Home / ಕವನ / ಕವಿತೆ / ಅಹಲ್ಯೆ

ಅಹಲ್ಯೆ

ಇಂದ್ರ:

ಹಚ್ಚಿ ಹೊಗೆಬತ್ತಿ ನೋಡುವೆನು ಕಣ್ಣೆತ್ತಿ
ಬಾರಿಬಾರಿಗು ಜೀವದ ಪವಾಡ ಕೋರಿ
ನಿನ್ನೆಯಷ್ಟೇ ಬದುಕು ಮೈತುಂಬಿ ಉದ್ದಕು
ನಿಂತಿದ್ದ ಒಡಲು ಇಂದು ಕೇವಲ ಕಲ್ಲು
ಎಂದರೆ ನಂಬುವೆನೆ ನೊಡುವ ಕಣ್ಣುಗಳನೆ
ಒಬ್ಬಾತನ ಸ್ನೇಹದಲಿ ಇನ್ನೊಬ್ಬನ ಮೋಹ
ಹಿಡಿಯಬಯಸಿದವಳೆ ಎರಡನೊಮ್ಮೆಲೆ
ಎಳಸಿದವಳೆ ಕೇಳು ನನ್ನ ಕರೆ! ಏಳು
ಎದ್ದೇಳು ನಿದ್ದೆಯಿಂದ ಹುಟ್ಟು ಶಿಲೆಯೊಳಗಿಂದ
ನಡೆಯಲಿ ಪಾದ ಕೇಳಿಸಲಿ ಕಂಠದ ನಾದ
ಮರ್ತ್ಯದ ಸಕಲ ಸಾರ ಪಡೆಯೆ ಆಕಾರ
ಎಲೆ ಚೆಲುವೆ ನೀ ಯಾರ ಕಾಯುತಿರುವೆ
ಯಾವ ಯುಗದ ದೈವ ಕೊಡುವುದು ಜೀವ?

ಆಹಲ್ಯೆ:

ಪಾಷಾಣವೆಂಬ ಸ್ಥಿತಿ ಎಷ್ಟೊಂದು ಕಠಿಣ-
ವೆಂಬುದನು ಯಾರಿಗೆ ತಿಳಿಸುವೆನು ಹೇಗೆ!
ಚಲಿಸಲಾರೆನು ಕೈಯ ಸ್ಪಂದಿಸದು ಹೃದಯ
ತಡವಲಾರದ ಬೆರಳು ಸರಿಸಲಾರದ ಕುರುಳು
ಯುಗವೆ ಕಳೆದಿದೆ ಮೈಯ ಹೊರಳಿಸದೆ
ಮಾತು ಮರೆತಿರುವೆ ಇದ್ದರೂ ಇರದಿರುವೆ
ತೆರೆದು ಮಳೆಬಿಸಿಲಿಗೆ ಬಿದ್ದರೂ ಹೀಗೆ
ಮುದುಡುವಂತಿಲ್ಲ ಬಾಡುವಂತಿಲ್ಲ
ಸಕಲ ದಾಹಗಳನೊಮ್ಮೆಲೆ ತಣಿಸಿದಂತಿದೆ ದೇಹ
ಅಹ್! ಇನ್ನೇಕೆ ಮಾತು ದಾಹದ ಕುರಿತು?
ನೆನಪುಗಳಿರದ ಯಾವ ಭಯವೂ ಇರದ
ಎಷ್ಟೊಂದು ಮಾಗಿ ಮೈಮೇಲೆ ಸಾಗಿ
ಇನ್ನೊಂದು ಯುಗದಲ್ಲಿ ಎಷ್ಟೊಂದು ಮನದಲ್ಲಿ
ಏಳಲೇಕೆ ಇಂಥ ಗತಿ ಮತ್ತೆ ಬೇಕೆ?

ಗೌತಮ:

ಇಷ್ಟು ಬೇಗನೆ ಮೂಡಿತೆ ಮುಂಜಾನೆ-
ಯೆಂದು ಬರಿಗಾಲಿನಲಿ ನಿದ್ದೆಗಣ್ಣಿನಲಿ
ನದಿಯ ತೀರಕೆ ಬಂದು ಎಂದಿನಂತೆಯ ಮಿಂದು
ನೋಡಿದರೆ ರಾತ್ರಿ. ಇನ್ನೂ ಮೂರನೆ ಪಹರೆ
ಕೋಳಿ ಕೂಗಿದ ಸದ್ದು ಕಿವಿಯಾರೆ ಕೇಳಿದ್ದು
ಸುಳ್ಳಿರಬಹುದೆ? ಅಹ ಮೋಸ ಹೋದೆ-
ನೆಂದು ಮರಳಿದರೆ ಮನೆಗೆ ಏನದು ಒಳಗೆ
ಯಾಕೆ! ನನ್ನ ನಾನೆ ಕಂಡು ಬೆಚ್ಚೆದೆನೆ
ನಿಂತಿದ್ದ ನಿಚ್ಛಾರೂಪಿ ತದ್ವತ್‌ಸ್ವರೂಪಿ
ಕತ್ತಲಿನ ಮರೆಯಲ್ಲಿ ನನ್ನನಣಕಿಸುವ ರೀತಿಯಲಿ
ಸ್ವಂತ ಬಯಕೆಗಳಭಿವ್ಯಕ್ತಿಯಂತೊಬ್ಬ ವ್ಯಕ್ತಿ!
ಸಿಡಿದೆದ್ದ ಕೋಪವೆ ಕೈಬಿಟ್ಟ ಶಾಪವೆ
ಹಿಂದೆ ಬರುವುದೆಂತು ತುಟಿಮೀರಿದ ಮಾತು
ಕಲ್ಲಾದವನು ನೀನಲ್ಲ ನಾನು!

