Home / ಕವನ / ಕವಿತೆ / ಸೀಮಂತಿನಿ

ಸೀಮಂತಿನಿ

ಯಾರಿವಳು?
ಇದ್ದಕ್ಕಿದ್ದಂತೆ ಪಕ್ಕದಲೆ ಬದಲಾದವಳು?
ಗಂಡನೆಂಬವನನ್ನ ಕಂಡ ಕಂಡಂತೆಯೇ
ಕಂದ ಎಂಬಂತೆ ಮಮತೆಯಲಿ ಮಾತಾಡುವಳು!
ಅಪ್ಪ ಬಂದವನನ್ನು ತಪ್ಪು ಮಾಡಿದ ಎಳೆಯನಂತೆ
ಉಡಿಯಲ್ಲಿ ಹಾಕಿ ಶಮಿಸಿದವಳು
ಗುಟುರು ಮದವನು ಮೆಟ್ಟಿ ಎದ್ದ ಹೆಡೆಯನು ತಟ್ಟಿ
ಹೊಲೆಗಸದ ತೊಟ್ಟಿಯನು ಹೀಗೆ ತೊಳೆದವಳು?

ಇವಳೆ
ಬೆನ್ನ ಬಳಿ ಬಂದು ಕೊರಳಿಗೆ ತೂಗುತಿದ್ದವಳು?
ಕೈಯ ಪುಸ್ತಕವನ್ನು ಕಿತ್ತು ಗೂಡೊಳಗೆಸೆದು
ಸಾಕು ಬಿಡಿ ಸನ್ಯಾಸ ಎಂದು ತೋಳೆಳೆದವಳು!
ಕೆನ್ನೆಯಲಿ ಬೆರಳಿಟ್ಬು
ಕೊರಳ ಸರ ತುಟಿಗಿಟ್ಬು
ಏನೊ ಕಕಮಕ ಹಿಡಿಸಿ ಗೆದ್ದು ನಕ್ಕವಳು?
ಈಗ ಅದೆ ಹುಡುಗಿ
ಬೇಸಿಗೆಯ ಉರಿಗಣ್ಣ
ಬೆಳುದಿಂಗಳಲಿ ತೊಳೆದು
ಗರ್ಭಗುಡಿ ಹಣತೆಯನು ಹಚ್ಚಿರುವಳು ;
ಮೊನ್ನೆ ಸೀಮಂತದಲಿ ಹಸೆಯೇರಿದಾಗಿಂದ
ಜಗದಂಬೆ ಭಾವಕ್ಕೆ ಸಂದಿರುವಳು!

ಒಲೆ ಮೇಲೆ ಅನ್ನ ಸೀಯುತ್ತೆಲಿದೆ ಮೊನ್ನೆ;
ಎದುರಿಗೇ ಕುಳಿತು
ಹಾಲಪಾತ್ರೆಗೆ ಬಿದ್ದ ಇರುವೆಗಳ ಮೇಲೆತ್ತಿ
ನೆಲಕಿಳಿಸಿ ಹರಿಯಬಿಡುತಿದ್ದಾಳೆ, ಒಂದೊಂದೆ !
ಪೊರಕೆ ತುದಿಯಲಿ ಹಿಂದೆ
ಜಿರಲೆಗಳ ಬಡಿದವಳು ಇವಳೆ ?

“ಪಾಪ” ಎಂದರೆ – ‘ಅಹ! ಶುದ್ದ ಕನ್ನಡಿಗ’
ಎ೦ದು ಛೇಡಿಸಿದವಳು!
ಈಗ ಹೊರಳಿದೆ ಕರುಳು,
ಮೊದಲ ಬಾರಿಗೆ ಬಸಿರ ಸವರಿದೆ ಯಶೋದೆಯ
ಬೆಣ್ಣೆ ಬೆರಳು.

ಎಲ್ಲಿ ತಲೆಮರೆಸಿಕೊಂಡುವೊ ಏನೊ ಈಗಿವಳ
ಸಿನಿಮ ಹೋಟೆಲುಗಳಿಗೆ ಅಲೆವ ಚೆಪಲ,
ಆಗೀಗ (ನನ್ನನೂ ಜೊತೆಗೆಳೆದುಕೊಂಡು!)
ದೇವಸ್ಥಾನ ಯಾತ್ರೆಯಷ್ಟೇ ಈಗ ಎಲ್ಲ!
ಮುಡಿತುಂಬ ಹಣೆತುಂಬ ಕೈತುಂಬ ತನ್ನೆಲ್ಲ
ಮಾಂಗಲ್ಯ ಸೌಭಾಗ್ಯ ಮೆರೆಸಿ,
ಶಾಂತಮುಖದೊಳಗೊಂದು ಮರುಳುನಗೆ ನಿಲಿಸಿ,
ಇವಳೀಗ ಕಾರ್ತೀಕದಾಗಸದ ಹಾಡು,
ಕಣ್ಣೊ ಹುಣ್ಣಿಮೆಯಿರುಳ ಕಡಲ ಬೀಡು!

ಜೊತೆಗೆ ನಡೆವಾಗ
ನನ್ನ ಹೆಜ್ಜೆಗು ಹೆಜ್ಜೆ ಮುಂದೆಯಿಟ್ಬು,
ಈಗ? ಎಂಬಂತೆ ಹುಬ್ಬೆತ್ತರಿಸಿ ನಕ್ಕು ಸ್ಪರ್ಧಿಸಿದ್ದವಳು
ಈಗೆಲ್ಲ ಅಬ್ಬರ ಬಿಟ್ಟು
ಕಾಲೆಳೆಯುವಳು ಏಕೊ ತೀರ.
ಕನಸುಗಣ್ಣಿಗೆ ದಾರಿಯಲ್ಲು ಏನೋ ಧ್ಯಾನ,
ಮೈ ಮಾತ್ರ ಇಲ್ಲಿ ಮನಸೆಲ್ಲೊ ಹೊರಟಿದೆ ಯಾನ,
ಅಡಿಗಡಿಗು ಒ೦ದೊ೦ದು ಗುಡಿಕಟ್ಚಿ ಬಾಗಿಲಲಿ
ಹೊರಳಿ ಬೇಡಿದೆ ಮಗುವಿಗಭಯದಾನ.
ಎಲ್ಲ ಬಾಳಲಿ ಎಂಬ ಭಾವ
ಚೆಲ್ಲುತಿದೆ ಕಣ್ಣು, ಅಲುಗಿದೆ ಹೊಟ್ಟೆಯೊಳಗಿರುವ ಪುಟ್ಟ ಜೀವ;
ಗಟ್ಚಿ ಸ್ವಾರ್ಥಕೆ ಈಗ ಮಳೆ ಬಿದ್ದು ಮೈಯೊಡೆದು
ಉಸಿರಾಡುತಿದೆ ಮಣ್ಣ ತೇವ!
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...