ಕೃಷಿ

ಅದೊಂದು ಪುಟ್ಟ ಗ್ರಾಮ. ಅಲ್ಲಿನ ತರುಣ ಸಂಘವರು ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಸನ್ಮಾನಿತನಾದವನು ಹೆಸರಾಂತ ಕವಿ. ಅವನೂ ಅದೇ ಹಳ್ಳಿಯವನು. ಸಾಹಿತ್ಯ ಅಕಾಡಮಿಯ ಪ್ರಶಸ್ತಿ ದೊರಕಿಸಿಕೊಂಡಿದ್ದರಿಂದ ಊರ ಜನ ಪ್ರೀತಿ, ಅಭಿಮಾನದಿಂದ ಕವಿಯನ್ನು ಬರಮಾಡಿಕೊಂಡಿದ್ದರು. ಮತ್ತು ಸಂಭ್ರಮದಿಂದ ಕವಿಗೆ ಶಾಲು ಹೊದಿಸಿ, ಹಾರ ಹಾಕಿ, ಅಮೂಲ್ಯ ಕಾಣಿಕೆಯೊಂದಿಗೆ ಸನ್ಮಾನಿಸಿದ್ದರು.

ಸಮಾರಂಭದಲ್ಲಿ ಆರಂಭದಿಂದ ಕೊನೆಯತನಕ ಕವಿಯ ಸಾಹಿತ್ಯ ಕೃಷಿಯ ಕುರಿತು ಪ್ರತಿಯೊಬ್ಬರು ಮಾತನಾಡಿದರು. ಘನವಾದ ಶಬ್ದಗಳಿಂದ ಕವಿಯೂ ತನ್ನ ಕಾವ್ಯಕೃಷಿ ಕುರಿತು ಮಾತನಾಡಿದ. ಅವನು ವೇದಿಕೆ ಇಳಿದು ಬರುತ್ತಿದ್ದಂತೆ ಕಾತರದಿಂದ ಹತ್ತಿರ ಬಂದ ರೈತನೊಬ್ಬ “ಏ, ಕವಿ ನಂದು ಗುರ್ತು ಹತ್ತೇನೊ?” ಎಂದ. ಅವನ ಧ್ವನಿಯಲ್ಲಿ ಹುಂಬತನವಿತ್ತು. ಅದನ್ನು ಯಾವಾಗಲೋ ಕೇಳಿದ, ಅವನನ್ನು ಎಲ್ಲೋ ನೋಡಿದ ನೆನಪು. ಒಮ್ಮೆ ದಿಟ್ಟಿಸಿ ನೋಡಿ “ನೀವು ಯಾರು?” ಎಂದು ಘನಗಂಭೀರವಾಗಿ ಕೇಳಿದ ಕವಿ.

“ಈಗ ನೀ ದೊಡ್ಡ ಕವಿಯಾಗಿಯಪ್ಪ. ನನ್ನಂಥ ಹಳ್ಳಿಯಾಂವ ನಿನ್ಗೆ ನೆಪ್ಪ ಹ್ಯಾಂಗಾಗಬೇಕು. ನಾ ನಿನ್ನ ಕೂಡ ಗೌಂಟಿ ಸಾಲ್ಯಾಗ ಕಲ್ತಾಂವ” ಎಂದ ರೈತನನ್ನು ಒಂದು ಕ್ಷಣ ದಿಟ್ಟಿಸಿದವನೇ ಕವಿ “ನೀನು ಚೆನಮಲ್ಲು” ಎಂದ. “ಹೌದೋ ವಾಮನ” ಎಂದು ಹಿಗ್ಗಿಕೊಂಡ ರೈತ.

“ಹೌದೋ, ನಿನ್ನ ಮಂಜಾಳ ಹೋಗ್ಲಿ” ಎಂದು ಕವಿಯ ಬೆನ್ನಿಗೆ ಲಘುವಾಗಿ ಗುದ್ದಿ ನಕ್ಕ ರೈತ. “ನಿನ್ನೋಡಿ ಬಹಳ ದಿನಾ ಆತು” ಎನ್ನುತ್ತ ರೈತನೊಂದಿಗೆ ಹೆಜ್ಜೆ ಹಾಕಿದ ಕವಿ. ಬಾಲ್ಯದ ಕ್ಷಣಗಳನ್ನು ಮೆಲುಕು ಹಾಕಿಕೊಳ್ಳುತ್ತ ಹಾದಿ ತುಳಿಯುತ್ತಿದ್ದಂತೆ ರೈತ ಕವಿಯನ್ನು ಕೇಳಿದ.

