ಸತ್ಯ

ಸತ್ಯ

ಚಿತ್ರ: ಕರಿನ್ ಹೆನ್ಸೆಲರ್‍
ಚಿತ್ರ: ಕರಿನ್ ಹೆನ್ಸೆಲರ್‍

ಆಕೆ ಚಿಕ್ಕವಯಸ್ಸಿನಲ್ಲಿ ಗಂಡನನ್ನು ಕಳೆದುಕೊಂಡ ಹೆಂಗಸು.  ನೋಡಲು ಸುಂದರಿ.  ತವರುಮನೆಯಲ್ಲಿದ್ದ ಆಕೆ ವಿಧವಾ ಬದುಕನ್ನು ಸಹಜವಾಗಿ ಅನುಭವಿಸತೊಡಗಿದ್ದಳು.  ಪುರಾಣ, ಪುಣ್ಯಕಥೆಗಳನ್ನು ಆಲಿಸುವಲ್ಲಿ, ಮಠ, ದೇವಾಲಯಗಳಿಗೆ ಹೋಗುವಲ್ಲಿ ಶ್ರದ್ಧೆ ಬೆಳೆಸಿಕೊಂಡಿದ್ದಳು.  ಅವಳ ಅಲೌಕಿಕ ತುಡಿತಗಳನ್ನು ಊರಿನ ಮಠದ ಸ್ವಾಮಿಗಳು ತುಂಬಾ ಮೆಚ್ಚಿಕೊಂಡಿದ್ದರು.  ಮತ್ತು ಅವಳನ್ನು ಗೌರವಿಸುತ್ತಿದ್ದರು.  ಅವಳ ಪರಿಶುದ್ಧ ಜೀವನ ಬಗೆ ಜನರಿಗೂ ಹೆಮ್ಮೆ ತಂದಿತ್ತು.

ಮನುಷ್ಯನ ಜೀವನದ ಘಟನೆಗಳು ತೀರ ಆಕಸ್ಮಿಕ.

ಅಂಥದೊಂದು ಪ್ರಸಂಗ ಅವಳನ್ನು ಆತಂಕಕ್ಕೀಡು ಮಾಡಿಬಿಟ್ಟಿತು.  ಈಗವಳ ಬಗ್ಗೆ ಜನರ ನಾಲಗೆಗಳು ಪಿಸುಪಿಸು ನುಡಿಯಲಾರಂಭಿಸಿದವು.  ಆಕೆಯ ಬಸಿರು ಅದಕ್ಕೆ ಕಾರಣ.

ಹೊಟ್ಟೆ ಬೆಳೆಯುತ್ತಿದ್ದಂತೆ ಮನೆಯ ಜನರಂತೂ ಮುಳ್ಳಿನ ಮೇಲೆ ಮಲಗಿದಂತೆ ಒದ್ದಾಡತೊಡಗಿದರು.  ಜನರು ತಮ್ಮ ಗೊಡವೆಗಳನ್ನು ಬದಿಗಿಟ್ಟು ಅವಳ ಬಸಿರಿನ ಮೂಲ ಜಾಲಾಡುತ್ತ ರೋಚಕ ಸಂಗತಿಗಳನ್ನು ಹೆಣೆಯತೊಡಗಿದರು.  ಆದರೆ ಆಕೆ ಮಾತ್ರ ಮೌನಿಯಾಗಿದ್ದಳು.

ಈ ಬಸಿರಿಗೆ ಕಾರಣರಾದ ಪುರುಷ ಯಾರು?  ಎಲ್ಲರದೂ ಇದೆ ಪ್ರಶ್ನೆ-ಆದರೆ ಆಕೆ ಮಾತ್ರ `ಗೊತ್ತಿಲ್ಲ’ ಎನ್ನವಳು.  ರಮಿಸುವ, ಶಿಕ್ಷಿಸುವ, ಬೆದರಿಸುವ ಎಲ್ಲ ತಂತ್ರಗಳಿಗೂ ಅವಳದು ಒಂದೇ ಉತ್ತರ.  ಕೊನೆಗೆ ಮನೆಯವರು ಅವಳನ್ನು ಮಠಕ್ಕೆ ಕರೆದುಕೊಂಡು ಬಂದು ಸ್ವಾಮಿಗಳೆದುರು ನಿಲ್ಲಿಸಿದರು.

ಮಠದ ಬಗ್ಗೆ, ಸ್ವಾಮಿಗಳ ಬಗ್ಗೆ ಬಹಳ ಭಕ್ತಿ, ಶ್ರದ್ಧೆ, ಗೌರವ ಇರಿಸಿಕೊಂಡಿದ್ದ ಆಕೆ ಅಲ್ಲಿ ನಿಜಸಂಗತಿಯನ್ನು ಹೇಳುತ್ತಾಳೆಂದು ತಾಯಿ-ತಂದೆಗಳ ನಂಬಿಕೆಯಾಗಿತ್ತು.

“ಮನುಷ್ಯ ತಪ್ಪು ಮಾಡುವುದು ಸಹಜ.  ಆದರೆ ಅದಕ್ಕೆ ಪಶ್ಚಾತ್ತಾಪ ಪಟ್ಟರೆ ದೇವರಿಗೆ ಇಷ್ಟವಾಗುವುದು” ಎಂದು ಸ್ವಾಮೀಜಿ ಅವಳ ಗರ್ಭದ ಸತ್ಯ ಹೊರಗೆ ಹಾಕಲು ಯತ್ನಿಸಿದರು.

