Home / ಕವನ / ಕವಿತೆ / ಯಾರು ಬಂದರೆ ತಾನೆ ಏನು ?

ಯಾರು ಬಂದರೆ ತಾನೆ ಏನು ?

ನಿನಗೆ ಅರವತ್ತಾಯಿತಾ ಎಂದದ್ದು
‘ಬರೋ ಹೊತ್ತಾಯಿತಾ’ ಎಂದು ಕೇಳಿಸಿ
ಸಣ್ಣಗೆ ಬೆಚ್ಚಿದೆ ಒಳಗೆ,
ಯಾರು ಕೇಳಿದ್ದು ಹಾಗೆ ?
ಜೊತೆಗಿದ್ದ ಅಳಿಯನ ? ಮಗನ ? ಅಥವಾ
ಸಿನಿಮಾ ರೇಸು ಕಾರು ಬಾರು ಎಂದು
ಸದಾ ಜೊತೆಗೆ ಪೋಲಿ ಅಲೆಯುವ
ಅವನ ಗೆಳೆಯನ ?
ಏನು ಕೇಳಿದರೊ ?
ಈ ಬೆಚ್ಚನೆ ಆರೋಗ್ಯ ಕಂಡು
ಮೆಚ್ಚಿಗೆ ಹುಟ್ಟಿ ಕೇಳಿದರೊ ?
ಯಾರಿಗೆ ಗೊತ್ತು
ಹುಚ್ಚು ಜನ ಅಸೂಯೆಪಟ್ಟೇ ಆಡಿದರೊ ?

ಯಾರು ಬಂದಾರೆಂದು ಇದ್ದೀತು ?
ಯಾರು ಬಂದರು ತಾನೆ ಏನು ದಿಗಿಲು ?
ಬಂದವರು ತಂದ ಋಣದಲ್ಲಿ ತೂಗಾಡುತಿವೆ
ನೂರು ಉರುಳಿನ ನೆರಳು ;
ಕನಸು ಕಲಿಸಿದ ಅಮ್ಮ
ಕಂಡು ತೀರಿದ ಅಪ್ಪ
ಕೈ ಹಿಡಿದ ಕಣ್ಮಣಿಯೊ
ತನ್ನ ಲೆಕ್ಕಗಳಲ್ಲಿ ನನ್ನ ಎತ್ತರ ಅಳೆದು
ನಟ್ಟನಡು ಚೌಕದಲಿ ಹರಾಜು ಹಾಕಿದ ಮಾಯೆ
ನುಂಗಲಾಗದೆ ಸುಟ್ಟ ಬಿಸಿ ಬಿಸೀ ತುಪ್ಪ
ಮಿಠಾಯಿ ಮಕ್ಕಳು, ಜೊತೆಗೆ ಕಠಾರಿ ನಂಟರು
ವೃತ್ತಿ ಹವ್ಯಾಸ ನೆರೆಹೊರೆಗೆ ಹುಟ್ಟಿದ ಎಷ್ಟೋ
ಪಟಾಕಿ ಗೆಳೆಯರು,

ಬೆಳಗಿನ ತುಷಾರ ಸರಿದು
ಕೆರಳಿದ ಮಧ್ಯಾಹ್ನ ಬೆಳೆದು
ಕನಸಿದ್ದ ಮುಖದಲ್ಲಿ ಸತ್ಯದ
ಕಠೋರ ದಾಡೆಗಳು !

ತುಂಬುತಿಂಗಳ ಬದುಕು
ಬರಿ ತಂಗಳು ಈಗ.
ನಿನ್ನೆ ಮೊನ್ನೆಯ, ಇವತ್ತು ನಿನ್ನೆಯ
ನಾಳೆ ಇಂದಿನ ಕಾರ್ಬನ್ ಕಾಪಿ.
ತರ್ಕಕ್ಕೆ ಗಣಿತಕ್ಕೆ ಅಂಕೆಗಳ ಮಣಿತಕ್ಕೆ ಸಿಕ್ಕು
ಬದುಕಲ್ಲಿ ಸುಖ ಸಿಗದ ಪಾಪಿ.
ಇದೆಲ್ಲ ಮೀಟಿ
ತಾರೆಗಳನ್ನೇ ದಾಟಿ
ನಿಂತ ಅನಂತದ ಹನಿ ಹನಿ ಆಮಂತ್ರಣ.
ಕಳ್ಳ ಹೆಜ್ಜೆಯನಿಟ್ಟು ಬಂದ ಕಾಮದ ಬೆಕ್ಕು
ಕತ್ತಲಲ್ಲಿ ತಿಂದು ಬಿಕ್ಕಿದ ಬದುಕಿನ
ಮೂಳೆಯವಶೇಷಕ್ಕೆ
ಅನಿರೀಕ್ಷಿತ ಅದ್ಭುತದ ಸಿಂಚನ.

ಹೀಗಿರುತ್ತ
ಯಾರು ಬಂದರೆ ತಾನೆ ಏನಂತೆ ?
ಬಾ ಎಂದು ಕರೆದರೂ ಇಲ್ಲ ಚಿಂತೆ.
ಬಂದು ಮುಟ್ಟಲಿ ನನ್ನ,
ಮುಟ್ಟಿ ಬಿಡಿಸಲಿ ಸಣ್ಣ
ಪಂಜರದಿ ಸೆರೆಸಿಕ್ಕ
ಗುಟ್ಟುಗಳ ಸಂತೆ.
ಹಕ್ಕಿ ಹಾರಲಿಬಿಡಿ ಬಾನಿನಲ್ಲಿ
ಸುಖವುಕ್ಕಿ ಈಜಲಿ ಬೆಳಕುಗಡಲಿನಲ್ಲಿ
ದೂರ ಮಣಿಯಾಗುತ್ತ ಸಮೆದು ಕಣವಾಗುತ್ತ
ತಾನೆ ಬಾನಾಗುತ್ತ ಕಾಣದಲ್ಲಿ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...