Home / ಕವನ / ಕವಿತೆ / ಅಣ್ಣನ ವಿಲಾಪ

ಅಣ್ಣನ ವಿಲಾಪ

(ಚೌಪದಿ)

ಎಲ್ಲಿ ಹೋದನು ಅಮ್ಮ ಪುಟ್ಟಣ್ಣ ನಮ್ಮಾ? |
ನಿಲ್ಲದವನನು ತರುವೆ ಹುಡುಕಿ ನಾನಮ್ಮಾ| ||
ಅಲ್ಲಿಲ್ಲ, ಇಲ್ಲಿಲ್ಲ, ಎಲ್ಲಿಹನು ತಮ್ಮಾ? |
ತಲ್ಲಣಿಸುತಿದೆ ಮನವು; ಹೇಳು ಸೀತಮ್ಮಾ! ||೧||

“ಹಸೆಯ ಮಗುವನು ಮೊನ್ನೆ ಬಂದವರು ನೋಡಿ, |
ಮಸುಕು ಬಿಳಿ ಕಣ್ಣುಗಳ ಕದಗಳನು ಹೂಡಿ, ||
ಹಸಿ ತುಳಸಿದಳ ನೀರ ಒಣ ಬಾಯೊಳೂಡಿ, |
ಬಿಸಿಲುಕನ್ನಡಿಯನ್ನು ಮಾಡಿನಲ್ಲಿ ಮಾಡಿ,” ||೨||

“ಸುದ್ದ ನೀರನು ಮೀಸಿ, ಅರಸಿನವ ಪೂಸಿ, |
ಗದ್ದೆ ಗೋರುವ ಹಲಗೆಯಲ್ಲಿ ಎಲೆ ಹಾಸಿ, ||
ಮುದ್ದು ಪುಟ್ಟನನುಡಿಗೆಯಿಂದ ಸಿಂಗರಿಸಿ, |
ಸದ್ದಿಲ್ಲದೆಲ್ಲಿಗೊಯ್ದರು ಹೆಗಲೊಳಿರಿಸಿ?” ||೩||

ಚೆನ್ನಾಗಿ ಸೇಸೆಮಳೆ ಸೂಸುತಿರೆ ಕನ್ನೆ, |
ನಿನ್ನೊಡನಿರುಳ್ ನಿದ್ದೆಯಲ್ಲಿ ಕಂಡ ನಿನ್ನೆ- ||
‘ಬನ್ನಿ ಬಾ ಬಾ’ ಎಂದು ಮಾಡಿ ಕೈಸನ್ನೆ |
ನನ್ನೆದುರು ಬಂದು ಹೋದಾ ಪುಟ್ಟನನ್ನೆ. ||೪||

ಮಬ್ಬು ತೆರೆ ಹಿಂದುಗಡೆ ಜಾರಿದುದು ತಾರೆ. |
ಹೆಬ್ಬಿಸಿಲ ಉಗುಳುವಂತಿಹುದು ಹೊತ್ತಾರೆ. ||
ಉಬ್ಬಸರಿ ಮೊದಲೆ ಬಾಲನ ಮೈಯು ತಾರೆ, |
ಅಬ್ಬೆ! ನಡೆಯುವನೆಂತು? ಬೇಗ ಕರತಾರೆ. || ೫||

ಬಳ್ಳಿ ಉಯ್ಯಾಲೆಯಲ್ಲಿ ಗಿಳಿಯ ಮರಿ ತೂಗಿ, |
ಉಳ್ಳಲರ ಜೇನ್‌ಗುಡಿದು ಮರಿದುಂಬಿ ಕೂಗಿ, ||
ಬೆಳ್ಳಿ ನೀರ್‌ ಬಿಸಿಲಲ್ಲಿ ಮುಳುಗಿದಂತಾಗಿ |
ಹಳ್ಳಿ ಹಗಲಿರೆ-ಪುಟ್ಟನಾಡುವನೆ ಹೋಗಿ? ||೬||

ತಾಯ್ದನದ ಬಳಿ ಹೋಗದೀ ಕರುವು ನಿಂದು, |
ಕಾಯ್ದನಂ ಕರೆಯುತಿದೆ ನೆನಸಿ ‘ಮ್ಬೇ’ ಎಂದು. ||
ನಾಯ್ದುಗುಡದಲಿ ಬಿಡದೆ ಮಗುವಿದ್ದ ಸ್ಥಲವಾ, |
ಬಾಯ್ದೆರೆಯದಾಗಾಗ ಮೂಸುತಿದೆ ನೆಲವಾ. ||೭||

“ಇವನ ಚಿಲುವಿನ ಪುಂಜ ಹೋಯ್ತೆ ಮರಿಯಲ್ಲೆ! |
ಸವೆಯಿತೇ ಕಾಲವಂಕುರದ ಪರಿಯಲ್ಲೆ! ||
ಕುವರನಾ ಬಾಳೆ ಕಂದಿತೆ ಕಂದಿನಲ್ಲೆ! |
ಸವಿ ಬಂದುಗೇನಾಯ್ತು ನನೆಸಂದಿನಲ್ಲೆ! ||೮||

