Home / ಕವನ / ಕವಿತೆ / ರಾಮನ ವಿರುದ್ಧ ದೆವ್ವದ ತರ್ಕ

ರಾಮನ ವಿರುದ್ಧ ದೆವ್ವದ ತರ್ಕ

ರಾಮಾಯಣ ಪಾರಾಯಣ
ಮಾಡಿ ಮುಗಿಸಿದ್ದೆ,
ರಾಮನವಮಿಯ ರಾತ್ರಿ.
ರಾಮಚಂದ್ರನ ದಿವ್ಯಬದುಕ ಸ್ಮರಿಸುತ್ತ,
ಅಂಥ ಬಾಳಿನ ಕನಸು ಕೂಡ ಕಾಣದ್ದಕ್ಕೆ
ನನ್ನಂಥ ಪಾಪಿಗಳ ಶಪಿಸಿಕೊಳ್ಳುತ್ತ,
ಒಬ್ಬನೇ ಒಳಕೋಣೆಯಲ್ಲಿ ಕೂತಿದ್ದೆ.
ತೆರೆದ ಕಿಟಿಕಿಯ ಹಾದು ಗಾಳಿ ಬಂದಂತೆ
ತೂರಿ ಬಂದಿತು ಏನೋ ;
ಕೊಳೆತ ಇಲಿವಾಸನೆ ಒಳಗೆ ಹಬ್ಬುತ್ತಿತ್ತು.
ನಿಮಿಷಾರ್ಧದಲ್ಲಿ ನನ್ನೆದುರು ಕುರ್ಚಿಯ ಮೇಲೆ
ನಗುತ್ತ ಕೂತಿತ್ತೊಂದು ನೀಳ ಎಲುಬಿನ ದೆವ್ವ!
“ಮತ್ತೆ ಬಂತಲ್ಲಪ್ಪ, ಕರೆಯದೇ ಕೇಳದೇ
ಹಾಳು ಪ್ರಾರಬ್ಧ!
ಆಡುವಂತಿಲ್ಲ ಅನುಭವಿಸುವಂತಿಲ್ಲ;
ಎಲ್ಲ ತಿಳಿಯುತ್ತದೆ ದರಿದ್ರ ಮುಚ್ಚಿಡುವಂತೇ ಇಲ್ಲ.
ಒದ್ದು ಹೊರ ಹಾಕಿದ್ದರೂ,
ಮರ್ಯಾದೆ ಇದ್ದರೆ ತಾನೆ?
ಮತ್ತೆ ಬಂದಿದೆ, ಶುದ್ಧ ತರಲೆ” ಎನ್ನಿಸಿತು.

“ಯಾಕೆ ನಗುತ್ತೀ” ಎಂದೆ,
ನಾನೂ ನಗುಮುಖ ಮಾಡಿ.
“ನಿನ್ನ ಪೆದ್ದುತನಕ್ಕೆ,
ತೆಗಳಬೇಕಾದವನ ಹಾಡಿ, ಹೊಗಳಿ, ಕುಣಿದು
ಪ್ರಸಾದ ನುಂಗಿದ್ದಕ್ಕೆ,
ತರ್ಕದ ತಕ್ಕಡಿ ಒದ್ದು, ಶ್ರದ್ಧೆಗೆ ಟೋಪಿ ಬಿದ್ದು
ತಿಳಿದರೂ ತಿರುತಿರುಗಿ
ಮೋಸ ಹೋಗುವುದಕ್ಕೆ.
ಮನುಷ್ಯ ಮುಟ್ಠಾಳ ನಿಜ,

