Home / ಕವನ / ಕವಿತೆ / ನೀರಿರದ ಮೋಡಕ್ಕೆ

ನೀರಿರದ ಮೋಡಕ್ಕೆ

ಇಲ್ಲಿದ್ದವರೆ ನೀವು
ಹಿಂದೆ ಒಮ್ಮೆ
ಈಗ ಅಲ್ಲಿದ್ದೀರಿ ದೂರ, ಅಷ್ಟೆ
ಎಲ್ಲೋ ಮೇಲಿದ್ದರೂ,
ಇಲ್ಲದ ಗಾಂಬೀರ್‍ಯ, ಹೊತ್ತು ದಿಕ್ಕಿಂದ ದಿಕ್ಕಿಗೆ
ಒಂದೇ ಸಮನೆ ನೀವು
ಠಳಾಯಿಸುತ್ತಿದ್ದರೂ
ನಿಮ್ಮ ಗುರುತಿದೆ ನಮಗೆ ಖಿಚಿತವಾಗಿ
ಹೇಳಬೇಕೆ ಪೂರ್ವಕಥೆಯನೆಲ್ಲ
ಉಚಿತವಾಗಿ ?

ಇಲ್ಲಿದ್ದಾಗ ನೀವು
ತುಂಬಿಕೊಂಡದ್ದು ಹೇಗೆ, ಎಲ್ಲ ಗೊತ್ತಲ್ಲ !
ಎಲ್ಲ ದಿಕ್ಕಿನಿಂದಲೂ ತೊರೆ ಹಳ್ಳ ಕೊಳ್ಳ
ಕೂಡಿ ಹರಿದವು ಒಂದೆ ಮೈಯಾಗಿ ನಿಮ್ಮೆಡೆಗೆ,
ನೀವಿದ್ದ ತಗ್ಗಿಗೆ.
ಬಂದು ತಲುಪಿದ್ದೆಲ್ಲ ನಿಮ್ಮದೆಂದಾಯಿತು,
ಡೊಡ್ಡ ತಗ್ಗಾಗಿದ್ದೆ ನಿಮಗೆ ವರವಾಯಿತು.

ಸಲ್ಲದ್ದು ಬೇಕಾದಷ್ಟಿತ್ತು ನಿಮ್ಮಲ್ಲಿ
ತುಂಬಿಕೊಂಡಿದ್ದರೂ ದೊಡ್ಡಕಡಲಲ್ಲಿ
ಯಾರಿಗೂ ಹನಿ ನೀರು
ಕೊಡಲಾಗಲಿಲ್ಲ
ನೀವು ಇದ್ದದ್ದೆ ಹಾಗೆ, ಕೊಡುವಂತಿರಲಿಲ್ಲ
ಉಪ್ಪುನೀರನ್ನು ಯಾವ ಬೆಪ್ಪ ಕುಡಿದಾನು ?
ಎಷ್ಟೇ ವಿಶಾಲವಾಗಿ ಕಂಡರೂ ಏನಂತೆ
ಚಿಕ್ಕ ಕೆರೆಗಿಂತಲೂ,
ನಲ್ಲಿಬಾಯಲ್ಲಿ ಬರುವ ಕಿರುಬೆರಳ ದಪ್ಪದ
ಜಲಧಾರೆಗಿಂತಲೂ ಕನಿಷ್ಠವಾಗಿದ್ದಿರಿ,
ಬಾಯಾರಿದವರನೂ ತಣಿಸಲಾಗದ ಹಾಗೆ
ಅನಿಷ್ಟವಾಗಿದ್ದಿರಿ.
ಸುತ್ತ ಮುತ್ತ ಎಲ್ಲ ತುರುಗಿಕೊಂಡಿದ್ದರೂ
ಮುಟ್ಟಲಾಗದ ನಿಮ್ಮ
ಉಪ್ಪು ಬದುಕಿಗೆ ಮರುಗಿ
ಕರಗಿದನು ಭಾನು.
ಪ್ರಖರ ಬಿಸಿಲಿನ ಶಾಖ ಬಿದ್ದು ಮೇಲೆದ್ದಿರಿ ;
ಅದೃಷ್ಟವಿದ್ದುದರಿಂದ
ಗಾಳಿಯ ಬೆನ್ನು ಹತ್ತಿ
ನಿಮ್ಮನ್ನೇ ಬೆಚ್ಚಿಸುವ ಬಾರೀ ಎತ್ತರಕೆ
ಯಾರೂ ಕಾಣದ ಹಾಗೆ
ಹೋಗಿ ಸೇರಿದಿರಿ.
ಈಗ ಹರಡಿದ್ದೀರಿ ಆಗಸದ ತುಂಬ
ಆದರೇನು ?
ಬೆರಗಾಗುವರು ಯಾರು ಸುಳ್ಳು ದಂಭಕ್ಕೆ ?
ನೀರೇ ಇಲ್ಲದ ಖಾಲಿ ಮುಗಿಲ ಠೀವಿಯನು
ಬಯ್ಯುವವರೇ ಎಲ್ಲ – “ಏನೆಂದರೇನೂ ಇಲ್ಲ”

ತೇವವಿಲ್ಲದ ಮುಗಿಲು ನೀಲಿ ಬಾಲಿನ ಮೈಗೆ
ತೊನ್ನು ಎನುವಂತಿದೆ.
ಒಳಗೆ ಜಲವಿಲ್ಲ, ಕೊಡುವ ಬಲವಿಲ್ಲ,
ಕೆಳಗೆ ದಡದಡ ಸುರಿದು
ಮಣ್ಣೊಳಗೆ ಇಳಿದು
ಬೆಳೆವ ಕಸುವಿಲ್ಲ.
ಎಳೆಗಾಳಿ, ತೆಳುಗಾಳಿ ಎಂಥ ಕ್ಷುದ್ರವೆ ಇರಲಿ
ಅದು ಎಳೆದ ದಿಕ್ಕಿಗೇ ಇದರ ಓಟ,
ಆಡಿಸುತ್ತಿದ್ದಾರೆ ಎಲ್ಲ ಆಟ!

ಇಲ್ಲದ್ದು ಹೋಗಿ ಇರುವುದೆಂದು ಬಂದೀತೋ
ಎಂದು ಕೊರಗುತ್ತಿದೆ ಕೆಳಗೆ ಜನವೆಲ್ಲ.
ಜಲಸುರಿವ ಮೋಡಕ್ಕೆ ಕಾಯುತ್ತ ನಿಂತಿವೆ
ಬಾಯ್ತೆರೆದುಕೊಂಡಿರುವ ಹಳ್ಳ ಕೊಳ್ಳ!
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...