ಕೃಷಿ

ಅದೊಂದು ಪುಟ್ಟ ಗ್ರಾಮ. ಅಲ್ಲಿನ ತರುಣ ಸಂಘವರು ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಸನ್ಮಾನಿತನಾದವನು ಹೆಸರಾಂತ ಕವಿ. ಅವನೂ ಅದೇ ಹಳ್ಳಿಯವನು. ಸಾಹಿತ್ಯ ಅಕಾಡಮಿಯ ಪ್ರಶಸ್ತಿ ದೊರಕಿಸಿಕೊಂಡಿದ್ದರಿಂದ ಊರ ಜನ ಪ್ರೀತಿ, ಅಭಿಮಾನದಿಂದ ಕವಿಯನ್ನು ಬರಮಾಡಿಕೊಂಡಿದ್ದರು. ಮತ್ತು ಸಂಭ್ರಮದಿಂದ ಕವಿಗೆ ಶಾಲು ಹೊದಿಸಿ, ಹಾರ ಹಾಕಿ, ಅಮೂಲ್ಯ ಕಾಣಿಕೆಯೊಂದಿಗೆ ಸನ್ಮಾನಿಸಿದ್ದರು.

ಸಮಾರಂಭದಲ್ಲಿ ಆರಂಭದಿಂದ ಕೊನೆಯತನಕ ಕವಿಯ ಸಾಹಿತ್ಯ ಕೃಷಿಯ ಕುರಿತು ಪ್ರತಿಯೊಬ್ಬರು ಮಾತನಾಡಿದರು. ಘನವಾದ ಶಬ್ದಗಳಿಂದ ಕವಿಯೂ ತನ್ನ ಕಾವ್ಯಕೃಷಿ ಕುರಿತು ಮಾತನಾಡಿದ. ಅವನು ವೇದಿಕೆ ಇಳಿದು ಬರುತ್ತಿದ್ದಂತೆ ಕಾತರದಿಂದ ಹತ್ತಿರ ಬಂದ ರೈತನೊಬ್ಬ “ಏ, ಕವಿ ನಂದು ಗುರ್ತು ಹತ್ತೇನೊ?” ಎಂದ. ಅವನ ಧ್ವನಿಯಲ್ಲಿ ಹುಂಬತನವಿತ್ತು. ಅದನ್ನು ಯಾವಾಗಲೋ ಕೇಳಿದ, ಅವನನ್ನು ಎಲ್ಲೋ ನೋಡಿದ ನೆನಪು. ಒಮ್ಮೆ ದಿಟ್ಟಿಸಿ ನೋಡಿ “ನೀವು ಯಾರು?” ಎಂದು ಘನಗಂಭೀರವಾಗಿ ಕೇಳಿದ ಕವಿ.

“ಈಗ ನೀ ದೊಡ್ಡ ಕವಿಯಾಗಿಯಪ್ಪ. ನನ್ನಂಥ ಹಳ್ಳಿಯಾಂವ ನಿನ್ಗೆ ನೆಪ್ಪ ಹ್ಯಾಂಗಾಗಬೇಕು. ನಾ ನಿನ್ನ ಕೂಡ ಗೌಂಟಿ ಸಾಲ್ಯಾಗ ಕಲ್ತಾಂವ” ಎಂದ ರೈತನನ್ನು ಒಂದು ಕ್ಷಣ ದಿಟ್ಟಿಸಿದವನೇ ಕವಿ “ನೀನು ಚೆನಮಲ್ಲು” ಎಂದ. “ಹೌದೋ ವಾಮನ” ಎಂದು ಹಿಗ್ಗಿಕೊಂಡ ರೈತ.

“ಹೌದೋ, ನಿನ್ನ ಮಂಜಾಳ ಹೋಗ್ಲಿ” ಎಂದು ಕವಿಯ ಬೆನ್ನಿಗೆ ಲಘುವಾಗಿ ಗುದ್ದಿ ನಕ್ಕ ರೈತ. “ನಿನ್ನೋಡಿ ಬಹಳ ದಿನಾ ಆತು” ಎನ್ನುತ್ತ ರೈತನೊಂದಿಗೆ ಹೆಜ್ಜೆ ಹಾಕಿದ ಕವಿ. ಬಾಲ್ಯದ ಕ್ಷಣಗಳನ್ನು ಮೆಲುಕು ಹಾಕಿಕೊಳ್ಳುತ್ತ ಹಾದಿ ತುಳಿಯುತ್ತಿದ್ದಂತೆ ರೈತ ಕವಿಯನ್ನು ಕೇಳಿದ.

