Home / ಕಥೆ / ಕಿರು ಕಥೆ / ರೊಟ್ಟಿ

ರೊಟ್ಟಿ

ರೈಲು ನಿಲ್ದಾಣದ ಒಂದು ಬೆಂಚಿನ ಮೇಲೆ ಗಂಡ ಹೆಂಡತಿ ಕುಳಿತಿದ್ದರು. ಗಾಡಿ ಬರುವುದು ತಡವೆಂದು ಪೋರ್ಟರ್‍ ಹೇಳಿದ. “ರೀ ಕುಡಿಯಲು ನೀರು ತಗೊಂಡು ಬರ್‍ರಿ. ಇಲ್ಲೇ ಊಟ ಮಾಡೂಣು, ಹ್ಯಾಂಗಿದ್ರೂ ಗಾಡಿ ತಡಾ ಆಗಿ ಬರುವುದು” ಎಂದು ಹೆಂಡತಿಯ ಮಾತಿಗೆ `ಹೂಂ’ ಎಂದು ಬಾಟಲಿ ತೆಗೆದುಕೊಂಡು ಹೋಗಿದ್ದ ಗಂಡ. ಆಕೆ ಚೀಲದಲ್ಲಿದ್ದ ಬುತ್ತಿಯ ಗಂಟನ್ನು ಬಿಚ್ಚಿದ್ದಳು.

ಎದುರು ಬೆಂಚಿನಲ್ಲಿ ಕುಳಿತ ವ್ಯಕ್ತಿಯೊಬ್ಬನ ದೃಷ್ಟಿ ಅವಳತ್ತ ಹರಿದಿತ್ತು. ಆಕೆಯೂ ಆಕಸ್ಮಿವೆನ್ನುವಂತೆ ಅವನನ್ನು ನೋಡಿದ್ದಳು. ಬಡಕಲು ಶರೀರದ, ಕುರುಚಲು ಗಡ್ಡದ ಆ ವ್ಯಕ್ತಿಯ ಕಣ್ಣು ತನ್ನ ಮೇಲೆ ಸುಳಿದಾಡುತ್ತಿವೆ ಅನಿಸಿ ಆಕೆ ಮುಖವನ್ನು ಬೇರೆ ಕಡೆ ಹೊರಳಿಸಿದ್ದಳು. ಪ್ಲಾಟ್‌ಫಾರ್ಮಿನ ಕಂಬಕ್ಕೆ ತೂಗು ಹಾಕಿದ್ದ ಫಲಕ ಕಂಡಿತ್ತು. “ಕಳ್ಳರಿದ್ದರೆ ಎಚ್ಚರಿಕೆ!” ಫಲಕದಲ್ಲಿನ ಅಕ್ಷರಗಳು ದಿಗಿಲು ಹುಟ್ಟಿಸಿದವು. ಮೈತುಂಬ ಸೆರಗು ಹೊದ್ದುಕೊಂಡು ಗಂಡ ಹೋದ ದಾರಿಯತ್ತ ಗಮನ ಹರಿಸಿದಳು. ತನ್ನ ಕೊರಳಿನಲ್ಲಿದ್ದ ನಾಲ್ಕೆಳೆಯ ಬಂಗಾರದ ಸರದ ಮೇಲೆ ಅವನ ಕಣ್ಣು ಬಿತ್ತು? ಅನುಮಾನಿಸಿದಳಾಕೆ. ಮತ್ತೊಮ್ಮೆ ಆ ವ್ಯಕ್ತಿಯತ್ತ ಓರೆ ನೋಟ ಬೀರಿದಳು. ಅವನು ರೆಪ್ಪೆ ಪಿಳುಕಿಸದೆ ನೋಡುತ್ತಲೇ ಇದ್ದ. ಒಂದು ಕ್ಷಣ ಭಯವೆನಿಸಿತು. ಹಾಡು ಹಗಲು, ಜನದಟ್ಟಣೆ ಇದೆ. ಅವನೇನು ಮಾಡಲು ಸಾಧ್ಯ? ಮತ್ತೆ ತಾನೇ ಸಮಾಧಾನ ಮಾಡಿಕೊಂಡಳು.

