Home / ಕವನ / ಕವಿತೆ / ದೆವ್ವದ ಉಪದೇಶ

ದೆವ್ವದ ಉಪದೇಶ

ಈಗ ಕೂಡ ಒಮ್ಮೊಮ್ಮೆ
ದೆವ್ವ ಮನೆಗೆ ಬರುತ್ತವೆ ;
ಬರೀ ಕೈಲಿ ಬರುವುದಿಲ್ಲ
ಏನೋ ವಾರೆಂಟ್ ತರುತ್ತವೆ
ನಟ್ಟ ನಡೂರಾತ್ರಿ ;
ಡೈರಿ ಬರೆದ ದಿನವಂತೂ
ಅವು ಬರುವುದು ಖಾತ್ರಿ –
ಝಡತಿಯ ದಂಡದ ಹಾಗೆ,
ಮಿಡತೆಯ ಹಿಂಡಿನ ಹಾಗೆ,
ಕುಕ್ಕಿ ಕುಕ್ಕಿ ಗುಟ್ಟ ಬಗೆವ
ಮರಕುಟುಕನ ಹಾಗೆ.

ದೆವ್ವಕ್ಕ ಕಿಚ್ಚೇ ಕಣ್ಣು
ಧಗ ಧಗ ಜ್ವಲಿಸುತ್ತವೆ;
ಚಿತ್ತದ ಪಾತಾಳಗಳೂ
ಅವಕ್ಕೆ ತೆರೆಯುತ್ತವೆ;
ಒಳಗೇ ಆಡುವ ಆಸೆಯ
ಕಬ್ಬಿನ ಆಲೆಗಳು,
ಬೆಳಕೇ ಹಾಯದ ಕಾಮದ
ನಿಗೂಢ ಕಾಡುಗಳು,
ಮೈ ಕೈ ಕಾಯಿಸಬಾರದ
ಗಂಜಿಯ ಬೇಯಿಸಬಾರದ
ಹೆಣಕ್ಕೆ ಹಚ್ಚಿದ ಕಿಚ್ಚಿನ
ಮೈಲಿಗೆ ಜ್ವಾಲೆಗಳು,
ಕಾಣುತ್ತವೆ ಆ ಕಣ್ಣಿಗೆ ಎಲ್ಲಾ ಲೀಲೆಗಳೂ!

ಈ ಸಲ ಬಂದಾಗ ದೆವ್ವ
ಏನೋ ನಕ್ಷೆ ತಂದವು :
‘ಈ ಕನ್ನಡಿ ತಗೊ ಮಗನೇ
ಮುಖ ನೋಡಿಕೊ’ ಎಂದವು.
ಅದೋ, ರಸ್ತೆನಕ್ಷೆ. ಅಲ್ಲಿ
ರಾಜಮಾರ್ಗ ಮೂರು,
ಆ ದಾರಿಗೆ ಚಿಗುರಿದ್ದ
ಸೊಟ್ಟಾಪಟ್ಟ ಬೆಳಿದಿದ್ದ
ಹಾಸುಹೊಕ್ಕು ಹೆಣೆದಿದ್ದ
ಕಾಲುದಾರಿ ನೂರು.
ರಾಜಮರ್‍ಗ ಒಂದರಲ್ಲೂ
ಹೆಜ್ಜೆಯ ಗುರುತಿಲ್ಲ,
ದಾರಿಯೆ ಸಮೆದಿಲ್ಲ ;
ಕುರುಚಲು ತುಂಬಿದೆ ಯಾರೂ
ನಡೆಯಲು ಬಳಸಿಲ್ಲ.
ಕೆದರಿದ್ದರೂ ಮಣ್ಣು ಅದು
ಮಳೆ ಬಿದ್ದದ್ದಕ್ಕೆ.
ಹುಳು ಹರಿದದ್ದಕ್ಕೆ:
ಉತ್ತಿದ್ದಕ್ಕಲ್ಲ ಅಥವಾ
ಬಿತ್ತಿದ್ದಕ್ಕಲ್ಲ.

ಕಾಲುದಾರಿ ರೀತಿಯೋ
ಗೀಚಿ ಬರೆವ ಸ್ಲೇಟು:
ನಿರಂಕುಶ ಅಭಿವ್ಯಕ್ತಿ
ಲಂಡನ್ ಹೈಡ್‌ಪಾರ್ಕು:
ಸ್ಪಾಟ್‌ಲೈಟ್‌ ಸುಳಿವೇ ಇಲ್ಲದ
ಚಂಬಲ್ ಕಣಿವೆ,
ಬೇಕಾಬಿಟ್ಟಿ ಒಟ್ಟಿದ
ಒಣಹುಲ್ಲಿನ ಬಣವೆ;
ಎಲ್ಲಿಂದ ಎಲ್ಲಿಗೋ ಜಿಗಿದು
ಸುರಂಗ ಗಟಾರದಲ್ಲಿ ಮುಗಿದು
ಒಬ್ಬನೇ ಸಮೆಸಿದ ದಾರಿ
ಎಲಾ ಗಡಿ ಮೀರಿ,
ಪರಮಪದದ ದ್ವಾರದಿಂದ
ಪ್ರತಿಸಲವೂ ಜಾರಿ.
ಶಹಭಾಶ್ ಎಂದವು ದೆವ್ವ,
ಸುಮ್ಮನೆ ಮುಖ ನೋಡಿದೆ.
“ಸುಳ್ಳು ಬದುಕು ಯಾಕಪ್ಪಾ”
ಎಂದವು. ಹಲ್ಕಿರಿದೆ.
“ಎಲ್ಲಾ ಡೈರಿ ಸುಟ್ಟು ಬಿಡೊ
ನಿಜದ ಬದುಕನ್ನೊಪ್ಪಿಬಿಡೊ
ಢೋಂಗಿ ಬದುಕು ಯಾಕೋ ಮಗನೆ”
ಎಂದವು. ಮುಖ ಬಿಗಿದೆ.
ಎಲ್ಲೋ ಹಾಳು ಸಹವಾಸ
ಮೂಲಕ್ಕೇ ಮೋಸ ;
ತಾನೇ ದೆವ್ವ, ಮಾಡುವುದೋ
ನೀತಿಯ ಉಪದೇಶ
ಎನ್ನಿಸಿದ್ದೇ ಒಳಗೊಳಗೇ
ಉಕ್ಕಿತು ಕುದಿಕೋಪ
ಎದ್ದು ಹೋಗಿ ದೆವ್ವಗಳನು
ಒದ್ದು ಹೊರಗೆ ಹಾಕಿದೆ,
ಕದ ಕಿಟಕಿಯ ಜಡಿದೆ :
ಆತ್ಮಕಥೆಯ ರೇಷ್ಮೆವಸ್ತ್ರ
ನೇಯಲೆಂದು ಡೈರಿ ಹಿಡಿದು
ಒಳಕೋಣೆಗೆ ನಡೆದೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...