Home / ಲೇಖನ / ಇತರೆ / ನಿಮ್ಮ ಕುರಿತು ಅಭಿಪ್ರಾಯ

ನಿಮ್ಮ ಕುರಿತು ಅಭಿಪ್ರಾಯ

ಸಾಯಂಕಾಲ ಮದರಾಸಿನಿಂದ ಬಂದ ಮೈಲ್ ಬಂಡಿಯು ಕಾಸರಗೋಡು ನಿಲ್ದಾಣದಲ್ಲಿ ನಿಲ್ಲುತ್ತಲೇ ಅದನ್ನು ಹತ್ತಿದ ಕೆಲವು ಪ್ರಯಾಣಿಕರಲ್ಲಿ ಅಚುತನೂ ಒಬ್ಬ. ಅಚ್ಯುತನೆಂದರೆ – ಮಾತಿನ ಮಲ್ಲ. ಅವನಿಗೆ ಪರಿಚಿತರನ್ನು ಕಂಡರೆ ಮಾತ್ರ ಮಾತು ಬರುವುದಲ್ಲ – ಅಪರಿಚಿತರನ್ನು ಕಂಡರೂ ಆಷಾಢ ಮಾಸದ ಮಳೆಯಂತೆ ಎಡೆಬಿಡದೆ ಮಾತಾಡುವವನೇ! ಮಾತಾಡುವಾಗ, ಆ ಸಂಭಾಷಣೆಯಲ್ಲಿ ಬರುವ ವ್ಯಕ್ತಿಗಳನ್ನು ಟೀಕಿಸುವನು: ಬಾರದ ವ್ಯಕ್ತಿಗಳನ್ನು ತಾನೇ ತಂದು, ಅವರ ಜೀವನ, ನಡೆ, ನುಡಿ, ಪೋಷಾಕು ಎಲ್ಲವುಗಳ ಮೇಲೆ ಅಭಿಪ್ರಯ ಕೊಡುವನು.

ರೈಲು ಹತ್ತುತ್ತಲೇ ಅವನು ಹೋಗಿ ಕುಳಿತುದು ಒಬ್ಬ ಹಳೇ ಮನುಷ್ಯನ ಜತೆಯಲ್ಲಿ, ‘ಹಳೇ ಮನುಷ್ಯ’ನೆಂದರೆ – ಕ್ರಾಪ್ ಇಲ್ಲದ, ಆಧುನಿಕ ವಿಧದ ಪೋಷಾಕುಗಳಿಲ್ಲದ, ಕೇವಲ ‘ಶಟ್ ಕೋಟ’ನ್ನು ಹಾಕಿ, ಮುಂಡಾಸಿಟ್ಟು, ಅದರ ಎಡೆಯಿಂದ ನರೆತ ಕೂದಲನ್ನು ಪ್ರದರ್ಶಿಸುತ್ತಿರುವ ಹಳಬನೆಂದರ್‍ಥ.

“ತಾವು ಎಲ್ಲಿಂದ ಬಂದಿರಿ ಸ್ವಾಮಿ?” ಎಂದು ಮೊದಲು ಮಾಡಿದನು ಅಚ್ಯುತ.

ಹಳಬನು ಕೊಂಚ ಬಾಯಿ ಬಿರಿದು- “ಪೊದನೂರಿ ನಿಂದ!” ಎಂದನು.

“ಪೊದನೂರು!…. ನಾನು ಆ ಸ್ಟೇಷನನ್ನು ಒಮ್ಮೆ ದಾಟಿದ್ದೇನೆ!” ಎನ್ನುತ್ತ ಅಚ್ಯುತನು ತನ್ನ ಮಾತಿನ ಭಾಂಡಾಗಾರವನ್ನು ಅಡಿ ಮೇಲಾಗಿಯೇ ಹಿಡಿದು, ಅದರ ಬಾಯಿ ತೆರೆದನು. ಮಾತುಗಳು ಬಡಬಡನೆ ಉದುರಲಾರಂಭಿಸಿದುವು. ಮಾತನಾಡುತ್ತ, ಮಂಗಳೂರಿನ ಪಂಡಿತ ಶಿವಣ್ಣಯ್ಯನ ವಿಷಯವೂ ಬಂತು.

