿಲ ಧಗೆ
ಮುಳುಗಲಾರೆವು ಮುಳುಗದೆಯೆ ಇರದ ಕಾವು
ಎರಡು ಸ್ಥಿತಿಗಳ ನಡುವೆ ತೊನೆದುದು ನಾವೆ

ಅವತಾರವೆಂದೆನೆ? ಅವತಾರಕುಂಟೆ ಕೊನೆ!
ಬರಿಮೈಯ ಅಬಲೆ ತಿಕ್ಕಿತೊಳದು ಮೊಲೆ
ಬಟ್ಟಬಯಲಿನ ಮರೆಗೆ ಉಟ್ಟುಕೊಳ್ಳುವವರೆಗೆ
ಎಷ್ಟು ಸಾವಿರ ಹುಣ್ಣು ಬಿಟ್ಟಿಕೊಂಡಿತು ಕಣ್ಣು ?
(ಛೇ ಛೇ! ಇದು ಸರಿಯಲ್ಲ ಬಿಡುವೆನೀ ಸೊಲ್ಲ
ಕವಿತೆಗೆ ಬೇಕಿಂದು ವಾಸ್ತವದ ಬಿಗುವೆಂದು
ಬಿಟ್ಟು ನೋಡಿದರೆ ಮತ್ತೇಕೆ ನಡುಗುತಿದೆ ಧರೆ ?)

ಓಹೊ! ನೆಲೆತಪ್ಪಿ ಅಂಡಲೆಯುತಿಹನು ಪಾಪಿ
ಪ್ರಥಮಾವತಾರದಲೆ ಎಷ್ಟು ಬೆಳೆದಿದೆ ತಲೆ!
ಇದ್ದಿಲು ಸುಟ್ಟ ಬೂದಿ ಬಿದ್ದ ಬೀದಿಯ ರಾಡಿ
ಹಾಸುಗಲ್ಲುಗಳ ನಡುವೆ ಸೆಳೆದುದೇನವನ ಗೊಡವೆ
ಯಾರೊ ಚೆಲ್ಲಿದ ಪುಣ್ಯ ರೂಪಾಯಿಯ ನಾಣ್ಯ
ಒಂದು ಕ್ಷಣ ನಿಂತನೀ ಯುಗಾಂತರದ ಸಂತ
ಅದದೊ ನಿಂತಿತು ಯುಗ ಅವನು ನಿಂತಾಗ!
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...