Home / ಕವನ / ಕವಿತೆ / ಯಾತ್ರಿಕ

ಯಾತ್ರಿಕ

ಜಡ ಮಾನಸವ ತಟ್ಟಿ
ಚೇತನವ ಬಿತ್ತರಿಸಿ
ಸಾಗುತಿಹ ಓ ಯಾತ್ರಿಕ

ತಾಳಣ್ಣ ನಾ ಬರುವೆ
ಹಿಂದಿಷ್ಟು ಸೋತಿರುವೆ
ದಿಬ್ಬಗಳ ಹಾಯ್ವತನಕ

ಮುಳ್ಳೆಷ್ಟೊ ತುಳಿದಿಹೆನು
ಕಲ್ಲೆಷ್ಟೊ ಎಡವಿದೆನು
ಹಸಿವಿನಿಂ ಸೊರಗುತಿಹೆನು

ನಿಲ್ಲಣ್ಣ ನಿಲ್ಲಣ್ಣ
ನಿನ್ನಂಥ ಪಯಣಿಗರ
ಹಾದಿಯನೆ ಕಾದಿದ್ದೆನು

ಕೇಳಿಸಿತು ಹುಚ್ಚು ನುಡಿ
ಕಾಣಿಸಿತು ಹುಚ್ಚು ನಡೆ
ಓಡೋಡಿ ನಾ ಬಂದೆನು

ಅಕ್ಕರೆಯ ಈ ನಿನ್ನ
ಮಾತೊಂದೆ ಸಾಕಣ್ಣ
ಬೇಡೆ ಮತ್ತೊಂದೇನನು

ಒಳ್ಳ ಮನವುಳ್ಳವನು
ಎಲ್ಲರನು ನಲಿಸುವನು
ಮನಗಂಡೆ ಕರುಣಿ ನೀನು

ಕಲ್ಲು ಕರಗಿಸುವಂಥ
ಅದ್ಭುತದ ಬಲವೊಂದು
ತುಂಬಿಹುದು ನಿನ್ನೊಳೇನೊ

ಜೀವಿ ಜೀವಿಯ ಬಯಸಿ
ಬಾಯ್ಬಿಡುವ ಮಿಡುಕುಗುಣ
ವೆನ್ನೊಳಗೆ ಅಣಗುವತನಕ

ಸಾಯಮಾಗಿರು ಎನಗೆ
ನಿನ್ನೊಡನೆ ನಾ ಬರುವೆ
ಸ್ವಸ್ಥಾನ ಸಿಗುವ ತನಕ

ಹೊತ್ತೇರಿ ಬರುತಿಹುದು
ಸುತ್ತಲೂ ಸುಡುತಿಹುದು
ಮರುಭೂಮಿ ನಾ ಬಂದುದು

ಕತ್ತಲಾಗುವ ಮುನ್ನ
ಸುತ್ತಿ ಸಂತೆಯನಣ್ಣ
ಬುತ್ತಿ ಉಂಬುವ ತಂದುದು

ಕುದಿಯೊಳಗೆ ಈ ಮರದ
ನೆಳಲೆಷ್ಟು ತಣುವಿಹುದು
ಈಶಕೃಪೆ ಹರಡಿದಂತೆ

ಚಣಕಾಲ ವಿಶ್ರಮಿಸಿ
ಅರುಹುವೆನು ನಿನಗೆನ್ನ
ಗತಪಯಣಗಳ ಭೀಕರ

ನಾ ಬಿದ್ದ ಕೂಪಗಳ
ನಾ ಗೆದ್ದ ಕೋಟೆಗಳ
ಸೊದೆಯನೆಲ್ಲವ ಪೇಳ್ವೆನು

ಕುರುಡು ಸಡಗರದಿಂದ
ಮುಳುಗಿ ತೇಲುತ ಬಂದ
ಹರುಕು ಮುರುಕಿನ ಕಥೆಯನು

ನೀನೆತ್ತಣಿಂ ಬಂದೆ
ಎಲ್ಲಿಗಿದೆ ಗುರಿ ಮುಂದೆ
ಏನೇನ ಕಂಡೆ ಹಿಂದೆ?

ಮಾನವರ ಕೃತ್ಯಮೇನ್?
ಜಗದೊಡೆಯನಿಚ್ಛೆಯೇನ್?
ಅರುಹು ನೀನರಿತುದಿಂದು

ಅರಿತವರ ನುರಿತವರ
ಒಡನಾಟವಂ ಬಯಸಿ
ನಾನಿತ್ತ ಪೊರಮಟ್ಟೆನು

ನಿರ್ಮಲದ ನಿಶ್ಚಲದ
ಕಾಂತಿಮಯದೈಸಿರಿಯ
ಕರುಣಿಸನು ಪರಮಾತ್ಮನು

ಕಣ್ ಕಟ್ಟಿ ಆಡಿಸುವ
ಕಪಟನಾಟಕ ಸೂತ್ರಿ
ಕಂಡನೇ ನಿನ ದೃಷ್ಟಿಗೆ?