“ಪಂಡಿತ ಶಿವಣ್ಣಯ್ಯ! ಯಾರೋ ಒಬ್ಬ ಹಳಬ ಸ್ವಾಮಿ, ತಾನೊಬ್ಬ ವಿದ್ವಾನನೆಂದು ಗರ್‍ವ ಆ ಮುದಿ ಗೂಬೆಗೆ! ಚಿಕ್ಕ ಬಾಲಕರು ಬರೆದುದನ್ನೂ, ಬೆಳೆದ ಯೌವನಸ್ಥರು ಪ್ರಕಟಿಸಿದುದನ್ನೂ ದೂರುವುದೇ ಕೆಲಸ! ಪುಣ್ಯಾತ್ಮ ತಾನೊಂದೂ ಪಂಕ್ತಿ ಬರೆದುದಿಲ್ಲ. ನವಕವಿತೆಯೆಂದರೆ, ಬರೆದವರಿಗೇ ಅರ್ಥವಾಗದ, ನಿಷ್ಪ್ರಯೋಜಕವಾದ, ಸಂಗೀತ ವಿಹೀನವಾದ, ಛಂದೋಶಾಸ್ತ್ರದ ಕೊಲೆ ಮಾಡಿ ಅದರ ಬೂದಿಯ ಮೇಲೆ ಕಟ್ಟಲ್ಪಟ್ಟ ಮುರುಕು ಗುಡಿಸಲುಗಳಂತೆ! ಒಮ್ಮೆ ಅವನನ್ನೆ ಕೆಲವರು ಒಂದು ಲೇಖನಕ್ಕಾಗಿ ಒತ್ತಾಯ ಪಡಿಸಲು, – ಭಾಮಿನಿ ಷಟ್ಪದಿಯಲ್ಲಿ ಎರಡು ಪದ್ಯಗಳನ್ನು ಬರೆದುಕೊಟ್ಟನು; ಜತೆಯಲ್ಲಿ ಒಂದು ಕತೆಯನ್ನು ಕಳುಹಿಸಿ “ಇದು ಸಣ್ಣ ಕತೆಗೆ ಮಾದರಿ” ಎಂದನು. ಓದಿದವರೆಲ್ಲ ನೋಡಿ ನಕ್ಕುಬಿಟ್ಟರು ಸ್ವಾಮಿ! ವಿದ್ವಾನರಾದರೇನು, ಆತನಿಗೆ ಕೆಲವು ಶಬ್ದಗಳು ಹೆಚ್ಚಿಗೆ ಬರಬಹುದು – ಇತರ ಸಾಮಾನ್ಯ ಬರಹಗಾರರಿಗೆ ಕೆಲವು ಕಡಿಮೆ; ಆದರೆ, ಕೇವಲ ಶಬ್ದ ಭಾಂಡಾಗಾರವು ದೊಡ್ಡದೆಂದು ಚಲೋ ಕಲ್ಪನೆಗಳನ್ನು ತಮಗೆ ತಿಳಿದ ಭಾಷೆಯಲ್ಲಿ ಪ್ರಕಟಿಸುವ ತರುಣರನ್ನು ದೂರುವುದೇ? ಹಾಗೆ ದೂರುವವರು ತಾವೇ “ಮಾದರಿ”ಯೆಂದು ಬರೆದೂ ನಗೆಗೀಡಾಗುವುದೇ? ನನಗೆ ಆ ಶಿವಣ್ಣಯ್ಯ ದೊರೆತರೆ – ‘ನೀನಿನ್ನು ಕೇವಲ ವಿದ್ವಾನನೆಂಬ ಬಿರುದನ್ನು ಹಿಡಿದು ಕೊಂಡು ತಣ್ಣಗೆ ಮನೆಮೂಲೆಯಲ್ಲಿ ಪಂಪಭಾರತವನ್ನೋದಿ ಪುಣ್ಯಗಳಿಸಿಕೊಂಡಿರುವುದೊಳ್ಳಿತೆ’ಂದು ಹೇಳುತಿದ್ದೆ ಸ್ವಾಮಿ, ಆದರೆ, ಹೋಗಲಿ, ನಮಗೇನು?”

ಹಳಬನು ಇದನ್ನೆಲ್ಲ ಮಂದಸ್ಮಿತದಿಂದ ಕೇಳುತ್ತಲೇ ಇದ್ದನು, ಚಾ-ಚೂ ಎನ್ನಲಿಲ್ಲ. ರೈಲು ಬಂಡಿಯು ಮಂಗಳೂರು ನಿಲ್ದಾಣಕ್ಕೆ ಬಂದು ತಲಪಿತು. ಅಚ್ಯುತನು, ಆ ಹಳಬನೊಂದಿಗೆ ಕೆಳಗಿಳಿಯುತ್ತ, “ನಮಸ್ಕಾರ ಸ್ವಾಮಿ, ಹೋಗುತ್ತೇನೆ. ಇನ್ನೊಮ್ಮೆ ಎಲ್ಲಾದರೂ ನಾವು ಭೇಟಿಯಾಗಬಹುದು. ಬಂಡಿಯಲ್ಲಿ ನೀವಿದ್ದುದರಿಂದ ಸಮಯ ಕಳೆದು ಹೋದುದೇ ತಿಳಿಯಲಿಲ್ಲ. . . . . ನಮಸ್ಕಾರ . . . . ನಿಮ್ಮ ಹೆಸರು?”

ಹಳಬನು ನಗುತ್ತ “ನನ್ನ ಹೆಸರು . . . . . ಅಗತ್ಯ ವಿದೆಯೇ?” ಎಂದು ಕೇಳಿದನು.

“ಹೊಸ ಪರಿಚಯ – ಹೆಸರನ್ನು ತಿಳಿಯದುಂಟೇ”

ಹಳಬನು ತನ್ನ ಕಿಸೆಯಿಂದೊಂದು ಕಾಗದವನ್ನು ತೆಗೆದು, ಪೆನ್ಸಿಲಿನಿಂದ ಅದರ ಮೇಲೆ ತನ್ನ ಹೆಸರನ್ನು ಬರೆದು ಕೊಟ್ಟನು. ಅಚ್ಯುತನು ಓದಿದನು: –

“ಪಂಡಿತ ಶಿವಣ್ಣಯ್ಯ, ವಿದ್ವಾನ್.”
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...