“ನಿಮ್ಮ ಜಮೀನಿನ್ಯಾಗ ಏನೇನು ಬೆಳೀತಿಯಪಾ ನೀನು?”

“ನಮ್ದು ಜಮೀನಽಽ ಇಲ್ಲ.”

“ಮತ್ತ ಕೃಷಿ ಮಾಡ್ತೀನಿ ಅಂತ ಭಾಸನದಾಗ ಹೇಳ್ದಿ. ನಿನ್ನ ಬಗ್ಗೆ ಮಾತಾಡಿದವರೂ ನಿನ್ನ ಕೃಷಿ ಬಗ್ಗೆ ಹೇಳಿದ್ರು” ಸೋಜಿಗ ವ್ಯಕ್ತಪಡಿಸಿದ ರೈತ.

“ನಂದು ಸಾಹಿತ್ಯ ಕೃಷಿ!” ಎಂದ ಕವಿ.

“ಅಂದ್ರ ಅದಕ್ಕ ಯಾವ ಬೀಜ ಬಿತ್ತಿ, ಯಾವ ಗೊಬ್ಬರ ಹಾಕ್ತಿ?” ಕುತೂಹಲವಿತ್ತು ರೈತನ ದನಿಯಲ್ಲಿ.

“ಬೀಜ ಇಲ್ಲ, ಗೊಬ್ಬರ ಇಲ್ಲ, ನೀರೂ ಇಲ್ಲದ ಕೃಷಿ ನಂದು”

“ಅದೆಂತ ಕೃಷಿನೋ ಮಾರಾಯ?”

“ಕಾವ್ಯ, ಕಥಿ, ಕಾದಂಬರಿ, ನಾಟಕ, ವಿಮರ್ಶೆ ಬರೀತೀನಿ.”

“ಅದರಿಂದ ನಿನಗೇನು ಲಾಭ?”

“ಹೆಸರು, ಕೀರ್ತಿ, ಪ್ರತಿಷ್ಠೆ, ಗೌರವ, ಸನ್ಮಾನ.”

“ಮತ್ತೆ ನಿನ್ನ ಸಂಸಾರಕ ಏನು ಮಾಡ್ತಿ?”

“ನಾನು ಕಾಲೇಜಿನ್ಯಾಗ ರೀಡರ್‍ ಇದ್ದೀನಿ.”

“ಅಂದ್ರ ದೊಡ್ಡ ಪಗಾರನಽಽ ಇರಬೇಕಲ್ಲ.”

“ಹೌದು.”

“ಬಂಗ್ಲೇನೂ ಕಟ್ಟಿಸಿರಬೇಕಲ್ಲ.”

“ಹೂಂ.”

“ಬಂಗ್ಲೆದಾಗ ಕುಂತು ಕಥಿ, ಕವನ ಬರೀತಿ ಅನ್ನು.”

“ಹೂಂ.”

“ಅದರಿಂದ ಉಪಯೋಗವೇನು?”

“ಜನರ ಮನಸ್ಸಿಗೆ ಆನಂದ, ಹಿತ.”

ಹೊಲ, ಬೀಜ, ಬೆವರು, ಫಲದ ತನ್ನ ಕೃಷಿಯನ್ನು ರೈತ ಕವಿ ಕೃಷಿಯೊಂದಿಗೆ ಸಮೀಕರಿಸಿಕೊಂಡು ಯೋಚಿಸಿದ. ಕೊನೆಗೆ ಕೇಳಿದ “ನಿನ್ನ ಕೃಷಿಯಿಂದ ಹಸಿದ ಹೊಟ್ಟೆಗೆ, ಕಷ್ಟದ ಜೀವನಕ್ಕೆ ಎಂತ ಉಪಯೋಗ ಆಗತ್ತೊ ವಾಮನ?”

ಕವಿ ದಿಙ್ಮೂಡನಾದ.

*******

 

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...