Home / ಕವನ / ಕವಿತೆ / ವೃತ್ತ

ವೃತ್ತ

ನಿಂತ ನೆಲವೆ ದ್ವೀಪವಾಗಿ
ಕೂಪದಾಳದಲ್ಲಿ ತೂಗಿ
ಕಂದಕವನು ಕಾವಲಾಗಿ
ತೋಡಿದಂತೆ ನನ್ನ ಸುತ್ತ
ಒಂದು ಕಲ್ಲ ವೃತ್ತ.
ಹೃದಯ ಮಿದುಳು ಕಣ್ಣು ಕಿವಿ
ಉಂಡ ಸವಿ, ಮನದ ಗವಿಯ
ತಳದಲೆಲ್ಲೊ ಪಿಸುಗುಟ್ಟುವ
ಪಿತಾಮಹರ ಚಿತ್ತ-
ಕೊರೆದುದಂತೆ ಈ ವಲಯ
ಇದೇ ನನ್ನ ಎಲ್ಲ ಕಲೆಯ
ಗರಡಿಮನೆ, ಗಣೆಯ ಕೊನೆ,
ಬಳಸಿ ಕವಿದ ಹುತ್ತ
ಒಳಗೆ ನೆಲದ ಕೆಳಗೆ ತಳವೆ
ಇರದ ಇರುಳ ಕೊಳವಿಯೊಳಗೆ
ಹತ್ತಿಳಿಯುವೆ ಸದಾ ಹಳಸು-
ಗಾಳಿಯ ಹೀರುತ್ತ.

ಒಂದಲ್ಲ ಹತ್ತಲ್ಲ
ಸುತ್ತ ಕಣ್ಣು ಹರಿವಲ್ಲೆಲ್ಲ
ಹುತ್ತದಂತೆ ಎದ್ದುನಿಂತ
ಇಂಥ ಲಕ್ಷ ವೃತ್ತ.
ಕೆಲಕೆಲವಕೆ ಕಿಂಡಿಯುಂಟು
ಕೆಲಕೆಲವಕೆ ಕಿಟಕಿಯುಂಟು
ದೊಡ್ಡ ದೊಡ್ಡ
ಬಾಗಿಲುಂಟು
ಲಕ್ಷದಲ್ಲಿ ನಾಲ್ಕಕೆ.
ಉಳಿದವುಗಳ ತಳದಲೆಲ್ಲೊ
ಸಣ್ಡದೊಂದು ಸಂದಿದಾರಿ
ಆಮದು ರಫ್ತಿಗೆ ಸಾಲದ
ಗಾಳಿ ಬೆಳಕ ವೈರಿ.

ಕಲ್ಲಗೋಡೆ ಹೊರಗೆ ದಿನಾ
ಬಿಲ್ಲು ಹಿಡಿದ ಎಷ್ಟೊ ಜನ
ಗವಿಯ ತಳದ ಸಂದಿಯಿಂದ
ತೆವಳಿ ಹೊರಗೆ ಬರುವರು.
ಬಾಣ ತೂಗಿ ಬೆನ್ನಿನಲ್ಲಿ
ಏನೊ ಉರಿದು ಕಣ್ಣಿನಲ್ಲಿ
ಬಿಸಿಲು ಕೆರಳುತಿದ್ದೆಂತೆಯೆ
ಸಂತೆ ಸೇರಿ ಕುಣಿವರು.
ನಾಯಿಯ ನಾಲಗೆಯಾದರು
ಕಿವಿಯಿಲ್ಲದ ನಾಗರು;
ಕೆನ್ನೆ ಕೆನ್ನೆ ತಿಕ್ಕಿ ಉಬ್ಬಿ
ಬೆನ್ನು ಬೆನ್ನು ಕೊಟ್ಟು ದಬ್ಬಿ
ಬೇತಾಳಕೆ ಕಾಮವರ್ಧಿನೀ ರಾಗವ ಹಬ್ಬಿ
ಸೊಕ್ಕಿ ಕೆರಳುಗೊರಳಿನಲ್ಲಿ
ಭೂತಕುಣಿತ ಕುಣಿವರು;
ಬಿಸಿಲಾರಿತೊ ಎಲ್ಲ ಓಡಿ ಗವಿಯ ತಳಕೆ ಸರಿವರು.

