Home / ಕವನ / ಕವಿತೆ / ಅಹಲ್ಯೆ

ಅಹಲ್ಯೆ

ಇಂದ್ರ:

ಹಚ್ಚಿ ಹೊಗೆಬತ್ತಿ ನೋಡುವೆನು ಕಣ್ಣೆತ್ತಿ
ಬಾರಿಬಾರಿಗು ಜೀವದ ಪವಾಡ ಕೋರಿ
ನಿನ್ನೆಯಷ್ಟೇ ಬದುಕು ಮೈತುಂಬಿ ಉದ್ದಕು
ನಿಂತಿದ್ದ ಒಡಲು ಇಂದು ಕೇವಲ ಕಲ್ಲು
ಎಂದರೆ ನಂಬುವೆನೆ ನೊಡುವ ಕಣ್ಣುಗಳನೆ
ಒಬ್ಬಾತನ ಸ್ನೇಹದಲಿ ಇನ್ನೊಬ್ಬನ ಮೋಹ
ಹಿಡಿಯಬಯಸಿದವಳೆ ಎರಡನೊಮ್ಮೆಲೆ
ಎಳಸಿದವಳೆ ಕೇಳು ನನ್ನ ಕರೆ! ಏಳು
ಎದ್ದೇಳು ನಿದ್ದೆಯಿಂದ ಹುಟ್ಟು ಶಿಲೆಯೊಳಗಿಂದ
ನಡೆಯಲಿ ಪಾದ ಕೇಳಿಸಲಿ ಕಂಠದ ನಾದ
ಮರ್ತ್ಯದ ಸಕಲ ಸಾರ ಪಡೆಯೆ ಆಕಾರ
ಎಲೆ ಚೆಲುವೆ ನೀ ಯಾರ ಕಾಯುತಿರುವೆ
ಯಾವ ಯುಗದ ದೈವ ಕೊಡುವುದು ಜೀವ?

ಆಹಲ್ಯೆ:

ಪಾಷಾಣವೆಂಬ ಸ್ಥಿತಿ ಎಷ್ಟೊಂದು ಕಠಿಣ-
ವೆಂಬುದನು ಯಾರಿಗೆ ತಿಳಿಸುವೆನು ಹೇಗೆ!
ಚಲಿಸಲಾರೆನು ಕೈಯ ಸ್ಪಂದಿಸದು ಹೃದಯ
ತಡವಲಾರದ ಬೆರಳು ಸರಿಸಲಾರದ ಕುರುಳು
ಯುಗವೆ ಕಳೆದಿದೆ ಮೈಯ ಹೊರಳಿಸದೆ
ಮಾತು ಮರೆತಿರುವೆ ಇದ್ದರೂ ಇರದಿರುವೆ
ತೆರೆದು ಮಳೆಬಿಸಿಲಿಗೆ ಬಿದ್ದರೂ ಹೀಗೆ
ಮುದುಡುವಂತಿಲ್ಲ ಬಾಡುವಂತಿಲ್ಲ
ಸಕಲ ದಾಹಗಳನೊಮ್ಮೆಲೆ ತಣಿಸಿದಂತಿದೆ ದೇಹ
ಅಹ್! ಇನ್ನೇಕೆ ಮಾತು ದಾಹದ ಕುರಿತು?
ನೆನಪುಗಳಿರದ ಯಾವ ಭಯವೂ ಇರದ
ಎಷ್ಟೊಂದು ಮಾಗಿ ಮೈಮೇಲೆ ಸಾಗಿ
ಇನ್ನೊಂದು ಯುಗದಲ್ಲಿ ಎಷ್ಟೊಂದು ಮನದಲ್ಲಿ
ಏಳಲೇಕೆ ಇಂಥ ಗತಿ ಮತ್ತೆ ಬೇಕೆ?

ಗೌತಮ:

ಇಷ್ಟು ಬೇಗನೆ ಮೂಡಿತೆ ಮುಂಜಾನೆ-
ಯೆಂದು ಬರಿಗಾಲಿನಲಿ ನಿದ್ದೆಗಣ್ಣಿನಲಿ
ನದಿಯ ತೀರಕೆ ಬಂದು ಎಂದಿನಂತೆಯ ಮಿಂದು
ನೋಡಿದರೆ ರಾತ್ರಿ. ಇನ್ನೂ ಮೂರನೆ ಪಹರೆ
ಕೋಳಿ ಕೂಗಿದ ಸದ್ದು ಕಿವಿಯಾರೆ ಕೇಳಿದ್ದು
ಸುಳ್ಳಿರಬಹುದೆ? ಅಹ ಮೋಸ ಹೋದೆ-
ನೆಂದು ಮರಳಿದರೆ ಮನೆಗೆ ಏನದು ಒಳಗೆ
ಯಾಕೆ! ನನ್ನ ನಾನೆ ಕಂಡು ಬೆಚ್ಚೆದೆನೆ
ನಿಂತಿದ್ದ ನಿಚ್ಛಾರೂಪಿ ತದ್ವತ್‌ಸ್ವರೂಪಿ
ಕತ್ತಲಿನ ಮರೆಯಲ್ಲಿ ನನ್ನನಣಕಿಸುವ ರೀತಿಯಲಿ
ಸ್ವಂತ ಬಯಕೆಗಳಭಿವ್ಯಕ್ತಿಯಂತೊಬ್ಬ ವ್ಯಕ್ತಿ!
ಸಿಡಿದೆದ್ದ ಕೋಪವೆ ಕೈಬಿಟ್ಟ ಶಾಪವೆ
ಹಿಂದೆ ಬರುವುದೆಂತು ತುಟಿಮೀರಿದ ಮಾತು
ಕಲ್ಲಾದವನು ನೀನಲ್ಲ ನಾನು!

