Home / ಕವನ / ಕವಿತೆ / ದಿನಚರಿ

ದಿನಚರಿ

ರಜದಲ್ಲೇನು ಮಾಡುವಿರಿ ಎಂದು ಕೇಳಿದರು ಟೀಚರು
ಊರಿಗೆ ಹೋಗುತ್ತೇವೆ ಎಂದರು ಒಬ್ಬಿಬ್ಬರು
ಊಟ, ಆಟ ಎಂದು ಪಿಸುಗುಟ್ಟಿ ನಕ್ಕರು ತುಂಟರು
ಒಬ್ಬರಿದ್ದಂತಿದ್ದರಲ್ಲವೆ ಇನ್ನೊಬ್ಬರು?
ತಲೆಗೊಂದರಂತೆ ಮಾತು ಗದ್ದಲಿಸಿದರು
ಅದೇನು ಮಾಡುತ್ತಿರೊ ಮಾಡಿ ಅಂದರು ಟೀಚರು
ಮಾಡಿದ್ದನ್ನೆಲ್ಲಾ ದಿನವೂ ಬರೆದಿಡಿ ಅಂದರು
‘ಇದ್ದದ್ದು ಇದ್ದ ಹಾಗೆಯೇ’ ಎಂದೂ ಸೇರಿಸಿದರು.

ಹೀಗೆ ಊಟ ಆಟದ ಜೊತೆಗೆ
ದಿನಚರಿ ಬರೆಯುವುದೂ ಸೇರಿಕೊಂಡಿತು
ಆಡಿದ್ದು, ನೋಡಿದ್ದು, ಮಾಡಿದ್ದು
ಬರೆದಂತೆಲ್ಲ ಚುರುಮುರಿ ಉಂಡೆಯದೆ ರುಚಿ ಕಂಡಿತು.

ರಜೆಯಲ್ಲೂ ಬರೆಯುವುದೇ? ಎಂದು
ಅಜ್ಜಿ ಗೊಣಗುಟ್ಟಿದರು.
ನೆಪಕ್ಕೆ ಟೀಚರಿನ ಹೆಸರು
ಇವಳದೆ ಕಾರು-ಬಾರು ಎಂದು
ಅಮ್ಮ ಮೆಣಸು ಕುಟ್ಟಿದರು.
ನಾವೂ ಬರೆಯುತ್ತೇವೆ ಎಂದು
ತಮ್ಮಂದಿರು ಹಠ ಮಾಡಿದರು.

ಹೀಗೆ

ಹೊಂಡದ ಮೀನುಗಳಿಗೆ ಮಂಡಕ್ಕಿ ಕೊಟ್ಟಿದ್ದು
ನಿಂಬೆಯ ಗಿಡದಲ್ಲಿದ್ದ ಮೊಟ್ಟೆ ಮರಿಯಾಗಿ
ಚಿಟ್ಟೆಯಾಗಿ ಹಾರಿದ್ದು
ಸೇವಂತಿಗೆ ದಾಸವಾಳಕ್ಕೆ ನೀರೆರದದ್ದು
ದಿನಚರಿಯಲ್ಲಿ ಸೇರಿತು.

ಜರಿಲಂಗಕ್ಕಾಗಿ ಅತ್ತ ಅಮ್ಮನ ಮೇಲೆ
ಮುನಿಸಿಕೊಂಡಿದ್ದು
ಅಪ್ಪ ತರುವ ಮಿಠಾಯಿಗಾಗಿ ರಾತ್ರಿಯೆಲ್ಲಾ
ಕಣ್ಣಿಗೆ ಎಣ್ಣೆ ಬಿಟ್ಟು ಕೂತದ್ದು
ದಿನಚರಿಯಲ್ಲಿ ಸೇರಿತು.

ಅಂಡಾ ಭಂಡಾ ಅಡಿ ಕುಂಟಾಬಿಲ್ಲೆ ಗೆದ್ದದ್ದು
ಒಟ್ಟು ಮಾಡಿದ ಬಳೆ ಚೂರುಗಳನ್ನು
ಗುಟ್ಟಾಗಿ ನಿಧಿಯಂತೆ ಅಡಗಿಸಿಟ್ಟಿದ್ದು
ದಿನಚರಿಯಲ್ಲಿ ಸೇರಿತು.

ಕೊಳಲೂದಿ ಅಜ್ಜಿಯ ಕಿವಿ ತೂತು ಮಾಡಿದ್ದು
ಮಣ್ಣಿಗೆ ನೀರು ಹಾಕಿ ಪಾಯಸವೆಂದು
ತಂಗಿಗೆ ನಂಬಿಸಿದ್ದು
ದಿನಚರಿಯಲ್ಲಿ ಸೇರಿತು.

ತೆಂಗಿನ ಗರಿಯ ವಾಚಿನ ಆಸೆಗೆ
ಪರಮವೈರಿಯೊಂದಿಗೂ ರಾಜಿಯಾದದ್ದು
‘ನಿದ್ರಾ ಸುಂದರಿ’ ಕಥೆಯೋದುತ್ತಾ
ಹಾಗೆಯೆ ನಿದ್ರೆ ಹೋದದ್ದು
ದಿನಚರಿಯಲ್ಲಿ ಸೇರಿತು.

