Home / ಕವನ / ಕವಿತೆ / ಅಣ್ಣನ ವಿಲಾಪ

ಅಣ್ಣನ ವಿಲಾಪ

(ಚೌಪದಿ)

ಎಲ್ಲಿ ಹೋದನು ಅಮ್ಮ ಪುಟ್ಟಣ್ಣ ನಮ್ಮಾ? |
ನಿಲ್ಲದವನನು ತರುವೆ ಹುಡುಕಿ ನಾನಮ್ಮಾ| ||
ಅಲ್ಲಿಲ್ಲ, ಇಲ್ಲಿಲ್ಲ, ಎಲ್ಲಿಹನು ತಮ್ಮಾ? |
ತಲ್ಲಣಿಸುತಿದೆ ಮನವು; ಹೇಳು ಸೀತಮ್ಮಾ! ||೧||

“ಹಸೆಯ ಮಗುವನು ಮೊನ್ನೆ ಬಂದವರು ನೋಡಿ, |
ಮಸುಕು ಬಿಳಿ ಕಣ್ಣುಗಳ ಕದಗಳನು ಹೂಡಿ, ||
ಹಸಿ ತುಳಸಿದಳ ನೀರ ಒಣ ಬಾಯೊಳೂಡಿ, |
ಬಿಸಿಲುಕನ್ನಡಿಯನ್ನು ಮಾಡಿನಲ್ಲಿ ಮಾಡಿ,” ||೨||

“ಸುದ್ದ ನೀರನು ಮೀಸಿ, ಅರಸಿನವ ಪೂಸಿ, |
ಗದ್ದೆ ಗೋರುವ ಹಲಗೆಯಲ್ಲಿ ಎಲೆ ಹಾಸಿ, ||
ಮುದ್ದು ಪುಟ್ಟನನುಡಿಗೆಯಿಂದ ಸಿಂಗರಿಸಿ, |
ಸದ್ದಿಲ್ಲದೆಲ್ಲಿಗೊಯ್ದರು ಹೆಗಲೊಳಿರಿಸಿ?” ||೩||

ಚೆನ್ನಾಗಿ ಸೇಸೆಮಳೆ ಸೂಸುತಿರೆ ಕನ್ನೆ, |
ನಿನ್ನೊಡನಿರುಳ್ ನಿದ್ದೆಯಲ್ಲಿ ಕಂಡ ನಿನ್ನೆ- ||
‘ಬನ್ನಿ ಬಾ ಬಾ’ ಎಂದು ಮಾಡಿ ಕೈಸನ್ನೆ |
ನನ್ನೆದುರು ಬಂದು ಹೋದಾ ಪುಟ್ಟನನ್ನೆ. ||೪||

ಮಬ್ಬು ತೆರೆ ಹಿಂದುಗಡೆ ಜಾರಿದುದು ತಾರೆ. |
ಹೆಬ್ಬಿಸಿಲ ಉಗುಳುವಂತಿಹುದು ಹೊತ್ತಾರೆ. ||
ಉಬ್ಬಸರಿ ಮೊದಲೆ ಬಾಲನ ಮೈಯು ತಾರೆ, |
ಅಬ್ಬೆ! ನಡೆಯುವನೆಂತು? ಬೇಗ ಕರತಾರೆ. || ೫||

ಬಳ್ಳಿ ಉಯ್ಯಾಲೆಯಲ್ಲಿ ಗಿಳಿಯ ಮರಿ ತೂಗಿ, |
ಉಳ್ಳಲರ ಜೇನ್‌ಗುಡಿದು ಮರಿದುಂಬಿ ಕೂಗಿ, ||
ಬೆಳ್ಳಿ ನೀರ್‌ ಬಿಸಿಲಲ್ಲಿ ಮುಳುಗಿದಂತಾಗಿ |
ಹಳ್ಳಿ ಹಗಲಿರೆ-ಪುಟ್ಟನಾಡುವನೆ ಹೋಗಿ? ||೬||

ತಾಯ್ದನದ ಬಳಿ ಹೋಗದೀ ಕರುವು ನಿಂದು, |
ಕಾಯ್ದನಂ ಕರೆಯುತಿದೆ ನೆನಸಿ ‘ಮ್ಬೇ’ ಎಂದು. ||
ನಾಯ್ದುಗುಡದಲಿ ಬಿಡದೆ ಮಗುವಿದ್ದ ಸ್ಥಲವಾ, |
ಬಾಯ್ದೆರೆಯದಾಗಾಗ ಮೂಸುತಿದೆ ನೆಲವಾ. ||೭||

“ಇವನ ಚಿಲುವಿನ ಪುಂಜ ಹೋಯ್ತೆ ಮರಿಯಲ್ಲೆ! |
ಸವೆಯಿತೇ ಕಾಲವಂಕುರದ ಪರಿಯಲ್ಲೆ! ||
ಕುವರನಾ ಬಾಳೆ ಕಂದಿತೆ ಕಂದಿನಲ್ಲೆ! |
ಸವಿ ಬಂದುಗೇನಾಯ್ತು ನನೆಸಂದಿನಲ್ಲೆ! ||೮||

