Home / ಕವನ / ಕವಿತೆ / ಒಪ್ಪಿಕೊ ಪರಾಭವ!

ಒಪ್ಪಿಕೊ ಪರಾಭವ!

ಮಾತಲ್ಲ ಮಂತ್ರ, ಅರ್ಥದಾಚೆಗೆ ಮಾತ
ಹಾರಿಸಿಬಿಡುವ ತಂತ್ರ; ಕತ್ತಿಗೆ ಗಂಟು ಬಿದ್ದ
ಅರ್ಥದ ಕಣ್ಣಿ ಕಳಚಿ ಅಂತರಿಕ್ಷಕ್ಕೆ ಜಿಗಿದು
ನಕ್ಷತ್ರವಾಯಿತು ಶಬ್ಧ.
ನಾದಲಯಗಳ ಜೋಡು ಸಾರೋಟು ಹತ್ತಿ
ರೂಪಕದ ಮೆರವಣಿಗೆ ಬರವಣಿಗೆ;
ಬಡ ಪದವ ಕವಿತೆ ಮಾಡುವ ಅತಾರ್ಕಿಕ ಹೆಣಿಗೆ ಯಕ್ಷಿಣಿಗೆ.
ಲೋಟದಲ್ಲಿದೆ ಹೌದೆ ನೀರು ? ತಟ್ಟೆಯ ಮುಚ್ಚಿ
ಮತ್ತೆ ತೆಗೆದರೆ ಬಿಯರು!
ಆಟಕ್ಕೆ ಮಾತನ್ನು ಹೂಡಿ ಎಸೆದನೊ ದಾಳ
ಕೇಳುಕೇಳಿದ ಗರ,
ನಾಲ್ಕೇ ಜಿಗಿತ ಕಾಯಿ ಹಣ್ಣಾಗಿ ಬಿಡುವ ವರ.
ಖಿಯಾಲಿ ಹತ್ತಿತೊ ಹರಟೆ ಕಣ್ಣೆದುರೆ ಒಣಗೊರಟೆ
ಕುಡಿಯೊಡೆದು ಸಸಿಯಾಗಿ ಗಿಡವಾಗಿ ಮರವಾಗಿ
ಚಿಗುರಿ ಹೂತುಂಬಿ ಹರೆಯಾಡಿ ಹಬ್ಬುವ ನೆರಳು!

ಸಾಧನಕೇರಿಯಲ್ಲಿ ಸಿದ್ಧಿಗೇರಿದ ಜೋಗಿ
ಖಾಲಿ ಜೇಬಿನ ಆರ್ಥಶ್ರೀಮಂತ; ಹೋಗಂತ
ಹೇಳಿದನೊ ಹೋಗಿ, ಬಾ ಎಂದನೋ ತಲೆಬಾಗಿ
ಠಣ್ಣೆಂದು ಕುಣಿಕುಣಿದು ಶಬ್ಧವರಹದ ಸಾಲು
ಹೇಗೆ ಬರುವುವು ನೋಡಿ! ಅರ್ಥ ಆತ್ತಿರಲಿ ಬಿಡಿ
ಅನರ್ಥ ಅಪಾರ್ಥಗಳ ಗಲ್ಲಿ ಪಡಖಾನೆಯಲಿ
ಕುಡಿದು ಮತ್ತೇರಿ
ದನಿಯೆತ್ತಿ ಹಾಡಿ ಪದ ಬಾರಿಸಿವೆ ಜಯಭೇರಿ

ಕುಡುಗೋಲ ಹಿಡಿದ ಏ ಉನ್ಮತ್ತ ಕರಿಯ !
ಏನು ಕೆಲಸವೊ ಇಲ್ಲಿ ನಿನಗೆ ?
ಕುಡುಗೋಲ ಕೆಳಗಿಟ್ಟು, ಕೈಯೆತ್ತಿ ಹಣೆಗಿಟ್ಟು
ಸಲ್ಲಿಸು ನಮಸ್ಕಾರ, ಒಪ್ಪಿಕೊ ಪರಾಭವ!
****

