ಕೃಷಿ

ಅದೊಂದು ಪುಟ್ಟ ಗ್ರಾಮ. ಅಲ್ಲಿನ ತರುಣ ಸಂಘವರು ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಸನ್ಮಾನಿತನಾದವನು ಹೆಸರಾಂತ ಕವಿ. ಅವನೂ ಅದೇ ಹಳ್ಳಿಯವನು. ಸಾಹಿತ್ಯ ಅಕಾಡಮಿಯ ಪ್ರಶಸ್ತಿ ದೊರಕಿಸಿಕೊಂಡಿದ್ದರಿಂದ ಊರ ಜನ ಪ್ರೀತಿ, ಅಭಿಮಾನದಿಂದ ಕವಿಯನ್ನು ಬರಮಾಡಿಕೊಂಡಿದ್ದರು. ಮತ್ತು ಸಂಭ್ರಮದಿಂದ ಕವಿಗೆ ಶಾಲು ಹೊದಿಸಿ, ಹಾರ ಹಾಕಿ, ಅಮೂಲ್ಯ ಕಾಣಿಕೆಯೊಂದಿಗೆ ಸನ್ಮಾನಿಸಿದ್ದರು.

ಸಮಾರಂಭದಲ್ಲಿ ಆರಂಭದಿಂದ ಕೊನೆಯತನಕ ಕವಿಯ ಸಾಹಿತ್ಯ ಕೃಷಿಯ ಕುರಿತು ಪ್ರತಿಯೊಬ್ಬರು ಮಾತನಾಡಿದರು. ಘನವಾದ ಶಬ್ದಗಳಿಂದ ಕವಿಯೂ ತನ್ನ ಕಾವ್ಯಕೃಷಿ ಕುರಿತು ಮಾತನಾಡಿದ. ಅವನು ವೇದಿಕೆ ಇಳಿದು ಬರುತ್ತಿದ್ದಂತೆ ಕಾತರದಿಂದ ಹತ್ತಿರ ಬಂದ ರೈತನೊಬ್ಬ “ಏ, ಕವಿ ನಂದು ಗುರ್ತು ಹತ್ತೇನೊ?” ಎಂದ. ಅವನ ಧ್ವನಿಯಲ್ಲಿ ಹುಂಬತನವಿತ್ತು. ಅದನ್ನು ಯಾವಾಗಲೋ ಕೇಳಿದ, ಅವನನ್ನು ಎಲ್ಲೋ ನೋಡಿದ ನೆನಪು. ಒಮ್ಮೆ ದಿಟ್ಟಿಸಿ ನೋಡಿ “ನೀವು ಯಾರು?” ಎಂದು ಘನಗಂಭೀರವಾಗಿ ಕೇಳಿದ ಕವಿ.

“ಈಗ ನೀ ದೊಡ್ಡ ಕವಿಯಾಗಿಯಪ್ಪ. ನನ್ನಂಥ ಹಳ್ಳಿಯಾಂವ ನಿನ್ಗೆ ನೆಪ್ಪ ಹ್ಯಾಂಗಾಗಬೇಕು. ನಾ ನಿನ್ನ ಕೂಡ ಗೌಂಟಿ ಸಾಲ್ಯಾಗ ಕಲ್ತಾಂವ” ಎಂದ ರೈತನನ್ನು ಒಂದು ಕ್ಷಣ ದಿಟ್ಟಿಸಿದವನೇ ಕವಿ “ನೀನು ಚೆನಮಲ್ಲು” ಎಂದ. “ಹೌದೋ ವಾಮನ” ಎಂದು ಹಿಗ್ಗಿಕೊಂಡ ರೈತ.

“ಹೌದೋ, ನಿನ್ನ ಮಂಜಾಳ ಹೋಗ್ಲಿ” ಎಂದು ಕವಿಯ ಬೆನ್ನಿಗೆ ಲಘುವಾಗಿ ಗುದ್ದಿ ನಕ್ಕ ರೈತ. “ನಿನ್ನೋಡಿ ಬಹಳ ದಿನಾ ಆತು” ಎನ್ನುತ್ತ ರೈತನೊಂದಿಗೆ ಹೆಜ್ಜೆ ಹಾಕಿದ ಕವಿ. ಬಾಲ್ಯದ ಕ್ಷಣಗಳನ್ನು ಮೆಲುಕು ಹಾಕಿಕೊಳ್ಳುತ್ತ ಹಾದಿ ತುಳಿಯುತ್ತಿದ್ದಂತೆ ರೈತ ಕವಿಯನ್ನು ಕೇಳಿದ.