ಗಂಡ ನೀರು ತಂದ. ಆಕೆ ಅವನ ಕೈಗೆ ರೊಟ್ಟಿ – ಪಲ್ಲೆ ಹಚ್ಚಿಕೊಟ್ಟಳು. ತಾನೂ ರೊಟ್ಟಿ ಹಿಡಿದುಕೊಂಡಳು. ಒಂದು ತುತ್ತು ಬಾಯಲ್ಲಿಡುತ್ತಿದ್ದಂತೆ ಅವಳ ಕಣ್ಣು ಎದುರು ಬೆಂಚನ್ನು ದೃಷ್ಟಿಸಿತ್ತು. ಈಗ ಆಗಂತುಕ ವ್ಯಕ್ತಿ ಆಸೆಗಣ್ಣುಗಳಿಂದ ನೋಡ ತೊಡಗಿದ್ದ. ಅವಳ ಒಡಲಲ್ಲಿ ತುಮುಲವೆದ್ದಿತು. ಅವನು ಒಮ್ಮೆಲೆ ಎದ್ದು ನಿಂತಿದ್ದ. ಆಕ್ರಮಣಕ್ಕೆ ಸಜ್ಜಾಗುತ್ತಿದ್ದಾನೆ ಅನ್ನಿಸಿತು. ದಿಢೀರೆಂದು ಮೇಲೆ ಬಿದ್ದು ಕೊರಳ ಸರ ಕಿತ್ತು ಓಡಿದರೆ ಏನು ಮಾಡುವುದು? ಸರ ಹೋದರೆ ಹೋಗಲಿ ಚೂರಿ, ಬ್ಲೇಡು ಹಾಕಿದರೆ ಗತಿಯೇನು? ಆಕೆ ಆಗಂತುಕನ ಬಗ್ಗೆ ವಿಪರೀತವಾಗಿ ಊಹಿಸಿಕೊಂಡಳು. ಅವನು ನೋಡುವ ರೀತಿಯೇ ಅಪಾಯಕಾರಿ ಎಂಬ ಭಯ ಆವರಿಸಿತು. ಮತ್ತೆ ಆ ಆಗಂತುಕ ಕುಳಿತು ನಾಲಗೆಯಿಂದ ತನ್ನ ತುಟಿ ಸವರಿಕೊಳ್ಳತೊಡಗಿದ. ಭಯವಿಹ್ವಲಳಾದಳಾಕೆ.

“ರಿ, ಆ ಮನುಷ್ಯ ಎಷ್ಟೋ ಹೊತ್ತಾತು ನನ್ನ ಕಡೆಗೆ ನೋಡಾಕ ಹತ್ಯಾನ” ಎಂದಳು.

“ಯಾರವನು?”

“ಅಲ್ಲೆ ಎದುರಿಗೆ ಕುಂತಾನ ನೋಡ್ರಿ” ಕಣ್ಣು ಸಂಜ್ಞೆಯಿಂದಲೇ ತೋರಿಸಿದಳಾಕೆ.

ಗಂಡ ಅತ್ತ ನೋಡಿದ್ದ.

ಆಗಂತುಕನ ದೃಷ್ಟಿ ಬೇರೆ ಕಡೆಗೆ ಹೊರಳಿತ್ತು. “ಇನ್ನೊಂದ್ಸಲ ಈ ಕಡೆಗೆ ನೋಡ್ಲಿ. ಅವನ ಕಣ್ಣಗುಡ್ಡೆ ಕಿತ್ತು ಕೈಗೆ ಹಾಕ್ತಿನಿ” ಎಂದು ಊಟ ಮುಗಿಸಿ ನೀರು ಕುಡಿದ ಗಂಡ. ಆಗಂತುಕನು ಮತ್ತೆ ಮುಖ ಅತ್ತ ತಿರುಗಿಸಿದ್ದ. ಅದನ್ನು ಕಂಡದ್ದೆ ಗಂಡನ ಮೈಯೆಲ್ಲಾ ಬೆಂಕಿಯಾಗಿತ್ತು. ಅವನು ಎದ್ದು ಹೋಗಿ ಮುಸುರಿ ಕೈಯಿಂದಲೇ ಕಪಾಳಕ್ಕೆ ರಪ್ಪೆಂದು ಬಾರಿಸಿದ್ದ. ಆಗಂತುಕ ನೆಲಕ್ಕೆ ಉರುಳಿದ.