ನಭದಲ್ಲಿ ಬೇರು, ನೆಲದಲ್ಲಿ ಅರಳಿರುವ ಫಲ
ಜ್ವಲಿಸುವ ಆತ್ಮ ತೊಟ್ಟ ಹಿಡಿಮೂಳೆಗಳ ಚೀಲ
ಮೈಯ ಮುಚ್ಚದ ಅರಿವೆ, ಬೋಳುತಲೆ, ಪಾದುಕೆ
ಬಡಪಾಯಿ ರೈತನೆ, ಮಹಿಮಾವಂತ ಋಷಿಯೆ?
ಎರಡೂ ಕೂಡಿ ಮೊಳೆತ ಲೋಕಾಲೋಕ ಕಸಿಯೆ
ಒಮ್ಮೊಮ್ಮೆ ಕೂತನೋ ಚಂಡಿ ಉಪವಾಸ ಹಿಡಿದು
ಮಿಲಿಯಗಟ್ಟಲೆ ಜನ ಇಡಿಕಿರಿದ ಭೂಖಂಡ
ಕಾಯುತ್ತದೆ ಕಳವಳಿಸಿ ತುದಿಗಾಲಿನಲ್ಲಿ ನಿಂತು,
ಬೇಡುತ್ತದೆ ಕೈಮುಗಿದು ಉಪವಾಸ ನಿಲ್ಲಿಸು ಎಂದು.
ಅಲ್ಲಾಡದ ಕಲ್ಲುಜೀವ, ಕಟ್ಟಿಟ್ಟ ಬಿರುಗಾಳಿ
ನಿಜನಡತೆ; ಆದರೂ ಕಂಪನಿ ನಾಟಕದ ಶೈಲಿ!
ತಿಳಿಯದು ಹಡಗಿಗೆ ತನ್ನ ತೇಲಿಸಿ ಮುಂದೊಯ್ಯುವ
ಕಡಲಿನ ನಿಗೂಢ ಜಾಲ, ಮಣ್ಣುಮಂತ್ರದ ಮೇಳ.
ಗೀತೆಯ ಹಾಲು ಹೀರಿ ಗಟ್ಟಿ ಮುಟ್ಟಾದ ಮುದುಕ
ವಾಸ್ತವದ ಬಟ್ಟಲಲ್ಲಿ ಚರಿತ್ರೆ ಪುರಾಣಗಳ
ಕಲೆಸಿ ಉಂಡ ಆಧುನಿಕ.
ಮುಟ್ಟುವಂತಿಲ್ಲ ಹಿಮಾಲಯಕ್ಕಿಂತ ಎತ್ತರ
ಬಿತ್ತದಲ್ಲಿ ಅಡಗಿರುವ ಅರಳಿಯ ವಿಸ್ತಾರ
ಮಡಿಲೊಳಗೆ ಏಳು ಬಣ್ಣಗಳ ಬಚ್ಚಿಟ್ಟ ಬೆಳಕು;
ರಾಜಕಾರಣದ ಸುಡುಗಾಡಿನಲ್ಲೂ
ಸತ್ಯಬ್ರಹ್ಮನ ಧ್ಯಾನ, ಎಲ್ಲವನ್ನೂ ಆತ್ಮದೊರೆಗೆ ಹಚ್ಚುವ ಮಾನ
ಕೊಲ್ಲುವ ಸಿಡಿಗುಂಡೂ ಹೊರಗೆ ತಂದದ್ದು ಅಮರ
‘ಹೇ ರಾಮ ರಾಮ’

ಕುಡುಗೋಲ ಹಿಡಿದ ಏ ಉನ್ಮತ್ತ ಕರಿಯ !
ಏನು ಕೆಲಸವೊ ಇಲ್ಲಿ ನಿನಗೆ ?
ಕುಡುಗೋಲ ಕೆಳಗಿಟ್ಟು ಪಾದುಕೆ ಮೇಲೆ ಹಣೆಯಿಟ್ಟು
ಸಲ್ಲಿಸು ನಮಸ್ಕಾರ, ಒಪ್ಪಿಕೊ ಪರಾಭವ!
* * * *

