Home / ಕವನ / ಕವಿತೆ / ಸೀಮಂತಿನಿ

ಸೀಮಂತಿನಿ

ಯಾರಿವಳು?
ಇದ್ದಕ್ಕಿದ್ದಂತೆ ಪಕ್ಕದಲೆ ಬದಲಾದವಳು?
ಗಂಡನೆಂಬವನನ್ನ ಕಂಡ ಕಂಡಂತೆಯೇ
ಕಂದ ಎಂಬಂತೆ ಮಮತೆಯಲಿ ಮಾತಾಡುವಳು!
ಅಪ್ಪ ಬಂದವನನ್ನು ತಪ್ಪು ಮಾಡಿದ ಎಳೆಯನಂತೆ
ಉಡಿಯಲ್ಲಿ ಹಾಕಿ ಶಮಿಸಿದವಳು
ಗುಟುರು ಮದವನು ಮೆಟ್ಟಿ ಎದ್ದ ಹೆಡೆಯನು ತಟ್ಟಿ
ಹೊಲೆಗಸದ ತೊಟ್ಟಿಯನು ಹೀಗೆ ತೊಳೆದವಳು?

ಇವಳೆ
ಬೆನ್ನ ಬಳಿ ಬಂದು ಕೊರಳಿಗೆ ತೂಗುತಿದ್ದವಳು?
ಕೈಯ ಪುಸ್ತಕವನ್ನು ಕಿತ್ತು ಗೂಡೊಳಗೆಸೆದು
ಸಾಕು ಬಿಡಿ ಸನ್ಯಾಸ ಎಂದು ತೋಳೆಳೆದವಳು!
ಕೆನ್ನೆಯಲಿ ಬೆರಳಿಟ್ಬು
ಕೊರಳ ಸರ ತುಟಿಗಿಟ್ಬು
ಏನೊ ಕಕಮಕ ಹಿಡಿಸಿ ಗೆದ್ದು ನಕ್ಕವಳು?
ಈಗ ಅದೆ ಹುಡುಗಿ
ಬೇಸಿಗೆಯ ಉರಿಗಣ್ಣ
ಬೆಳುದಿಂಗಳಲಿ ತೊಳೆದು
ಗರ್ಭಗುಡಿ ಹಣತೆಯನು ಹಚ್ಚಿರುವಳು ;
ಮೊನ್ನೆ ಸೀಮಂತದಲಿ ಹಸೆಯೇರಿದಾಗಿಂದ
ಜಗದಂಬೆ ಭಾವಕ್ಕೆ ಸಂದಿರುವಳು!

ಒಲೆ ಮೇಲೆ ಅನ್ನ ಸೀಯುತ್ತೆಲಿದೆ ಮೊನ್ನೆ;
ಎದುರಿಗೇ ಕುಳಿತು
ಹಾಲಪಾತ್ರೆಗೆ ಬಿದ್ದ ಇರುವೆಗಳ ಮೇಲೆತ್ತಿ
ನೆಲಕಿಳಿಸಿ ಹರಿಯಬಿಡುತಿದ್ದಾಳೆ, ಒಂದೊಂದೆ !
ಪೊರಕೆ ತುದಿಯಲಿ ಹಿಂದೆ
ಜಿರಲೆಗಳ ಬಡಿದವಳು ಇವಳೆ ?

“ಪಾಪ” ಎಂದರೆ – ‘ಅಹ! ಶುದ್ದ ಕನ್ನಡಿಗ’
ಎ೦ದು ಛೇಡಿಸಿದವಳು!
ಈಗ ಹೊರಳಿದೆ ಕರುಳು,
ಮೊದಲ ಬಾರಿಗೆ ಬಸಿರ ಸವರಿದೆ ಯಶೋದೆಯ
ಬೆಣ್ಣೆ ಬೆರಳು.

ಎಲ್ಲಿ ತಲೆಮರೆಸಿಕೊಂಡುವೊ ಏನೊ ಈಗಿವಳ
ಸಿನಿಮ ಹೋಟೆಲುಗಳಿಗೆ ಅಲೆವ ಚೆಪಲ,
ಆಗೀಗ (ನನ್ನನೂ ಜೊತೆಗೆಳೆದುಕೊಂಡು!)
ದೇವಸ್ಥಾನ ಯಾತ್ರೆಯಷ್ಟೇ ಈಗ ಎಲ್ಲ!
ಮುಡಿತುಂಬ ಹಣೆತುಂಬ ಕೈತುಂಬ ತನ್ನೆಲ್ಲ
ಮಾಂಗಲ್ಯ ಸೌಭಾಗ್ಯ ಮೆರೆಸಿ,
ಶಾಂತಮುಖದೊಳಗೊಂದು ಮರುಳುನಗೆ ನಿಲಿಸಿ,
ಇವಳೀಗ ಕಾರ್ತೀಕದಾಗಸದ ಹಾಡು,
ಕಣ್ಣೊ ಹುಣ್ಣಿಮೆಯಿರುಳ ಕಡಲ ಬೀಡು!

ಜೊತೆಗೆ ನಡೆವಾಗ
ನನ್ನ ಹೆಜ್ಜೆಗು ಹೆಜ್ಜೆ ಮುಂದೆಯಿಟ್ಬು,
ಈಗ? ಎಂಬಂತೆ ಹುಬ್ಬೆತ್ತರಿಸಿ ನಕ್ಕು ಸ್ಪರ್ಧಿಸಿದ್ದವಳು
ಈಗೆಲ್ಲ ಅಬ್ಬರ ಬಿಟ್ಟು
ಕಾಲೆಳೆಯುವಳು ಏಕೊ ತೀರ.
ಕನಸುಗಣ್ಣಿಗೆ ದಾರಿಯಲ್ಲು ಏನೋ ಧ್ಯಾನ,
ಮೈ ಮಾತ್ರ ಇಲ್ಲಿ ಮನಸೆಲ್ಲೊ ಹೊರಟಿದೆ ಯಾನ,
ಅಡಿಗಡಿಗು ಒ೦ದೊ೦ದು ಗುಡಿಕಟ್ಚಿ ಬಾಗಿಲಲಿ
ಹೊರಳಿ ಬೇಡಿದೆ ಮಗುವಿಗಭಯದಾನ.
ಎಲ್ಲ ಬಾಳಲಿ ಎಂಬ ಭಾವ
ಚೆಲ್ಲುತಿದೆ ಕಣ್ಣು, ಅಲುಗಿದೆ ಹೊಟ್ಟೆಯೊಳಗಿರುವ ಪುಟ್ಟ ಜೀವ;
ಗಟ್ಚಿ ಸ್ವಾರ್ಥಕೆ ಈಗ ಮಳೆ ಬಿದ್ದು ಮೈಯೊಡೆದು
ಉಸಿರಾಡುತಿದೆ ಮಣ್ಣ ತೇವ!
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...