Home / ಕವನ / ಕವಿತೆ / ನರಸಿಯ ಪರಿಸೆ

ನರಸಿಯ ಪರಿಸೆ

ಹದಿನಾಲ್ಕು ಹರೆಯದ ನರಸಿ ಬಲು ಚೆಲುವೆ
ಮುದವಾಗುತಿದೆ ಇವಳ ನಡೆ ನುಡಿಯ ನೋಡೆ
ಹರುಕು ಕಂಚುಕ ತೊಟ್ಟು ಮಲಿನಾಂಬರವುಟ್ಟು
ಉಡುಗುವಳು ವರ್ತನೆಯ ಮನೆಗಳೊಳು ಕಸವ

ಮುಕುರವೇತಕೆ ಇವಳ ಮೂಗೆ ಸಂಪಿಗೆ ಮೊಗ್ಗು
ಪೊಳೆವ ಕಂಗಳ ತುಂಬಿ ತುಳುಕುತಿದೆ ಹಿಗ್ಗು
ಚೆಲ್ವ ಪಣೆಯೊಳು ಬಿದ್ದು ಅಲುಗಾಡುತಿವೆ ಕುರುಳು
ರಸಿಕತೆಯು ಚಿಮ್ಮುತಿದೆ ಇವಳ ಮಾತಿನೊಳು

ತೊಳೆಯುವಳು ಮುಸುರೆಗಳ ಥಳಥಳನೆ ಕ್ಷಣದಿ
ಓಡುವಳು ಮತ್ತೊಂದು ಮನೆಗಿವಳು ಮುದದಿ
ಬೆಳಸುವಳು ಗೆಳೆತನವ ಹುಡುಗರೊಳು ಬೆರೆತು
ದುಡಿತದೊಳಗಿದ್ದರೂ ದುಗುಡವನು ಮರೆತು

ಬಾರದಿರಲೊಂದು ದಿನ ಮನೆಗೆಲಸಕಿವಳು
ಮೀರಿದಳೆ? ಆಜ್ಞೆಯನು ಎನುತ ದುಡುಕಿದೆನು
ಬರಲಿಲ್ಲವಿಂದೇಕೆ ಮನೆಗೆಲಸಕೆಲೆ ನರಸಿ,
ತಿರುದು ತಿಂಬುವ ನಿನಗೆ ಜಂಬವೇ ಮೂಳಿ!

ಹಿಡಿಯುವೆನು ನಾ ನಿನ್ನ ಕೂಲಿಯೊಳಗೊಂದಾಣೆ
ಬಿಡಿಸುವೆನು ನೀನಿನ್ನು ಬೇಕಿಲ್ಲ ನಡಿ ಎಂದೆ
ಸಿಟ್ಟಾಗ ಬೇಡಮ್ಮ ತಾಸು ತಡವಾಯ್ತು
ಹಿಟ್ಟಿನಾರತಿ ಹೊತ್ತು ಗುಡಿಗೆ ಹೋಗಿದ್ದೆ

ಬೀರಪ್ಪ ಹೊರಟಿದ್ದ, ತೇರು ನೋಡಲು ಹೋದೆ
ಎಲೆ ಪೂಜೆ ಕಟ್ಟಿದರು ತಡವಾಯಿತಲ್ಲಿ
ಎಡೆಯನಿಟ್ಟವು ಎಲ್ಲ ಸ್ವಾಮಿಗೊಂದೊಂದಾಗಿ
ನೆನೆಯಕ್ಕಿ ತಂಬಿಟ್ಟು ಕಾಯಿ ಬಾಳೇಹಣ್ಣು

ಉಡಿಯೊಳಗೆ ಮಡಗಿದ್ದ ಚೂರು ಕೊಬ್ಬರಿಯೊಂದು
ತೆಗೆದುಕೊಟ್ಟಳು ನನಗೆ ಪರಸಾದವೆಂದು
ತೇರಿನೊಳು ಬೀರಪ್ಪಗಾರತಿಯ ಬೆಳಗಿದರು
ಹೊಂಬಾಳೆ ದವನಗಳ ನಾವು ಸೂರಿದೆವು

ತೇರು ಕದಲಿಸುವಾಗ ಭೋರೆಂದು ವುರಿಮೆಗಳು
ಕುಣಿಕುಣಿದು ಜನರೆಲ್ಲ ಕೇಕೆ ಹಾಕಿದರು
ನಾಗಮ್ಮ ಕರಿಯಮ್ಮ ಸಿತ್ತಮ್ಮ ಸಿರಿಯಮ್ಮ
ಪದಗಳನು ಹಾಡಿದರು ಏನೇಳಲಮ್ಮ!

ಹೊರಟಿಲ್ಲವೇನಮ್ಮ ನೀನಿನ್ನು ಪರಿಸೆಗೆ
ತರಿಸಮ್ಮ ಕಾಯೊಂದ ಇರಲಿ ದಿನಗೆಲಸ
ಬಾರಮ್ಮ ಸ್ವಾಮಿಯ ತೇರ ನೋಡಮ್ಮ
ಊರೂರೆ ಬಂದಿಹುದು ನೀನಿಲ್ಲೆ ಇರುವೆ

ತೊಡಿಸಮ್ಮ ಪರಿಸೆಯೊಳು ನನ ಕೈಗೆ ಬಳೆಗಳನು
ಕೊಡಿಸಮ್ಮ ಮಕ್ಕಳಿಗೆ ಗೊಂಬೆಗಳನೆಂದಳು
ಆಗಿಲ್ಲವೇ ನರಸಿ ಮದುವೆ ನಿನಗೆಂದರೆ
ಸೆರಗ ಬಾಯಿಗೆ ಮುಚ್ಚಿ ಸಿರಬಾಗಿ ನಗುವಳು

ಮದುವೆಯೊಳಗಿನ ತತ್ವ ಗೊತ್ತಿಲ್ಲ ಪಸುಳೆಗೆ
ನಿಸ್ಪೃಹದ ಮನಸಿನೊಳು ನಲಿದಾಡುತಿಹಳು
ಇರಲಿರಲಿ ನರಸೀ ಮದುವೆಯಂತಿರಲಿ
ಬೀರಪ್ಪನಾ ಪರಿಸೆ ಬಂಗಾರವಾದೀತು

ನಿನ್ನ ಜೀವನ ಬೆಳಸು ಬೆಳೆಯುತಿರಲಿಂತೆ
ನಿನ್ನ ರಸಿಕತೆ ಬೆಳಗಿ ಬೆಳಗುತಿರಲಿಂತೆ
ನಿನ್ನ ದುಡಿತವು ಜನಕೆ ಸಲ್ಲುತಿರಲಿಂತೆ
ನಿನ್ನ ಪರಿಸೆಯ ಕುಣಿತ ಕುಣಿಯುತಿರಲಿಂತೆ

ಬಂಧನದಿ ಸಿಲುಕಿದಾ ಬಾಳಿನನುಭವಕಿಂತ
ಎಳೆತನದ ಕುಣಿತವೇ ಜನಕಜೆಗೆ ಹಿತವು
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...