Home / ಕವನ / ಕವಿತೆ / ವೃತ್ತ

ವೃತ್ತ

ನಿಂತ ನೆಲವೆ ದ್ವೀಪವಾಗಿ
ಕೂಪದಾಳದಲ್ಲಿ ತೂಗಿ
ಕಂದಕವನು ಕಾವಲಾಗಿ
ತೋಡಿದಂತೆ ನನ್ನ ಸುತ್ತ
ಒಂದು ಕಲ್ಲ ವೃತ್ತ.
ಹೃದಯ ಮಿದುಳು ಕಣ್ಣು ಕಿವಿ
ಉಂಡ ಸವಿ, ಮನದ ಗವಿಯ
ತಳದಲೆಲ್ಲೊ ಪಿಸುಗುಟ್ಟುವ
ಪಿತಾಮಹರ ಚಿತ್ತ-
ಕೊರೆದುದಂತೆ ಈ ವಲಯ
ಇದೇ ನನ್ನ ಎಲ್ಲ ಕಲೆಯ
ಗರಡಿಮನೆ, ಗಣೆಯ ಕೊನೆ,
ಬಳಸಿ ಕವಿದ ಹುತ್ತ
ಒಳಗೆ ನೆಲದ ಕೆಳಗೆ ತಳವೆ
ಇರದ ಇರುಳ ಕೊಳವಿಯೊಳಗೆ
ಹತ್ತಿಳಿಯುವೆ ಸದಾ ಹಳಸು-
ಗಾಳಿಯ ಹೀರುತ್ತ.

ಒಂದಲ್ಲ ಹತ್ತಲ್ಲ
ಸುತ್ತ ಕಣ್ಣು ಹರಿವಲ್ಲೆಲ್ಲ
ಹುತ್ತದಂತೆ ಎದ್ದುನಿಂತ
ಇಂಥ ಲಕ್ಷ ವೃತ್ತ.
ಕೆಲಕೆಲವಕೆ ಕಿಂಡಿಯುಂಟು
ಕೆಲಕೆಲವಕೆ ಕಿಟಕಿಯುಂಟು
ದೊಡ್ಡ ದೊಡ್ಡ
ಬಾಗಿಲುಂಟು
ಲಕ್ಷದಲ್ಲಿ ನಾಲ್ಕಕೆ.
ಉಳಿದವುಗಳ ತಳದಲೆಲ್ಲೊ
ಸಣ್ಡದೊಂದು ಸಂದಿದಾರಿ
ಆಮದು ರಫ್ತಿಗೆ ಸಾಲದ
ಗಾಳಿ ಬೆಳಕ ವೈರಿ.

ಕಲ್ಲಗೋಡೆ ಹೊರಗೆ ದಿನಾ
ಬಿಲ್ಲು ಹಿಡಿದ ಎಷ್ಟೊ ಜನ
ಗವಿಯ ತಳದ ಸಂದಿಯಿಂದ
ತೆವಳಿ ಹೊರಗೆ ಬರುವರು.
ಬಾಣ ತೂಗಿ ಬೆನ್ನಿನಲ್ಲಿ
ಏನೊ ಉರಿದು ಕಣ್ಣಿನಲ್ಲಿ
ಬಿಸಿಲು ಕೆರಳುತಿದ್ದೆಂತೆಯೆ
ಸಂತೆ ಸೇರಿ ಕುಣಿವರು.
ನಾಯಿಯ ನಾಲಗೆಯಾದರು
ಕಿವಿಯಿಲ್ಲದ ನಾಗರು;
ಕೆನ್ನೆ ಕೆನ್ನೆ ತಿಕ್ಕಿ ಉಬ್ಬಿ
ಬೆನ್ನು ಬೆನ್ನು ಕೊಟ್ಟು ದಬ್ಬಿ
ಬೇತಾಳಕೆ ಕಾಮವರ್ಧಿನೀ ರಾಗವ ಹಬ್ಬಿ
ಸೊಕ್ಕಿ ಕೆರಳುಗೊರಳಿನಲ್ಲಿ
ಭೂತಕುಣಿತ ಕುಣಿವರು;
ಬಿಸಿಲಾರಿತೊ ಎಲ್ಲ ಓಡಿ ಗವಿಯ ತಳಕೆ ಸರಿವರು.

