ರೋಜಾ

ಚಿತ್ರ: ಅಲೆಕ್ಸಾ / ಪಿಕ್ಸಾಬೇ
ಚಿತ್ರ: ಅಲೆಕ್ಸಾ / ಪಿಕ್ಸಾಬೇ

ಅಮಾವಾಸ್ಯೆಯ ಮರುದಿನ ಸಂಜೆಯಷ್ಟು ಹೊತ್ತಿಗೆ ಆಕಾಶದಲ್ಲಿ ಚಂದ್ರ ದರ್ಶನವಾಯಿತು.  ಗಲ್ಲಿಯಲ್ಲಿ ಸಂಭ್ರಮ.  ಸಾರಾಬೂ ಬೀದಿಗೆ ಬಂದು ತನ್ನ ನಾಲ್ಕು ಮಕ್ಕಳಿಗೂ ಚಂದ್ರನನ್ನು ತೋರಿಸಿದಳು.  “ನಾಳೆ ರೋಜಾ ಚಾಲು”  ಎಂದಳು.  ಅವಳ ಮೂರು ಗಂಡು ಮಕ್ಕಳು “ನಾವೂ ನಾಳೆಗೆ ರೋಜಾ ಇರ್ತೀವಿ” ಎಂದರು.

ಮಾತಿನಲ್ಲಿ ಚುರುಕಾಗಿದ್ದ ಎಂಟು ವರ್ಷದ ನಫೀಸಾ “ನಾನೂ ರೋಜಾ ಮಾಡ್ತೀನಿ ಅಮ್ಮಾ” ಎಂದಳು.

“ನಿನಗೆ ಆಗುದಿಲ್ಲ ಬಿಡು” ಎಂದ ಅವಳ ಅಣ್ಣ.

“ನಾನು ರೋಜಾ ಮಾಡ್ತೀನಿ” ನಫೀಸಾ ಹಟದ ಧೋರಣೆಯಲ್ಲಿ ಹೇಳಿದಳು.

“ಬೇಟಿ ರೋಜಾ ಅಂದ್ರ ಬಾಯಲ್ಲಿ ಹನಿ ನೀರೂ ಹಾಕಬಾರ್‍ದು.  ಹಾಗಾದರೆ ರೋಜಾ ಕಬುಲು ಆಗುವುದು.  ನೀನಿನ್ನೂ ಚಿಕ್ಕವಳು, ನಿನಗೆ ತ್ರಾಸಾಗುವುದು” ಸಾರಾಬೂ ಮಗಳನ್ನು ರಮಿಸಿದಳು.

“ನನ್ಗೇನೂ ಆಗುದಿಲ್ಲ ನಾನು ರೋಜಾ ಮಾಡ್ತೀನಿ” ಉತ್ಸಾಹ ತೋರಿದಳು ನಫೀಸಾ.

“ಒಂದು ಕಡ್ಡಿ ಕೂಡಾ ಬಾಯಲ್ಲಿ ಹಾಕಬಾರ್‍ದು.  ಅದೆಲ್ಲ ನಿನ್ನಿಂದ ಆಗುದಿಲ್ಲ.  ಇನ್ನಷ್ಟು ದೊಡ್ಡವಳಾದ ಮೇಲೆ ರೋಜಾ ಹಿಡಿಯುವಂತೆ ಬೇಟಿ” ತಂದೆ ಹುಸೇನಲಿ ಹೇಳಿದ.

“ನಾನು ರೋಜಾಮಾಡ್ತೀನಿ” ನಫೀಸಾ ಹಟ ಬಿಡಲಿಲ್ಲ.

“ಇನ್ ಷಾ ಅಲ್ಲಾ!” ಎಂದು ಸುಮ್ಮನಾದರು ಸಾರಾಬೂ-ಹುಸೇನಲಿ.

ಮಸೀದಿಯ ಮೀನಾರಿನಿಂದ ಸೈರಿಗೆ ಕರೆ ಕೇಳಿಸಿತು.  ಮಕ್ಕಳು ಉತ್ಸಾಹದಿಂದಲೇ ಎದ್ದರು.  ಮನೆಯಲ್ಲಿ ಇದ್ದದ್ದು ಮೂರು ರೊಟ್ಟಿ ಮಾತ್ರ.  ಮಕ್ಕಳು ಹಂಚಿಕೊಂಡು ತಿಂದು ನಿಯತ್ತು ಹೇಳಿ ರೋಜಾ ಹಿಡಿದರು.  ಸಾರಾಬೂ ಕರಿ ಚಹ ಕುಡಿದಳು.  ಹುಸೇನಲಿ ಹಮಾಲಿ ಮಾಡಬೇಕು ಅವನು ರೋಜಾ ಹಿಡಿಯಲಿಲ್ಲ.

ಹೊತ್ತೇರ ತೊಡಗಿದ್ದಂತೆ ಸಾರಾಬೂ ಚಿಂತೆಗೊಳಗಾದಳು.  ಮಗಳ ರೋಜಾ ಪೂರ್ತಿಯಾಗುವುದೋ ಇಲ್ಲವೋ ಎಂಬ ಅನುಮಾನ ಕಾಡಿತು.  “ಹೇ ಅಲ್ಲಾಹುವೆ!  ಮಗು ಉಪವಾಸ ಅರ್ಧಕ್ಕೆ ನಿಲ್ಲಿಸಿದರೆ ತಪ್ಪು ಮನ್ನಿಸು” ಎಂದು ಹತ್ತಾರು ಸಲ ಪ್ರಾರ್ಥಿಸಿದಳು.

ನಫೀಸಾ ಮಾತ್ರ ಲವಲವಿಕೆಯಿಂದಲೇ ಇದ್ದಳು.  ಶಾಲೆಗೂ ಹೋಗಿ ಬಂದಳು.  ಒಂದು ಹನಿ ನೀರೂ ಎನ್ನಲಿಲ್ಲ.  ಮಧ್ಯಾಹ್ನದ ಇಳಿ ಹೊತ್ತಿಗೆ ಆಟದಲ್ಲಿ ಮಗ್ನಳಾದಳು.

ಸೂರ್ಯ ಮುಳುಗಿದ.  ಅಂದಿನ ರೋಜಾದ ವ್ರತ ಮುಗಿಯಿತು.

“ಬೇಟಿ ನಿನಗೆ ಹಸಿವು ಅನಿಸಲಿಲ್ಲವೆ?” ಸಾರಾಬೂ ಕೇಳಿದಳು.

“ಇಲ್ಲಾ ಅಮ್ಮಾ”

“ಸ್ವಲ್ಪೂ ತ್ರಾಸು ಅನಿಸಿಲ್ಲ” ಕೆದಕಿ ಕೇಳಿದ ಹಿರಿಯಣ್ಣ.

“ರೋಜಾ ಅಂದ್ರ ಉಪವಾಸ.  ಅದು ನಮ್ಗ ರೂಢಿ ಐತಲ್ಲ ಭಯ್ಯಾ” ಎಂದು ಗಳಿಬಿಳಿ ಮಾತಾಡಿ ಒಣಚುರುಮುರಿಯನ್ನು ಬಾಯಿ ತುಂಬಿಕೊಂಡಳು ನಫೀಸಾ.  ಸಾರಬೂ ಕಣ್ಣಲ್ಲಿ ಹನಿಯೊಡೆದಿತ್ತು.

*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...