Home / ಕಥೆ / ಕಿರು ಕಥೆ / ಜನ ಮೆಚ್ಚಿದ ಶಿಕ್ಷಕ

ಜನ ಮೆಚ್ಚಿದ ಶಿಕ್ಷಕ

ಕಾರ್ಯಾಲಯದಲ್ಲಿ ಶಿಕ್ಷಣಾಧಿಕಾರಿಗಳು ಕಡತ ನೋಡುವಲ್ಲಿ ಮಗ್ನರಾಗಿದ್ದರು. ಹೊರಗೆ ಕೂಗಾಟ ಕೇಳಿಸಿತು. “ಧಿಕ್ಕಾರ…. ಧಿಕ್ಕಾರ…. ಹಲ್ಕಾ ಶಿಕ್ಷಕನಿಗೆ ಧಿಕ್ಕಾರ.” ಧ್ವನಿ ಜೋರಾಗಿತ್ತು. ಸಾಹೇಬರು ಎದ್ದು ಹೊರಗೆ ಬಂದರು. ಆವರಣದ ತುಂಬ ಜನ. ಸಾಹೇಬರನ್ನು ಮತ್ತು ಅವರ ಹಿಂದೆ ಬಂದ ಸಿಬ್ಬಂದಿಯನ್ನು ಕಂಡು ಜನರ ಕೂಗು ಇನ್ನೂ ಮುಗಿಲಿಗೇರಿತ್ತು.

ಬಂದವರೆಲ್ಲ ಗ್ರಾಮಸ್ಥರು, ಅವರಲ್ಲಿ ಕೆಲವರನ್ನು ಗುರುತಿಸಿದ ಸಾಹೇಬರು “ಏನ್ರಿ ಗೌಡರೆ ಇದೆಲ್ಲ?” ಎಂದು ಕೇಳಿದರು. ಹಳ್ಳಿಯ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿದ್ದ ಅವರು ಮತ್ತು ಉಳಿದ ಸದಸ್ಯರು ಮುಂದೆ ಬಂದರು. “ನಮ್ಮೂರಿನ ಸಾಲಿಗೆ ಆ ಬೆಂಕಿಮಠ ಮಾಸ್ತರ ಬ್ಯಾಡ ಸಾಹೇಬರ” ಗೌಡರು ಪ್ರತಿಭಟನೆಯ ಧ್ವನಿಯಲ್ಲಿ ಹೇಳಿದರು. ಪರಿಸ್ಥಿತಿ ಗಂಭೀರವಾಗಿದೆಯೆಂದು ಸೂಕ್ಷ್ಮವಾಗಿ ಗ್ರಹಿಸಿಕೊಂಡ ಸಾಹೇಬರು ಅವರನ್ನು ಒಳಗೆ ಕರೆದುಕೊಂಡು ಹೋದರು.

ಕುಳಿತುಕೊಳ್ಳುತ್ತಿದ್ದಂತೆ ಗೌಡರು “ಸಾಹೇಬರ ಈಗಿಂದೀಗ ಆ ಹಲ್ಕಾ ಮಾಸ್ತರನನ್ನ ಟ್ರಾನ್ಸ್‌ಫರ್‍ ಮಾಡ್ರಿ. ನಮ್ಮ ಸಾಲಿಗೆ ಬ್ಯಾರೆ ಮಾಸ್ತರನ್ನ ಕೊಡ್ರಿ” ಎಂದು ತೀವ್ರವಾಗಿ ಒತ್ತಾಯಿಸಿದರು. ಈಗವರು ಬೇಡವೆನ್ನುತ್ತಿರುವ ಶಿಕ್ಷಕರಿಗೆ ಇದೇ ಗೌಡರು ಕಳೆದ ವರ್ಷ `ಜನ ಮೆಚ್ಚಿದ ಶಿಕ್ಷಕ’ ಪ್ರಶಸ್ತಿ ಕೊಡಿಸಿಕೊಂಡು ಮೆರವಣಿಗೆ ಹೋಗಿದ್ದರ ದೃಶ್ಯ ಕಣ್ಮುಂದೆ ತೇಲಿ ಹೋಯಿತು. ಈಗವರೇ ಮೆರವಣಿಗೆಯಲ್ಲಿ ಬಂದು ಅವನ ಬಗ್ಗೆ ಧಿಕ್ಕಾರ ಹೇಳುತ್ತಿರುವುದು ಸೋಜಿಗವೆನಿಸಿ “ಏನ್ರಿ ಗೌಡ್ರೆ ಹಕೀಕತ್ತು?” ಎಂದು ಪ್ರಶ್ನಿಸಿದರು.

