Home / ಕವನ / ಕವಿತೆ / ನರಸಿಯ ಪರಿಸೆ

ನರಸಿಯ ಪರಿಸೆ

ಹದಿನಾಲ್ಕು ಹರೆಯದ ನರಸಿ ಬಲು ಚೆಲುವೆ
ಮುದವಾಗುತಿದೆ ಇವಳ ನಡೆ ನುಡಿಯ ನೋಡೆ
ಹರುಕು ಕಂಚುಕ ತೊಟ್ಟು ಮಲಿನಾಂಬರವುಟ್ಟು
ಉಡುಗುವಳು ವರ್ತನೆಯ ಮನೆಗಳೊಳು ಕಸವ

ಮುಕುರವೇತಕೆ ಇವಳ ಮೂಗೆ ಸಂಪಿಗೆ ಮೊಗ್ಗು
ಪೊಳೆವ ಕಂಗಳ ತುಂಬಿ ತುಳುಕುತಿದೆ ಹಿಗ್ಗು
ಚೆಲ್ವ ಪಣೆಯೊಳು ಬಿದ್ದು ಅಲುಗಾಡುತಿವೆ ಕುರುಳು
ರಸಿಕತೆಯು ಚಿಮ್ಮುತಿದೆ ಇವಳ ಮಾತಿನೊಳು

ತೊಳೆಯುವಳು ಮುಸುರೆಗಳ ಥಳಥಳನೆ ಕ್ಷಣದಿ
ಓಡುವಳು ಮತ್ತೊಂದು ಮನೆಗಿವಳು ಮುದದಿ
ಬೆಳಸುವಳು ಗೆಳೆತನವ ಹುಡುಗರೊಳು ಬೆರೆತು
ದುಡಿತದೊಳಗಿದ್ದರೂ ದುಗುಡವನು ಮರೆತು

ಬಾರದಿರಲೊಂದು ದಿನ ಮನೆಗೆಲಸಕಿವಳು
ಮೀರಿದಳೆ? ಆಜ್ಞೆಯನು ಎನುತ ದುಡುಕಿದೆನು
ಬರಲಿಲ್ಲವಿಂದೇಕೆ ಮನೆಗೆಲಸಕೆಲೆ ನರಸಿ,
ತಿರುದು ತಿಂಬುವ ನಿನಗೆ ಜಂಬವೇ ಮೂಳಿ!

ಹಿಡಿಯುವೆನು ನಾ ನಿನ್ನ ಕೂಲಿಯೊಳಗೊಂದಾಣೆ
ಬಿಡಿಸುವೆನು ನೀನಿನ್ನು ಬೇಕಿಲ್ಲ ನಡಿ ಎಂದೆ
ಸಿಟ್ಟಾಗ ಬೇಡಮ್ಮ ತಾಸು ತಡವಾಯ್ತು
ಹಿಟ್ಟಿನಾರತಿ ಹೊತ್ತು ಗುಡಿಗೆ ಹೋಗಿದ್ದೆ

ಬೀರಪ್ಪ ಹೊರಟಿದ್ದ, ತೇರು ನೋಡಲು ಹೋದೆ
ಎಲೆ ಪೂಜೆ ಕಟ್ಟಿದರು ತಡವಾಯಿತಲ್ಲಿ
ಎಡೆಯನಿಟ್ಟವು ಎಲ್ಲ ಸ್ವಾಮಿಗೊಂದೊಂದಾಗಿ
ನೆನೆಯಕ್ಕಿ ತಂಬಿಟ್ಟು ಕಾಯಿ ಬಾಳೇಹಣ್ಣು

ಉಡಿಯೊಳಗೆ ಮಡಗಿದ್ದ ಚೂರು ಕೊಬ್ಬರಿಯೊಂದು
ತೆಗೆದುಕೊಟ್ಟಳು ನನಗೆ ಪರಸಾದವೆಂದು
ತೇರಿನೊಳು ಬೀರಪ್ಪಗಾರತಿಯ ಬೆಳಗಿದರು
ಹೊಂಬಾಳೆ ದವನಗಳ ನಾವು ಸೂರಿದೆವು

ತೇರು ಕದಲಿಸುವಾಗ ಭೋರೆಂದು ವುರಿಮೆಗಳು
ಕುಣಿಕುಣಿದು ಜನರೆಲ್ಲ ಕೇಕೆ ಹಾಕಿದರು
ನಾಗಮ್ಮ ಕರಿಯಮ್ಮ ಸಿತ್ತಮ್ಮ ಸಿರಿಯಮ್ಮ
ಪದಗಳನು ಹಾಡಿದರು ಏನೇಳಲಮ್ಮ!

ಹೊರಟಿಲ್ಲವೇನಮ್ಮ ನೀನಿನ್ನು ಪರಿಸೆಗೆ
ತರಿಸಮ್ಮ ಕಾಯೊಂದ ಇರಲಿ ದಿನಗೆಲಸ
ಬಾರಮ್ಮ ಸ್ವಾಮಿಯ ತೇರ ನೋಡಮ್ಮ
ಊರೂರೆ ಬಂದಿಹುದು ನೀನಿಲ್ಲೆ ಇರುವೆ

ತೊಡಿಸಮ್ಮ ಪರಿಸೆಯೊಳು ನನ ಕೈಗೆ ಬಳೆಗಳನು
ಕೊಡಿಸಮ್ಮ ಮಕ್ಕಳಿಗೆ ಗೊಂಬೆಗಳನೆಂದಳು
ಆಗಿಲ್ಲವೇ ನರಸಿ ಮದುವೆ ನಿನಗೆಂದರೆ
ಸೆರಗ ಬಾಯಿಗೆ ಮುಚ್ಚಿ ಸಿರಬಾಗಿ ನಗುವಳು

ಮದುವೆಯೊಳಗಿನ ತತ್ವ ಗೊತ್ತಿಲ್ಲ ಪಸುಳೆಗೆ
ನಿಸ್ಪೃಹದ ಮನಸಿನೊಳು ನಲಿದಾಡುತಿಹಳು
ಇರಲಿರಲಿ ನರಸೀ ಮದುವೆಯಂತಿರಲಿ
ಬೀರಪ್ಪನಾ ಪರಿಸೆ ಬಂಗಾರವಾದೀತು

ನಿನ್ನ ಜೀವನ ಬೆಳಸು ಬೆಳೆಯುತಿರಲಿಂತೆ
ನಿನ್ನ ರಸಿಕತೆ ಬೆಳಗಿ ಬೆಳಗುತಿರಲಿಂತೆ
ನಿನ್ನ ದುಡಿತವು ಜನಕೆ ಸಲ್ಲುತಿರಲಿಂತೆ
ನಿನ್ನ ಪರಿಸೆಯ ಕುಣಿತ ಕುಣಿಯುತಿರಲಿಂತೆ

ಬಂಧನದಿ ಸಿಲುಕಿದಾ ಬಾಳಿನನುಭವಕಿಂತ
ಎಳೆತನದ ಕುಣಿತವೇ ಜನಕಜೆಗೆ ಹಿತವು
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...