Home / ಕವನ / ಕವಿತೆ / ಸುಳಿ

ಸುಳಿ

ನಾ ತಿಳಿಯದ್ದೆ ಶಿವಮೊಗ್ಗೆಯ ಈ ಹೊಳೆ?
ನನ್ನ ಕೌಮಾರ್‍ಯ ಕಂಠ ಒಡೆದದ್ದೆ ಇವಳ ತೊಡೆಮೇಲೆ.
ಇವಳ ಹೊಳೆಮೈಯನ್ನು ಸೆಳೆದು
ಆಳಗಳಲ್ಲಿ ಇಳಿದು
ಸೆಳವುಗಳಲ್ಲಿ ಬೇರಲುಗಿ ಕೊಚ್ಚಿ ಹೋಗಿದ್ದೇನೆ;
ಸಕ್ಕರೆ ದಂಡೆಗಳಲ್ಲಿ ಅಕ್ಕರೆಯುಕ್ಕಿ ಮಲಗಿ
ಬಿಳಲು ಬಿಟ್ಟಿದ್ದೇನೆ ಪ್ರೀತಿಗೆ,
ಇವಳ ಮೀನುಮೈಯ ಜುಳು ಜುಳು ತಂಪಿನಲ್ಲಿ
ಕೊಳಲು ನುಡಿಸಿದ್ದೇನೆ ಬದುಕಿಗೆ,
ವಾರಾನ್ನಕ್ಕೆ ಬೆಳೆದು ಕೊಯಿಲಾಗಿ, ಕೊಯಿಲಾದರೂ ಉಯಿಲಾಗಿ,
ಉಯಿಲಾದರೂ ಬಯಲಾಗದೆ ಉಳಿದಿದ್ದೇನೆ ಇವಳ ಗೂಢಕ್ಕೆ.
ಇಷ್ಟೆಲ್ಲ ಕೊಟ್ಟು ಪಡೆದು
ನಾ ತಿಳಿಯದ್ದೆ ಶಿವಮೊಗ್ಗೆಯ ಈ ಹೊಳೆ
ಹೆತ್ತ ಜಾಗಕ್ಕೆ ನನ್ನ ನಿಲಿಸಿ ಹೊಡೆದ ಮೊಳೆ?

ಸಾಕಿದ ಬೆಕ್ಕಂಥ ಸಲಿಗೆ ಹೊಳೆ ಹಠಾತ್ತಾನೆ
ಸೊಕ್ಕು ತಿರುಗಿ ತಿಪ್ಪರಲಾಗ ಹಾಕಿಸಬರುವುದೆ?
ನಡುನೀರಿನಲ್ಲಿ ಈಜುತ್ತಿರುವಾಗ ಮೊನ್ನೆ
ಗಳಿಗೆಬಟ್ಟಲು ಸರಸರ ಸರಿದು ಬಂದಂತೆ
ಫಕ್ಕನೆ ದೊಡ್ಡ ಸುಳಿ-
ಮೊಳೆಕಾಲಿನಿಂದ ಮರತಲೆಯವರೆಗೆ
ಬಳೆ ಬಳೆ ಮೇಲಕ್ಕೆ ಬೆಳೆದು
ಗರಗರ ತಿರುಗುವ ಬಗುರಿಯನ್ನ
ನೀರಲ್ಲಿ ಕೊರೆದು ತೆಗೆದಿರುವ ಥರ.
ನಾನೋ ಸಾವು ಕಂಡಂತೆ ಚೀರಿ
ಸತ್ತೆನೋ ಎಂದು ಆಕಾಶದುದ್ದ ಒದರಿ-
ಅರೆ ಇದೇನು!
ಎಳೆಯುತ್ತಿರುವುದು ಹೊಳೆಸುಳಿಯಲ್ಲ ಹಾವು!
ಹಾವಲ್ಲ ಹಗೆ,
ಹಗೆಯಲ್ಲ ಮುಕ್ಕಿ ಮುತ್ತಿಟ್ಟದ್ದ ಪರಿಚಿತ ನಗೆ!
ಅಲೆ‌ಅಲೆಯಾಗಿ ಬೀಸಿ ಬರುವ
ರಾಡಿ ರಾಡಿ ರಾವಣಧಗೆ.
ಕಂಡ ಹೊಳೆಯ ಹೊಟ್ಟೆಯಿಂದ
ಕಾಣದ ಪಾತಾಳಗಳೆದ್ದು
ಎಲಾ! ಯಾರಿದು ಸುತ್ತ?
ಈ ಇವಳು, ಹೆತ್ತ ಕರುಳು,
ಎಂದೋ ಗತಿಸಿದ್ದ ಜುಟ್ಟು ಬಿಟ್ಟ ತಂದೆಯ ನೆರಳು,
ಕತ್ತು ಹಿಸುಕ ಬರುತ್ತಿರುವ ವಾರದ ಹುಡುಗನ ಹತ್ತೂ ಬೆರಳು!
ಬೆವರಿದೆ, ಯಮಸಾಹಸ ಎದ್ದು,
ನಾಲಿಗೆ ಕತ್ತಿ ಹಿರಿದು,
ಎತ್ತಿ ಎತ್ತಿ ಬೀಸಿದೆ.
ನೆತ್ತಿ ಬಿರಿದು ಫಕಫಕನೆ ನಗುತ್ತ,
ವಿಕಾರ ಕೇಕೆ ಕೂಗುತ್ತ,
ಸೀಳಿಬಿತ್ತು ಸೊಕ್ಕಿ ಬೆಳೆದಿದ್ದ ಮೂರೂ ದೇಹ.
ನಿಧಾನ ಮೇಲೆದ್ದು ನಡೆದ ಅದರೊಳಗಿಂದ
ಚಿಕ್ಕಂದು ನನ್ನ ಸಾಕಿದ್ದ
ದಟ್ಟ ವಿಭೂತಿ ಪಟ್ಟೆಗಳ
ಉಗ್ಗ ದುಗ್ಗಾಭಟ್ಟ
ಮರೆತೊಟ್ಟು ಸಾಧಿಸಬಂದಿದ್ದ ಬಲು ಹಳೆಯ ವೈರ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...