Home / ಕವನ / ಕವಿತೆ / ಮೌನದ ಗಂಟೆ

ಮೌನದ ಗಂಟೆ

(ಭಾರತದಿಂದ ಗಡೀಪಾರು ಮಾಡಲ್ಪಟ್ಟ ಬೌದ್ಧದರ್‍ಮ ಚೀನಾ, ಜಾಪಾನುಗಳಿಗೆ ವಲಸೆ ಹೋಗಿ ಕ್ರಮೇಣ ಅಲ್ಲಿ ಕವಲೊಡೆದ ಶಾಖೆಗಳಲ್ಲಿ ಪ್ರಮುಖವಾದ ಶಾಖೆಯೆ ‘ಝೆನ್’. ಶೊಯ್‌ಚಿ ಒಬ್ಬ ಝೆನ್ ಧರ್‍ಮಗುರು. ಆತ ತನ್ನ ಶಿಷ್ಯರಿಗೆ ಸೂತ್ರಗಳ ಪಠಣ ಕೈಬಿಟ್ಟು ಕೇವಲ ಧ್ಯಾನದಲ್ಲಿ ನಿರತರಾಗುವಂತೆ ಆದೇಶ ನೀಡುತ್ತಾನೆ. ದೇವಾಲಯ ಹಗಲು ರಾತ್ರಿಯ ಪರಿವೆಯಿಲ್ಲದೆ ಮೌನದಲ್ಲಿ ಮುಳುಗುತ್ತದೆ. ಅದೊಂದು ದಿನ ಇದ್ದಕ್ಕಿದ್ದ ಹಾಗೆ ದೇವಾಲಯದಿಂದ ಸೂತ್ರಗಳ ಪಠಣ ಕೇಳಿ ಬರುತ್ತದೆ. ಗುರುವಿನ ಮರಣವಾರ್‍ತೆ ಆ ಮೂಲಕ ಎಲ್ಲೆಡೆ ಬಿತ್ತರಗೊಳ್ಳುತ್ತದೆ.)

ಅದೊಂದು ದಿನ ಶೊಯ್‌ಚಿ

ಗಂಟೆಗಳಿಗೆ ಮೊಳಗಿದ್ದು ಸಾಕು ಅಂದ
ತಾಳಗಳಿಗೆ ಕುಣಿದದ್ದು ಸಾಕು ಅಂದ
ಮಂತ್ರಗಳಿಗೆ ಪಠಿಸಿದ್ದು ಸಾಕು ಅಂದ.

ಗಂಟೆಗಳಿಗೆ ಒಂದು ಚಣ ಗಾಬರಿಯಾಯಿತು
ತಾಳಗಳು ಕುಣಿತದ ಮಧ್ಯೆ ಕೆರಳಿ ನಿಂತವು
ಮಂತ್ರಗಳು ಮುಖ ಊದಿಸಿಕೊಂಡವು
ಶಿಷ್ಯರು ತಳಮಳಿಸಿದರು.

ಇದೀಗ ಶೊಯ್‌ಚಿ ಎಲ್ಲರಿಗೂ
ಧ್ಯಾನಿಸಲು ಹೇಳಿದ.

ಇಷ್ಟಾನಿಷ್ಟವನೆಲ್ಲ ಮೆಟ್ಟಿ
ಗಂಟೆಗಳು ಗರಬಡಿದು ನಿಂತವು
ತಾಳಗಳು ತಲ್ಲೀನವಾದವು
ಮಂತ್ರಗಳು ಮಗ್ನವಾದವು
ದೇವಾಲಯ ಧ್ಯಾನಸ್ಥವಾಯಿತು.

ಶಿಷ್ಯರು-
ಬುದ್ಧನನ್ನೊಮ್ಮೆ ನೋಡಿದರು
ಮುಗುಳುನಗೆಯನ್ನೂ ನೋಡಿದರು
ಧ್ಯಾನದಲ್ಲಿ ಮುಳುಗಿದರು.

‘ಧ್ಯಾನಿಸಿ’ ಅಂದದ್ದು
ಅಲ್ಲೇ ಭುಸುಗುಡುತ್ತಾ
ಅಡ್ಡಾಡುತ್ತಿದ್ದ ಸೂರ್‍ಯನ
ಕಿವಿಗೂ ಬಿತ್ತು.
ಅಗ್ನಿಪರ್‍ವತದೊಳಗೊಂದು
ಅಂತರ್‍ಗಾಮಿ ನದಿ
ತಣ್ಣಗೆ ಹರಿದು ಹೋಯಿತು.

