Home / ಕವನ / ಕವಿತೆ / ಶರೀಫಜ್ಜನಿಗೆ

ಶರೀಫಜ್ಜನಿಗೆ

ಒಂದು ಧರ್ಮಕ್ಕೆ ಮೊಳೆತು
ಇನ್ನೊಂದರಲಿ ಫಲಿತು
ಸಾರ ಒಂದೇ ಎಂದು ಹಾಡಿದಾತ;
ಹನಿಸೇರಿ ಹೊಳೆಯಾಗಿ
ಗುರಿ ಸೇರಿ ಕಡಲಾಗಿ
ನಭವೇರಿ ಮುಗಿಲಾಗಿ ಆಡಿದಾತ;
ಹತ್ತು ವನಗಳ ಸುತ್ತಿ
ಹೂ ಹೂವನೂ ಮುತ್ತಿ
ಒಂದೆ ಜೇನಿನ ಹುಟ್ಟು ಕಟ್ಟಿದಾತ;
ಎಲ್ಲಿ ಹೇಳೋ ತಾತ
ಹಿಂದೆ ಯಾ ಅವಧೂತ
ಸಾಧಿಸಿದ ನಿನ್ನಂತೆ ಧರ್ಮವನ್ನು
ಕಾವ್ಯದಲಿ ಕೆಡೆದ ಆ ಮರ್ಮವನ್ನು ?

ಸೃಷ್ಟಿ ಮರೆಸಿಟ್ಟಿರುವ ಗುಟ್ಟುಗಳನು
ಸಪ್ತಸ್ವರದಾಚೆಯಾ ಮಟ್ಟುಗಳನು
ನಿನ್ನ ನುಡಿಯಲ್ಲಿಟ್ಟೆ
ಭಾಷೆಗರ್ಥವ ಕೊಟ್ಟೆ
ಹಾಡು ಮಾಡಿದೆ ನಿನ್ನ ವ್ಯಥೆಗಳನ್ನು
ಹೇಳು ಹೇಳು ಶರೀಫ
ಹಿಂದೆ ಯಾವ ಖಲೀಫ
ಏರಿದ್ದ ಈ ಹೊನ್ನಿನಟ್ಟವನ್ನು,
ಮಣಿಸಿದ್ದ ಮಾತುಗಳ ಬೆಟ್ಟವನ್ನು ?

ಏನು ಜೀವನಧರ್ಮ
ಏನು ಸೃಷ್ಟಿಯ ಮರ್ಮ
ಏನು ಎಲ್ಲಿ ಯಾಕೆ ತಾಕಿದವನು;
ಬೆಟ್ಟ ಬೆಟ್ಟವ ಕುಲುಕಿ
ಸಪ್ತಸಾಗರ ಕಲಕಿ
ಸೃಷ್ಟಿಮೂಲವ ಹುಡುಕಿ ಜೀಕಿದವನು;
ಹೇಳು ಹೇಳು ಶರೀಫ
ಬೇರೊಬ್ಬ ಯಾರವನು
ನಿನ್ನಂತೆ ನಡೆನುಡಿಯ ಕಾಡಿದವನು?
ತೀರದಾಚೆಯ ತಾರೆ ಕೂಡಿದವನು?

ಅನ್ನ ನೆಲ ಮಾತು ಮತ
ಎಲ್ಲ ಹೊರತಾದರೂ
ಪ್ರೀತಿಯಲಿ ಅವನೆಲ್ಲ ಕಲೆಸಿಬಿಟ್ಟೆ;
ಬಣ್ಣ ಏಳಾದರೂ
ಒಂದೆ ಕಾಮನಬಿಲ್ಲು
ಚಂದವಾದಂತೆ ನೀ ಬಾಳಿಬಿಟ್ಟೆ;
ಗಡಿಮೀರಿ ಮಡಿ ಮೀರಿ
ಬಾನಿನಲಿ ಕುಡಿಯೂರಿ
ಗಾಳಿಯಲಿ ಬಾಳಪಟ ತೇಲಿಬಿಟ್ಟೆ;
ಹೇಳು ಹೇಳು ಶರೀಫ
ಯಾವ ಭಾವಕಲಾಪ
ಇಂಥ ಬಿಡುಗಡೆ ಕೊಟ್ಟ ಸೂತ್ರವಾಯ್ತು – ಹೇಗೆ
ಬರಿ ನೀರು ಪರಿಶುದ್ಧ ತೀರ್ಥವಾಯ್ತು?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...