Home / ಕವನ / ಕವಿತೆ / ಸುಳಿ

ಸುಳಿ

ನಾ ತಿಳಿಯದ್ದೆ ಶಿವಮೊಗ್ಗೆಯ ಈ ಹೊಳೆ?
ನನ್ನ ಕೌಮಾರ್‍ಯ ಕಂಠ ಒಡೆದದ್ದೆ ಇವಳ ತೊಡೆಮೇಲೆ.
ಇವಳ ಹೊಳೆಮೈಯನ್ನು ಸೆಳೆದು
ಆಳಗಳಲ್ಲಿ ಇಳಿದು
ಸೆಳವುಗಳಲ್ಲಿ ಬೇರಲುಗಿ ಕೊಚ್ಚಿ ಹೋಗಿದ್ದೇನೆ;
ಸಕ್ಕರೆ ದಂಡೆಗಳಲ್ಲಿ ಅಕ್ಕರೆಯುಕ್ಕಿ ಮಲಗಿ
ಬಿಳಲು ಬಿಟ್ಟಿದ್ದೇನೆ ಪ್ರೀತಿಗೆ,
ಇವಳ ಮೀನುಮೈಯ ಜುಳು ಜುಳು ತಂಪಿನಲ್ಲಿ
ಕೊಳಲು ನುಡಿಸಿದ್ದೇನೆ ಬದುಕಿಗೆ,
ವಾರಾನ್ನಕ್ಕೆ ಬೆಳೆದು ಕೊಯಿಲಾಗಿ, ಕೊಯಿಲಾದರೂ ಉಯಿಲಾಗಿ,
ಉಯಿಲಾದರೂ ಬಯಲಾಗದೆ ಉಳಿದಿದ್ದೇನೆ ಇವಳ ಗೂಢಕ್ಕೆ.
ಇಷ್ಟೆಲ್ಲ ಕೊಟ್ಟು ಪಡೆದು
ನಾ ತಿಳಿಯದ್ದೆ ಶಿವಮೊಗ್ಗೆಯ ಈ ಹೊಳೆ
ಹೆತ್ತ ಜಾಗಕ್ಕೆ ನನ್ನ ನಿಲಿಸಿ ಹೊಡೆದ ಮೊಳೆ?

ಸಾಕಿದ ಬೆಕ್ಕಂಥ ಸಲಿಗೆ ಹೊಳೆ ಹಠಾತ್ತಾನೆ
ಸೊಕ್ಕು ತಿರುಗಿ ತಿಪ್ಪರಲಾಗ ಹಾಕಿಸಬರುವುದೆ?
ನಡುನೀರಿನಲ್ಲಿ ಈಜುತ್ತಿರುವಾಗ ಮೊನ್ನೆ
ಗಳಿಗೆಬಟ್ಟಲು ಸರಸರ ಸರಿದು ಬಂದಂತೆ
ಫಕ್ಕನೆ ದೊಡ್ಡ ಸುಳಿ-
ಮೊಳೆಕಾಲಿನಿಂದ ಮರತಲೆಯವರೆಗೆ
ಬಳೆ ಬಳೆ ಮೇಲಕ್ಕೆ ಬೆಳೆದು
ಗರಗರ ತಿರುಗುವ ಬಗುರಿಯನ್ನ
ನೀರಲ್ಲಿ ಕೊರೆದು ತೆಗೆದಿರುವ ಥರ.
ನಾನೋ ಸಾವು ಕಂಡಂತೆ ಚೀರಿ
ಸತ್ತೆನೋ ಎಂದು ಆಕಾಶದುದ್ದ ಒದರಿ-
ಅರೆ ಇದೇನು!
ಎಳೆಯುತ್ತಿರುವುದು ಹೊಳೆಸುಳಿಯಲ್ಲ ಹಾವು!
ಹಾವಲ್ಲ ಹಗೆ,
ಹಗೆಯಲ್ಲ ಮುಕ್ಕಿ ಮುತ್ತಿಟ್ಟದ್ದ ಪರಿಚಿತ ನಗೆ!
ಅಲೆ‌ಅಲೆಯಾಗಿ ಬೀಸಿ ಬರುವ
ರಾಡಿ ರಾಡಿ ರಾವಣಧಗೆ.
ಕಂಡ ಹೊಳೆಯ ಹೊಟ್ಟೆಯಿಂದ
ಕಾಣದ ಪಾತಾಳಗಳೆದ್ದು
ಎಲಾ! ಯಾರಿದು ಸುತ್ತ?
ಈ ಇವಳು, ಹೆತ್ತ ಕರುಳು,
ಎಂದೋ ಗತಿಸಿದ್ದ ಜುಟ್ಟು ಬಿಟ್ಟ ತಂದೆಯ ನೆರಳು,
ಕತ್ತು ಹಿಸುಕ ಬರುತ್ತಿರುವ ವಾರದ ಹುಡುಗನ ಹತ್ತೂ ಬೆರಳು!
ಬೆವರಿದೆ, ಯಮಸಾಹಸ ಎದ್ದು,
ನಾಲಿಗೆ ಕತ್ತಿ ಹಿರಿದು,
ಎತ್ತಿ ಎತ್ತಿ ಬೀಸಿದೆ.
ನೆತ್ತಿ ಬಿರಿದು ಫಕಫಕನೆ ನಗುತ್ತ,
ವಿಕಾರ ಕೇಕೆ ಕೂಗುತ್ತ,
ಸೀಳಿಬಿತ್ತು ಸೊಕ್ಕಿ ಬೆಳೆದಿದ್ದ ಮೂರೂ ದೇಹ.
ನಿಧಾನ ಮೇಲೆದ್ದು ನಡೆದ ಅದರೊಳಗಿಂದ
ಚಿಕ್ಕಂದು ನನ್ನ ಸಾಕಿದ್ದ
ದಟ್ಟ ವಿಭೂತಿ ಪಟ್ಟೆಗಳ
ಉಗ್ಗ ದುಗ್ಗಾಭಟ್ಟ
ಮರೆತೊಟ್ಟು ಸಾಧಿಸಬಂದಿದ್ದ ಬಲು ಹಳೆಯ ವೈರ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...