‘ಧ್ಯಾನಿಸಿ’ ಅಂದದ್ದು
ಅಲ್ಲೇ ಚಿನ್ನಾಟವಾಡುತ್ತಿದ್ದ
ಮರಿಮೋಡಗಳ ಹಿಂಡಿಗೂ ತಟ್ಟಿತು
ಮಿಂಚಿನ ಸೆಳಕೊಂದು
ಮೆರೆದು ಮರೆಯಾಯಿತು.

ಹೀಚು, ಮೊಗ್ಗು, ಹೂವು, ಹಣ್ಣು,
ಕೆಂಪೆಲೆ, ಹಸಿರೆಲೆ, ಹಣ್ಣೆಲೆಗಳ
ಲೆಕ್ಕಾಚಾರದಲ್ಲಿ ಮಗ್ನವಾಗಿದ್ದ
ಹೆಮ್ಮರಿಗಳಿಗೆ ಗಾಳಿಗಿವಿಯೂದಿ
‘ಧ್ಯಾನಿಸಿ’ ಅಂತು.
ಅತ್ತಿಂದಿತ್ತ ಹೊಯ್ದಾಡಿ
ಧ್ಯಾನಕ್ಕೆ ಶರಣಾಯಿತು.

ಧುಮುಧುಮು ಎಂದು
ಧುಮುಗುಡುತ್ತಾ ಧುಮ್ಮಿಕ್ಕಿ
ಹರಿಯುತ್ತಿದ್ದ ನದಿಯ
ಎದೆ ಸುಳಿಯೊಳಗೆ
ದನಿಯೊಂದು ಚಿಮ್ಮಿ
ತಡೆದು ನಿಲ್ಲಿಸಿತು.

ಚಂದ್ರ ಓಡೋಡಿ ಬಂದು
ಇರುಳ ಮನೆಗೆ ದೀಪ ಹಚ್ಚಿದ
ಬೆಳಕು ಸಾಲದು
ಎಂದು ಅವನಿಗೂ ಅನ್ನಿಸಿತು.

ದುಂಬಿಯ ಝೇಂಕಾರದ ಹಾಗೆ
ಹಕ್ಕಿಯ ಹಾಡಿನ ಹಾಗೆ
ಹೂವಿನ ಗಂಧದ ಹಾಗೆ
ಧ್ಯಾನ ಎಲ್ಲರನ್ನೂ ತಬ್ಬುತ್ತಿತ್ತು
ದಟ್ಟವಾಗುತ್ತಿತ್ತು.

ಅದೊಂದು ದಿನ ಶೊಯ್‌ಚಿ
ಇನ್ನಿಲ್ಲವಾದ.

ಸೂರ್‍ಯ ಬೆಂಕಿಯ ನಾಲಗೆ ತೆರೆದು
ನದಿ ಧುಮ್ಮಿಕ್ಕಿ ನಡೆದು
ಶೊಯ್‌ಚಿ ಇನ್ನಿಲ್ಲ ಎಂದು ಸಾರಿದವು.

ಗಂಟೆಗಳು ಮೊಳಗತೊಡಗಿದವು
ತಾಳಗಳು ಕುಣಿಯತೊಡಗಿದವು
ಮಂತ್ರಗಳ ಗರ್‍ಜನೆ ಮುಗಿಲು ಮುಟ್ಟಿತು.

ಯಾರಿಗೋ ಗೊತ್ತಾಯಿತು
ಶೊಯ್‌ಚಿ ಇನ್ನಿಲ್ಲ
ಎಲ್ಲರಿಗೂ ಗೊತ್ತಾಯಿತು-
ಶೊಯ್‌ಚಿ ಇನ್ನಿಲ್ಲ
ಜಗತ್ತೇ ನುಡಿಯಿತು
ಶೊಯ್‌ಚಿ ಇನ್ನಿಲ್ಲ

ಶಿಷ್ಯರು ನೋಡಿದರು
ಸದ್ದುಗದ್ದಲ ಸಂಭ್ರಮದಲ್ಲಿ
ಕರಗುತ್ತಿದ್ದ
ಬುದ್ಧನನ್ನು ನೋಡಿದರು

ದುಂಬಿಯ ಝೇಂಕಾರದಲ್ಲಿ
ಹಕ್ಕಿಯ ಹಾಡಿನಲ್ಲಿ
ಹೂವಿನ ಪರಿಮಳದಲ್ಲಿ
ಕರಗುತ್ತಿದ್ದ
ಮುಗುಳುನಗೆಯನ್ನು ನೋಡಿದರು.

ಧೂಪದ ಹೊಗೆ ಕಣ್ಣ
ಕವಿಯುವ ತನಕ ನೋಡಿದರು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...