ಕೃಷಿ

ಅದೊಂದು ಪುಟ್ಟ ಗ್ರಾಮ. ಅಲ್ಲಿನ ತರುಣ ಸಂಘವರು ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಸನ್ಮಾನಿತನಾದವನು ಹೆಸರಾಂತ ಕವಿ. ಅವನೂ ಅದೇ ಹಳ್ಳಿಯವನು. ಸಾಹಿತ್ಯ ಅಕಾಡಮಿಯ ಪ್ರಶಸ್ತಿ ದೊರಕಿಸಿಕೊಂಡಿದ್ದರಿಂದ ಊರ ಜನ ಪ್ರೀತಿ, ಅಭಿಮಾನದಿಂದ ಕವಿಯನ್ನು ಬರಮಾಡಿಕೊಂಡಿದ್ದರು. ಮತ್ತು ಸಂಭ್ರಮದಿಂದ ಕವಿಗೆ ಶಾಲು ಹೊದಿಸಿ, ಹಾರ ಹಾಕಿ, ಅಮೂಲ್ಯ ಕಾಣಿಕೆಯೊಂದಿಗೆ ಸನ್ಮಾನಿಸಿದ್ದರು.

ಸಮಾರಂಭದಲ್ಲಿ ಆರಂಭದಿಂದ ಕೊನೆಯತನಕ ಕವಿಯ ಸಾಹಿತ್ಯ ಕೃಷಿಯ ಕುರಿತು ಪ್ರತಿಯೊಬ್ಬರು ಮಾತನಾಡಿದರು. ಘನವಾದ ಶಬ್ದಗಳಿಂದ ಕವಿಯೂ ತನ್ನ ಕಾವ್ಯಕೃಷಿ ಕುರಿತು ಮಾತನಾಡಿದ. ಅವನು ವೇದಿಕೆ ಇಳಿದು ಬರುತ್ತಿದ್ದಂತೆ ಕಾತರದಿಂದ ಹತ್ತಿರ ಬಂದ ರೈತನೊಬ್ಬ “ಏ, ಕವಿ ನಂದು ಗುರ್ತು ಹತ್ತೇನೊ?” ಎಂದ. ಅವನ ಧ್ವನಿಯಲ್ಲಿ ಹುಂಬತನವಿತ್ತು. ಅದನ್ನು ಯಾವಾಗಲೋ ಕೇಳಿದ, ಅವನನ್ನು ಎಲ್ಲೋ ನೋಡಿದ ನೆನಪು. ಒಮ್ಮೆ ದಿಟ್ಟಿಸಿ ನೋಡಿ “ನೀವು ಯಾರು?” ಎಂದು ಘನಗಂಭೀರವಾಗಿ ಕೇಳಿದ ಕವಿ.

“ಈಗ ನೀ ದೊಡ್ಡ ಕವಿಯಾಗಿಯಪ್ಪ. ನನ್ನಂಥ ಹಳ್ಳಿಯಾಂವ ನಿನ್ಗೆ ನೆಪ್ಪ ಹ್ಯಾಂಗಾಗಬೇಕು. ನಾ ನಿನ್ನ ಕೂಡ ಗೌಂಟಿ ಸಾಲ್ಯಾಗ ಕಲ್ತಾಂವ” ಎಂದ ರೈತನನ್ನು ಒಂದು ಕ್ಷಣ ದಿಟ್ಟಿಸಿದವನೇ ಕವಿ “ನೀನು ಚೆನಮಲ್ಲು” ಎಂದ. “ಹೌದೋ ವಾಮನ” ಎಂದು ಹಿಗ್ಗಿಕೊಂಡ ರೈತ.

“ಹೌದೋ, ನಿನ್ನ ಮಂಜಾಳ ಹೋಗ್ಲಿ” ಎಂದು ಕವಿಯ ಬೆನ್ನಿಗೆ ಲಘುವಾಗಿ ಗುದ್ದಿ ನಕ್ಕ ರೈತ. “ನಿನ್ನೋಡಿ ಬಹಳ ದಿನಾ ಆತು” ಎನ್ನುತ್ತ ರೈತನೊಂದಿಗೆ ಹೆಜ್ಜೆ ಹಾಕಿದ ಕವಿ. ಬಾಲ್ಯದ ಕ್ಷಣಗಳನ್ನು ಮೆಲುಕು ಹಾಕಿಕೊಳ್ಳುತ್ತ ಹಾದಿ ತುಳಿಯುತ್ತಿದ್ದಂತೆ ರೈತ ಕವಿಯನ್ನು ಕೇಳಿದ.

