ಮೈ ಝುಮ್ಮಾಗುವ ಸುಳ್ಳು

ಮೈ ಝುಮ್ಮಾಗುವ ಸುಳ್ಳು

ರಘುವೀರನು ನನ್ನ ಗೆಳೆಯ, ನಮಗೆ ಪರಿಚಯವಾದುದು ಮೊದಲು ಲೇಖನಿಯಿಂದ, ಅವನು ಸಂಪಾದಕನು. ನಾನು, ‘ಸಂಪಾದಕ’ರೆಂಬವರನ್ನು ಪ್ರೀತಿಯಿಂದ ನೋಡುವವನು. “ಹೃದಯರಂಜನ” ಪತ್ರಿಕೆಯನ್ನು ರಘುವೀರನು ಆರಂಭಿಸಿದ ಮೇಲೆ ನಮ್ಮ ಪರಿಚಯವೂ ಫಕ್ಕನೆ ಉಂಟಾಗಿ, ಕೆಲವೇ ಕಾಲದಲ್ಲಿ ಬಲವಾಯಿತು. ಈಗ ರಘುವೀರನು ‘ಸಂಪಾದಕ’ನಲ್ಲ; “ಭೂತಪೂರ್ವ….”ವಾಗಿದ್ದಾನೆ. ಅವನ “ಹೃದಯರಂಜನ”ವು ಹೃದಯಭೇದಕವೆನಿಸುವಂತೆ ಹುಟ್ಟಿದ ದಿನವೇ ಸತ್ತಿತೆಂಬುದು ದುಖಃಪೂರ್ಣವಾದ ‘ಬಹಿರಂಗ ರಹಸ್ಯ.’

ನಿಂತು ಹೋಗಲು ಕಾರಣವೇನು? –
(೧) ಕನ್ನಡಿಗರ ಆದರದ ಅಭಾವ
(೨) ಆರ್ಥಿಕ ದುರ್ದಶೆ
(೩) ಪ್ರಚಾರ ಕಾರ್ಯದ ಅಪೂರ್ಣತೆ
(೪) ಪತ್ರಿಕೆಯು ಆಕರ್ಷಕವಾಗಿಲ್ಲದಿರುವದು

– ಇವು ಒಂದು ಪ್ರತಿಕೆಯ ‘ಅಕಾಲ ನಿಧನ’ಕ್ಕೆ ಕಾರಣವೆಂದು ನಿಮ್ಮ ತರ್ಕವಿರಬಹುದು. ಆದರೆ, ರಘುವೀರನ ಪತ್ರಿಕೆಯ ಅವಸಾನವು ಆತನ ದುಂದುವ್ಯಯದಿಂದಲೇ ಉಂಟಾಯಿತು.

ಹೇಗೆ? – ಒಂದು ಉದಾಹರಣೆಯೇ ಇದು.

ಪತ್ರಿಕೆಗೆ ಚಂದಾದಾರರನ್ನು ಕೂಡಿಸಲು ಆತನು ಸರ್ವೋತ್ತಮನೆಂಬವನ ಸಹಾಯ ಪಡೆದನು. ಸರ್ವೊತ್ತಮನು ಸರ್ವ ವಿದ್ಯೆಗಳಲ್ಲೂ ನಿಷ್ಣಾತನು. ಅವನ ನಾಲಗೆಯೂ, ಅದರಂತೆ ಕೈಯೂ ಹರಿತವಾಗಿವೆ. “ಚಂದಾದಾರರನ್ನು ಕೂಡಿಸುತ್ತ ದಣಿವ ಬದಲಾಗಿ ನಿಮ್ಮನ್ನು ಒಂದೇ ಒಂದು ಹತ್ತು ರೂಪಾಯಿ ನೋಟಿನಲ್ಲಿ ಭಾಗ್ಯವಂತನನ್ನಾಗಿ ಮಾಡಬಲ್ಲೆ” ಎಂದು ಆತನು ರಘುವೀರನಿಗೆ ಭಾಷೆಕೊಟ್ಟನು. ಹೇಗೆಂದು ರಘುವೀರನು ಪ್ರಶ್ನಿಸಲಾಗಿ, “ತಾಯಿತ! ನನ್ನ ಅಜ್ಜನು . . .ಲ್ಲಿ ಕಲಿತು ಬಂದು ನನಗೆ ಹೇಳಿಕೊಟ್ಟನು. ಮಹಾರಹಸ್ಯ; ಖಂಡಿತ ಫಲ!” ಎಂದನು.

‘ಸುಶಿಕ್ಷಿತ’ನು ರಘುವು; ಒಂದು ಪತ್ರಿಕೆಯ ಸಂಪಾದಕನು; ಆದರೆ ಮನುಷ್ಯನು. ಆದುದರಿಂದ ಸರ್ವೋತ್ತಮನು ತೆಳ್ಳಗಿನ ನಾಲಗೆಯಿಂದಾಡಿದ ಮಾತುಗಳನ್ನು ತೆಳ್ಳಗಿನ ಕೈಯಿಂದ ಭಾಷೆಯ ವೆಟ್ಟನ್ನಿತ್ತುದೇ – ನಂಬಿದನು. ‘ಸುಶಿಕ್ಷಿತ’ ರೆಂಬವರಲ್ಲಿ ಹೆಚ್ಚಿನವರು ತಾಯಿತವನ್ನು ತಾಯಿಗಿಂತ ಹೆಚ್ಚು ನಂಬುವರೆಂಬುದು ನಿಮಗರಿತಿರಬಹುದು.