ದೀಪಾವಳಿಯ ದಿನ ಬಲೀಂದ್ರ ಮರ ನೆಡಿಸಿ, |
ಕೇಪಳಂಬಳ ಕಾಯಿ ಗುಂಡುಸರ ತೊಡಿಸಿ, ||
ಆ ಪೂಜೆಯಾಗುತಿರೆ ತಮ್ಮನನು ಬಿಟ್ಟು, !
ಕೈಪರೆ ಹೊಡೆವುದೆಂತು? ಬರುವುದೇ ಪುಟ್ಟು,? ||೯||

ನರಿಮೊಗರು ಜಾತ್ರೆಯಲಿ ನನ್ನನ್ನು ಕಂಡು, |
ಅರರೆ ತಮ್ಮನನೇಕೆ ನಾನು ಕರಕೊಂಡು |
ಬರಲಿಲ್ಲ? ಎಂದಾ ಗೆಳೆಯರೆನ್ನ ಕೇಳೆ, |
ಮರುಮಾತು ನಾನೇನು ಕೊಡಲಮ್ಮ ನಾಳೆ? ||೧೦||

ಒಬ್ಬನೇ ತಿನಿಸುಣಿಸು ನಾ ಬೇಡಲಾರೆ. |
ಇಬ್ಬರಿಲ್ಲದೆ ಈಗ ನಾನಾಡಲಾರೆ, ||
ತಬ್ಬಿಕೊಂಡೆನ್ನ ನೀಂ ಅಳುವುದೇನಿ೦ತು? |
ಅಬ್ಬೆ, ಅಳದಿರು ಪುಟ್ಟ ಎಲ್ಲಿಹನು ನಿಂತು? ||೧೧||

ತಾಯಿ- ಮುತ್ತಿನಾ ಸರಪಳಿಯೆ! ಮಾತಿನರಗಿಳಿಯೆ! |
ಎತ್ತ ಹೋದನು ತಮ್ಮ ಎಂಬುದು ತಿಳಿಯೆ. ||
ಇತ್ತವನೆ ಎತ್ತಿದನು! ಕೇಳು, ಪುತ್ಥಳಿಯೇ! |
ಬಿತ್ತಿದವ ಒತ್ತರಿಸಿದನು ತನ್ನ ಬಳಿಯೆ? ||೧೨||

ಮುಗುವು ಮುದ್ದಿನ ಮೊಗವು, ಅವನಿಲ್ಲಿ ಬಾರಂ |
ಆಗಲಿ ನಮ್ಮನು ಹೋದ ಹೋದ ಬಹುದೂರಂ ||
ಜಗದಂಬೆ ತೊಡೆಯಲ್ಲಿ ಲಾಲಿ ಕೇಳುತ್ತ |
ಸೋಗನಿದ್ದೆಗೊಂಡವನು ಬರುವನೇ ಇತ್ತ? ||೧೩||

ಮಗು- “ಈಗಲೇ ಹೊರಡುವೆನು, ಕೈ ಬಿಡೌ, ಅಮ್ಮಾ ! |
ಬೇಗ ಅಪ್ಪನು ಬರುವ ಮುಂಚೆಯೇ, ಅಮ್ಮಾ! ||
ಹೋಗುವೆನು, ಹೋಗುವೆನು; ಹೊರ ಹೊರಡು; ಅಮ್ಮಾ! |
ಕೂಗಿ ಅಳದಿರು; ದಾರಿ ತೋರಿಸೌ! ಅಮ್ಮಾ! || ೧೪ ||

ತಾಯಿ-ಚಂದು ಕೇಳ್! ದಾರಿಯಲಿ ನಾ ಪೋಪೆ ಮುಂದೆ |
ಬಂದವನು ಬಳಿಕ ನಿನ್ನಯ ಮುದ್ದು ತಂದೆ ||
ಮಂದಿ ಮಕ್ಕಳು ಪಡೆದು ಬಾ ನೀನು ಹಿಂದೆ. |
ಎಂದವನ ಬಾಯಿ ಬಿಗಿದಳು ಮುದ್ದಿನಿಂದೆ. ||೧೫||

ಆರಲಿಲ್ಲವು; ತಾಯ ಮನದ ಪರಿತಾಪಂ |
ಆರಿದುದು ಮಾತೆಯಾ ಮನೆಯ ಮಣಿದೀಪಂ. ||
ಆರಲಿಲ್ಲವು ತಾಯ ಕಂಬನಿಯ ಕೂಪಂ |
ಆರಿದುದು ಭಾಗ್ಯಾಬ್ಧಿ, ಅಯ್ಯಯ್ಯೋ ಪಾಪಂ! ||೧೬||
*****
(ಪದ್ಯ ಪುಸ್ತಕ)

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...