ಸತ್ಯ

ಸತ್ಯ

ಚಿತ್ರ: ಕರಿನ್ ಹೆನ್ಸೆಲರ್‍
ಚಿತ್ರ: ಕರಿನ್ ಹೆನ್ಸೆಲರ್‍

ಆಕೆ ಚಿಕ್ಕವಯಸ್ಸಿನಲ್ಲಿ ಗಂಡನನ್ನು ಕಳೆದುಕೊಂಡ ಹೆಂಗಸು.  ನೋಡಲು ಸುಂದರಿ.  ತವರುಮನೆಯಲ್ಲಿದ್ದ ಆಕೆ ವಿಧವಾ ಬದುಕನ್ನು ಸಹಜವಾಗಿ ಅನುಭವಿಸತೊಡಗಿದ್ದಳು.  ಪುರಾಣ, ಪುಣ್ಯಕಥೆಗಳನ್ನು ಆಲಿಸುವಲ್ಲಿ, ಮಠ, ದೇವಾಲಯಗಳಿಗೆ ಹೋಗುವಲ್ಲಿ ಶ್ರದ್ಧೆ ಬೆಳೆಸಿಕೊಂಡಿದ್ದಳು.  ಅವಳ ಅಲೌಕಿಕ ತುಡಿತಗಳನ್ನು ಊರಿನ ಮಠದ ಸ್ವಾಮಿಗಳು ತುಂಬಾ ಮೆಚ್ಚಿಕೊಂಡಿದ್ದರು.  ಮತ್ತು ಅವಳನ್ನು ಗೌರವಿಸುತ್ತಿದ್ದರು.  ಅವಳ ಪರಿಶುದ್ಧ ಜೀವನ ಬಗೆ ಜನರಿಗೂ ಹೆಮ್ಮೆ ತಂದಿತ್ತು.

ಮನುಷ್ಯನ ಜೀವನದ ಘಟನೆಗಳು ತೀರ ಆಕಸ್ಮಿಕ.

ಅಂಥದೊಂದು ಪ್ರಸಂಗ ಅವಳನ್ನು ಆತಂಕಕ್ಕೀಡು ಮಾಡಿಬಿಟ್ಟಿತು.  ಈಗವಳ ಬಗ್ಗೆ ಜನರ ನಾಲಗೆಗಳು ಪಿಸುಪಿಸು ನುಡಿಯಲಾರಂಭಿಸಿದವು.  ಆಕೆಯ ಬಸಿರು ಅದಕ್ಕೆ ಕಾರಣ.

ಹೊಟ್ಟೆ ಬೆಳೆಯುತ್ತಿದ್ದಂತೆ ಮನೆಯ ಜನರಂತೂ ಮುಳ್ಳಿನ ಮೇಲೆ ಮಲಗಿದಂತೆ ಒದ್ದಾಡತೊಡಗಿದರು.  ಜನರು ತಮ್ಮ ಗೊಡವೆಗಳನ್ನು ಬದಿಗಿಟ್ಟು ಅವಳ ಬಸಿರಿನ ಮೂಲ ಜಾಲಾಡುತ್ತ ರೋಚಕ ಸಂಗತಿಗಳನ್ನು ಹೆಣೆಯತೊಡಗಿದರು.  ಆದರೆ ಆಕೆ ಮಾತ್ರ ಮೌನಿಯಾಗಿದ್ದಳು.

ಈ ಬಸಿರಿಗೆ ಕಾರಣರಾದ ಪುರುಷ ಯಾರು?  ಎಲ್ಲರದೂ ಇದೆ ಪ್ರಶ್ನೆ-ಆದರೆ ಆಕೆ ಮಾತ್ರ `ಗೊತ್ತಿಲ್ಲ’ ಎನ್ನವಳು.  ರಮಿಸುವ, ಶಿಕ್ಷಿಸುವ, ಬೆದರಿಸುವ ಎಲ್ಲ ತಂತ್ರಗಳಿಗೂ ಅವಳದು ಒಂದೇ ಉತ್ತರ.  ಕೊನೆಗೆ ಮನೆಯವರು ಅವಳನ್ನು ಮಠಕ್ಕೆ ಕರೆದುಕೊಂಡು ಬಂದು ಸ್ವಾಮಿಗಳೆದುರು ನಿಲ್ಲಿಸಿದರು.

ಮಠದ ಬಗ್ಗೆ, ಸ್ವಾಮಿಗಳ ಬಗ್ಗೆ ಬಹಳ ಭಕ್ತಿ, ಶ್ರದ್ಧೆ, ಗೌರವ ಇರಿಸಿಕೊಂಡಿದ್ದ ಆಕೆ ಅಲ್ಲಿ ನಿಜಸಂಗತಿಯನ್ನು ಹೇಳುತ್ತಾಳೆಂದು ತಾಯಿ-ತಂದೆಗಳ ನಂಬಿಕೆಯಾಗಿತ್ತು.

“ಮನುಷ್ಯ ತಪ್ಪು ಮಾಡುವುದು ಸಹಜ.  ಆದರೆ ಅದಕ್ಕೆ ಪಶ್ಚಾತ್ತಾಪ ಪಟ್ಟರೆ ದೇವರಿಗೆ ಇಷ್ಟವಾಗುವುದು” ಎಂದು ಸ್ವಾಮೀಜಿ ಅವಳ ಗರ್ಭದ ಸತ್ಯ ಹೊರಗೆ ಹಾಕಲು ಯತ್ನಿಸಿದರು.