“ಅಂವಾ ಮಾಸ್ತರ ಆಗಾಕ ಅಯೋಗ್ಯದಾನ ಸಹೇಬರ” ಎಂದು ಬೆಂಕಿಮಠನ ಬಗ್ಗೆ ವಿವರ ನೀಡಿದರು ಗೌಡರು. ಶಾಲೆಗೆ ಗೈರು ಆಗುವುದು, ಶಿಕ್ಷಕಿಯೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುವುದು. ಪುಸ್ತಕ ಮಾರಿಕೊಳ್ಳುವುದು, ಶಾಲೆಯಲ್ಲಿ ವಾಸ್ತವ್ಯ ಹೂಡಿ ಇಸ್ಪೀಟ್ ಆಡುವುದು, ಕುಡಿಯುವುದು, ತಿನ್ನುವುದು, ಎಂಟು ದಿನಗಳ ಹಿಂದೆ ಏಳನೆಯ ತರಗತಿಯ ಹುಡುಗಿಯೊಬ್ಬಳ ಮೇಲೆ ಬಲಾತ್ಕರಿಸಲು ಯತ್ನಿಸಿದ್ದರ ಬಗ್ಗೆ ಹೇಳಿ “ಆ ನಾಲಾಯಕ ಮಾಸ್ತರ ನಮ್ಮ ಕೈಯಾಗ ಸಿಗಲಿಲ್ಲ. ಇಷ್ಟು ದಿನಾತು ಅವನ ಪತ್ತಾನೂ ಇಲ್ಲ. ಅಂವಾ ಶಿಕ್ಷಣ ಇಲಾಕೆಯಾಗ ಇರ್ಲಿಕ್ಕೆ ಅಯೋಗ್ಯ ಅದಾನ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಗೌಡರೆ, ಕಳೆದ ವರ್ಷ ಆ ಶಿಕ್ಷಕ ಛಲೋ ಸಜ್ಜನ ಮನುಷ್ಯ ಅದಾನ, ನೀವು ಅವನಿಗೆ ಪ್ರಶಸ್ತಿ ಕೊಡದಿದ್ರ ಇಲಾಖೆ ಎದುರು ಉಪವಾಸ ಕುಂದ್ರಿತೀನಿ ಅಂದ್ರಿ. ರಾಜಕೀಯ ಮಂದಿಯ ಒತ್ತಡ ತಂದ್ರಿ. ಅವನ ವರ್ತನೆ ನಿಮ್ಮ ಗಮನಕ್ಕೆ ಬಂದಿದ್ದಲೇನ್ರಿ?” ಸಾಹೇಬರು ಕೇಳಿದರು.

“ಹುತ್ತಿನ್ಯಾಗಿಂದ ಹೊರಗ ಬಂದಾಗ ಗೊತ್ತಾಗೊದಲ್ರಿ ಯಾವ ಹಾವು ಅಂತ!”

ಗೌಡರ ಮಾತು ಕೇಳುತ್ತಲೇ ಸಂಬಂಧಿಸಿದ ಕಾರಕೂನರನ್ನು ಕರೆಯಿಸಿದ ಸಾಹೇಬರು “ಈಗಿಂದೀಗ ಆ ಬೆಂಕಿಮಠ ಶಿಕ್ಷಕರನ್ನ ಸಸ್ಪೆಂಡ್ ಮಾಡಿದ ಕಾಗದ ಟೈಪ್ ಮಾಡಿಸ್ಗಂಡು ಬರ್‍ರಿ” ಎಂದರು.

“ಸಸ್ಪೆಂಡ್ ಮಾಡಿದ್ರ ಮತ್ತ ಆ ಮಾಸ್ತರಗ ಬಲ ಹೆಚ್ಚಿಗ ಬರ್ತೈತಿ ಸಾಹೇಬರ. ದೊಡ್ಡ ದೊಡ್ಡವರ ಕೈಗಳು ಸಸ್ಪೆಂಡ್ ಆದವರನ್ನು ಉಳಿಸಿಕೊಳ್ಳಾಕ ನೋಡ್ತಾವು. ಆ ಮಾಸ್ತರನ ಡಿಸ್ಮಿಸ್ ಮಾಡಬೇಕು. ಒಂದು ಹುಳಾ ನೂರು ಹುಳಾನ್ನ ಹುಟ್ಟುಸ್ತಾವು!” ಗೌಡರು ಒತ್ತಾಯಿಸಿದರು.

“ಗೌಡರೆ ನನ್ನ ಅಧಿಕಾರದ ಮಿತಿಯಾಗ ನಾನು ಕೆಲಸ ಮಾಡಬೇಕು. ನೀವು ಅದರ ಬಗ್ಗೆ ಕಾಗದ ಕೊಡ್ರಿ. ನಾನು ಮೇಲಿನ ಸಾಹೇಬರಿಗೆ ಕಳಿಸ್ತೀನಿ” ಹೀಗೆ ಹೇಳಿ ಕುಳಿತರು ಸಾಹೇಬರು.

ಹೊರಗೆ ಬೆಂಕಿಮಠ ಮಾಸ್ತರನ ವಿರುದ್ಧದ ಕೂಗು ಕೇಳಿಸುತ್ತಲೇ ಇತ್ತು.

*****

 

 

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...