ಸತ್ಯ

ಚಿತ್ರ: ಕರಿನ್ ಹೆನ್ಸೆಲರ್‍
ಚಿತ್ರ: ಕರಿನ್ ಹೆನ್ಸೆಲರ್‍

ಆಕೆ ಚಿಕ್ಕವಯಸ್ಸಿನಲ್ಲಿ ಗಂಡನನ್ನು ಕಳೆದುಕೊಂಡ ಹೆಂಗಸು.  ನೋಡಲು ಸುಂದರಿ.  ತವರುಮನೆಯಲ್ಲಿದ್ದ ಆಕೆ ವಿಧವಾ ಬದುಕನ್ನು ಸಹಜವಾಗಿ ಅನುಭವಿಸತೊಡಗಿದ್ದಳು.  ಪುರಾಣ, ಪುಣ್ಯಕಥೆಗಳನ್ನು ಆಲಿಸುವಲ್ಲಿ, ಮಠ, ದೇವಾಲಯಗಳಿಗೆ ಹೋಗುವಲ್ಲಿ ಶ್ರದ್ಧೆ ಬೆಳೆಸಿಕೊಂಡಿದ್ದಳು.  ಅವಳ ಅಲೌಕಿಕ ತುಡಿತಗಳನ್ನು ಊರಿನ ಮಠದ ಸ್ವಾಮಿಗಳು ತುಂಬಾ ಮೆಚ್ಚಿಕೊಂಡಿದ್ದರು.  ಮತ್ತು ಅವಳನ್ನು ಗೌರವಿಸುತ್ತಿದ್ದರು.  ಅವಳ ಪರಿಶುದ್ಧ ಜೀವನ ಬಗೆ ಜನರಿಗೂ ಹೆಮ್ಮೆ ತಂದಿತ್ತು.

ಮನುಷ್ಯನ ಜೀವನದ ಘಟನೆಗಳು ತೀರ ಆಕಸ್ಮಿಕ.

ಅಂಥದೊಂದು ಪ್ರಸಂಗ ಅವಳನ್ನು ಆತಂಕಕ್ಕೀಡು ಮಾಡಿಬಿಟ್ಟಿತು.  ಈಗವಳ ಬಗ್ಗೆ ಜನರ ನಾಲಗೆಗಳು ಪಿಸುಪಿಸು ನುಡಿಯಲಾರಂಭಿಸಿದವು.  ಆಕೆಯ ಬಸಿರು ಅದಕ್ಕೆ ಕಾರಣ.

ಹೊಟ್ಟೆ ಬೆಳೆಯುತ್ತಿದ್ದಂತೆ ಮನೆಯ ಜನರಂತೂ ಮುಳ್ಳಿನ ಮೇಲೆ ಮಲಗಿದಂತೆ ಒದ್ದಾಡತೊಡಗಿದರು.  ಜನರು ತಮ್ಮ ಗೊಡವೆಗಳನ್ನು ಬದಿಗಿಟ್ಟು ಅವಳ ಬಸಿರಿನ ಮೂಲ ಜಾಲಾಡುತ್ತ ರೋಚಕ ಸಂಗತಿಗಳನ್ನು ಹೆಣೆಯತೊಡಗಿದರು.  ಆದರೆ ಆಕೆ ಮಾತ್ರ ಮೌನಿಯಾಗಿದ್ದಳು.

ಈ ಬಸಿರಿಗೆ ಕಾರಣರಾದ ಪುರುಷ ಯಾರು?  ಎಲ್ಲರದೂ ಇದೆ ಪ್ರಶ್ನೆ-ಆದರೆ ಆಕೆ ಮಾತ್ರ `ಗೊತ್ತಿಲ್ಲ’ ಎನ್ನವಳು.  ರಮಿಸುವ, ಶಿಕ್ಷಿಸುವ, ಬೆದರಿಸುವ ಎಲ್ಲ ತಂತ್ರಗಳಿಗೂ ಅವಳದು ಒಂದೇ ಉತ್ತರ.  ಕೊನೆಗೆ ಮನೆಯವರು ಅವಳನ್ನು ಮಠಕ್ಕೆ ಕರೆದುಕೊಂಡು ಬಂದು ಸ್ವಾಮಿಗಳೆದುರು ನಿಲ್ಲಿಸಿದರು.

ಮಠದ ಬಗ್ಗೆ, ಸ್ವಾಮಿಗಳ ಬಗ್ಗೆ ಬಹಳ ಭಕ್ತಿ, ಶ್ರದ್ಧೆ, ಗೌರವ ಇರಿಸಿಕೊಂಡಿದ್ದ ಆಕೆ ಅಲ್ಲಿ ನಿಜಸಂಗತಿಯನ್ನು ಹೇಳುತ್ತಾಳೆಂದು ತಾಯಿ-ತಂದೆಗಳ ನಂಬಿಕೆಯಾಗಿತ್ತು.

“ಮನುಷ್ಯ ತಪ್ಪು ಮಾಡುವುದು ಸಹಜ.  ಆದರೆ ಅದಕ್ಕೆ ಪಶ್ಚಾತ್ತಾಪ ಪಟ್ಟರೆ ದೇವರಿಗೆ ಇಷ್ಟವಾಗುವುದು” ಎಂದು ಸ್ವಾಮೀಜಿ ಅವಳ ಗರ್ಭದ ಸತ್ಯ ಹೊರಗೆ ಹಾಕಲು ಯತ್ನಿಸಿದರು.