ಏಕಾಏಕಿಯಾಗಿ ಸಂಭವಿಸಿದ ಈ ಪ್ರಸಂಗ ಜನರ ಗಮನ ಸೆಳೆಯಿತು. ಗಬೋ ಎಂದರು ಜನ. “ಏನಾಯಿತು? ಏನಾಯಿತು?” ಎಲ್ಲರ ಮುಖದಲ್ಲೂ ಗಾಬರಿ, ಕೌತುಕ.

“ಬದ್ಮಾಶ್, ಅಕ್ಕ-ತಂಗೇರು ಇಲ್ಲೇನು ನಿನ್ಗ?” ಆಕ್ರೋಶದಿಂದ ಕುದಿಯತೊಡಗಿದ್ದ ಗಂಡ. ಅವನ ಧ್ವನಿಯೊಂದಿಗೆ ಧ್ವನಿ ಬೆರೆಸಿ ಹೆಂಡತಿಯೂ ಬೈಯತೊಡಗಿದಳು.

ಆಗಂತುಕ ಕಿಂಚಿತ್ತೂ ಮಿಸುಗಾಡಲಿಲ್ಲ. ಸತ್ತು ಹೋದನೆ ಅವನು? ಜನರ ಗುಂಪಲ್ಲಿ ಗುಸುಗುಸು ಎದ್ದಿತು. ಅಷ್ಟರಲ್ಲಿ ಪೋಲಿಸರು, ಸ್ಟೇಶನ್ ಮಾಸ್ಟರ್‍ ಬಂದರು. ಗಂಡ ನಡೆದುದನ್ನು ವಿವರಿಸಿದ. ಪೋರ್ಟರನೊಬ್ಬ ಅವಸರದಿಂದ ನೀರು ತಂದು ಆಗಂತುಕನ ಮುಖದ ಮೇಲೆ ಸಿಂಪಡಿಸಿದ. ಪೋಲಿಸ್ ಹೇಳಿದ “ಇವನು ಕಳ್ಳನಲ್ಲ ಇಲ್ಲಿಯ ಖಾಯಂ ಗಿರಾಕಿ”

“ಅವನು ನನ್ನ ಹೆಂಡತಿಯನ್ನು ನೋಡುತ್ತಿದ್ದ” ಆರೋಪಿಸಿದ್ದ ಗಂಡ.

ಸಾವಕಾಶವಾಗಿ ಎದ್ದು ಕುಳಿತ ಆಗಂತುಕನನ್ನು ಸ್ಟೇಶನ್ ಮಾಸ್ಟರ್‍ ಕೇಳಿದರು.

“ಹೀಗೇಕೆ ಮಾಡಿದಿಯೋ ನೀನು?”

ಆಗಂತುಕ ಕಣ್ಣಲ್ಲಿ ನೀರು ತುಂಬಿಕೊಂಡು ಹೇಳಿದ.

“ಸಾಹೇಬರ… ಎರಡು ದಿನಾ ಆತು ನಾನು ಊಟ ಮಾಡಿಲ್ಲ. ಹಸಿವು ತಡೀಲಾರದ ಆ ತಾಯಿ ಕಡೆ ನೋಡಿದ್ಯೆ ಒಂದು ರೊಟ್ಟಿ ಸಿಕ್ಕೀತು ಅಂತ”.

*****

 

 

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...