Home / ಕಥೆ / ಕಿರು ಕಥೆ / ಸಿದ್ಧಾಂತ

ಸಿದ್ಧಾಂತ

ಉಗ್ರಪ್ಪ ನಾಲ್ಕನೆಯ ಬಾರಿ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಹ್ಯಾಟ್ರಿಕ್ ಸಾಧಿಸಿದ್ದ. ಅಭಿಮಾನಿಗಳು ಅತ್ಯಂತ ವೈಭವದಿಂದ ಅವನ ವಿಜಯೋತ್ಸವ ಆಚರಿಸಿದರು. ತೆರೆದ ವಾಹನದಲ್ಲಿ ಊರ ತುಂಬ ಮೆರೆಸಿದರು.

ಗೆಲುವಿನಿಂದ ಬೀಗಿಕೊಂಡಿದ್ದ ಉಗ್ರಪ್ಪನ ಬಳಿಗೆ ಬಂದ ಪತ್ರಕರ್ತನೊಬ್ಬ “ನೀವು ಕೂದಲೆಳೆಯಲ್ಲಿ ಸೋಲು ತಪ್ಪಸಿಕೊಂಡಿರಿ” ಎಂದ.

“ನಾನು ಸೋಲಿಲ್ಲದ ಸರದಾರ” ಅತ್ಯುತ್ಸಾಹದಿಂದ ಉದ್ಗರಿಸಿದ ಉಗ್ರಪ್ಪ.

“ನಿಮ್ಮ ಅಧಿಕಾರದ ಅವಧಿಗಳಲ್ಲಿ ಮತಕ್ಷೇತ್ರದ ಎಲ್ಲ ರಸ್ತೆಗಳನ್ನು ರಾಜಮಾರ್ಗಗಳನ್ನಾಗಿ ರೂಪಿಸುತ್ತೇನೆ ಎಂದಿದ್ದೀರಿ” ಪರ್ತಕರ್ತ ಹೇಳಿದ.

“ಹೌದು” ಚುಟುಕಾಗಿ ಉಲಿದ ಉಗ್ರಪ್ಪ.

“ಉದ್ದಿಮೆ ಸ್ಥಾಪಿಸಿ ನಿರುದ್ಯೋಗಿ ಯುವಕರಿಗೆ ಭವಿಷ್ಯ ನೀಡುತ್ತೇನೆಂದು ಪ್ರಮಾಣ ಮಾಡಿದ್ದೀರಿ”.

“ಅದು ನಿಜ”

“ರೈತರಿಗೆ ಉಚಿತ ವಿದ್ಯುತ್, ಪಂಪ್‌ಸೆಟ್ಟು, ಬೀಜ, ಗೊಬ್ಬರ ಪೂರೈಸಿ ಅನ್ನದಾತರನ್ನು ಬದುಕಿಸುತ್ತೇನೆ ಎಂದು ಘೋಷಿಸಿದ್ದೀರಿ”.

“ಹೌದು”.

“ಕುಡಿಯುವ ನೀರಿಗೆ ತೊಂದರೆ ಬಾರದಂತೆ ನೋಡಿಕೊಳ್ಳುತ್ತೇನೆ. ಹಸಿವಿನ ಸಂಕಟದಿಂದ ಜನರು ಸಾಯದಂತೆ ಎಚ್ಚರಿಕೆ ವಹಿಸುತ್ತೇನೆ. ನೂರಕ್ಕೆ ನೂರರಷ್ಟು ಜನರನ್ನು ಸಾಕ್ಷರರನ್ನಾಗಿಸಲು ಹೋರಾಡುತ್ತೇನೆ. ರೋಗ-ರುಜಿನಗಳಿಂದ ಜನರು ಸತ್ತು ಹೋಗದಂತೆ ಅಮೃತ ಕುಡಿಸುತ್ತೇನೆ ಎಂದು ನೂರಾರು ಸಭೆಗಳಲ್ಲಿ ಹೇಳುತ್ತಿದ್ದಿರಿ.”

“ಹೌದು… ಹೌದು… ಹೌದು.”

“ಆದರೆ ನೀವು ಏನನ್ನೂ ಮಾಡಲಿಲ್ಲ” ವಿಷಾದ ವ್ಯಕ್ತಪಡಿಸಿದ ಪತ್ರಕರ್ತ.

“ನನ್ನ ಗೆಲುವಿಗೆ ಅದೇ ಆಧಾರವಲ್ಲವೆ?” ನಗುತ್ತ ಕೇಳಿದ ಉಗ್ರಪ್ಪ.

ಅವನ ಪ್ರಶ್ನೆಗೆ ದಿಗಿಲುಗೊಂಡ ಪತ್ರಕರ್ತ ತುಸು ಏರುಧ್ವನಿಯಲ್ಲಿ ಹೇಳಿದ “ನೀವು ರಾಜಕಾರಣಿಗಳು ಬರಿ ಸುಳ್ಳು ಹೇಳುತ್ತೀರಿ. ಭರವಸೆಯ ಗಾಳಿ ಊದಿ ಜನರನ್ನು ರಬ್ಬರಿನ ಬಲೂನ್ ಆಗಿಸುತ್ತೀರಿ.”

“ಎಷ್ಟೇ ಆಗಲಿ ನೀವೂ ಪತ್ರಕರ್ತರು. ರಾಜಕಾರಣದ ಸಿದ್ಧಾಂತವನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದೀರಿ” ಹ್ಹ ಹ್ಹ ಹ್ಹ…. ಎಂದು ಹಗುರಾಗಿ ನಕ್ಕ ಉಗ್ರಪ್ಪ. ಆ ಲಜ್ಜೆಗೇಡಿ ನಗೆ ಕಂಡು ಕೋಪಿಸಿಕೊಂಡ ಪತ್ರಕರ್ತ “ಇಂಥ ರಾಜಕಾರಣದಿಂದ ದೇಶಕ್ಕೇನು ಲಾಭ?” ಎಂದು ವ್ಯಂಗ್ಯದ ಬಾಣ ಎಸೆದ.

“ದೇಶಕ್ಕೇನೋ ಗೊತ್ತಿಲ್ಲ. ನನಗಂತೂ ಇದೆ. ನನ್ನ ನಂಬಿಕೊಂಡವರಿಗೂ ಅನುಕೂಲವಿದೆ” ಯಾವ ಮುಜುಗರವಿಲ್ಲದೆ ಹೇಳಿದ ಉಗ್ರಪ್ಪ.

“ಒಂದಿಲ್ಲ ಒಂದಿನ ಜನ ನಿಮ್ಮ ಸ್ವಾರ್ಥದ ಎದುರು ನಿಂತರೆ?”

“ಬಲೂನಿಗೆ ಗಾಳಿ ತುಂಬುವುದರಲ್ಲಿ ನಾನು ಚಾಣಾಕ್ಷ. ಹಾಗೆಯೇ ಉಬ್ಬಿದ ಬಲೂನುಗಳ ಗಾಳಿ ತೆಗೆಯುವ ತಂತ್ರದಲ್ಲಿ ನಾನು ಎಕ್ಸ್‌ಪರ್ಟು ಮಾರಾಯರೆ!” ಆತ್ಮವಿಶ್ವಾಸ ವ್ಯಕ್ತಪಡಿಸಿದ ಉಗ್ರಪ್ಪ.

ಪತ್ರಕರ್ತ ತುಟಿ ಹೊಲಿದುಕೊಂಡಂತೆ ಕುಳಿತ.

*****

 

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...