“ನಿಮ್ಮ ಜಮೀನಿನ್ಯಾಗ ಏನೇನು ಬೆಳೀತಿಯಪಾ ನೀನು?”

“ನಮ್ದು ಜಮೀನಽಽ ಇಲ್ಲ.”

“ಮತ್ತ ಕೃಷಿ ಮಾಡ್ತೀನಿ ಅಂತ ಭಾಸನದಾಗ ಹೇಳ್ದಿ. ನಿನ್ನ ಬಗ್ಗೆ ಮಾತಾಡಿದವರೂ ನಿನ್ನ ಕೃಷಿ ಬಗ್ಗೆ ಹೇಳಿದ್ರು” ಸೋಜಿಗ ವ್ಯಕ್ತಪಡಿಸಿದ ರೈತ.

“ನಂದು ಸಾಹಿತ್ಯ ಕೃಷಿ!” ಎಂದ ಕವಿ.

“ಅಂದ್ರ ಅದಕ್ಕ ಯಾವ ಬೀಜ ಬಿತ್ತಿ, ಯಾವ ಗೊಬ್ಬರ ಹಾಕ್ತಿ?” ಕುತೂಹಲವಿತ್ತು ರೈತನ ದನಿಯಲ್ಲಿ.

“ಬೀಜ ಇಲ್ಲ, ಗೊಬ್ಬರ ಇಲ್ಲ, ನೀರೂ ಇಲ್ಲದ ಕೃಷಿ ನಂದು”

“ಅದೆಂತ ಕೃಷಿನೋ ಮಾರಾಯ?”

“ಕಾವ್ಯ, ಕಥಿ, ಕಾದಂಬರಿ, ನಾಟಕ, ವಿಮರ್ಶೆ ಬರೀತೀನಿ.”

“ಅದರಿಂದ ನಿನಗೇನು ಲಾಭ?”

“ಹೆಸರು, ಕೀರ್ತಿ, ಪ್ರತಿಷ್ಠೆ, ಗೌರವ, ಸನ್ಮಾನ.”

“ಮತ್ತೆ ನಿನ್ನ ಸಂಸಾರಕ ಏನು ಮಾಡ್ತಿ?”

“ನಾನು ಕಾಲೇಜಿನ್ಯಾಗ ರೀಡರ್‍ ಇದ್ದೀನಿ.”

“ಅಂದ್ರ ದೊಡ್ಡ ಪಗಾರನಽಽ ಇರಬೇಕಲ್ಲ.”

“ಹೌದು.”

“ಬಂಗ್ಲೇನೂ ಕಟ್ಟಿಸಿರಬೇಕಲ್ಲ.”

“ಹೂಂ.”

“ಬಂಗ್ಲೆದಾಗ ಕುಂತು ಕಥಿ, ಕವನ ಬರೀತಿ ಅನ್ನು.”

“ಹೂಂ.”

“ಅದರಿಂದ ಉಪಯೋಗವೇನು?”

“ಜನರ ಮನಸ್ಸಿಗೆ ಆನಂದ, ಹಿತ.”

ಹೊಲ, ಬೀಜ, ಬೆವರು, ಫಲದ ತನ್ನ ಕೃಷಿಯನ್ನು ರೈತ ಕವಿ ಕೃಷಿಯೊಂದಿಗೆ ಸಮೀಕರಿಸಿಕೊಂಡು ಯೋಚಿಸಿದ. ಕೊನೆಗೆ ಕೇಳಿದ “ನಿನ್ನ ಕೃಷಿಯಿಂದ ಹಸಿದ ಹೊಟ್ಟೆಗೆ, ಕಷ್ಟದ ಜೀವನಕ್ಕೆ ಎಂತ ಉಪಯೋಗ ಆಗತ್ತೊ ವಾಮನ?”

ಕವಿ ದಿಙ್ಮೂಡನಾದ.

*******

 

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...