ಇಂದ್ರ:

ಬೆಳಕು ಮೂಡಿರಲಿಲ್ಲ ಕೋಳಿ ಕೂಗಿರಲಿಲ್ಲ-
ಕೂಗಿದುದು ಕಾಮ ಎಲೆ ಗೌತಮ
ಕೇಳು! ಕಾನನ ತುಂಬ ತುಂಬಿ ಕಡುಮೌನ
ನೆಲವೆಲ್ಲ ಹರಡಿದ್ದ ದಟ್ಟ ಎಲೆಗಳ ಮೆಲ್ಲ
ಸದ್ದಾಗದ ತರದಿ ಮೆಟ್ಟಿ ನಡೆದೆನು ಹಾದಿ
ಮಲಗಿದ್ದ ಮನದನ್ನೆ ಕಂಡ ಕನಸನ್ನೆ
ಹೊಕ್ಕವನು ನಾನು ತನುವಿರದವನು
ನನಗಿಲ್ಲ ನೆರಳು ನಾನು ಕೇವಲ ಮರುಳು
ಉದಯದ ಆಸೆಯಲಿ ಸಂಜೆಯ ನಿರಾಸೆಯಲಿ
ಕರೆದವಳು ಯಾರೀಕೆ ಅಂತರಂಗದ ಸನಿಯಕೆ
ನದಿಯೋ ಭೂಮಿಯೊ ಕೇವಲ ಕಲ್ಪನೆಯೊ
ನಾದವೊ ವರ್ಣವೊ ಸ್ಪರ್ಶದ ಸೆಳವೊ
ತಿಳಿಯಲಿ ಹೇಗೆ ತಿಳಿಯದೆ ಪಡೆಯಲಿ ಹೇಗೆ
ಪಡೆಯಲೆಂದೇ ಬಂದು ಪಡೆದುಕೊಂಡಂದು
ನನ್ನ ಕನಸನೆ ನಾನು ಒಡೆದುಕೊಂಡೆನೆ
ಹೇಳು ಮನವೆ ಇದು ಇನ್ನೊಂದು ದಿನವೆ?

ಕವಿ:

ದೈವವಿರಲಿಲ್ಲ ಯಾವ ದೇವರೂ ಬರಲಿಲ್ಲ
ಬಂದವನೊಬ್ಬ ಮಾನವ ಶಿಲೆಯಿಂದ ಶಿಲ್ಪವ
ತೆಗೆಯ ಬಯಸಿದನು, ಬಿಡಿಸಬಬಯಸಿದನು
ಶಾಪದ ಸರೆಯಿಂದ ಆ ಅಂಥ ಛಂದ
ಕಣ್ಣುಗಳೆಲ್ಲಿ ತುಟಿಗಳೆಲ್ಲಿ ತೋಳುಗಳೆಲ್ಲಿ
ಎಲ್ಲಿ ಮರ್ತ್ಯಕ್ಕೆ ಸ್ವರ್ಗವ ತಂದ ನಿಸರ್ಗ
ಎವೆಯದುರಿತೆ ಮುಟ್ಟಿದ ಕೈ ಕಂಪಿಸಿತೆ
ಉಳಿಯ ಹೊಡೆತವೊ ಅದು ನಾಡಿ ಮಿಡಿತವೊ
ಯಾರೂ ಇರದಲ್ಲಿ ಉತ್ತರಿಸುವವರಾರಿಲ್ಲ
ಅವರವರ ಭಾವಕ್ಕೆ ತಕ್ಕಂತೆ ರೆಕ್ಕೆ
ತೆರೆಯುವ ಮನಸ್ಸು ಹೂಡುವ ಪ್ರತ್ಯೇಕ ತಪಸ್ಸು
ಅದೋ ಅದೋ! ನೋಡಿ ಸಾವಿರ ಕಣ್ಣು ಒಮ್ಮೆಲೆ ಮೂಡಿ
ಆಹ! ಪ್ರತಿಯೊಂದು ಕಲ್ಪಕೂ ಪ್ರತ್ಯೇಕ ಶಿಲ್ಪ
ಪ್ರತಿಯೊಂದು ಅಬ್ದಕೂ ಅದರದೇ ಶಬ್ದ
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...