ಇವರ ನಡುವೆ ಬೆರೆಯದೆ
ಕಂಡವರನು ಕರೆಯದೆ
ಎಲ್ಲೊ ನಾಲ್ಕು ಜನರು ಅಲ್ಲೆ ದೂರದಲ್ಲಿ ನಿಲುವರು.
ಬಾವಿಗಣ್ಣು ಈಟಿಮೂಗು
ಬಡಕಲು ಮೈಯವರು.
ಗುಂಡಿಗೆನ್ನೆ ಬಟ್ಟತಲೆ
ಹೆಚ್ಚು ಹೊದೆಯದವರು.
ಶಾಂತರಾಗಿ ದೂರ ನಿಂತು
ಚಿಂತೆ ತುಡಿವ ಕಣ್ಣಿನಿಂದ
ಸಂತೆಯತ್ತ ನೋಡಿ ಖಿನ್ನರಾಗಿ ಹಿಂದೆ ಸರಿವರು.

ಸದಾ ಹೊರಗೆ ನಿಲುವ ಇವರು
ಅಪ್ಪಿತಪ್ಪಿ ಎಲ್ಲೊ ಒಮ್ಮೆ
ವೃತ್ತದಲ್ಲಿ ಸರಿವರು,
ಕಿಟಕಿ ಬಾಗಿಲನ್ನು ಮಾತ್ರ ಸದಾ ತೆರೆದೆ ಇರುವರು.
ಯಾರಿವರು, ಯಾರಿವರು?
ಎಷ್ಟು ಅಳೆದು ಸುರಿದರೂ
ಇಷ್ಟು ವರುಷ ಕಂಡರೂ
ತಿಳಿಯದೆ ಹೋದವರು?

ಬಿಸಿಲಿನಲ್ಲಿ ನೆರೆದ ಸಂತೆ
ಸಂಜೆಯಿಳಿದು ಕರಗುತಿದೆ,
ಸೊಕ್ಕಿ ಕುಣಿದ ಬೇಡರ ಪಡೆ
ಮತ್ತೆ ಗವಿಗೆ ತೆರಳುತಿದೆ,
ಜೊತೆಗಿದ್ದರು ಅವರು ಮಬ್ಬು ರೂಪವಷ್ಟೆ ಕಾಣುತಿದೆ.
ಕೇಳುತಿದೆಯ ಮಾತು? ಇಲ್ಲ.
ತುಂಬುತ್ತಿದೆ ಕಿವಿಯ ನನ್ನ ಕೂಗೆ ಗಿರಣಿ ಸಿಳ್ಳಿನಂತೆ.
ಬರೆಯುತ್ತಿರುವೆ ಸ್ವಂತ ಭಾಷ್ಯ
ಸುತ್ತಲಿರುವ ಜನರ ನಡೆಗೆ,
ಕಿರಿಚುತ್ತಿರುವೆ ‘ಉಳಿದುದೆಲ್ಲ ಸುಳ್ಳು
ಇಷ್ಟು ಮಾತ್ರ ಸತ್ಯ:
ನನ್ನ ಒಲೆಗೆ ಇಟ್ಟ ಸೌದೆ
ಗಡಿಗೆ ಮತ್ತು ಆದ ನಡಿಗೆ’

ಕಣ್ಣ ಮುಚ್ಚಿ ಕಿರಿಚುವಾಗ ಸರಕ್ಕನೆ ಏನೊ ನೆನಪು;
ದೂರ ನಿಲುವ ಸ್ವಲ್ಪ ಜನರ ಕಣ್ಣಲ್ಲಿದ್ದ ತಂಪು ಬೆಳಕು,
ಕುಣಿಯುತಿರುವ ಮಂದೆ ಕಡೆಗೆ ನೋವಿನಿಂದ, ಕರುಣೆಯಿಂದ
ನೋಡಿದಾಗ ಮೂಡುತಿದ್ದ ಬಿಚ್ಚಲಾಗದಂಥ ಒಡಪು
ಕಿರಿಚುಗೊರಳಿಗಡ್ಡವಾಗಿ
ಕಿವುಡು ಕಿವಿಯ ಶೂಲವಾಗಿ
ಇರಿಯುತಿರಲು
ವೃತ್ತದಲ್ಲಿ
ಎಲ್ಲೂ ಗಾಳಿ ಬೆಳಕು!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...