ನಿಮ್ಮ ಹೆಸರೆತ್ತಿದರೆ ಸಾಕು ದೆವ್ವಗಳೆಲ್ಲ
ಘೊಳ್ಳೆನ್ನುತ್ತವೆ” ಅಂತ ಖೊಕ್ ಎಂದು ನಕ್ಕಿತು.
“ಮುಚ್ಚು ಬಾಯಿ, ಸಾಕು. ಹೇಗೆ? ಬೊಗಳು” ಅಂತ
ಸಿಟ್ಟಾಗಿ ಕೇಳಿದೆ.
ಅಪ್ಪ ಕೊಟ್ಟಿದ್ದ ಒಂದು ತಪ್ಪು ಮಾತನ್ನೇ ಹಿಡಿದು
ರಾಜ್ಯ ನಡೆಸುವ ಹೊಣೆಯ ಬಿಡುವವನು ಗಂಡ?
ಮೆಚ್ಚಿರುವೆ ಮದುವೆಯಾಗೋ ಎಂದ ಹೆಣ್ಣಿನ
ಮೂಗು ಕಿವಿ ಕೊಯಿಸಿದವ ನಿಜವಾಗಿ ಪುಂಡ!
ಅಣ್ಣನ್ನ ಬಿಟ್ಟು ಒಂದ ಸುಳ್ಳು ತಮ್ಮನ್ನ
ತಬ್ಬಿ ಬಾ ಎನ್ನುವವ ಯಾವನಿಗೆ ಅಣ್ಣ?
ಕಿಚ್ಚಲ್ಲಿ ಒಮ್ಮೆ ಬಿದ್ದೆದ್ದರೂ ಶಂಕಿಸಿ
ಕಾಡಿಗಟ್ಟಿದನಲ್ಲ ಬಸಿರಿ ಹೆಣ್ಣನ್ನ ?
ಯಾರ ರಾಜ್ಯದ ಮಾತೊ ಯಾಕಪ್ಪ ಅವನಿಗೆ ?
ಬೆಂಕಿಗೆ ತುಪ್ಪ ಸುರಿವ ದಡ್ಡ ಬೈರಾಗಿಗಳ
ಪರ ಹಿಡಿದು ಯಾರನ್ನೋ ತದುಕುವುದು ಯಾಕೆ ?
ಸೀಕರಣೆ ಪಾನಕ ಸಿದ್ದೋಟಿ ಹೋಳುಗಳ
ಚಪಲ ನಿಮಗೆ.
ತಿನ್ನಬಾರದೆ ಅದನ್ನು ಹಾಗೆಯೇ? ಅಷ್ಟಕ್ಕೆ
ಆ ರಾಮ ಯಾತಕ್ಕೆ ?
ಚಿನ್ನದಂಥ ಮನುಷ್ಯ ರಾವಣ, ಅವನನ್ನ
ತೆಗಳುವುಮ ಬೇಕಿತ್ತೆ ?”

ಎಲಾ ಎನಿಸಿತು. ಪೂರಾ ತಬ್ಬಿಬ್ಬಾಗಿ ಹೋದೆ !
ಏನು ವಾದ! ಅದೆಷ್ಟು ತರ್ಕಶುದ್ಧ, ಪ್ರಬುದ್ಧ
ಎಂಥ ಶೀರ್ಷಾಸನ !
“ಅರೇ, ಆ ರಾವಣ ಯೋಗ್ಯಮನುಷ್ಯ ಹೇಗೆ ?
ಯಾರ ಹೆಣ್ಣನ್ನೊ ಮರೆಯಲಿ ಕದ್ದೊಯ್ದದ್ದು
ಸರಿಯೇನು?” ಎಂದೆ.
“ಮರೆಯಿಂದ ವಾಲಿಯನ್ನು ಬಡಿದದ್ದು ಗೊತ್ತ ?
ದ್ವೇಷವೇ ಇಲ್ಲದೆ ಕೊಲ್ಲಬಹುದೆಂದರೆ
ಆಸೆಯಾದವಳನ್ನು ಕದ್ದರೇನಂತೆ ?
ಒಪ್ಪಿಗೆ ಇರದೆ ಪಾಪ, ಮುಟ್ಟಲಿಲ್ಲ ಕೂಡ !”
ಎಂದದ್ದೆ ಭೂತ ಬೇರೆ ಏನೋ ನೆನಪಿಸಿಕೊಂಡು
ಹಠಾತ್ತನೆ ಎದ್ದಿತು.

“ಕೆಲಸವಿದೆ ನನಗೂ, ರಾವಣನ ಜಯಂತಿ ಇವತ್ತು
ನಿಮಗೆ ಸೀಕರಣೆ ಪಾನಕ; ನಮಗೆ ಹಸಿಹೆಣದ
ರಸಗವಳ; ಕಾಯುತ್ತ ಇರುತ್ತಾರೆ” ಎನ್ನುತ್ತ
ಹಾರಿಹೋಯಿತು ಭೂತ ಕಣ್ಣು ಹೊಡೆದು ನಗುತ್ತ
“ಟಾ ಟಾ” ಎನ್ನುತ್ತ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...