ಕನಸಿನ ತುಂಬಾ ಪೆಪ್ಪರಮೆಂಟಿನ
ಮಳೆ ಸುರಿದದ್ದು
ನಿಜ ಜೀವನದಲ್ಲಿ ಪೈಗೆ ಪೈ ಕೂಡಿಟ್ಟರೂ
ಪೆಪ್ಪರಮೆಂಟು ಕೊಳ್ಳದೆ ಇದದ್ದು
ದಿನಚರಿಯಲ್ಲಿ ಸೇರಿತು.

ಕಾದೂ ಕಾದೂ ಕೊನೆಗೆ
ಶಾಲೆ ಕದ ತೆರೆಯಿತು
ಆವೊತ್ತಿನ ಮಾತುಕತೆ ಕಿತ್ತಾಟ
ಕುಣಿತ ದಿನಚರಿ ಕುರಿತೆ ಆಗಿತ್ತು
ಕೊನೆಗೆ ಎಲ್ಲರೂ ಸೇರಿ
ಎಲ್ಲವನ್ನೂ ಓದಿದ್ದೂ ಆಯಿತು.

ನನಗೋ…. ನನ್ನ ಗೆಳತಿಯರ
ದಿನಚರಿಯೆ ಚೆನ್ನಾಗಿದೆ ಅನ್ನಿಸತೊಡಗಿತ್ತು.
ನನ್ನ ಬಳಿ ಇಲ್ಲದ್ದು ಅವರ ಬಳಿ
ಇದೆ ಎಂದೆನಿಸುತ್ತಿತ್ತು.
ಅವರ ಬಳಿ ಇದ್ದದ್ದೆಲ್ಲವೂ ನನಗೂ
ಬೇಕೆನಿಸುತ್ತಿತ್ತು.

ಅವರ ದಿನಚರಿಗಳಲ್ಲಿ
ಬಣ್ಣ, ಬೆರಗು, ಬೆಡಗು
ಎಲ್ಲವೂ ಇದೆ ಎಂದೆನಿಸುತ್ತಿತ್ತು.
ಆ ರಂಗು, ರಂಜನೆ, ರೋಮಾಂಚನ
ಹೊಟ್ಟೆ ಉರಿಸುತ್ತಿತ್ತು.
ಹುಲಿ, ಕರಡಿ, ಆನೆ, ಕೊಕ್ಕರೆಗಳು
ರೈಲುಬಂಡಿ, ಅರಮನೆ ಆಟಿಕೆಗಳು
ಕಣ್ಣಿಗೆ ಕಟ್ಟಿದಂತಿತ್ತು.

ಟೀಚರೇನೋ ಎಲ್ಲರಿಗೂ ಕೊಡುವಂತೆ
ನನಗೂ ಮಾರ್‍ಕು ಕೊಟ್ಟಿದ್ದರು
ಅಭಿಮಾನವೊ? ಅನುಮಾನವೊ?
ಕಣ್ಣೀರು ತುಂಬಿ ತುಳುಕುತ್ತಿತ್ತು.

ಆಮೇಲೇನೂ ದಿನಚರಿ ಬರೆಯಲು
ಯಾರ ಒತ್ತಾಯವೂ ಇರಲಿಲ್ಲ
ಬರೆಯುವುದೂ ನಿಲ್ಲಲಿಲ್ಲ
ಆದರೆ ಇದ್ದದ್ದು ಇದ್ದ ಹಾಗೆಯೇ ಅಲ್ಲ!

ಕಲ್ಪನೆಗೆ ಕುದುರೆ ರಥ ಕಟ್ಟಿದ್ದಷ್ಟೇ ಗೊತ್ತು
ರಥ ಓಡಿತು.
ಆಸೆಹಕ್ಕಿಗೆ ರೆಕ್ಕೆ ಮೂಡಿಸಿದಷ್ಟೇ ಗೊತ್ತು
ಹಕ್ಕಿ ದೂರ ದೂರ ಹಾರಿತು.

ಇವತ್ತಿಗೂ ರಥ ಓಡುತ್ತಲೇ ಇದೆ
ಕುದುರೆಗಳ ಕಾಲು ಸೋತಂತಿಲ್ಲ
ಇವತ್ತಿಗೂ ಹಕ್ಕಿ ಹಾರುತ್ತಲೇ ಇದೆ
ಕಿಂಚಿತ್ತೂ ಆಯಾಸಗೊಂಡಿಲ್ಲ.

ಇಷ್ಟು ದಿನಗಳಾದ ಮೇಲೆ
ಇಷ್ಟು ದೊಡ್ಡವಳಾದ ಮೇಲೆ
ಕಡಲಲ್ಲಿ ಗುಮ್ಮನಂತೆ ನಿಂತಿರುವ
ಭಾರಿ ಹಡಗನ್ನ ನೋಡಿದಾಗೆಲ್ಲ
ನೆನಪಿನ ತಂತಿಗಳು ಮಿಡಿದು
ನಾನು ಕೈಯಾರೆ ಮಾಡಿ ತೇಲಿಸಿದ
ಕಾಗದದ ದೋಣಿ ಕಣ್ಣೊಳಗೇ ನಿಲ್ಲುತ್ತೆ.

ಆ ಹರ್‍ಷ, ವಿಷಾದ, ಒಲುಮೆ
ಆಸೆ ಆಕಾಂಕ್ಷೆಯ ಕುಲುಮೆ
ಇಂದಿಗೂ ಬೆಚ್ಚಗೆ ಉರಿದಿದೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...