ಇಂದ್ರ:

ಬೆಳಕು ಮೂಡಿರಲಿಲ್ಲ ಕೋಳಿ ಕೂಗಿರಲಿಲ್ಲ-
ಕೂಗಿದುದು ಕಾಮ ಎಲೆ ಗೌತಮ
ಕೇಳು! ಕಾನನ ತುಂಬ ತುಂಬಿ ಕಡುಮೌನ
ನೆಲವೆಲ್ಲ ಹರಡಿದ್ದ ದಟ್ಟ ಎಲೆಗಳ ಮೆಲ್ಲ
ಸದ್ದಾಗದ ತರದಿ ಮೆಟ್ಟಿ ನಡೆದೆನು ಹಾದಿ
ಮಲಗಿದ್ದ ಮನದನ್ನೆ ಕಂಡ ಕನಸನ್ನೆ
ಹೊಕ್ಕವನು ನಾನು ತನುವಿರದವನು
ನನಗಿಲ್ಲ ನೆರಳು ನಾನು ಕೇವಲ ಮರುಳು
ಉದಯದ ಆಸೆಯಲಿ ಸಂಜೆಯ ನಿರಾಸೆಯಲಿ
ಕರೆದವಳು ಯಾರೀಕೆ ಅಂತರಂಗದ ಸನಿಯಕೆ
ನದಿಯೋ ಭೂಮಿಯೊ ಕೇವಲ ಕಲ್ಪನೆಯೊ
ನಾದವೊ ವರ್ಣವೊ ಸ್ಪರ್ಶದ ಸೆಳವೊ
ತಿಳಿಯಲಿ ಹೇಗೆ ತಿಳಿಯದೆ ಪಡೆಯಲಿ ಹೇಗೆ
ಪಡೆಯಲೆಂದೇ ಬಂದು ಪಡೆದುಕೊಂಡಂದು
ನನ್ನ ಕನಸನೆ ನಾನು ಒಡೆದುಕೊಂಡೆನೆ
ಹೇಳು ಮನವೆ ಇದು ಇನ್ನೊಂದು ದಿನವೆ?

ಕವಿ:

ದೈವವಿರಲಿಲ್ಲ ಯಾವ ದೇವರೂ ಬರಲಿಲ್ಲ
ಬಂದವನೊಬ್ಬ ಮಾನವ ಶಿಲೆಯಿಂದ ಶಿಲ್ಪವ
ತೆಗೆಯ ಬಯಸಿದನು, ಬಿಡಿಸಬಬಯಸಿದನು
ಶಾಪದ ಸರೆಯಿಂದ ಆ ಅಂಥ ಛಂದ
ಕಣ್ಣುಗಳೆಲ್ಲಿ ತುಟಿಗಳೆಲ್ಲಿ ತೋಳುಗಳೆಲ್ಲಿ
ಎಲ್ಲಿ ಮರ್ತ್ಯಕ್ಕೆ ಸ್ವರ್ಗವ ತಂದ ನಿಸರ್ಗ
ಎವೆಯದುರಿತೆ ಮುಟ್ಟಿದ ಕೈ ಕಂಪಿಸಿತೆ
ಉಳಿಯ ಹೊಡೆತವೊ ಅದು ನಾಡಿ ಮಿಡಿತವೊ
ಯಾರೂ ಇರದಲ್ಲಿ ಉತ್ತರಿಸುವವರಾರಿಲ್ಲ
ಅವರವರ ಭಾವಕ್ಕೆ ತಕ್ಕಂತೆ ರೆಕ್ಕೆ
ತೆರೆಯುವ ಮನಸ್ಸು ಹೂಡುವ ಪ್ರತ್ಯೇಕ ತಪಸ್ಸು
ಅದೋ ಅದೋ! ನೋಡಿ ಸಾವಿರ ಕಣ್ಣು ಒಮ್ಮೆಲೆ ಮೂಡಿ
ಆಹ! ಪ್ರತಿಯೊಂದು ಕಲ್ಪಕೂ ಪ್ರತ್ಯೇಕ ಶಿಲ್ಪ
ಪ್ರತಿಯೊಂದು ಅಬ್ದಕೂ ಅದರದೇ ಶಬ್ದ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...