Home / ಕಥೆ / ಕಿರು ಕಥೆ / ಜನ ಮೆಚ್ಚಿದ ಶಿಕ್ಷಕ

ಜನ ಮೆಚ್ಚಿದ ಶಿಕ್ಷಕ

ಕಾರ್ಯಾಲಯದಲ್ಲಿ ಶಿಕ್ಷಣಾಧಿಕಾರಿಗಳು ಕಡತ ನೋಡುವಲ್ಲಿ ಮಗ್ನರಾಗಿದ್ದರು. ಹೊರಗೆ ಕೂಗಾಟ ಕೇಳಿಸಿತು. “ಧಿಕ್ಕಾರ…. ಧಿಕ್ಕಾರ…. ಹಲ್ಕಾ ಶಿಕ್ಷಕನಿಗೆ ಧಿಕ್ಕಾರ.” ಧ್ವನಿ ಜೋರಾಗಿತ್ತು. ಸಾಹೇಬರು ಎದ್ದು ಹೊರಗೆ ಬಂದರು. ಆವರಣದ ತುಂಬ ಜನ. ಸಾಹೇಬರನ್ನು ಮತ್ತು ಅವರ ಹಿಂದೆ ಬಂದ ಸಿಬ್ಬಂದಿಯನ್ನು ಕಂಡು ಜನರ ಕೂಗು ಇನ್ನೂ ಮುಗಿಲಿಗೇರಿತ್ತು.

ಬಂದವರೆಲ್ಲ ಗ್ರಾಮಸ್ಥರು, ಅವರಲ್ಲಿ ಕೆಲವರನ್ನು ಗುರುತಿಸಿದ ಸಾಹೇಬರು “ಏನ್ರಿ ಗೌಡರೆ ಇದೆಲ್ಲ?” ಎಂದು ಕೇಳಿದರು. ಹಳ್ಳಿಯ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿದ್ದ ಅವರು ಮತ್ತು ಉಳಿದ ಸದಸ್ಯರು ಮುಂದೆ ಬಂದರು. “ನಮ್ಮೂರಿನ ಸಾಲಿಗೆ ಆ ಬೆಂಕಿಮಠ ಮಾಸ್ತರ ಬ್ಯಾಡ ಸಾಹೇಬರ” ಗೌಡರು ಪ್ರತಿಭಟನೆಯ ಧ್ವನಿಯಲ್ಲಿ ಹೇಳಿದರು. ಪರಿಸ್ಥಿತಿ ಗಂಭೀರವಾಗಿದೆಯೆಂದು ಸೂಕ್ಷ್ಮವಾಗಿ ಗ್ರಹಿಸಿಕೊಂಡ ಸಾಹೇಬರು ಅವರನ್ನು ಒಳಗೆ ಕರೆದುಕೊಂಡು ಹೋದರು.

ಕುಳಿತುಕೊಳ್ಳುತ್ತಿದ್ದಂತೆ ಗೌಡರು “ಸಾಹೇಬರ ಈಗಿಂದೀಗ ಆ ಹಲ್ಕಾ ಮಾಸ್ತರನನ್ನ ಟ್ರಾನ್ಸ್‌ಫರ್‍ ಮಾಡ್ರಿ. ನಮ್ಮ ಸಾಲಿಗೆ ಬ್ಯಾರೆ ಮಾಸ್ತರನ್ನ ಕೊಡ್ರಿ” ಎಂದು ತೀವ್ರವಾಗಿ ಒತ್ತಾಯಿಸಿದರು. ಈಗವರು ಬೇಡವೆನ್ನುತ್ತಿರುವ ಶಿಕ್ಷಕರಿಗೆ ಇದೇ ಗೌಡರು ಕಳೆದ ವರ್ಷ `ಜನ ಮೆಚ್ಚಿದ ಶಿಕ್ಷಕ’ ಪ್ರಶಸ್ತಿ ಕೊಡಿಸಿಕೊಂಡು ಮೆರವಣಿಗೆ ಹೋಗಿದ್ದರ ದೃಶ್ಯ ಕಣ್ಮುಂದೆ ತೇಲಿ ಹೋಯಿತು. ಈಗವರೇ ಮೆರವಣಿಗೆಯಲ್ಲಿ ಬಂದು ಅವನ ಬಗ್ಗೆ ಧಿಕ್ಕಾರ ಹೇಳುತ್ತಿರುವುದು ಸೋಜಿಗವೆನಿಸಿ “ಏನ್ರಿ ಗೌಡ್ರೆ ಹಕೀಕತ್ತು?” ಎಂದು ಪ್ರಶ್ನಿಸಿದರು.