“ನನ್ನ ತಪ್ಪು ಒಪ್ಪಿಕೊಳ್ಳುತ್ತೇನೆ.  ಆದರೆ ಈ ಬಸಿರಿಗೆ ಕಾರಣರಾದವರ ಹೆಸರು ಹೇಳುವುದಿಲ್ಲ”  ಆಕೆ ಮೊದಲ ಬಾರಿ ಇಷ್ಟು ಮಾತನಾಡಿದ್ದಳು.

“ಇದು ನಿನ್ನ ಚಾರಿತ್ರ್‍ಯದ ಪ್ರಶ್ನೆ.  ನಿನ್ನ ಮನೆಯವರ ಮಾನದ ಪ್ರಶ್ನೆ.  ಎಲ್ಲರಿಗೂ ಸತ್ಯ ಗೊತ್ತಾಬೇಕು.  ನಿನ್ನ ಬದುಕಿಗೆ ಅನ್ಯಾಯವಾಗಬಾರದು” ತುಸು ಏರುಧ್ವನಿಯಲ್ಲಿ ಸ್ವಾಮೀಜಿ ನಿಗೂಢತೆಯನ್ನು ಬಯಲುಗೊಳಿಸಲು ಪ್ರೇರೇಪಿಸಿದರು.

“ನಾನು ಬಸಿರಾಗಿದ್ದೇನೆ ಇದು ಸತ್ಯ” ತಲ್ಲಣಕ್ಕೀಡಾಗದೆ ಹೇಳಿದಳಾಕೆ.

“ನೀನು ಅಂತರಂಗದ ಸತ್ಯವನ್ನು ಹೇಳುತ್ತಿಲ್ಲ”  ಸಮಾಜದ ಮುಖ್ಯಸ್ಥನೊಬ್ಬ ಕೆರಳಿದ್ದ.

“ನೀವು ಈ ಜೀವ ತೆಗೆದರೂ ನಾನು ಈ ಬಸಿರಿಗೆ ಕಾರಣರಾದವರ ಬಗ್ಗೆ ಹೇಳುವುದಿಲ್ಲ” ಅವಳು ದೃಢವಾಗಿದ್ದಳು.

ಜನರು ಸ್ತಂಭೀಭೂತರಾಗಿ ಕುಳಿತರು.  ಸ್ವಾಮಿಗಳೆದುರು ಅವಳು ಉದ್ಧಟತನ ತೋರುತ್ತಿದ್ದಾಳೆಂದು ಒಳಗೊಳಗೆ ಸಿಟ್ಟು.  ಮತ್ತೊಬ್ಬ ಎದ್ದು ನಿಂತು ಹೇಳಿದ “ಸ್ವಾಮಿಗಳು ನಮಗೆ ಪೂಜ್ಯರು.  ನಿರ್ಮಲ ಚಿತ್ತದವರು.  ಅವರೆದುರಾದರೂ ಸತ್ಯ ಹೇಳು” ಕೂಡಿದ ಜನರೂ ಈ ಮಾತಿಗೆ ಬೆಂಬಲಿಸಿದರು.

ಆಕೆ ತನ್ನ ನಿಲುವನ್ನು ಪ್ರಕಟಿಸಲಿಲ್ಲ.

ಸಭೆಯಲ್ಲಿ ಹಿಂಸಾತ್ಮಕ ಧೋರಣೆಯ ಪ್ರವೃತ್ತಿ ಕಾವುಗೊಳ್ಳುತ್ತಿರುವಂತೆ ಸ್ವಾಮೀಜಿ “ಸತ್ಯ ಕಠೋರ ಮತ್ತು ನಿಷ್ಠುರ.  ಅದು ಬಹಿರಂಗವಾದರೆ ಆಗುವ ಪರಿಣಾಮ ಎಂಥದೋ?  ಅವಳಿಗೆ ಒಂದಿಷ್ಟು ಸಮಯ ಕೊಡಿರಿ” ಎಂದರು.

ಸಭೆ ಸಮ್ಮತಿಸಿತು.  ಕೂಡಿದ ಜನ ನಾಳೆ ಸೇರೋಣವೆಂದು ಎದ್ದು ನಡೆದರು.  ಆಕೆ ನಿಂತಲ್ಲಿಯೆ ಕುಳಿತಳು.  “ನೀನು ಸತ್ಯ ಹೇಳುವ ತನಕ ನಮ್ಮ ಮನೆಗೆ ಬರಬೇಡ” ಎಂದು ತಾಯಿ-ತಂದೆಗಳು ಹೊರಟು ಹೋದರು.

ಮರುದಿನ ಸತ್ಯ ಬಯಲಾಗಿತ್ತು.  ಸ್ವಾಮೀಜಿ ಬರೆದಿಟ್ಟಿದ್ದರು.

“ಅವಳ ಬಸಿರಿಗೆ ಕಾರಣ ನಾನು.  ಕಾವಿಯಲ್ಲಿ ಕಾಮನೆಗಳನ್ನು ಬಚ್ಚಿಟ್ಟುಕೊಂಡು ನಿಮ್ಮನ್ನು ವಂಚಿಸಲು ನನ್ನಿಂದ ಸಾಧ್ಯವಿಲ್ಲ.  ಕ್ಷಮಿಸಿ, ನಾವು ದೂರ ಹೋಗುತ್ತಿದ್ದೇವೆ.”

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೪೫
Next post ಆ ದಿನಗಳ ಹುಡುಗಿ

ಸಣ್ಣ ಕತೆ

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…