“ನನ್ನ ತಪ್ಪು ಒಪ್ಪಿಕೊಳ್ಳುತ್ತೇನೆ.  ಆದರೆ ಈ ಬಸಿರಿಗೆ ಕಾರಣರಾದವರ ಹೆಸರು ಹೇಳುವುದಿಲ್ಲ”  ಆಕೆ ಮೊದಲ ಬಾರಿ ಇಷ್ಟು ಮಾತನಾಡಿದ್ದಳು.

“ಇದು ನಿನ್ನ ಚಾರಿತ್ರ್‍ಯದ ಪ್ರಶ್ನೆ.  ನಿನ್ನ ಮನೆಯವರ ಮಾನದ ಪ್ರಶ್ನೆ.  ಎಲ್ಲರಿಗೂ ಸತ್ಯ ಗೊತ್ತಾಬೇಕು.  ನಿನ್ನ ಬದುಕಿಗೆ ಅನ್ಯಾಯವಾಗಬಾರದು” ತುಸು ಏರುಧ್ವನಿಯಲ್ಲಿ ಸ್ವಾಮೀಜಿ ನಿಗೂಢತೆಯನ್ನು ಬಯಲುಗೊಳಿಸಲು ಪ್ರೇರೇಪಿಸಿದರು.

“ನಾನು ಬಸಿರಾಗಿದ್ದೇನೆ ಇದು ಸತ್ಯ” ತಲ್ಲಣಕ್ಕೀಡಾಗದೆ ಹೇಳಿದಳಾಕೆ.

“ನೀನು ಅಂತರಂಗದ ಸತ್ಯವನ್ನು ಹೇಳುತ್ತಿಲ್ಲ”  ಸಮಾಜದ ಮುಖ್ಯಸ್ಥನೊಬ್ಬ ಕೆರಳಿದ್ದ.

“ನೀವು ಈ ಜೀವ ತೆಗೆದರೂ ನಾನು ಈ ಬಸಿರಿಗೆ ಕಾರಣರಾದವರ ಬಗ್ಗೆ ಹೇಳುವುದಿಲ್ಲ” ಅವಳು ದೃಢವಾಗಿದ್ದಳು.

ಜನರು ಸ್ತಂಭೀಭೂತರಾಗಿ ಕುಳಿತರು.  ಸ್ವಾಮಿಗಳೆದುರು ಅವಳು ಉದ್ಧಟತನ ತೋರುತ್ತಿದ್ದಾಳೆಂದು ಒಳಗೊಳಗೆ ಸಿಟ್ಟು.  ಮತ್ತೊಬ್ಬ ಎದ್ದು ನಿಂತು ಹೇಳಿದ “ಸ್ವಾಮಿಗಳು ನಮಗೆ ಪೂಜ್ಯರು.  ನಿರ್ಮಲ ಚಿತ್ತದವರು.  ಅವರೆದುರಾದರೂ ಸತ್ಯ ಹೇಳು” ಕೂಡಿದ ಜನರೂ ಈ ಮಾತಿಗೆ ಬೆಂಬಲಿಸಿದರು.

ಆಕೆ ತನ್ನ ನಿಲುವನ್ನು ಪ್ರಕಟಿಸಲಿಲ್ಲ.

ಸಭೆಯಲ್ಲಿ ಹಿಂಸಾತ್ಮಕ ಧೋರಣೆಯ ಪ್ರವೃತ್ತಿ ಕಾವುಗೊಳ್ಳುತ್ತಿರುವಂತೆ ಸ್ವಾಮೀಜಿ “ಸತ್ಯ ಕಠೋರ ಮತ್ತು ನಿಷ್ಠುರ.  ಅದು ಬಹಿರಂಗವಾದರೆ ಆಗುವ ಪರಿಣಾಮ ಎಂಥದೋ?  ಅವಳಿಗೆ ಒಂದಿಷ್ಟು ಸಮಯ ಕೊಡಿರಿ” ಎಂದರು.

ಸಭೆ ಸಮ್ಮತಿಸಿತು.  ಕೂಡಿದ ಜನ ನಾಳೆ ಸೇರೋಣವೆಂದು ಎದ್ದು ನಡೆದರು.  ಆಕೆ ನಿಂತಲ್ಲಿಯೆ ಕುಳಿತಳು.  “ನೀನು ಸತ್ಯ ಹೇಳುವ ತನಕ ನಮ್ಮ ಮನೆಗೆ ಬರಬೇಡ” ಎಂದು ತಾಯಿ-ತಂದೆಗಳು ಹೊರಟು ಹೋದರು.

ಮರುದಿನ ಸತ್ಯ ಬಯಲಾಗಿತ್ತು.  ಸ್ವಾಮೀಜಿ ಬರೆದಿಟ್ಟಿದ್ದರು.

“ಅವಳ ಬಸಿರಿಗೆ ಕಾರಣ ನಾನು.  ಕಾವಿಯಲ್ಲಿ ಕಾಮನೆಗಳನ್ನು ಬಚ್ಚಿಟ್ಟುಕೊಂಡು ನಿಮ್ಮನ್ನು ವಂಚಿಸಲು ನನ್ನಿಂದ ಸಾಧ್ಯವಿಲ್ಲ.  ಕ್ಷಮಿಸಿ, ನಾವು ದೂರ ಹೋಗುತ್ತಿದ್ದೇವೆ.”

*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...