Home / ಕವನ / ಕವಿತೆ / ಅದೇ ಕಥೆ

ಅದೇ ಕಥೆ

ಆಡುಗೂಲಜ್ಜಿ ಕಣ್ಣುಮುಚ್ಚಿ ಹೇಳುತ್ತಾಳೆ ಕಥೆಯ,
ನೇಯುತ್ತಾಳೆ ರಾಗವಾಗಿ ವರ್ತಮಾನ ವ್ಯಥೆಯಾಗುವ
ಸತ್ತ ಸುಖದ ಸ್ಮೃತಿಯ.
ಕಣ್ಣಿಂದ ದಳದಳ ನೀರು
ಹೆಪ್ಪುಮುಪ್ಪಿನ ಸುಕ್ಕುತೆರೆ ಸರಿಸಿ ಮುಖದಲ್ಲಿ
ಏಳುವುವು ನೂರು
ಜೇನುಗೂಡನು ಹಿಂಡಿಬಂದ ಅನುಭವ ಸಾಲು:
“ಅಯ್ಯೋ ದೇವರೆ ಆಗೆಲ್ಲ ಎಂಥ ಕಾಲ!
ಎಂಥ ಬಾಲ ಕಪ್ಪೆಗೆ, ಏನು ಕೋಡು ಕುದುರೆಗೆ
ಅರಳಿಯೆಲೆಯ ಕೆಂಪುಚಿಗುರೆ ಮೇವು ಹಂಸಪಕ್ಷಿಗೆ;
ಬೇಲಿಯಿರದ ಬೇಟ
ಕಾವಲಿರದ ತೋಟ
ದನಕಾಯುವ ದಡ್ಡ ಕೂಡ ತಪ್ಪಿ ಮೇಲೆ ಕೂತರೆ
ತಟಕ್ಕನೆಯೆ ಜೀವತುಂಬಿ ನುಡಿವ ಧರ್ಮಪೀಠ;
ಎಂಥ ಕೆಟ್ಟ ಹೆಣ್ಣಿಗೂ ಸರಸ್ವತಿಯ ಕಂಠ
ಅಪ್ಸರೆಯರ ಸೊಂಟ
ಗಂಡಸಾದರಂತು ಬಿಡು ಇಂದ್ರ ಅವನ ನೆಂಟ”.
ಹರಿಹರಿದಂತೆ ನೆರೆ ಬರುವುದು
ಕೊರಕಲಿನಲ್ಲಿ ಕಿಳಪಿಳ ಸರಿವ ಬಡಕಲು ತೊರೆಗೆ;
ಬಿಟ್ಟ ಬಾಯಾಗಿ
ನೆಟ್ಟ ಕಣ್ಣಾಗಿ
ಕೇಳುವುವು ಮಕ್ಕಳು
ಆತು ಅಜ್ಜಿ ಮೈಗೆ,
ಬೆರಗಾಗಿ ಕತ್ತಲಲ್ಲಿ ಕುರುಡ ಬಣ್ಣಿಸುತ್ತಿರುವ
ಬೆಳುದಿಂಗಳ ಕಥೆಗೆ.

ನಮಗೇನು ಗೊತ್ತು
ಹೋಮಧೂಮದಲಿ ಬುದ್ಧಪ್ರೇಮದಲಿ
ಅಶೋಕಧರ್ಮದ ಚಕ್ರಚಲನದಲಿ
ಗಾಡಿ ನಡೆದ ಗತ್ತು?
ಮನೆಯಿತ್ತು
ಮನೆಗೆ ಮಾಡಿತ್ತು;
ಹೆಂಚುದೋಣಿಗಳ ನಡುವೆ ಅಲ್ಲಲ್ಲಿ ತೂತೂ ಇತ್ತು;
ಹಗಲಲ್ಲಿ ಹೊನ್ನ ಸರಳು
ಇರುಳಲ್ಲಿ ಬೆಳುದಿಂಗಳ ಕೊರಳು
ದೇವರ ಮನೆಗೆ ಬೆಳಕ ಹಾಡಿತ್ತು.
ಮಳೆಗಾಲದಲ್ಲಿ ಮನೆ ಕೆರೆಯಾಗಿರಲಿಲ್ಲವೆ,
ಬೆಲ್ಲದ ವರ್ಣನೆಯಲ್ಲೇ ಬೇವಿನ ಮಾಹಿತಿ ಇಲ್ಲವೆ?
ಎದ್ದ ಕಲ್ಲು ಪೂಜಾರಿಯ ಲೆಕ್ಕಕ್ಕೆ ಜಮವಾಗಿ
ಜಾಗಟೆ ಮೊಳಗಿ
ಆರತಿ ಬೆಳಗಿ ಗುಡಿಯಲ್ಲಿ,
ಬಿದ್ದ ಕಲ್ಲುಗಳ ಪಾಡು
ಅಗಸನ ಬಟ್ಟೆಯ ಬಡಿತದ ತಾಳಕೆ ನುಡಿಸಿದ ಹಾಡು!

