Home / ಕಥೆ / ಕಿರು ಕಥೆ / ಜನ ಮೆಚ್ಚಿದ ಶಿಕ್ಷಕ

ಜನ ಮೆಚ್ಚಿದ ಶಿಕ್ಷಕ

ಕಾರ್ಯಾಲಯದಲ್ಲಿ ಶಿಕ್ಷಣಾಧಿಕಾರಿಗಳು ಕಡತ ನೋಡುವಲ್ಲಿ ಮಗ್ನರಾಗಿದ್ದರು. ಹೊರಗೆ ಕೂಗಾಟ ಕೇಳಿಸಿತು. “ಧಿಕ್ಕಾರ…. ಧಿಕ್ಕಾರ…. ಹಲ್ಕಾ ಶಿಕ್ಷಕನಿಗೆ ಧಿಕ್ಕಾರ.” ಧ್ವನಿ ಜೋರಾಗಿತ್ತು. ಸಾಹೇಬರು ಎದ್ದು ಹೊರಗೆ ಬಂದರು. ಆವರಣದ ತುಂಬ ಜನ. ಸಾಹೇಬರನ್ನು ಮತ್ತು ಅವರ ಹಿಂದೆ ಬಂದ ಸಿಬ್ಬಂದಿಯನ್ನು ಕಂಡು ಜನರ ಕೂಗು ಇನ್ನೂ ಮುಗಿಲಿಗೇರಿತ್ತು.

ಬಂದವರೆಲ್ಲ ಗ್ರಾಮಸ್ಥರು, ಅವರಲ್ಲಿ ಕೆಲವರನ್ನು ಗುರುತಿಸಿದ ಸಾಹೇಬರು “ಏನ್ರಿ ಗೌಡರೆ ಇದೆಲ್ಲ?” ಎಂದು ಕೇಳಿದರು. ಹಳ್ಳಿಯ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿದ್ದ ಅವರು ಮತ್ತು ಉಳಿದ ಸದಸ್ಯರು ಮುಂದೆ ಬಂದರು. “ನಮ್ಮೂರಿನ ಸಾಲಿಗೆ ಆ ಬೆಂಕಿಮಠ ಮಾಸ್ತರ ಬ್ಯಾಡ ಸಾಹೇಬರ” ಗೌಡರು ಪ್ರತಿಭಟನೆಯ ಧ್ವನಿಯಲ್ಲಿ ಹೇಳಿದರು. ಪರಿಸ್ಥಿತಿ ಗಂಭೀರವಾಗಿದೆಯೆಂದು ಸೂಕ್ಷ್ಮವಾಗಿ ಗ್ರಹಿಸಿಕೊಂಡ ಸಾಹೇಬರು ಅವರನ್ನು ಒಳಗೆ ಕರೆದುಕೊಂಡು ಹೋದರು.

ಕುಳಿತುಕೊಳ್ಳುತ್ತಿದ್ದಂತೆ ಗೌಡರು “ಸಾಹೇಬರ ಈಗಿಂದೀಗ ಆ ಹಲ್ಕಾ ಮಾಸ್ತರನನ್ನ ಟ್ರಾನ್ಸ್‌ಫರ್‍ ಮಾಡ್ರಿ. ನಮ್ಮ ಸಾಲಿಗೆ ಬ್ಯಾರೆ ಮಾಸ್ತರನ್ನ ಕೊಡ್ರಿ” ಎಂದು ತೀವ್ರವಾಗಿ ಒತ್ತಾಯಿಸಿದರು. ಈಗವರು ಬೇಡವೆನ್ನುತ್ತಿರುವ ಶಿಕ್ಷಕರಿಗೆ ಇದೇ ಗೌಡರು ಕಳೆದ ವರ್ಷ `ಜನ ಮೆಚ್ಚಿದ ಶಿಕ್ಷಕ’ ಪ್ರಶಸ್ತಿ ಕೊಡಿಸಿಕೊಂಡು ಮೆರವಣಿಗೆ ಹೋಗಿದ್ದರ ದೃಶ್ಯ ಕಣ್ಮುಂದೆ ತೇಲಿ ಹೋಯಿತು. ಈಗವರೇ ಮೆರವಣಿಗೆಯಲ್ಲಿ ಬಂದು ಅವನ ಬಗ್ಗೆ ಧಿಕ್ಕಾರ ಹೇಳುತ್ತಿರುವುದು ಸೋಜಿಗವೆನಿಸಿ “ಏನ್ರಿ ಗೌಡ್ರೆ ಹಕೀಕತ್ತು?” ಎಂದು ಪ್ರಶ್ನಿಸಿದರು.

