Home / ಕವನ / ಕವಿತೆ / ಹಿರಿಯ ದಾನಿ

ಹಿರಿಯ ದಾನಿ

ಕುರುಡನೊಬ್ಬ ಕೋಲನೂರಿ
ಮರದ ಕೆಳಗೆ ನಿಂದಿರುತ್ತ
ಕರವ ನೀಡಿ ಬೇಡುತಿದ್ದ
ಪುರದ ಜನರನು,

“ಹುಟ್ಟು ಕುರುಡ ಕಾಸನೀಡಿ
ಹೊಟ್ಟೆಗಿಲ್ಲ ದಯವ ತೋರಿ
ಬಟ್ಟೆಯೆಂಬುದರಿಯೆ” ಎಂದು
ಪಟ್ಟಣಿಗರನು.

ಬೇಡುತಿದ್ದ ದೈನ್ಯದಿಂದ
ಆಡುತಿದ್ದ ಶಿವನ ಮಾತ
“ಮಾಡಿರಯ್ಯ ಧರ್ಮವನ್ನು
ನೋಡಿ ಹೋಗದೆ.”

ಬಂದರಲ್ಲಿ ಪುರದ ಜನರು
ಮಂದಿಯೆನಿತೊ ಲೆಕ್ಕವಿಲ್ಲ
ಒಂದು ಕಾಸು ಕೊಡದೆಯವಗೆ
ಮುಂದೆ ನಡೆದರು.

ದೊಡ್ಡ ನಾಮ ದೊಡ್ಡ ಮುದ್ರೆ
ಅಡ್ಡಬೂದಿ ನಡೆದುವೆಷ್ಟೊ
ಗೊಡ್ಡು ತತ್ವ ಹೇಳಿಕೊಂಡು
ಜಡ್ಡು ಹಿಡಿದವು.

ಹಿರಿದು ಸರಿಗೆ ಹಿರಿದು ಪೇಟ
ಸರಿದು ನಡೆದ ಸಾಹುಕಾರ
ಕುರುಡನಾರೊ ತಿಳಿದು ಹೇಳಿ
ಅರಿಯ ಬಲ್ಲಡೆ.

ಚಲನ ಚಿತ್ರ ನೋಡಲೆಂದು
ಕಲೆಯ ತಿರುಳ ನೋಡಲೆಂದು
ಮಲಿನಮನರು ಹೋದರೆಷ್ಟೊ
ನಲಿಯುತಲ್ಲಿಗೆ.

ಎನಿತು ಜನರು ಬಂದರೇನು
ಎನಿತು ಜನರು ಹೋದರೇನು
ನೆನೆದರಿಲ್ಲ ಕುರುಡನಿರವ
ಮನದ ರಂಗದಿ.

“ಇವನ ಕೂಗು ಕಿವಿಗೆ ಅಲಗು
ಇವನ ರೂಪು ಕಣ್ಗೆ ಘೋರ
ಜವನ ಪುರಕೆ ಹೋಗದೇಕೆ
ಇವನು ನಿಂತನು.

ಪಾಪಮಾಡಿ ಕುರುಡನಾಗಿ
ತಾಪಬಡುತ ಕೊರಗಿ ಸೊರಗಿ
ಈ ಪುರದಲಿ ಬಂದು ನಿಂದು
ರೂಪುಗೆಡಿಪನು.”

ಹೀಗೆ ಜನರು ಕೆಲರು ಆಡಿ
ಹೋಗುತಿರಲು ಬೀದಿಯಲ್ಲಿ
ಕೂಗಿ ಕೂಗಿ ಕುರುಡನವನು
ಬಾಗಿ ನಿಂದನು.

ಕಾಲುಗಂಜಿಗಳಲಿ ತೊಳಲಿ
ಕೂಲಿಮಾಡಿ ಉಂಬ ಹೆಣ್ಣು
ಆಲಿಸುತ್ತ ಅವನ ಕೂಗ
ಸೋತು ಬಂದಳು.

ಹಣ್ಣು ಮಡಲಲಿಟ್ಟುಕೊಂಡು
ಹೆಣ್ಣು ಮಗಳು ಬಂದಳವಳು,
ಕಣ್ಣು ಅರಳೆ ನೋಡಿಯವನ
“ಅಣ್ಣ!” ಎಂದಳು.