ರಘುವು ಕುಂದಾಪುರದಲ್ಲಿ ಚಂದಾದಾರರನ್ನು ಕೂಡಿಸುವ ಮಹಾಯತ್ನದಲ್ಲಿದ್ದನು. ಅಲ್ಲಿಗೆ ಸರ್ವೋತ್ತಮನ ಹತ್ತು ರೂಪಾಯಿ ಮೌಲ್ಯದ ವಿ. ಪಿ. ತಲಪಿತು. ಮೌಲ್ಯ ತೆತ್ತು, ರಘುವು ಅದನ್ನೊಡೆಯಲು ಒಂದು ಉಂಗುರವು ಸಿಕ್ಕಿತು, ಅದನ್ನು ಬೆರಳಿಗೆ ಸಿಕ್ಕಿಸುತ್ತಲೇ ಮೈ ಝುಮ್ಮೆನ್ನುವುದೆಂದೂ, ಆಗಲೇ ಅದರ ಪ್ರಭಾವವು ಆರಂಭವಾಗಿದೆ ಎಂಒ ಲೆಕ್ಕವೆಂದೂ ಸರ್ವೊತ್ತಮನು ಬರೆದಿದ್ದನು. ಇನ್ನಿದನ್ನು ಕೈಗೆ ಸಿಕ್ಕಿಸಿ ಚಂದಾದಾರರನ್ನು ಕೂಡಿಸ ಹೋಗುವೆನೆಂದು ರಘುವು, ಆ ಕೂಡಲೇ ಕೈಗೆ ಸಿಕ್ಕಿಸಿ, ನಡುಗುವ ಹೃದಯದಿಂದ ಮೈ ಜುಮ್ಮನ್ನು ಕಾಯುತ್ತ ಕುಳಿತನು. ಘಂಟೆ- ದಿನ……. ತಿಂಗಳ ತನಕ ಕಾಯ್ದನು.
ಝುಮ್ಮೇ ಇಲ್ಲ. ವಿಷಾದದ ಸಂಗ್ತಿಯೆಂದ್ರೆ-ಕುಂದಾಪುರದಲ್ಲಿ ಇವನಿಗೆ ಒಬ್ಬನಾದರೂ ಚಂದಾದಾರನು ದೊರೆಯಲಿಲ್ಲ.

ಒಂದು ತಿಂಗಳ ನಂತರ ಸರ್ವೋತ್ತಮನು ಸಿಕ್ಕಲು, ರಘವು ಕೋಪದಿಂದ ಆತನನ್ನು ಕುರಿತು – “ಏನಯಾ – ಈ ನೀಚತನವೇ?”

ಸರ್ವ – “ಏನು ನೀಚತನ?”
ರಘು – “ಉಂಗುರದ ಜುಮ್ಮು? ಇಲ್ಲವೇ ಇಲ್ಲ!”
ಸರ್ವ -ನೀನು ಅದನ್ನು ಹೇಗೆ ಕೈಗೆ ಹಾಕಿಕೊಂಡೆ?”
ರಘು- “ಟಪ್ಪಾಲಿನವನ ಕೈಯಿಂದ ಪಡೆದ ಕೂಡಲೇ.”
ಸರ್ವ – “ಆಗ ಊಟಗೀಟವಾಗಿತ್ತೇ?”
ರಘು- “ಇಲ್ಲಪ್ಪಾ -ಸ್ನಾನ ಕೂಡಾ ಆಗಿರಲಿಲ್ಲ.”
ಸರ್ವ (ಸಂತೋಷದಿಂದ) – “ಸರಿ! ನಿನ್ನಂತಹ ಮೂರ್ಖನು ನೀನೆ! ಸ್ನಾನ ಮಾಡದೆ ಕೈಬೆರಳಿಗೆ ತಾಯಿತದ ಉಂಗುರವನ್ನು ಹಾಕಿಕೊಳ್ಳುವ ಬ್ರಾಹ್ಮಣರೂ ಇರುವರೇ? ಹತ್ತು ರೂಪಾಯಿಗಳನ್ನು ನೀರಿಗೆ ಹಾಕಿದಿಯಲ್ಲ!”

ರಘುವಿಗೆ (ಆಗ ಕೈಯ್ಯಲ್ಲಿ ಉಂಗುರವಿರಲಿಲ್ಲ.) ಮೈ ಝುಮ್ಮೆಂದಿತು.

ರಘುವಿನ ೧೯೩೩ನೇ ಇಸವಿಯ ಡೈರಿಯನ್ನು ತೆಗೆದು, ದಶಂಬರ ತಿಂಗಳ ಪುಟವೊಂದರಲ್ಲಿ ನೋಡಿರಿ- “ಮೈ ಝುಮ್ಮಾಗುವ ಸುಳ್ಳಿಗೆ ಕೊಟ್ಟ ಹಣ- ಹತ್ತು ರೂಪಾಯಿ” ಎಂದು ಬರೆದಿದೆ.

ಈಗ ವರ್ಷವೇ ಕಳೆದರೂ, ಆ ತಾಯಿತವಿಲ್ಲದೆ ಅವನ ಮೈ ಆಗಾಗ ಇದನ್ನು ನೆನೆದಾಗಲೆಲ್ಲಾ ಝುಮ್ಮೆನ್ನುತ್ತಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪತ್ರ
Next post ಖರ್ಬೂಜದ ಗಾಡಿ

ಸಣ್ಣ ಕತೆ

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…