ಚಂದಿಯುಟ್ಟಿರುವ ಮಗು, ಮಲಮೂತ್ರ ಸುರಿವ ಮೈ
ತುಂಡುಬೆರಳಿನ ಕುಷ್ಠಕಾಯ; ಮಗುವನ್ನು
ಎತ್ತಿ ಎದೆಗಪ್ಪಿ ಉಪಚರಿಸಿ ಉಸಿರೂದಿ
ಮತ್ತೆ ಬದುಕಿಗೆ ಕಳಿಸಿಕೊಡುವ ಕೌಶಲ್ಯ,
ಸೀರೆಯುಟ್ಟಿದೆ ಕರುಣೆ ಬರೆದ ಕವಿತೆ.
ಯೌವನದ ದಿನದಲ್ಲಿ ತನ್ನ ಸೈನ್ಯ ಸಮೇತ
ಯುದ್ಧಕ್ಕೆ ಬಂದ ಮಾರ
ಮುಗ್ಗರಿಸಿ ಬಿದ್ದ ಇವಳ ಮನೆ ಹೊಸ್ತಿಲಿನ ಮೇಲೆ
ತುಂಡಾಗಿ ಹೋಯಿತು ಬಿಲ್ಲದಾರ,
ಕ್ರಿಸ್ತನೆದೆಗೇರಿತು ಈ ರತ್ನಹಾರ.

ಕರ್ತವ್ಯ ಕರುಣೆ ವಾತ್ಸಲ್ಯಗಳ ಗಾಯತ್ರಿ
ಸದಾ ಗಂಭೀರೆ
ಆಗೀಗ ನಕ್ಕರೀ ಧೀರೆ
ಆಕಾಶದಲ್ಲಿ ಫಕ್ಕನೆ ಹಾರಿ ಹೋಗುವುದು ಬಿಳಿಹಕ್ಕಿ ಹಿಂಡು
ಮಲ್ಲಿಗೆಯ ವನದಲ್ಲಿ ಸಿಳ್ಳು ಹಾಕುತ್ತ
ಎಲೆ ನಡುವೆ ಹಾಯುವುದು ತಂಗಾಳಿ ದಂಡು.
ಗದ್ದಲದ ನಡುವಿದ್ದೂ ಸುದ್ದಿ ಬೇಡದ ಸೇವೆ
ಬಂಧಿಸುವ ಕರ್ಮವೇ ಯೋಗವಾಗುವ ಪೂಜೆ,
ಗಂಡಿನ ಹಂಗೇ ಇರದೆ ಕೋಟಿ ಕೋಟಿ ಜನಕ್ಕೆ
ತಾಯಾದ ಭಾಗ್ಯ; ಮನುಕುಲದ ಆರೋಗ್ಯ.
ಎಲ್ಲಿ ಹುಟ್ಟಿದ ಹೆಣ್ಣು ಎಂದು ಜಾತಕ ಕುರಿತು
ಸೊಲ್ಲೆತ್ತಲಿಲ್ಲ ಯಾರೂ
ಜ್ವಲಂತ ಭಕ್ತಿ ಶ್ರದ್ಧೆ ಪ್ರೀತಿ ಪಥದಲ್ಲಿ
ಸಾಗಿ ಬಂದರೆ ತೇರು ಬಾಗದಿರುವವರಾರು ?
ಮಣ್ಣಗೂಡಿಂದ ಹರಿವ ಅನಂತ ಕರುಣೆಯ ತೊರೆಯ
ಬೆರಗಾಗಿ ನೋಡುತಿದೆ ಚುಕ್ಕಿಗಳ ಮೇಳ
ಲೋಕ ಹಾಡುತ್ತಿರುವ ಕರ್ಮಯೋಗಕ್ಕೆ
ಅಲೌಕಿಕದ ತಾಳ.

ಕಂಡುಗೋಲ ಹಿಡಿದ ಏ ಉನ್ಮತ್ತ ಕರಿಯ!
ಏನು ಕೆಲಸವೊ ಇಲ್ಲಿ ನಿನಗೆ ?
ಕುಡುಗೋಲ ಕೆಳಗಿಟ್ಟು, ಮಿಂದು ಮೈ ಮಡಿಯುಟ್ಟು
ಸಲ್ಲಿಸು ನಮಸ್ಕಾರ, ಒಪ್ಪಿಕೊ ಪರಾಭವ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...