Home / ಕವನ / ಕವಿತೆ / ಟೀವಿ (T.V.) ಆಶು ಕವಿತ್ವ- ೧೯೮೯

ಟೀವಿ (T.V.) ಆಶು ಕವಿತ್ವ- ೧೯೮೯

ಟೀವಿಯ ಆಶುಕವಿತ್ವದ ಕರೆಗೆ
ಛೇ ಛೇ ಎಂದರು ಜಿ.ಎಸ್.ಎಸ್;
ಅಡಿಗರೊ ತಲೆ ತಲೆ ಚಚ್ಚಿಕೊಂಡರು
ಅಲ್ಲೆ ಮಾಡಿದರು ಅದ ಡಿಸ್‌ಮಿಸ್.
ಕಂಗಾಲಾದರು ಕಂಬಾರ
ನಿಟ್ಟುಸಿಟ್ಟರು ನಿಸ್ಸಾರ
ಕೆಟ್ಟೇ ಎಂದರು ಭಟ್ಟರು ಒಳಗೇ
ಬಂತಲ್ಲಪ್ಪಾ ಗ್ರಹಚಾರ!
ಆದರು ಏನು, ಬಿಡಲಾದೀತೇ?
ಗೋಕಾಕರ ಕವಿದರ್ಬಾರ ?
ಯುಗಾದಿ ಟೀವಿ ಗೋಷ್ಠಿಯ ಬಿಟ್ಟರೆ
ಹೊಸವರ್ಷಕ್ಕೆ ಅಪಚಾರ!
ಹೀಗೆಲ್ಲಾ ಬಲು ತರ್ಕವ ಮಾಡಿ
ಬಯಕೆಯ ಬಾವಿಗೆ ಬುದ್ಧಿಯ ದೂಡಿ
ಕಡೆಗೂ ಭಟ್ಟರು ಮಾಡಿಯೆ ಬಿಟ್ಟರು
ಪದ್ಯವ ಹೊಸೆಯುವ ನಿರ್ಧಾರ,
ನುಂಗಿತು ಹನಿಮಸಿ ಚಿತ್ತಾರ.

* * *

ಕೂತ ಕವಿಗಣವ ಅಣಕಿಸುವಂತೆ
ಸರಸ್ವತಿಯನೇ ಛೇಡಿಸುವಂತೆ
ಬಗೆ ಬಗೆ ವಿಷಯದ ಚೀಟಿಗಳನ್ನು
ತಂದು ಹಿಡಿಯಲು ಕವಿಗಳ ಮುಂದೆ
ಭಟ್ಟರು ಒಂದನು ಎತ್ತಿದರು.
ಕೈ ನಡುಗುತ್ತ ಬಿಚ್ಚಿದರು.
ವಿಘ್ನೇಶ್ವರನಿಗೆ ಮನದಲೆ ನಮಿಸಿ
ನೂರು ಮೋದಕದ ಹರಕೆಯ ಇರಿಸಿ
ಹಣೆಬರಹವನೇ ಓದುವ ಹಾಗೆ
ಕಡೆ ಕಾಳಗವನೆ ಕಾದುವ ಹಾಗೆ
ಓದಿ ಬೆವರಿ ತುಟಿಕಚ್ಚಿದರು,
ದೆವ್ವ ಕಂಡಂತೆ ಬೆಚ್ಚಿದರು.

ವಿಷಯ ಹೀಗಿತ್ತು ಚೀಟಿಯ ಒಳಗೆ
‘ಬೈಟೂ ಕಾಫಿ ಹೊಟೇಲಿನೊಳಗೆ’.
ಏನು ಬರೆದಾರು ಭಟ್ಟರು ಸದ್ಯ,
ಪದ್ಯವಿರಲಿ ದಕ್ಕೀತೇ ಗದ್ಯ ?
ವಿಷಯ ನೋಡಿ ಕವಿ ಗೊಣಗುಟ್ಟಿದರು
ಗೋಕಾಕರ ಮನದಲ್ಲೇ ಕುಟ್ಟಿದರು
ಈ ಕವಿಗೋಷ್ಟಿಗೆ ಸಲಹೆಯ ಮಾಡಿದ
ಅವರನು ವಿನಯದಲೇ ಛೇಡಿಸಿದರು.
“ಎಂಥ ವಿಷಯ ಇದು ಗೋಕಾಕ್ ಹೇಳಿ.
ಕವಿಯ ಹೀಗೆ ಮಾಡುವುದೇ ಗೇಲಿ ?
ಬರೆಯಲಾರೆ ನಾ ಒಂದೂ ಸಾಲು,
ನೀವೆ ಹೊದಿಸಿದರೂ ಭರ್ಜರಿ ಶಾಲು.
ಬೇಯಲು ಬೇಕು ಬದನೇಕಾಯಿಗು
ಅಷ್ಟಿಟ್ಟಾದರು ಪುರುಸೊತ್ತು
ಬೇಡವೆ ಹೇಳಿ ಬರೆಯುವ ಕವಿಗೂ
ಪದಗಳ ನೇಯಲು ತುಸುಹೊತ್ತು?”