“ನಿಮ್ಮ ಜಮೀನಿನ್ಯಾಗ ಏನೇನು ಬೆಳೀತಿಯಪಾ ನೀನು?”

“ನಮ್ದು ಜಮೀನಽಽ ಇಲ್ಲ.”

“ಮತ್ತ ಕೃಷಿ ಮಾಡ್ತೀನಿ ಅಂತ ಭಾಸನದಾಗ ಹೇಳ್ದಿ. ನಿನ್ನ ಬಗ್ಗೆ ಮಾತಾಡಿದವರೂ ನಿನ್ನ ಕೃಷಿ ಬಗ್ಗೆ ಹೇಳಿದ್ರು” ಸೋಜಿಗ ವ್ಯಕ್ತಪಡಿಸಿದ ರೈತ.

“ನಂದು ಸಾಹಿತ್ಯ ಕೃಷಿ!” ಎಂದ ಕವಿ.

“ಅಂದ್ರ ಅದಕ್ಕ ಯಾವ ಬೀಜ ಬಿತ್ತಿ, ಯಾವ ಗೊಬ್ಬರ ಹಾಕ್ತಿ?” ಕುತೂಹಲವಿತ್ತು ರೈತನ ದನಿಯಲ್ಲಿ.

“ಬೀಜ ಇಲ್ಲ, ಗೊಬ್ಬರ ಇಲ್ಲ, ನೀರೂ ಇಲ್ಲದ ಕೃಷಿ ನಂದು”

“ಅದೆಂತ ಕೃಷಿನೋ ಮಾರಾಯ?”

“ಕಾವ್ಯ, ಕಥಿ, ಕಾದಂಬರಿ, ನಾಟಕ, ವಿಮರ್ಶೆ ಬರೀತೀನಿ.”

“ಅದರಿಂದ ನಿನಗೇನು ಲಾಭ?”

“ಹೆಸರು, ಕೀರ್ತಿ, ಪ್ರತಿಷ್ಠೆ, ಗೌರವ, ಸನ್ಮಾನ.”

“ಮತ್ತೆ ನಿನ್ನ ಸಂಸಾರಕ ಏನು ಮಾಡ್ತಿ?”

“ನಾನು ಕಾಲೇಜಿನ್ಯಾಗ ರೀಡರ್‍ ಇದ್ದೀನಿ.”

“ಅಂದ್ರ ದೊಡ್ಡ ಪಗಾರನಽಽ ಇರಬೇಕಲ್ಲ.”

“ಹೌದು.”

“ಬಂಗ್ಲೇನೂ ಕಟ್ಟಿಸಿರಬೇಕಲ್ಲ.”

“ಹೂಂ.”

“ಬಂಗ್ಲೆದಾಗ ಕುಂತು ಕಥಿ, ಕವನ ಬರೀತಿ ಅನ್ನು.”

“ಹೂಂ.”

“ಅದರಿಂದ ಉಪಯೋಗವೇನು?”

“ಜನರ ಮನಸ್ಸಿಗೆ ಆನಂದ, ಹಿತ.”

ಹೊಲ, ಬೀಜ, ಬೆವರು, ಫಲದ ತನ್ನ ಕೃಷಿಯನ್ನು ರೈತ ಕವಿ ಕೃಷಿಯೊಂದಿಗೆ ಸಮೀಕರಿಸಿಕೊಂಡು ಯೋಚಿಸಿದ. ಕೊನೆಗೆ ಕೇಳಿದ “ನಿನ್ನ ಕೃಷಿಯಿಂದ ಹಸಿದ ಹೊಟ್ಟೆಗೆ, ಕಷ್ಟದ ಜೀವನಕ್ಕೆ ಎಂತ ಉಪಯೋಗ ಆಗತ್ತೊ ವಾಮನ?”

ಕವಿ ದಿಙ್ಮೂಡನಾದ.

*******

 

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...