Home / ಕಥೆ / ಕಿರು ಕಥೆ / ಲಂಚದ ಮನೆ

ಲಂಚದ ಮನೆ

ಆನಂದಪ್ಪ ಆ ಶಹರದ ಹೃದಯಭಾಗದಲ್ಲಿ ಮನೆ ಕಟ್ಟಿಸಲು ಶುರು ಮಾಡಿದ. ಅಲ್ಲಿನದು ಬಹು ಮೌಲ್ಯದ ಬಯಲು ಜಾಗೆ. ಅದು ಅವನಿಗೆ ಬಳುವಳಿಯಾಗಿ ಸಿಕ್ಕಿತ್ತು.

ಆನಂದಪ್ಪ ಒಬ್ಬ ಇಂಜಿನಿಯರ್‍. ಸರಕಾರಿ ಹುದ್ದೆಯಲ್ಲಿದ್ದ. ತಾನು ಕಟ್ಟಿಸುವ ಮನೆ ಭೂಮಿಯ ಮೇಲಿನ ಸ್ವರ್ಗಧಾಮದಂತಿರಬೇಕೆಂದು ಕನಸು ಕಂಡಿದ್ದ. ಅವನ ಕೈ ಕೆಳಗಿನ ನಾಲ್ಕಾರು ಜನ ಇಂಜಿನಿಯರ್‌ಗಳು ಆ ಕನಸಿನ ಸಾಕಾರಕ್ಕಾಗಿ ಸತತವಾಗಿ ಪರಿಶ್ರಮಿಸತೊಡಗಿದ್ದರು.

ಕೆಲವು ಕಂಟ್ರಾಕ್ಟರರು ಆನಂದಪ್ಪ ಹೇಳದಿದ್ದರೂ ಮನೆಯ ಕಟ್ಟಡಕ್ಕೆ ಬೇಕಾಗುವಷ್ಟು ಕಬ್ಬಿಣ, ಸಿಮೆಂಟು, ಕಲ್ಲು, ಉಸುಕು, ಕಿಟಕಿ, ಬಾಗಿಲು ಪೂರೈಸಿದ್ದರು. ಗೌಂಡಿಗಳು ತಮ್ಮ ಶ್ರಮದ ಬೆವರನ್ನು ಕಟ್ಟಡಕ್ಕೆ ಹನಿಸುತ್ತ ಬಹಳ ಮುತುವರ್ಜಿಯಿಂದ ಕೆಲಸ ಮಾಡುತ್ತಿದ್ದರು.

ಹಣ ಎಷ್ಟು ಖರ್ಚಾದರೂ ಚಿಂತೆಯಿಲ್ಲ. ಮನೆ ಮಾತ್ರ ಸುಂದರವಾಗಿರಬೇಕೆಂದು ಇಂಜಿನಿಯರ್‍ ಪತ್ನಿ ಪದೆ ಪದೆ ಹೇಳುತ್ತಿದ್ದಳು. ಅವಳ ಮನಸ್ಸಿಗೆ ಬೇಸರವೆನಿಸಿದರೆ ಕಟ್ಟಡವನ್ನು ಕೆಡವಿ ಹಾಕಲಾಗುತ್ತಿತ್ತು. ಇಂಜಿನಿಯರಿಂದ ಶುಕ್ರದೆಸೆ ಅನುಭವಿಸಿದ್ದ ಕಾಂಟ್ರಾಕ್ಟರರು ಒಂದು ಚಕಾರ ಶಬ್ದ ಆಡದೇ ಅವಳ ನಿರ್ದೇಶನಗಳನ್ನು ಪಾಲಿಸುತ್ತಿದ್ದರು.

ಕೊನಗೂ ಮನೆ ತಯಾರಾಯಿತು. ಎಂಥ ಅಪರೂಪದ ಮನೆ ಅದು!

ಒಳ-ಹೊರ ಗೋಡೆಗಳಿಗೆ ಸಂಗಮವರಿ ಕಲ್ಲುಗಳನ್ನು ಹೊರಿಸಲಾಗಿತ್ತು. ನೆಲದ ಹಾಸುಗಲ್ಲುಗಳಲ್ಲಿ ನಡೆದಾಡುವವರ ಪ್ರತಿಬಿಂಬ ಕಾಣಿಸುತ್ತಿತು. ತೇಗ-ಗಂಧದ ಕಿಟಕಿ, ಬಾಗಿಲುಗಳು ಹೊಸ ವಿನ್ಯಾಸದೊಂದಿಗೆ ಮನಮೋಹಕವಾಗಿದ್ದವು. ಮನೆ ನೋಡಿದವರೆಲ್ಲ ಬೆರಗುಗೊಂಡು ಅದ್ಭುತ! ಎಂದು ಬಣ್ಣಿಸುವರು.

ಅಂತೂ ಆ ಮನೆ ಗೃಹ ಪ್ರವೇಶಕ್ಕೆ ಸಿದ್ಧಗೊಂಡಿತು.

ಇಂಜಿನಿಯರ್‍ ಪತ್ನಿ ಮೂಹೂರ್ತ ಗೊತ್ತುಪಡಿಸಲು ಕಾರು ಹತ್ತಿ ಜೋಯಿಸರ ಮನೆಗೆ ಹೋದಳು. ತಿರುಗಿ ಬರುವಾಗ ರಸ್ತೆಯ ತಿರುವಿನಲ್ಲಿ ಕಾರು ಅಪಘಾತಕ್ಕೀಡಾಗಿ ಆಕೆ ಸ್ಥಳದಲ್ಲಿಯೇ ಅಸುನೀಗಿದ್ದಳು. ಹೆಂಡತಿಯ ಸಾವಿನ ಸುದ್ದಿ ಕೇಳಿದ್ದೆ ತಡ ಇಂಜಿನಿಯರ್‍ ಸಾಹೇಬರು ಹಠಾತ್ತನೆ ಹೃದಯಾಘಾತಕ್ಕೆ ಕುಸಿದು ಬಿದ್ದರು.

ಆ ಚೆಂದದ ಮನೆಯಲ್ಲಿ ಬದುಕುವ ತೀವ್ರ ತುಡಿತವಿದ್ದ ಗಂಡ-ಹೆಂಡತಿ ತಣ್ಣಗೆ ಸ್ಮಶಾನದ ಮಣ್ಣಲ್ಲಿ ಮಲಗಿದರು. ಮನೆಯನ್ನು ಹೊಗಳಿದ ಜನರೆ “ಇದು ಗೃಹದೋಷದ ಪ್ರಭಾವ!” ಎಂದರು.

*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