“ಅಂವಾ ಮಾಸ್ತರ ಆಗಾಕ ಅಯೋಗ್ಯದಾನ ಸಹೇಬರ” ಎಂದು ಬೆಂಕಿಮಠನ ಬಗ್ಗೆ ವಿವರ ನೀಡಿದರು ಗೌಡರು. ಶಾಲೆಗೆ ಗೈರು ಆಗುವುದು, ಶಿಕ್ಷಕಿಯೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುವುದು. ಪುಸ್ತಕ ಮಾರಿಕೊಳ್ಳುವುದು, ಶಾಲೆಯಲ್ಲಿ ವಾಸ್ತವ್ಯ ಹೂಡಿ ಇಸ್ಪೀಟ್ ಆಡುವುದು, ಕುಡಿಯುವುದು, ತಿನ್ನುವುದು, ಎಂಟು ದಿನಗಳ ಹಿಂದೆ ಏಳನೆಯ ತರಗತಿಯ ಹುಡುಗಿಯೊಬ್ಬಳ ಮೇಲೆ ಬಲಾತ್ಕರಿಸಲು ಯತ್ನಿಸಿದ್ದರ ಬಗ್ಗೆ ಹೇಳಿ “ಆ ನಾಲಾಯಕ ಮಾಸ್ತರ ನಮ್ಮ ಕೈಯಾಗ ಸಿಗಲಿಲ್ಲ. ಇಷ್ಟು ದಿನಾತು ಅವನ ಪತ್ತಾನೂ ಇಲ್ಲ. ಅಂವಾ ಶಿಕ್ಷಣ ಇಲಾಕೆಯಾಗ ಇರ್ಲಿಕ್ಕೆ ಅಯೋಗ್ಯ ಅದಾನ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಗೌಡರೆ, ಕಳೆದ ವರ್ಷ ಆ ಶಿಕ್ಷಕ ಛಲೋ ಸಜ್ಜನ ಮನುಷ್ಯ ಅದಾನ, ನೀವು ಅವನಿಗೆ ಪ್ರಶಸ್ತಿ ಕೊಡದಿದ್ರ ಇಲಾಖೆ ಎದುರು ಉಪವಾಸ ಕುಂದ್ರಿತೀನಿ ಅಂದ್ರಿ. ರಾಜಕೀಯ ಮಂದಿಯ ಒತ್ತಡ ತಂದ್ರಿ. ಅವನ ವರ್ತನೆ ನಿಮ್ಮ ಗಮನಕ್ಕೆ ಬಂದಿದ್ದಲೇನ್ರಿ?” ಸಾಹೇಬರು ಕೇಳಿದರು.

“ಹುತ್ತಿನ್ಯಾಗಿಂದ ಹೊರಗ ಬಂದಾಗ ಗೊತ್ತಾಗೊದಲ್ರಿ ಯಾವ ಹಾವು ಅಂತ!”

ಗೌಡರ ಮಾತು ಕೇಳುತ್ತಲೇ ಸಂಬಂಧಿಸಿದ ಕಾರಕೂನರನ್ನು ಕರೆಯಿಸಿದ ಸಾಹೇಬರು “ಈಗಿಂದೀಗ ಆ ಬೆಂಕಿಮಠ ಶಿಕ್ಷಕರನ್ನ ಸಸ್ಪೆಂಡ್ ಮಾಡಿದ ಕಾಗದ ಟೈಪ್ ಮಾಡಿಸ್ಗಂಡು ಬರ್‍ರಿ” ಎಂದರು.

“ಸಸ್ಪೆಂಡ್ ಮಾಡಿದ್ರ ಮತ್ತ ಆ ಮಾಸ್ತರಗ ಬಲ ಹೆಚ್ಚಿಗ ಬರ್ತೈತಿ ಸಾಹೇಬರ. ದೊಡ್ಡ ದೊಡ್ಡವರ ಕೈಗಳು ಸಸ್ಪೆಂಡ್ ಆದವರನ್ನು ಉಳಿಸಿಕೊಳ್ಳಾಕ ನೋಡ್ತಾವು. ಆ ಮಾಸ್ತರನ ಡಿಸ್ಮಿಸ್ ಮಾಡಬೇಕು. ಒಂದು ಹುಳಾ ನೂರು ಹುಳಾನ್ನ ಹುಟ್ಟುಸ್ತಾವು!” ಗೌಡರು ಒತ್ತಾಯಿಸಿದರು.

“ಗೌಡರೆ ನನ್ನ ಅಧಿಕಾರದ ಮಿತಿಯಾಗ ನಾನು ಕೆಲಸ ಮಾಡಬೇಕು. ನೀವು ಅದರ ಬಗ್ಗೆ ಕಾಗದ ಕೊಡ್ರಿ. ನಾನು ಮೇಲಿನ ಸಾಹೇಬರಿಗೆ ಕಳಿಸ್ತೀನಿ” ಹೀಗೆ ಹೇಳಿ ಕುಳಿತರು ಸಾಹೇಬರು.

ಹೊರಗೆ ಬೆಂಕಿಮಠ ಮಾಸ್ತರನ ವಿರುದ್ಧದ ಕೂಗು ಕೇಳಿಸುತ್ತಲೇ ಇತ್ತು.

*****

 

 

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...