“ನನ್ನ ತಪ್ಪು ಒಪ್ಪಿಕೊಳ್ಳುತ್ತೇನೆ.  ಆದರೆ ಈ ಬಸಿರಿಗೆ ಕಾರಣರಾದವರ ಹೆಸರು ಹೇಳುವುದಿಲ್ಲ”  ಆಕೆ ಮೊದಲ ಬಾರಿ ಇಷ್ಟು ಮಾತನಾಡಿದ್ದಳು.

“ಇದು ನಿನ್ನ ಚಾರಿತ್ರ್‍ಯದ ಪ್ರಶ್ನೆ.  ನಿನ್ನ ಮನೆಯವರ ಮಾನದ ಪ್ರಶ್ನೆ.  ಎಲ್ಲರಿಗೂ ಸತ್ಯ ಗೊತ್ತಾಬೇಕು.  ನಿನ್ನ ಬದುಕಿಗೆ ಅನ್ಯಾಯವಾಗಬಾರದು” ತುಸು ಏರುಧ್ವನಿಯಲ್ಲಿ ಸ್ವಾಮೀಜಿ ನಿಗೂಢತೆಯನ್ನು ಬಯಲುಗೊಳಿಸಲು ಪ್ರೇರೇಪಿಸಿದರು.

“ನಾನು ಬಸಿರಾಗಿದ್ದೇನೆ ಇದು ಸತ್ಯ” ತಲ್ಲಣಕ್ಕೀಡಾಗದೆ ಹೇಳಿದಳಾಕೆ.

“ನೀನು ಅಂತರಂಗದ ಸತ್ಯವನ್ನು ಹೇಳುತ್ತಿಲ್ಲ”  ಸಮಾಜದ ಮುಖ್ಯಸ್ಥನೊಬ್ಬ ಕೆರಳಿದ್ದ.

“ನೀವು ಈ ಜೀವ ತೆಗೆದರೂ ನಾನು ಈ ಬಸಿರಿಗೆ ಕಾರಣರಾದವರ ಬಗ್ಗೆ ಹೇಳುವುದಿಲ್ಲ” ಅವಳು ದೃಢವಾಗಿದ್ದಳು.

ಜನರು ಸ್ತಂಭೀಭೂತರಾಗಿ ಕುಳಿತರು.  ಸ್ವಾಮಿಗಳೆದುರು ಅವಳು ಉದ್ಧಟತನ ತೋರುತ್ತಿದ್ದಾಳೆಂದು ಒಳಗೊಳಗೆ ಸಿಟ್ಟು.  ಮತ್ತೊಬ್ಬ ಎದ್ದು ನಿಂತು ಹೇಳಿದ “ಸ್ವಾಮಿಗಳು ನಮಗೆ ಪೂಜ್ಯರು.  ನಿರ್ಮಲ ಚಿತ್ತದವರು.  ಅವರೆದುರಾದರೂ ಸತ್ಯ ಹೇಳು” ಕೂಡಿದ ಜನರೂ ಈ ಮಾತಿಗೆ ಬೆಂಬಲಿಸಿದರು.

ಆಕೆ ತನ್ನ ನಿಲುವನ್ನು ಪ್ರಕಟಿಸಲಿಲ್ಲ.

ಸಭೆಯಲ್ಲಿ ಹಿಂಸಾತ್ಮಕ ಧೋರಣೆಯ ಪ್ರವೃತ್ತಿ ಕಾವುಗೊಳ್ಳುತ್ತಿರುವಂತೆ ಸ್ವಾಮೀಜಿ “ಸತ್ಯ ಕಠೋರ ಮತ್ತು ನಿಷ್ಠುರ.  ಅದು ಬಹಿರಂಗವಾದರೆ ಆಗುವ ಪರಿಣಾಮ ಎಂಥದೋ?  ಅವಳಿಗೆ ಒಂದಿಷ್ಟು ಸಮಯ ಕೊಡಿರಿ” ಎಂದರು.

ಸಭೆ ಸಮ್ಮತಿಸಿತು.  ಕೂಡಿದ ಜನ ನಾಳೆ ಸೇರೋಣವೆಂದು ಎದ್ದು ನಡೆದರು.  ಆಕೆ ನಿಂತಲ್ಲಿಯೆ ಕುಳಿತಳು.  “ನೀನು ಸತ್ಯ ಹೇಳುವ ತನಕ ನಮ್ಮ ಮನೆಗೆ ಬರಬೇಡ” ಎಂದು ತಾಯಿ-ತಂದೆಗಳು ಹೊರಟು ಹೋದರು.

ಮರುದಿನ ಸತ್ಯ ಬಯಲಾಗಿತ್ತು.  ಸ್ವಾಮೀಜಿ ಬರೆದಿಟ್ಟಿದ್ದರು.

“ಅವಳ ಬಸಿರಿಗೆ ಕಾರಣ ನಾನು.  ಕಾವಿಯಲ್ಲಿ ಕಾಮನೆಗಳನ್ನು ಬಚ್ಚಿಟ್ಟುಕೊಂಡು ನಿಮ್ಮನ್ನು ವಂಚಿಸಲು ನನ್ನಿಂದ ಸಾಧ್ಯವಿಲ್ಲ.  ಕ್ಷಮಿಸಿ, ನಾವು ದೂರ ಹೋಗುತ್ತಿದ್ದೇವೆ.”

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೪೫
Next post ಆ ದಿನಗಳ ಹುಡುಗಿ

ಸಣ್ಣ ಕತೆ

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

cheap jordans|wholesale air max|wholesale jordans|wholesale jewelry|wholesale jerseys