Home / ಕವನ / ಕವಿತೆ / ಒಂದು ಕಾಗದ

ಒಂದು ಕಾಗದ

ನಿಮ್ಮ ಪತ್ರ ಬಂದು ಸೇರಿ
ಎರಡು ಮೂರು ಬಾರಿಯೋದಿ
ಎಲ್ಲ ತಿಳಿದೆನು.

ನೀವು ನನಗೆ ಗಂಡನಲ್ಲ
ನಾನು ನಿಮಗೆ ಹೆಂಡಿರಲ್ಲ
ನೀವು ತಿಳಿವುದು.

ಕುಂಟು ಕಾಲು ಬಚ್ಚು ಬಾಯಿ
ಮೆಳ್ಳುಗಣ್ಣು, ನಿಮ್ಮ ಸೇವೆ
ಮಾಡಲಾರೆನು.

ಬ್ರಹ್ಮ ಹಿಂದೆ ಗಂಟು ಹಾಕಿ
ಗಂಡಹೆಂಡಿರಾದವೆಂದು
ನೀವು ಬರೆವಿರಿ.

ಬ್ರಹ್ಮಗಿಮ್ಮ ಹಾಕಲಿಲ್ಲ
ಅಪ್ಪ ತಂದು ನನಗೆ ನಿಮಗೆ
ಗಂಟುಹಾಕಿದ.

ಹೆತ್ತ ತಂದೆ ಮಾರಿಕೊಂಡು
ಮೃತ್ಯುವಾಗಿ ಕೊಲ್ಲಲಿಂತು
ಮಾಡಲೇನಿದೆ.

ಶಾಸ್ತ್ರ ಗೀಸ್ತ್ರ ತಿಳಿಯೆ ನಾನು
ಬರೆದ ಜನರು ಹೆಂಡಿರಾಗಿ
ಸೇವೆಮಾಡಲಿ.

ನೋಟ ಬೇಟ ಗಂಡಿಗೆಂದು
ಧರ್ಮಶಾಸ್ತ್ರ ಹೆಣ್ಣಿಗೆಂದು
ನುಡಿವರೆಲ್ಲರು.

ಕೋರ್ಟು ಗೀರ್ಟು ಆಡಬೇಡಿ
ಜಡ್ಜಿ ಧರ್ಮವೇನು ಬಲ್ಲ
ನಾನು ತಿಳಿಸುವೆ.

ಕುರ್ಚಿ ಮೇಲೆ ಕುಳಿತುಕೊಂಡು
ಏನೋ ಗೀಚಿ ಎದ್ದು ಬರುವ
ಮಾತಿದಲ್ಲವು.

ತನ್ನ ಮಗಳ ನಿಮಗೆ ಕೊಟ್ಟು
ತನ್ನ ಮಗನ ಎನಗೆ ಕೊಟ್ಟು
ಮದುವೆ ಮಾಡಲಿ.

ಎನ್ನ ದುಃಖ ಆರಿಗುಂಟು
ಬಾಳಬೇಕು, ಬಾಳಲಾರೆ
ಹಾಳು ಲೋಕವು.

ಬಯ್ವ ಜನರು ಜರಿವ ಜನರು
ಅವರಿಗೇನು, ಬಾಯಿ ಕೊಬ್ಬು
ನೋವು ತೆಗೆವರೆ?

ಬಲ್ಲೆನವರ ಮನದ ಭಾವ
ಇಂದು ನಾನು ಸೂಳೆಯಾಗೆ
ಸುಖಿಸರೆಲ್ಲರು.

ಭೂಮಿ ಮೇಲೆ ಇರುವಳಲ್ಲ
ಇಂದೆ ನಾನು ಕೆರೆಗೆ ಬಿದ್ದು
ಜನ್ಮ ನೀಗುವೆ.

ಶಾಸ್ತ್ರ ಧರ್ಮ ತಣ್ಣಗಾಗಿ
ಬಯ್ವ ಜನರು ಉರಿದು ಹೋಗಿ
ಲೋಕವಡಗಲಿ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...