ದೀಪಾವಳಿಯ ದಿನ ಬಲೀಂದ್ರ ಮರ ನೆಡಿಸಿ, |
ಕೇಪಳಂಬಳ ಕಾಯಿ ಗುಂಡುಸರ ತೊಡಿಸಿ, ||
ಆ ಪೂಜೆಯಾಗುತಿರೆ ತಮ್ಮನನು ಬಿಟ್ಟು, !
ಕೈಪರೆ ಹೊಡೆವುದೆಂತು? ಬರುವುದೇ ಪುಟ್ಟು,? ||೯||

ನರಿಮೊಗರು ಜಾತ್ರೆಯಲಿ ನನ್ನನ್ನು ಕಂಡು, |
ಅರರೆ ತಮ್ಮನನೇಕೆ ನಾನು ಕರಕೊಂಡು |
ಬರಲಿಲ್ಲ? ಎಂದಾ ಗೆಳೆಯರೆನ್ನ ಕೇಳೆ, |
ಮರುಮಾತು ನಾನೇನು ಕೊಡಲಮ್ಮ ನಾಳೆ? ||೧೦||

ಒಬ್ಬನೇ ತಿನಿಸುಣಿಸು ನಾ ಬೇಡಲಾರೆ. |
ಇಬ್ಬರಿಲ್ಲದೆ ಈಗ ನಾನಾಡಲಾರೆ, ||
ತಬ್ಬಿಕೊಂಡೆನ್ನ ನೀಂ ಅಳುವುದೇನಿ೦ತು? |
ಅಬ್ಬೆ, ಅಳದಿರು ಪುಟ್ಟ ಎಲ್ಲಿಹನು ನಿಂತು? ||೧೧||

ತಾಯಿ- ಮುತ್ತಿನಾ ಸರಪಳಿಯೆ! ಮಾತಿನರಗಿಳಿಯೆ! |
ಎತ್ತ ಹೋದನು ತಮ್ಮ ಎಂಬುದು ತಿಳಿಯೆ. ||
ಇತ್ತವನೆ ಎತ್ತಿದನು! ಕೇಳು, ಪುತ್ಥಳಿಯೇ! |
ಬಿತ್ತಿದವ ಒತ್ತರಿಸಿದನು ತನ್ನ ಬಳಿಯೆ? ||೧೨||

ಮುಗುವು ಮುದ್ದಿನ ಮೊಗವು, ಅವನಿಲ್ಲಿ ಬಾರಂ |
ಆಗಲಿ ನಮ್ಮನು ಹೋದ ಹೋದ ಬಹುದೂರಂ ||
ಜಗದಂಬೆ ತೊಡೆಯಲ್ಲಿ ಲಾಲಿ ಕೇಳುತ್ತ |
ಸೋಗನಿದ್ದೆಗೊಂಡವನು ಬರುವನೇ ಇತ್ತ? ||೧೩||

ಮಗು- “ಈಗಲೇ ಹೊರಡುವೆನು, ಕೈ ಬಿಡೌ, ಅಮ್ಮಾ ! |
ಬೇಗ ಅಪ್ಪನು ಬರುವ ಮುಂಚೆಯೇ, ಅಮ್ಮಾ! ||
ಹೋಗುವೆನು, ಹೋಗುವೆನು; ಹೊರ ಹೊರಡು; ಅಮ್ಮಾ! |
ಕೂಗಿ ಅಳದಿರು; ದಾರಿ ತೋರಿಸೌ! ಅಮ್ಮಾ! || ೧೪ ||

ತಾಯಿ-ಚಂದು ಕೇಳ್! ದಾರಿಯಲಿ ನಾ ಪೋಪೆ ಮುಂದೆ |
ಬಂದವನು ಬಳಿಕ ನಿನ್ನಯ ಮುದ್ದು ತಂದೆ ||
ಮಂದಿ ಮಕ್ಕಳು ಪಡೆದು ಬಾ ನೀನು ಹಿಂದೆ. |
ಎಂದವನ ಬಾಯಿ ಬಿಗಿದಳು ಮುದ್ದಿನಿಂದೆ. ||೧೫||

ಆರಲಿಲ್ಲವು; ತಾಯ ಮನದ ಪರಿತಾಪಂ |
ಆರಿದುದು ಮಾತೆಯಾ ಮನೆಯ ಮಣಿದೀಪಂ. ||
ಆರಲಿಲ್ಲವು ತಾಯ ಕಂಬನಿಯ ಕೂಪಂ |
ಆರಿದುದು ಭಾಗ್ಯಾಬ್ಧಿ, ಅಯ್ಯಯ್ಯೋ ಪಾಪಂ! ||೧೬||
*****
(ಪದ್ಯ ಪುಸ್ತಕ)

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...