ಕಾಣದಿಹನಾ ಕಳ್ಳ
ಇಟ್ಟಿಹನು ಬೇಗುದಿಯ
ಮಾಯೆಯನು ಬಿತ್ತಿ ಒಳಗೆ

ಅವನಿರುವು ಅಂತಿರಲಿ
ಅವನ ಕೃತಿ ಎಂತಿಹುದೊ
ನೋಡಿದೆಯ ಈ ಶಕ್ತಿಯ?

ಬುವಿ ಬಾನ ಮೂಸೆಯೊಳು
ಜೀವರಾಶಿಯ ಸೃಜಿಸಿ
ತುಂಬಿಹನು ಜಿಜ್ಞಾಸೆಯ

ಮದ ಮತ್ಸರಗಳೇನು
ಮಾಯಜಾಲಗಳೇನು
ನನದೆಂಬ ಭ್ರಾಂತಿಯೇನು

ಕಾಂಬುದೆಲ್ಲವು ಈತ
ನಿನ ರೂಪವೇ ಎಂಬ
ಜ್ಞಾನಿಯೇ ಆನಂದನು

ಆನಂದವಂ ನಿರುತ
ಅನುಭವಿಸುವನು ಜ್ಞಾನಿ
ಅಜ್ಞಾನಿಗೆ ಗತಿಯದೇನು?

ಪಾಮರತ್ವವ ಬಿತ್ತಿ
ಪೈರು ಬೆಳಸಿಹನಿಲ್ಲಿ
ಕುಹುಕನೇಂ ಪರಮ ಶಿವನು?

ಅಲ್ಲದೊಡೆ ಜೀವನಿಗೆ
ಸ್ವಾತಂತ್ರ್‍ಯವುಂಟೇನು
ಊಳಿಗದಿ ತೊಡಗಿದವನು!

ವಿಧಿಯಂತ್ರ ಸೆಳೆದತ್ತ
ಬುದ್ಧಿ, ಮನ ಓಡುತಿರೆ
ಜೀವಿ ತಾನೇಗೈವನು?

ಒಡೆಯಲಾರದ ಒಗಟೆ
ಎಷ್ಟೊ ಉಳಿದಿಹುದಿಂತು
ಬೆಳೆಯುತಿದೆ ಗ್ರಂಥರಾಸಿ

ನುಂಗಲಾರದ ತುತ್ತ
ನೂಕಿದರೆ ಫಲವೇನು?
ಶ್ರಮೆಗೊಳದ ಮಿತವೆ ಲೇಸು

ಅಂತಿರಲಿ ಆ ಮಾತು
ಅವನಿರಲು ಎಮಗೇಕೆ?
ನೀ ದೊರೆತುದೆನ್ನ ಪುಣ್ಯ

ನೆಳಲೊಳಗೆ ನಿನ ಜೊತೆಗೆ
ಮೆಲ್ಲ ಮೆಲ್ಲನೆ ನಡೆವೆ
ಸೊಗವಹುದು ಪಯಣವಿನ್ನು

ಒಬ್ಬರೊಬ್ಬರ ಹಿಂಡಿ
ಈರ್ಷ್ಯೆಯಿಂದುರಿಯದಿಹ
ಹೊಸ ರಾಜ್ಯದೊಳಗೆ ಸುಳಿದು

ಕಂಡುದನು ಬಣ್ಣಿಸುತ
ಕಾಣದುದ ಶೋಧಿಸುತ
ನಡೆವ ನಾವ್ ನಕ್ಕುನಲಿದು

ಆ ಜಾಣನದ್ಭುತದ
ಕೌಶಲವ ಪರಿಕಿಸುವ!
ಶೃಂಗಾರಮೆಂತಿಪ್ಪುದೊ!

ಭೀಭತ್ಸ ಶರಧಿಯಂ
ಮಥಿಸಿ ನೋಡುವ ಅಣ್ಣ
ಹಾಸಾದಮೇಮ್ ದೊರೆವುದೊ!

ನವರಸಗಳೆಲ್ಲವಂ
ಒರೆಗಿಟ್ಟು ಶೋಧಿಸುವ
ಈ ಬುದ್ಧಿ ಯಂತ್ರದೊಳಗೆ

ಜೀವಿ ತಾಂ ಬಯಸಿರುವ
ತಿಳಿಮಧುವನೀಕ್ಷಿಸುವ
ಗುಪ್ತಸಂಧಾನದೊಳಗೆ

ಗೀತೆಯದು ಬೋಧಿಸುವ
ಸಾಹಸದ ಕಾರ್ಯದೊಳ್
ಧೈರ್‍ಯದಿಂ ಮುನ್ನುಗ್ಗುವ

ಮುರವೈರಿ ತೋರಿಸಿದ
ವಿಶ್ವರೂಪದ ಧೃತಿಯ
ನಾವೊಮಮೆ ಕಂಡುಬರುವ

ಇಲ್ಲಿರುವ ಚೆಲುವೇನೊ?
ಅಲ್ಲಿರುವ ತಿಳಿವೇನೊ?
ಎಲ್ಲವಂ ಪರಿಶೋಧಿಸಿ

ನೀನರಿತ ವಿಷಯಗಳ
ತಂಗಿ ಜನಕಜೆಗರುಹಿ
ಸಂತಸದಿ ಯಾತ್ರೆ ನಡೆಸು!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...