Home / ಕವನ / ಕವಿತೆ / ಯಾತ್ರಿಕ

ಯಾತ್ರಿಕ

ಜಡ ಮಾನಸವ ತಟ್ಟಿ
ಚೇತನವ ಬಿತ್ತರಿಸಿ
ಸಾಗುತಿಹ ಓ ಯಾತ್ರಿಕ

ತಾಳಣ್ಣ ನಾ ಬರುವೆ
ಹಿಂದಿಷ್ಟು ಸೋತಿರುವೆ
ದಿಬ್ಬಗಳ ಹಾಯ್ವತನಕ

ಮುಳ್ಳೆಷ್ಟೊ ತುಳಿದಿಹೆನು
ಕಲ್ಲೆಷ್ಟೊ ಎಡವಿದೆನು
ಹಸಿವಿನಿಂ ಸೊರಗುತಿಹೆನು

ನಿಲ್ಲಣ್ಣ ನಿಲ್ಲಣ್ಣ
ನಿನ್ನಂಥ ಪಯಣಿಗರ
ಹಾದಿಯನೆ ಕಾದಿದ್ದೆನು

ಕೇಳಿಸಿತು ಹುಚ್ಚು ನುಡಿ
ಕಾಣಿಸಿತು ಹುಚ್ಚು ನಡೆ
ಓಡೋಡಿ ನಾ ಬಂದೆನು

ಅಕ್ಕರೆಯ ಈ ನಿನ್ನ
ಮಾತೊಂದೆ ಸಾಕಣ್ಣ
ಬೇಡೆ ಮತ್ತೊಂದೇನನು

ಒಳ್ಳ ಮನವುಳ್ಳವನು
ಎಲ್ಲರನು ನಲಿಸುವನು
ಮನಗಂಡೆ ಕರುಣಿ ನೀನು

ಕಲ್ಲು ಕರಗಿಸುವಂಥ
ಅದ್ಭುತದ ಬಲವೊಂದು
ತುಂಬಿಹುದು ನಿನ್ನೊಳೇನೊ

ಜೀವಿ ಜೀವಿಯ ಬಯಸಿ
ಬಾಯ್ಬಿಡುವ ಮಿಡುಕುಗುಣ
ವೆನ್ನೊಳಗೆ ಅಣಗುವತನಕ

ಸಾಯಮಾಗಿರು ಎನಗೆ
ನಿನ್ನೊಡನೆ ನಾ ಬರುವೆ
ಸ್ವಸ್ಥಾನ ಸಿಗುವ ತನಕ

ಹೊತ್ತೇರಿ ಬರುತಿಹುದು
ಸುತ್ತಲೂ ಸುಡುತಿಹುದು
ಮರುಭೂಮಿ ನಾ ಬಂದುದು

ಕತ್ತಲಾಗುವ ಮುನ್ನ
ಸುತ್ತಿ ಸಂತೆಯನಣ್ಣ
ಬುತ್ತಿ ಉಂಬುವ ತಂದುದು

ಕುದಿಯೊಳಗೆ ಈ ಮರದ
ನೆಳಲೆಷ್ಟು ತಣುವಿಹುದು
ಈಶಕೃಪೆ ಹರಡಿದಂತೆ

ಚಣಕಾಲ ವಿಶ್ರಮಿಸಿ
ಅರುಹುವೆನು ನಿನಗೆನ್ನ
ಗತಪಯಣಗಳ ಭೀಕರ

ನಾ ಬಿದ್ದ ಕೂಪಗಳ
ನಾ ಗೆದ್ದ ಕೋಟೆಗಳ
ಸೊದೆಯನೆಲ್ಲವ ಪೇಳ್ವೆನು

ಕುರುಡು ಸಡಗರದಿಂದ
ಮುಳುಗಿ ತೇಲುತ ಬಂದ
ಹರುಕು ಮುರುಕಿನ ಕಥೆಯನು

ನೀನೆತ್ತಣಿಂ ಬಂದೆ
ಎಲ್ಲಿಗಿದೆ ಗುರಿ ಮುಂದೆ
ಏನೇನ ಕಂಡೆ ಹಿಂದೆ?

ಮಾನವರ ಕೃತ್ಯಮೇನ್?
ಜಗದೊಡೆಯನಿಚ್ಛೆಯೇನ್?
ಅರುಹು ನೀನರಿತುದಿಂದು

ಅರಿತವರ ನುರಿತವರ
ಒಡನಾಟವಂ ಬಯಸಿ
ನಾನಿತ್ತ ಪೊರಮಟ್ಟೆನು

ನಿರ್ಮಲದ ನಿಶ್ಚಲದ
ಕಾಂತಿಮಯದೈಸಿರಿಯ
ಕರುಣಿಸನು ಪರಮಾತ್ಮನು

ಕಣ್ ಕಟ್ಟಿ ಆಡಿಸುವ
ಕಪಟನಾಟಕ ಸೂತ್ರಿ
ಕಂಡನೇ ನಿನ ದೃಷ್ಟಿಗೆ?