ಸೊಗದ ಮಾತು ಸುಧೆಯ ಮಾತು
ಬಗೆಯ ಹಿಡಿವ ನಲ್ಮೆವಾತು
ಪುಗಲು ಕಿವಿಯ “ಶಿವನೆ!” ಎಂದು
ಮೊಗವನೆತ್ತಿದ.

“ಕಾಸ ನೀಡಿ ಧರ್ಮದವರು
ಲೇಸನೀವ ಶಿವನು ನಿಮಗೆ
ಹೇಸಬೇಡಿ ಕುರುಡನೆಂದು
ಘಾಸಿಪಟ್ಟೆನು.”

“ಕಾಸು ಎನ್ನ ಬಳಿಯೊಳಿಲ್ಲ
ಕಾಸು ಕೊಟ್ಟು ಕೊಂಡೆ ಹಣ್ಣ
ಆಸೆಪಟ್ಟು ತಿನ್ನಲೆಂದು
ಈಸು ನಿನಗಿದೆ.”

ಮಡಲಲಿದ್ದ ಹಣ್ಣ ತೆಗೆದು
ಎಡದ ಕೈಯಲದನು ಹಿಡಿದು
ನಡುವ ಮರೆಯ ಚೂರಿಯಿಂದ
ಒಡನೆ ಕೊಯ್ದಳು.

ಹಣ್ಣಿನೊಳಗೆ ರಸದ ಮಾವು
ಬಣ್ಣತೀವಿ ಬೆಳೆದ ಮಾವು
“ಅಣ್ಣ ಕೊಳೊ” ಎಂದು ಕೈಗೆ
ಉಣ್ಣಲಿತ್ತಳು.

“ಶಿವನೆ!” ಎಂದು ಕಣ್ಗೆ ಒತ್ತಿ
“ಶಿವನೆ!” ಎಂದು ಎದೆಗೆ ಒತ್ತಿ
ಶಿವನ ಮಾತಿನೊಡನೆ ಹಣ್ಣ
ಸವಿಯು ಹೆಚ್ಚಲು,

ತಿಂದು ಕುರುಡ ಕೈಯ ಮುಗಿದ
ಇಂದುಧರನು ಮೆಚ್ಚುತಿರಲು
ನಿಂದ ಮಗಳು ಧರೆಗೆ ಬಗ್ಗಿ
ವಂದಿಸೆದ್ದಳು.

ಅವಳ ಕಣ್ಗೆ ಕುರುಡನಲ್ಲ
ಶಿವನೆ ಎಂದು ತಿಳಿದಳವಳು
ಅವನ ಮನಕೆ ಹೆಣ್ಣದಲ್ಲ
ಶಿವನ ಕಂಡನು.

ಕಣ್ಣು ಇದ್ದು ಕುರುಡರೆಷ್ಟೊ
ಮಣ್ಣು ಹಿಡಿವ ಕಲ್ಲು ಹಿಡಿವ
ಬಣ್ಣ ಬಳೆವ ಬೀಗಿ ಮೆರೆವ
ಸಣ್ಣ ಮನುಜರು.

ಮೇಲು ಜಾತಿ ಕೀಳು ಜಾತಿ
ನೂಲು ಜಾತಿ ಎನಲು ಬೇಡ
ಶೂಲಿಯೊಲಿದ ಜಾತಿಯಲ್ಲಿ
ಶೀಲ ದೊಡ್ಡದು.

ದೀನನಲ್ಲಿ ದೇವನಿಹನು
ದಾನಿಯಲ್ಲಿ ದೇವನಿಹನು
ದೀನ ದಾನಿಯಲ್ಲದವರ
ಶ್ವಾನ ಎಂಬುದು.

ಕುರುಡ ಕುಂಟ ಹೆಳವರಲ್ಲಿ
ಮರುಕಗೊಂಡು ಬೋನವಿಕ್ಕು
ಹರನು ಮೆಚ್ಚಿ ತೇಗಿ ತಾನು
ಹರಸಿ ಪೊರೆವನು.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...