Home / ಕವನ / ಕವಿತೆ / ರಾಮನ ವಿರುದ್ಧ ದೆವ್ವದ ತರ್ಕ

ರಾಮನ ವಿರುದ್ಧ ದೆವ್ವದ ತರ್ಕ

ರಾಮಾಯಣ ಪಾರಾಯಣ
ಮಾಡಿ ಮುಗಿಸಿದ್ದೆ,
ರಾಮನವಮಿಯ ರಾತ್ರಿ.
ರಾಮಚಂದ್ರನ ದಿವ್ಯಬದುಕ ಸ್ಮರಿಸುತ್ತ,
ಅಂಥ ಬಾಳಿನ ಕನಸು ಕೂಡ ಕಾಣದ್ದಕ್ಕೆ
ನನ್ನಂಥ ಪಾಪಿಗಳ ಶಪಿಸಿಕೊಳ್ಳುತ್ತ,
ಒಬ್ಬನೇ ಒಳಕೋಣೆಯಲ್ಲಿ ಕೂತಿದ್ದೆ.
ತೆರೆದ ಕಿಟಿಕಿಯ ಹಾದು ಗಾಳಿ ಬಂದಂತೆ
ತೂರಿ ಬಂದಿತು ಏನೋ ;
ಕೊಳೆತ ಇಲಿವಾಸನೆ ಒಳಗೆ ಹಬ್ಬುತ್ತಿತ್ತು.
ನಿಮಿಷಾರ್ಧದಲ್ಲಿ ನನ್ನೆದುರು ಕುರ್ಚಿಯ ಮೇಲೆ
ನಗುತ್ತ ಕೂತಿತ್ತೊಂದು ನೀಳ ಎಲುಬಿನ ದೆವ್ವ!
“ಮತ್ತೆ ಬಂತಲ್ಲಪ್ಪ, ಕರೆಯದೇ ಕೇಳದೇ
ಹಾಳು ಪ್ರಾರಬ್ಧ!
ಆಡುವಂತಿಲ್ಲ ಅನುಭವಿಸುವಂತಿಲ್ಲ;
ಎಲ್ಲ ತಿಳಿಯುತ್ತದೆ ದರಿದ್ರ ಮುಚ್ಚಿಡುವಂತೇ ಇಲ್ಲ.
ಒದ್ದು ಹೊರ ಹಾಕಿದ್ದರೂ,
ಮರ್ಯಾದೆ ಇದ್ದರೆ ತಾನೆ?
ಮತ್ತೆ ಬಂದಿದೆ, ಶುದ್ಧ ತರಲೆ” ಎನ್ನಿಸಿತು.

“ಯಾಕೆ ನಗುತ್ತೀ” ಎಂದೆ,
ನಾನೂ ನಗುಮುಖ ಮಾಡಿ.
“ನಿನ್ನ ಪೆದ್ದುತನಕ್ಕೆ,
ತೆಗಳಬೇಕಾದವನ ಹಾಡಿ, ಹೊಗಳಿ, ಕುಣಿದು
ಪ್ರಸಾದ ನುಂಗಿದ್ದಕ್ಕೆ,
ತರ್ಕದ ತಕ್ಕಡಿ ಒದ್ದು, ಶ್ರದ್ಧೆಗೆ ಟೋಪಿ ಬಿದ್ದು
ತಿಳಿದರೂ ತಿರುತಿರುಗಿ
ಮೋಸ ಹೋಗುವುದಕ್ಕೆ.
ಮನುಷ್ಯ ಮುಟ್ಠಾಳ ನಿಜ,

