Home / ಕವನ / ಕವಿತೆ / ಶರೀಫಜ್ಜನಿಗೆ

ಶರೀಫಜ್ಜನಿಗೆ

ಒಂದು ಧರ್ಮಕ್ಕೆ ಮೊಳೆತು
ಇನ್ನೊಂದರಲಿ ಫಲಿತು
ಸಾರ ಒಂದೇ ಎಂದು ಹಾಡಿದಾತ;
ಹನಿಸೇರಿ ಹೊಳೆಯಾಗಿ
ಗುರಿ ಸೇರಿ ಕಡಲಾಗಿ
ನಭವೇರಿ ಮುಗಿಲಾಗಿ ಆಡಿದಾತ;
ಹತ್ತು ವನಗಳ ಸುತ್ತಿ
ಹೂ ಹೂವನೂ ಮುತ್ತಿ
ಒಂದೆ ಜೇನಿನ ಹುಟ್ಟು ಕಟ್ಟಿದಾತ;
ಎಲ್ಲಿ ಹೇಳೋ ತಾತ
ಹಿಂದೆ ಯಾ ಅವಧೂತ
ಸಾಧಿಸಿದ ನಿನ್ನಂತೆ ಧರ್ಮವನ್ನು
ಕಾವ್ಯದಲಿ ಕೆಡೆದ ಆ ಮರ್ಮವನ್ನು ?

ಸೃಷ್ಟಿ ಮರೆಸಿಟ್ಟಿರುವ ಗುಟ್ಟುಗಳನು
ಸಪ್ತಸ್ವರದಾಚೆಯಾ ಮಟ್ಟುಗಳನು
ನಿನ್ನ ನುಡಿಯಲ್ಲಿಟ್ಟೆ
ಭಾಷೆಗರ್ಥವ ಕೊಟ್ಟೆ
ಹಾಡು ಮಾಡಿದೆ ನಿನ್ನ ವ್ಯಥೆಗಳನ್ನು
ಹೇಳು ಹೇಳು ಶರೀಫ
ಹಿಂದೆ ಯಾವ ಖಲೀಫ
ಏರಿದ್ದ ಈ ಹೊನ್ನಿನಟ್ಟವನ್ನು,
ಮಣಿಸಿದ್ದ ಮಾತುಗಳ ಬೆಟ್ಟವನ್ನು ?

ಏನು ಜೀವನಧರ್ಮ
ಏನು ಸೃಷ್ಟಿಯ ಮರ್ಮ
ಏನು ಎಲ್ಲಿ ಯಾಕೆ ತಾಕಿದವನು;
ಬೆಟ್ಟ ಬೆಟ್ಟವ ಕುಲುಕಿ
ಸಪ್ತಸಾಗರ ಕಲಕಿ
ಸೃಷ್ಟಿಮೂಲವ ಹುಡುಕಿ ಜೀಕಿದವನು;
ಹೇಳು ಹೇಳು ಶರೀಫ
ಬೇರೊಬ್ಬ ಯಾರವನು
ನಿನ್ನಂತೆ ನಡೆನುಡಿಯ ಕಾಡಿದವನು?
ತೀರದಾಚೆಯ ತಾರೆ ಕೂಡಿದವನು?

ಅನ್ನ ನೆಲ ಮಾತು ಮತ
ಎಲ್ಲ ಹೊರತಾದರೂ
ಪ್ರೀತಿಯಲಿ ಅವನೆಲ್ಲ ಕಲೆಸಿಬಿಟ್ಟೆ;
ಬಣ್ಣ ಏಳಾದರೂ
ಒಂದೆ ಕಾಮನಬಿಲ್ಲು
ಚಂದವಾದಂತೆ ನೀ ಬಾಳಿಬಿಟ್ಟೆ;
ಗಡಿಮೀರಿ ಮಡಿ ಮೀರಿ
ಬಾನಿನಲಿ ಕುಡಿಯೂರಿ
ಗಾಳಿಯಲಿ ಬಾಳಪಟ ತೇಲಿಬಿಟ್ಟೆ;
ಹೇಳು ಹೇಳು ಶರೀಫ
ಯಾವ ಭಾವಕಲಾಪ
ಇಂಥ ಬಿಡುಗಡೆ ಕೊಟ್ಟ ಸೂತ್ರವಾಯ್ತು – ಹೇಗೆ
ಬರಿ ನೀರು ಪರಿಶುದ್ಧ ತೀರ್ಥವಾಯ್ತು?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...