“ನಿಮ್ಮ ಜಮೀನಿನ್ಯಾಗ ಏನೇನು ಬೆಳೀತಿಯಪಾ ನೀನು?”

“ನಮ್ದು ಜಮೀನಽಽ ಇಲ್ಲ.”

“ಮತ್ತ ಕೃಷಿ ಮಾಡ್ತೀನಿ ಅಂತ ಭಾಸನದಾಗ ಹೇಳ್ದಿ. ನಿನ್ನ ಬಗ್ಗೆ ಮಾತಾಡಿದವರೂ ನಿನ್ನ ಕೃಷಿ ಬಗ್ಗೆ ಹೇಳಿದ್ರು” ಸೋಜಿಗ ವ್ಯಕ್ತಪಡಿಸಿದ ರೈತ.

“ನಂದು ಸಾಹಿತ್ಯ ಕೃಷಿ!” ಎಂದ ಕವಿ.

“ಅಂದ್ರ ಅದಕ್ಕ ಯಾವ ಬೀಜ ಬಿತ್ತಿ, ಯಾವ ಗೊಬ್ಬರ ಹಾಕ್ತಿ?” ಕುತೂಹಲವಿತ್ತು ರೈತನ ದನಿಯಲ್ಲಿ.

“ಬೀಜ ಇಲ್ಲ, ಗೊಬ್ಬರ ಇಲ್ಲ, ನೀರೂ ಇಲ್ಲದ ಕೃಷಿ ನಂದು”

“ಅದೆಂತ ಕೃಷಿನೋ ಮಾರಾಯ?”

“ಕಾವ್ಯ, ಕಥಿ, ಕಾದಂಬರಿ, ನಾಟಕ, ವಿಮರ್ಶೆ ಬರೀತೀನಿ.”

“ಅದರಿಂದ ನಿನಗೇನು ಲಾಭ?”

“ಹೆಸರು, ಕೀರ್ತಿ, ಪ್ರತಿಷ್ಠೆ, ಗೌರವ, ಸನ್ಮಾನ.”

“ಮತ್ತೆ ನಿನ್ನ ಸಂಸಾರಕ ಏನು ಮಾಡ್ತಿ?”

“ನಾನು ಕಾಲೇಜಿನ್ಯಾಗ ರೀಡರ್‍ ಇದ್ದೀನಿ.”

“ಅಂದ್ರ ದೊಡ್ಡ ಪಗಾರನಽಽ ಇರಬೇಕಲ್ಲ.”

“ಹೌದು.”

“ಬಂಗ್ಲೇನೂ ಕಟ್ಟಿಸಿರಬೇಕಲ್ಲ.”

“ಹೂಂ.”

“ಬಂಗ್ಲೆದಾಗ ಕುಂತು ಕಥಿ, ಕವನ ಬರೀತಿ ಅನ್ನು.”

“ಹೂಂ.”

“ಅದರಿಂದ ಉಪಯೋಗವೇನು?”

“ಜನರ ಮನಸ್ಸಿಗೆ ಆನಂದ, ಹಿತ.”

ಹೊಲ, ಬೀಜ, ಬೆವರು, ಫಲದ ತನ್ನ ಕೃಷಿಯನ್ನು ರೈತ ಕವಿ ಕೃಷಿಯೊಂದಿಗೆ ಸಮೀಕರಿಸಿಕೊಂಡು ಯೋಚಿಸಿದ. ಕೊನೆಗೆ ಕೇಳಿದ “ನಿನ್ನ ಕೃಷಿಯಿಂದ ಹಸಿದ ಹೊಟ್ಟೆಗೆ, ಕಷ್ಟದ ಜೀವನಕ್ಕೆ ಎಂತ ಉಪಯೋಗ ಆಗತ್ತೊ ವಾಮನ?”

ಕವಿ ದಿಙ್ಮೂಡನಾದ.

*******

 

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...