ಕಾಣದಿಹನಾ ಕಳ್ಳ
ಇಟ್ಟಿಹನು ಬೇಗುದಿಯ
ಮಾಯೆಯನು ಬಿತ್ತಿ ಒಳಗೆ

ಅವನಿರುವು ಅಂತಿರಲಿ
ಅವನ ಕೃತಿ ಎಂತಿಹುದೊ
ನೋಡಿದೆಯ ಈ ಶಕ್ತಿಯ?

ಬುವಿ ಬಾನ ಮೂಸೆಯೊಳು
ಜೀವರಾಶಿಯ ಸೃಜಿಸಿ
ತುಂಬಿಹನು ಜಿಜ್ಞಾಸೆಯ

ಮದ ಮತ್ಸರಗಳೇನು
ಮಾಯಜಾಲಗಳೇನು
ನನದೆಂಬ ಭ್ರಾಂತಿಯೇನು

ಕಾಂಬುದೆಲ್ಲವು ಈತ
ನಿನ ರೂಪವೇ ಎಂಬ
ಜ್ಞಾನಿಯೇ ಆನಂದನು

ಆನಂದವಂ ನಿರುತ
ಅನುಭವಿಸುವನು ಜ್ಞಾನಿ
ಅಜ್ಞಾನಿಗೆ ಗತಿಯದೇನು?

ಪಾಮರತ್ವವ ಬಿತ್ತಿ
ಪೈರು ಬೆಳಸಿಹನಿಲ್ಲಿ
ಕುಹುಕನೇಂ ಪರಮ ಶಿವನು?

ಅಲ್ಲದೊಡೆ ಜೀವನಿಗೆ
ಸ್ವಾತಂತ್ರ್‍ಯವುಂಟೇನು
ಊಳಿಗದಿ ತೊಡಗಿದವನು!

ವಿಧಿಯಂತ್ರ ಸೆಳೆದತ್ತ
ಬುದ್ಧಿ, ಮನ ಓಡುತಿರೆ
ಜೀವಿ ತಾನೇಗೈವನು?

ಒಡೆಯಲಾರದ ಒಗಟೆ
ಎಷ್ಟೊ ಉಳಿದಿಹುದಿಂತು
ಬೆಳೆಯುತಿದೆ ಗ್ರಂಥರಾಸಿ

ನುಂಗಲಾರದ ತುತ್ತ
ನೂಕಿದರೆ ಫಲವೇನು?
ಶ್ರಮೆಗೊಳದ ಮಿತವೆ ಲೇಸು

ಅಂತಿರಲಿ ಆ ಮಾತು
ಅವನಿರಲು ಎಮಗೇಕೆ?
ನೀ ದೊರೆತುದೆನ್ನ ಪುಣ್ಯ

ನೆಳಲೊಳಗೆ ನಿನ ಜೊತೆಗೆ
ಮೆಲ್ಲ ಮೆಲ್ಲನೆ ನಡೆವೆ
ಸೊಗವಹುದು ಪಯಣವಿನ್ನು

ಒಬ್ಬರೊಬ್ಬರ ಹಿಂಡಿ
ಈರ್ಷ್ಯೆಯಿಂದುರಿಯದಿಹ
ಹೊಸ ರಾಜ್ಯದೊಳಗೆ ಸುಳಿದು

ಕಂಡುದನು ಬಣ್ಣಿಸುತ
ಕಾಣದುದ ಶೋಧಿಸುತ
ನಡೆವ ನಾವ್ ನಕ್ಕುನಲಿದು

ಆ ಜಾಣನದ್ಭುತದ
ಕೌಶಲವ ಪರಿಕಿಸುವ!
ಶೃಂಗಾರಮೆಂತಿಪ್ಪುದೊ!

ಭೀಭತ್ಸ ಶರಧಿಯಂ
ಮಥಿಸಿ ನೋಡುವ ಅಣ್ಣ
ಹಾಸಾದಮೇಮ್ ದೊರೆವುದೊ!

ನವರಸಗಳೆಲ್ಲವಂ
ಒರೆಗಿಟ್ಟು ಶೋಧಿಸುವ
ಈ ಬುದ್ಧಿ ಯಂತ್ರದೊಳಗೆ

ಜೀವಿ ತಾಂ ಬಯಸಿರುವ
ತಿಳಿಮಧುವನೀಕ್ಷಿಸುವ
ಗುಪ್ತಸಂಧಾನದೊಳಗೆ

ಗೀತೆಯದು ಬೋಧಿಸುವ
ಸಾಹಸದ ಕಾರ್ಯದೊಳ್
ಧೈರ್‍ಯದಿಂ ಮುನ್ನುಗ್ಗುವ

ಮುರವೈರಿ ತೋರಿಸಿದ
ವಿಶ್ವರೂಪದ ಧೃತಿಯ
ನಾವೊಮಮೆ ಕಂಡುಬರುವ

ಇಲ್ಲಿರುವ ಚೆಲುವೇನೊ?
ಅಲ್ಲಿರುವ ತಿಳಿವೇನೊ?
ಎಲ್ಲವಂ ಪರಿಶೋಧಿಸಿ

ನೀನರಿತ ವಿಷಯಗಳ
ತಂಗಿ ಜನಕಜೆಗರುಹಿ
ಸಂತಸದಿ ಯಾತ್ರೆ ನಡೆಸು!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...