ನಿಮ್ಮ ಹೆಸರೆತ್ತಿದರೆ ಸಾಕು ದೆವ್ವಗಳೆಲ್ಲ
ಘೊಳ್ಳೆನ್ನುತ್ತವೆ” ಅಂತ ಖೊಕ್ ಎಂದು ನಕ್ಕಿತು.
“ಮುಚ್ಚು ಬಾಯಿ, ಸಾಕು. ಹೇಗೆ? ಬೊಗಳು” ಅಂತ
ಸಿಟ್ಟಾಗಿ ಕೇಳಿದೆ.
ಅಪ್ಪ ಕೊಟ್ಟಿದ್ದ ಒಂದು ತಪ್ಪು ಮಾತನ್ನೇ ಹಿಡಿದು
ರಾಜ್ಯ ನಡೆಸುವ ಹೊಣೆಯ ಬಿಡುವವನು ಗಂಡ?
ಮೆಚ್ಚಿರುವೆ ಮದುವೆಯಾಗೋ ಎಂದ ಹೆಣ್ಣಿನ
ಮೂಗು ಕಿವಿ ಕೊಯಿಸಿದವ ನಿಜವಾಗಿ ಪುಂಡ!
ಅಣ್ಣನ್ನ ಬಿಟ್ಟು ಒಂದ ಸುಳ್ಳು ತಮ್ಮನ್ನ
ತಬ್ಬಿ ಬಾ ಎನ್ನುವವ ಯಾವನಿಗೆ ಅಣ್ಣ?
ಕಿಚ್ಚಲ್ಲಿ ಒಮ್ಮೆ ಬಿದ್ದೆದ್ದರೂ ಶಂಕಿಸಿ
ಕಾಡಿಗಟ್ಟಿದನಲ್ಲ ಬಸಿರಿ ಹೆಣ್ಣನ್ನ ?
ಯಾರ ರಾಜ್ಯದ ಮಾತೊ ಯಾಕಪ್ಪ ಅವನಿಗೆ ?
ಬೆಂಕಿಗೆ ತುಪ್ಪ ಸುರಿವ ದಡ್ಡ ಬೈರಾಗಿಗಳ
ಪರ ಹಿಡಿದು ಯಾರನ್ನೋ ತದುಕುವುದು ಯಾಕೆ ?
ಸೀಕರಣೆ ಪಾನಕ ಸಿದ್ದೋಟಿ ಹೋಳುಗಳ
ಚಪಲ ನಿಮಗೆ.
ತಿನ್ನಬಾರದೆ ಅದನ್ನು ಹಾಗೆಯೇ? ಅಷ್ಟಕ್ಕೆ
ಆ ರಾಮ ಯಾತಕ್ಕೆ ?
ಚಿನ್ನದಂಥ ಮನುಷ್ಯ ರಾವಣ, ಅವನನ್ನ
ತೆಗಳುವುಮ ಬೇಕಿತ್ತೆ ?”

ಎಲಾ ಎನಿಸಿತು. ಪೂರಾ ತಬ್ಬಿಬ್ಬಾಗಿ ಹೋದೆ !
ಏನು ವಾದ! ಅದೆಷ್ಟು ತರ್ಕಶುದ್ಧ, ಪ್ರಬುದ್ಧ
ಎಂಥ ಶೀರ್ಷಾಸನ !
“ಅರೇ, ಆ ರಾವಣ ಯೋಗ್ಯಮನುಷ್ಯ ಹೇಗೆ ?
ಯಾರ ಹೆಣ್ಣನ್ನೊ ಮರೆಯಲಿ ಕದ್ದೊಯ್ದದ್ದು
ಸರಿಯೇನು?” ಎಂದೆ.
“ಮರೆಯಿಂದ ವಾಲಿಯನ್ನು ಬಡಿದದ್ದು ಗೊತ್ತ ?
ದ್ವೇಷವೇ ಇಲ್ಲದೆ ಕೊಲ್ಲಬಹುದೆಂದರೆ
ಆಸೆಯಾದವಳನ್ನು ಕದ್ದರೇನಂತೆ ?
ಒಪ್ಪಿಗೆ ಇರದೆ ಪಾಪ, ಮುಟ್ಟಲಿಲ್ಲ ಕೂಡ !”
ಎಂದದ್ದೆ ಭೂತ ಬೇರೆ ಏನೋ ನೆನಪಿಸಿಕೊಂಡು
ಹಠಾತ್ತನೆ ಎದ್ದಿತು.

“ಕೆಲಸವಿದೆ ನನಗೂ, ರಾವಣನ ಜಯಂತಿ ಇವತ್ತು
ನಿಮಗೆ ಸೀಕರಣೆ ಪಾನಕ; ನಮಗೆ ಹಸಿಹೆಣದ
ರಸಗವಳ; ಕಾಯುತ್ತ ಇರುತ್ತಾರೆ” ಎನ್ನುತ್ತ
ಹಾರಿಹೋಯಿತು ಭೂತ ಕಣ್ಣು ಹೊಡೆದು ನಗುತ್ತ
“ಟಾ ಟಾ” ಎನ್ನುತ್ತ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...