“ಅಂವಾ ಮಾಸ್ತರ ಆಗಾಕ ಅಯೋಗ್ಯದಾನ ಸಹೇಬರ” ಎಂದು ಬೆಂಕಿಮಠನ ಬಗ್ಗೆ ವಿವರ ನೀಡಿದರು ಗೌಡರು. ಶಾಲೆಗೆ ಗೈರು ಆಗುವುದು, ಶಿಕ್ಷಕಿಯೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುವುದು. ಪುಸ್ತಕ ಮಾರಿಕೊಳ್ಳುವುದು, ಶಾಲೆಯಲ್ಲಿ ವಾಸ್ತವ್ಯ ಹೂಡಿ ಇಸ್ಪೀಟ್ ಆಡುವುದು, ಕುಡಿಯುವುದು, ತಿನ್ನುವುದು, ಎಂಟು ದಿನಗಳ ಹಿಂದೆ ಏಳನೆಯ ತರಗತಿಯ ಹುಡುಗಿಯೊಬ್ಬಳ ಮೇಲೆ ಬಲಾತ್ಕರಿಸಲು ಯತ್ನಿಸಿದ್ದರ ಬಗ್ಗೆ ಹೇಳಿ “ಆ ನಾಲಾಯಕ ಮಾಸ್ತರ ನಮ್ಮ ಕೈಯಾಗ ಸಿಗಲಿಲ್ಲ. ಇಷ್ಟು ದಿನಾತು ಅವನ ಪತ್ತಾನೂ ಇಲ್ಲ. ಅಂವಾ ಶಿಕ್ಷಣ ಇಲಾಕೆಯಾಗ ಇರ್ಲಿಕ್ಕೆ ಅಯೋಗ್ಯ ಅದಾನ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಗೌಡರೆ, ಕಳೆದ ವರ್ಷ ಆ ಶಿಕ್ಷಕ ಛಲೋ ಸಜ್ಜನ ಮನುಷ್ಯ ಅದಾನ, ನೀವು ಅವನಿಗೆ ಪ್ರಶಸ್ತಿ ಕೊಡದಿದ್ರ ಇಲಾಖೆ ಎದುರು ಉಪವಾಸ ಕುಂದ್ರಿತೀನಿ ಅಂದ್ರಿ. ರಾಜಕೀಯ ಮಂದಿಯ ಒತ್ತಡ ತಂದ್ರಿ. ಅವನ ವರ್ತನೆ ನಿಮ್ಮ ಗಮನಕ್ಕೆ ಬಂದಿದ್ದಲೇನ್ರಿ?” ಸಾಹೇಬರು ಕೇಳಿದರು.

“ಹುತ್ತಿನ್ಯಾಗಿಂದ ಹೊರಗ ಬಂದಾಗ ಗೊತ್ತಾಗೊದಲ್ರಿ ಯಾವ ಹಾವು ಅಂತ!”

ಗೌಡರ ಮಾತು ಕೇಳುತ್ತಲೇ ಸಂಬಂಧಿಸಿದ ಕಾರಕೂನರನ್ನು ಕರೆಯಿಸಿದ ಸಾಹೇಬರು “ಈಗಿಂದೀಗ ಆ ಬೆಂಕಿಮಠ ಶಿಕ್ಷಕರನ್ನ ಸಸ್ಪೆಂಡ್ ಮಾಡಿದ ಕಾಗದ ಟೈಪ್ ಮಾಡಿಸ್ಗಂಡು ಬರ್‍ರಿ” ಎಂದರು.

“ಸಸ್ಪೆಂಡ್ ಮಾಡಿದ್ರ ಮತ್ತ ಆ ಮಾಸ್ತರಗ ಬಲ ಹೆಚ್ಚಿಗ ಬರ್ತೈತಿ ಸಾಹೇಬರ. ದೊಡ್ಡ ದೊಡ್ಡವರ ಕೈಗಳು ಸಸ್ಪೆಂಡ್ ಆದವರನ್ನು ಉಳಿಸಿಕೊಳ್ಳಾಕ ನೋಡ್ತಾವು. ಆ ಮಾಸ್ತರನ ಡಿಸ್ಮಿಸ್ ಮಾಡಬೇಕು. ಒಂದು ಹುಳಾ ನೂರು ಹುಳಾನ್ನ ಹುಟ್ಟುಸ್ತಾವು!” ಗೌಡರು ಒತ್ತಾಯಿಸಿದರು.

“ಗೌಡರೆ ನನ್ನ ಅಧಿಕಾರದ ಮಿತಿಯಾಗ ನಾನು ಕೆಲಸ ಮಾಡಬೇಕು. ನೀವು ಅದರ ಬಗ್ಗೆ ಕಾಗದ ಕೊಡ್ರಿ. ನಾನು ಮೇಲಿನ ಸಾಹೇಬರಿಗೆ ಕಳಿಸ್ತೀನಿ” ಹೀಗೆ ಹೇಳಿ ಕುಳಿತರು ಸಾಹೇಬರು.

ಹೊರಗೆ ಬೆಂಕಿಮಠ ಮಾಸ್ತರನ ವಿರುದ್ಧದ ಕೂಗು ಕೇಳಿಸುತ್ತಲೇ ಇತ್ತು.

*****

 

 

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...