ಇವರ ನಡುವೆ ಬೆರೆಯದೆ
ಕಂಡವರನು ಕರೆಯದೆ
ಎಲ್ಲೊ ನಾಲ್ಕು ಜನರು ಅಲ್ಲೆ ದೂರದಲ್ಲಿ ನಿಲುವರು.
ಬಾವಿಗಣ್ಣು ಈಟಿಮೂಗು
ಬಡಕಲು ಮೈಯವರು.
ಗುಂಡಿಗೆನ್ನೆ ಬಟ್ಟತಲೆ
ಹೆಚ್ಚು ಹೊದೆಯದವರು.
ಶಾಂತರಾಗಿ ದೂರ ನಿಂತು
ಚಿಂತೆ ತುಡಿವ ಕಣ್ಣಿನಿಂದ
ಸಂತೆಯತ್ತ ನೋಡಿ ಖಿನ್ನರಾಗಿ ಹಿಂದೆ ಸರಿವರು.

ಸದಾ ಹೊರಗೆ ನಿಲುವ ಇವರು
ಅಪ್ಪಿತಪ್ಪಿ ಎಲ್ಲೊ ಒಮ್ಮೆ
ವೃತ್ತದಲ್ಲಿ ಸರಿವರು,
ಕಿಟಕಿ ಬಾಗಿಲನ್ನು ಮಾತ್ರ ಸದಾ ತೆರೆದೆ ಇರುವರು.
ಯಾರಿವರು, ಯಾರಿವರು?
ಎಷ್ಟು ಅಳೆದು ಸುರಿದರೂ
ಇಷ್ಟು ವರುಷ ಕಂಡರೂ
ತಿಳಿಯದೆ ಹೋದವರು?

ಬಿಸಿಲಿನಲ್ಲಿ ನೆರೆದ ಸಂತೆ
ಸಂಜೆಯಿಳಿದು ಕರಗುತಿದೆ,
ಸೊಕ್ಕಿ ಕುಣಿದ ಬೇಡರ ಪಡೆ
ಮತ್ತೆ ಗವಿಗೆ ತೆರಳುತಿದೆ,
ಜೊತೆಗಿದ್ದರು ಅವರು ಮಬ್ಬು ರೂಪವಷ್ಟೆ ಕಾಣುತಿದೆ.
ಕೇಳುತಿದೆಯ ಮಾತು? ಇಲ್ಲ.
ತುಂಬುತ್ತಿದೆ ಕಿವಿಯ ನನ್ನ ಕೂಗೆ ಗಿರಣಿ ಸಿಳ್ಳಿನಂತೆ.
ಬರೆಯುತ್ತಿರುವೆ ಸ್ವಂತ ಭಾಷ್ಯ
ಸುತ್ತಲಿರುವ ಜನರ ನಡೆಗೆ,
ಕಿರಿಚುತ್ತಿರುವೆ ‘ಉಳಿದುದೆಲ್ಲ ಸುಳ್ಳು
ಇಷ್ಟು ಮಾತ್ರ ಸತ್ಯ:
ನನ್ನ ಒಲೆಗೆ ಇಟ್ಟ ಸೌದೆ
ಗಡಿಗೆ ಮತ್ತು ಆದ ನಡಿಗೆ’

ಕಣ್ಣ ಮುಚ್ಚಿ ಕಿರಿಚುವಾಗ ಸರಕ್ಕನೆ ಏನೊ ನೆನಪು;
ದೂರ ನಿಲುವ ಸ್ವಲ್ಪ ಜನರ ಕಣ್ಣಲ್ಲಿದ್ದ ತಂಪು ಬೆಳಕು,
ಕುಣಿಯುತಿರುವ ಮಂದೆ ಕಡೆಗೆ ನೋವಿನಿಂದ, ಕರುಣೆಯಿಂದ
ನೋಡಿದಾಗ ಮೂಡುತಿದ್ದ ಬಿಚ್ಚಲಾಗದಂಥ ಒಡಪು
ಕಿರಿಚುಗೊರಳಿಗಡ್ಡವಾಗಿ
ಕಿವುಡು ಕಿವಿಯ ಶೂಲವಾಗಿ
ಇರಿಯುತಿರಲು
ವೃತ್ತದಲ್ಲಿ
ಎಲ್ಲೂ ಗಾಳಿ ಬೆಳಕು!
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...