ಇತ್ತು ಆಗಲೂ ಎಲ್ಲ ಇತ್ತು
ಅಜ್ಜಿಯ ಹಾಡಿನ ಮಲ್ಲಿಗೆ ಜಾಡಿನ ತಳದ ಕೆದಕಿನಲಿ
ಮೂಳೆ ಮಜ್ಜೆಗಳ ನಾರುವ ಗೊಬ್ಬರವಿತ್ತು
ಕರ್ಣನ ಶೌರ್ಯ
ಧರ್ಮನ ಧೈರ್ಯ
ಅಂಬೆಯ ಪ್ರೀತಿ
ಭೀಷ್ಮನ ನೀತಿ
ಎಲ್ಲಕು ಕೂಡಿಯೆ
ಕಾಲಜ್ಞಾನದ ಕತ್ತಲ ಕೊಳದಲಿ ಕಾಲುಜಾರಿತ್ತು.

ಆ ವನದಿಂದಲೆ ತಂದುದು ಈ ಆಲದ ಸಸಿಯ
ಬಳಿಯಬಹುದೆ ನಾವು ಪರಂಪರೆಯ ಮುಖಕೆ ಮಸಿಯ?
ಅಳಿಸಬಹುದೆ ನಿನ್ನೆಯಿಂದ ಇಂದು ಬಂದ ನನ್ನಿಯ?
ಹಾಗೆಂದೇ ಇಂದು ಕೂಡ
ಮಕ್ಕಳಿರುವ ಮನೆನೆತ್ತಿಯ ಮೇಲೆ ಗೂಬೆ ಕೂಗಿದೆ
ತೆಂಗುಗರಿಯ ಮೇಲೆ ಮಂಗ ಕುಣಿದು ಲಾಗ ಹಾಕಿದೆ
ಕಣಜದಲ್ಲೆ ಹೆಗ್ಗಣ
ಅಡಿಗೆಮನೆ ಮದ್ದಿನ
ದೀಪಾವಳಿ ಷಾಪಾಗಿದೆ, ಹೊಂಚುತ್ತಿದೆ ದುರ್ದಿನ?

ಬಿದ್ದಮನೆ ಗುರುತಲ್ಲೆ ಹೊಸಮನೆಗೆ ಅಡಿಪಾಯ
ಆಗೆಯುತ್ತಿದ್ದೇವೆ;
ಹುತ್ತ ಕಂಡೊಡನೆಯೇ ಹಾವಾಗಿ
ನೀರು ಕಂಡೊಡನೆಯೇ ಹೊಳೆಯಾಗಿ
ಎತ್ತಿಟ್ಟಕಾಲ ಮುತ್ತಿಟ್ಟದರ ಮೆಟ್ಟಾಗಿ
ಹೊಟ್ಟಾಗಿ ಈ ಕೆಟ್ಟ ಹೊಟ್ಟೆ ಹೊರೆದಿದ್ದೇವೆ;
ತಿದ್ದ ಬಂದವರನ್ನು ಗುದ್ದಿ ತೆಗೆದಿದ್ದೇವೆ
ಪ್ರತಿಕ್ಷಣವು ಅದಕೆ ಕೊರಗುತ್ತಲೂ ಇದ್ದೇವೆ;
ಕಷ್ಟ ಉಳಿದರು ಕಡೆಗೆ ನಾವು ಮುಗಿಯುವೆವೆಂದು
ಕತ್ತಲೆಯನೇ ನೆಮ್ಮಿ
ನಡೆಯುತ್ತಿದ್ದೇವೆ
ನಡೆಯುತ್ತಿರುತ್ತೇವೆ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...