“ಬೇಡ” ಎಂದರು ಕವಿ ಗೋಕಾಕ್ !
“ಕವಿ ನೀನಾದರೆ ಬರೆದೇ ಬರೆಯುವೆ,
ಯಾತಕೆ ಈ ಥರ ಹಲ್ ಹಲ್ ಕಿರಿಯುವೆ ?
ಏನಾದರು ಬರಿ, ಎಂತಾದರು ಬರಿ,
ಲಯಪ್ರಾಸಗಳನು ಬಿಡದಿದ್ದರೆ ಸರಿ.
ಢಿಕ್ಕೀ ಹೊಡಿ ನೀ ಕಲ್ಪನೆಗೆ;
ತಾನೆ ತಾನಾಗಿ ಸುರಿವುದು ಕವಿತೆ
ಜಳಜಳ ತೊರೆ ಥರ ಹರಿಯುತ್ತ
ಯೋಚಿಸಲೇನದು ಗೋಕಾಕ್ ವರದಿಯೆ,
ಕಾಲ ಯಾಕೆ ಕವಿತೆಗೆ ವ್ಯರ್ಥ?”

* * *

ಕೂತರು ಭಟ್ಟರು ಆಶುಕವಿತ್ವಕೆ
ವೇದಮಂತ್ರಗಳ ಜಪಿಸುತ್ತ
ಕರೆದರು ಪದಗಳ ಕೈಬೀಸಿ
ಮುಖದಲಿ ಪ್ರೀತಿಯ ನಗೆ ಹಾಸಿ.
ಆದರೆ ಏನಿದು ಬಲು ಚೋದ್ಯ,
ಭಟ್ಟರಿಗೂ ತಿಳಿಯಲಸಾಧ್ಯ!
ಹಿಂದೆಲ್ಲಾ ಮನೆನಾಯಿಯ ಹಾಗೆ
ಬಾಲವ ಆಡಿಸಿ, ಕೆರೆದರೆ ಬಳಿಗೆ
ಓಡಿಬರುತಿದ್ದ ಶಬ್ಧಗಳು,
ಓಟ ಕಿತ್ತವು ಕಳ್ಳರ ಹಾಗೆ
ಭಟ್ಟರು ಪೋಲೀಸ್ ಎನ್ನುವೊಲು.
ಬಿಡುವರೊ ಭಟ್ಟರು ಬಲುಗಟ್ಟಿ
ಹೊರಟರು ಬೇಟೆಗೆ ಬೆನ್ನಟ್ಟಿ!

ಪದಗಳು ಲಯಗಳು ಪ್ರಾಸಗಳೆಲ್ಲಾ
ಓಟಕಿತ್ತವು ಮುಂದುಗಡೆ;
ಭಟ್ಟರೂ ಪಂಚೆಯ ಮೇಲಕೆ ಕಟ್ಟಿ
ಓಡಿದರವುಗಳ ಹಿಂದುಗಡೆ.
ಕನ್ನಡ ಪದಗಳು ಮುಂದುಗಡೆ
ವಿಪ್ರವರೇಣ್ಯ ಹಿಂದುಗಡೆ!
ರಸ್ತೆಯ ಮಧ್ಯೆ ಬರಿಗಾಲಲ್ಲೇ
ಬಸ್ಸನು ತಪ್ಪಿಸಿ ಓಡಿದರು;
ಪುಟ್‌ಪಾತ್ ಹತ್ತಿ ಮರಕ್ಕೆ ಜನಕ್ಕೆ
ಢಿಕ್ಕೀ ಹೊಡೆಯುತ ತೂರಿದರು;

ಸರ್ಕಲ್ ಗಟಾರ, ಗಲ್ಲೀ ಜಲ್ಲೀ
ಓಡಿ ಓಡಿ ಎಲ್ಲೆಂದರೆ ಅಲ್ಲಿ
ಸುಸ್ತಾಗಲು ಭಟ್ಟರ ಎದೆಯಲ್ಲಿ
ಬಡಿಯತೊಡಗಿದವು ಭೇರಿಗಳು!
ಗಟ್ಟಿಪದಗಳೊ ಓಡಿಯೆಬಿಟ್ಟವು
ಕರುಣೆಯೆ ಇಲ್ಲದ ಕ್ರೂರಿಗಳು;
ದುಷ್ಟಪದಗಳೋ ಹಿಡಿದರು ಕಿರುಚಿ
ಭಟ್ಟರ ಮೈ ಕೈ ಎಲ್ಲಾ ಪರಚಿ

ತಪ್ಪಿಸಿಕೊಂಡವು ದ್ರೋಹಿಗಳು.
ಆದರೆ ಭಟ್ಟರು ಹಿಡಿದೇ ಬಿಟ್ಟರು
ಪಿಳ ಪಿಳ ಕಣ್ಣಿನ ಪೀಚುಗಳ,
ಕಾಲೇ ಬಲಿಯದ ಹೀಚುಗಳ;
ಕಷ್ಟಪಟ್ಟರೂ ಹಿಡಿದರು ಕವಿಶ್ರೀ
ಟೈಲ್ ಎಂಡರ್‌ಗಳ ಕ್ಯಾಚುಗಳ!
ಅವನ್ನೆ ಹಿಡಿದು, ಅತ್ತರೆ ಬಡಿದು
ಕೂರಿಸಿ ಏಳಿಸಿ ಕೈಕಾಲ್ ಎಳೆದು
ಮಾಡಿಸಿದರು ಕವಿ ಡ್ರಿಲ್ಲನ್ನು;
ಕೊಟ್ಟೀತೇ ಈ ‘ಠೀವಿಯ’ ಕವಿತೆ
ಯುಗಾದಿ ಹಬ್ಬದ ಥ್ರಿಲ್ಲನ್ನು ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...