Home / ಕವನ / ಕವಿತೆ / ಶರೀಫಜ್ಜನಿಗೆ

ಶರೀಫಜ್ಜನಿಗೆ

ಒಂದು ಧರ್ಮಕೆ ಮೊಳೆತು ಇನ್ನೊಂದರಲಿ ಫಲಿತು
ಸಾರ ಒಂದೇ ಎಂದು ಹಾಡಿದಾತ,
ಹನಿ ಸೇರಿ ಹೊಳೆಯಾಗಿ ಗುರಿ ಸೇರಿ ಕಡಲಾಗಿ
ನಭವೇರಿ ಮುಗಿಲಾಗಿ ಆಡಿದಾತ,
ಹತ್ತು ವನಗಳ ಸುತ್ತಿ, ಹೂ ಹೂವನೂ ಮುತ್ತಿ
ಒಂದೇ ಜೇನಿನ ಹುಟ್ಟು ಕಟ್ಟಿದಾತ,
ಎಲ್ಲಿ ಹೇಳೋ ತಾತ, ಹಿಂದೆ ಯಾ ಅವಧೂತ
ಸಾಧಿಸಿದ ನಿನ್ನಂತೆ ಧರ್ಮವನ್ನು,
ಕಾವ್ಯದಲಿ ಕಡೆದ ಆ ಮರ್ಮವನ್ನು?

ಸೃಷ್ಟಿ ಮರೆಸಿರುವ ಗುಟ್ಟುಗಳನು
ಸಪ್ತಸ್ವರ ಮೀರಿದಾ ಮಟ್ಟುಗಳನು
ನಿನ್ನ ನುಡಿಯಲ್ಲಿಟ್ಟೆ, ಮಾತಿಗರ್ಥವ ಕೊಟ್ಟೆ
ಹಾಡು ಮಾಡಿದೆ ನಿನ್ನ ವ್ಯಥೆಗಳನ್ನು;
ಹೇಳು, ಹೇಳು ಶರೀಫ, ಹಿಂದೆ ಯಾವ ಖಲೀಫ
ಏರಿದ್ದ ಈ ಹೊನ್ನಿನಟ್ಟವನ್ನು
ಮಣಿಸಿದ್ದ ಮಾತುಗಳ ಬೆಟ್ಟವನ್ನು?

ಏನು ಜೀವನ ಧರ್ಮ, ಏನು ಸೃಷ್ಟಿಯ ಮರ್ಮ
ಏನು, ಎಲ್ಲಿ, ಏಕೆ ತಾಕಿದವನು
ಬೆಟ್ಟ ಬೆಟ್ಟವ ಕುಲುಕಿ ಸಪ್ತಸಾಗರ ಕಲಕಿ
ಸೃಷ್ಟಿ ಮೂಲವ ಹುಡುಕಿ ಜೀಕಿದವನು;
ಹೇಳು ಹೇಳು ಶರೀಫ, ಬೇರೊಬ್ಬ ಯಾರವನು
ನಿನ್ನಂತೆ ನಡೆನುಡಿಯ ಕಾಡಿದವನು
ತೀರದಾಚೆಯ ತಾರೆ ಕೂಡಿದವನು?

ಅನ್ನ ನೆಲ ಮಾತು ಮತ ಎಲ್ಲ ಬೇರಾದರೂ
ಪ್ರೀತಿಯಲಿ ಅವನೆಲ್ಲ ಕಲೆಸಿಬಿಟ್ಟೆ,
ಬಣ್ಣ ಏಳಾದರೂ ಒಂದೆ ಕಾಮನಬಿಲ್ಲು
ಚಂದವಾದಂತೆ ನೀ ಬಾಳಿಬಿಟ್ಟೆ,
ಗಡಿಮೀರಿ, ಮಡಿಮೀರಿ, ಬಾನಿನಲಿ ಕುಡಿಯೂರಿ
ಗಾಳಿಯಲಿ ಬಾಳಪಟ ತೇಲಿಬಿಟ್ಟೆ;
ಹೇಳು ಹೇಳು ಶರೀಫ, ಯಾವ ಭಾವಕಲಾಪ
ಇಂಥ ಬಿಡುಗಡೆ ಕೊಟ್ಟ ಸೂತ್ರವಾಯ್ತು, ಹೇಗೆ
ಬರಿ ನೀರು ಪರಿಶುದ್ಧ ತೀರ್ಥವಾಯ್ತು?
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...