Home / ಕವನ / ಕವಿತೆ / ಗೆಳೆಯನ ಜೊತೆ ಸಮಾಲೋಚನೆ

ಗೆಳೆಯನ ಜೊತೆ ಸಮಾಲೋಚನೆ

ಈಚೆಗೆ ಯಾಕೋ ತುಂಬ
ಸಣ್ಣಗಾಗಿದ್ದೀರಿ ಅಂತ
ಗೆಳೆಯರು ಪರಿಚಿತರೆಲ್ಲ ಹೇಳಲು ಶುರುಮಾಡಿದರು.
ನನಗೇನಾಗಿದೆ ಧಾಡಿ
ಧಾಂಡಿಗನಂತಿದ್ದೀನಿ –
ಆಂತಾ ದಿನಾ ಹೇಳಿ ಹೇಳಿ
ಬಾಯಿ ಒಣಗಿ ಹೋಯಿತು.
ಮೊನ್ನೆ ಇವಳೂ ಒಮ್ಮೆ
ಮೆಲ್ಲಗೆ ಹತ್ತಿರ ಬಂದು
“ಯಾಕೀಥರ ಇದ್ದೀರಿ ?
ಪೂರಾ ಬಾಡಿದ್ದೀರಿ,
ನನ್ನೆದುರೂ ಗುಟ್ಟೆ” ಅಂತ
ಕಣ್ಣಲ್ಲಿ ನೀರು ತಂದಳು.
ಯಾಕೋ ವಿಪರೀತಕ್ಕೆ ಹೋಗುತ್ತಿದೆ ಎನಿಸಿತು
ನುಂಗಿದ್ದನ್ನು ಕಕ್ಕದೆ ವಿಧಿಯಿಲ್ಲ ಎನಿಸಿತು.

ನಾಡಿಗ ಬಂದರು ಮೊನ್ನೆ
ಮೇಲೆ ಬನ್ನಿ ಅಂದೆ.
ಪಕ್ಕ ಕೂತು ದನಿ ತಗ್ಗಿಸಿ
ಆಪ್ತವಾಗಿ ಹೇಳಿದೆ :
“ಬಲು ರಹಸ್ಯ ವಿಷಯ ನೋಡಿ
ಗೇಟು ದಾಟುವಂಥದಲ್ಲ
ಇವಳಿಗಂತೂ ಅಪ್ಪಿತಪ್ಪಿ ಕೂಡ ತಲುಪುವಂಥದ್ದಲ್ಲ.
ಹೇಗೆ ಹೇಳಲೆನ್ನುವುದೇ ತಿಳಿಯುತ್ತಿಲ್ಲ” ಎಂದೆ.

ಏನು ಹೊಳೆಯಿತೋ ಕವಿಗೆ
ಕಣ್ಣುಹೊಡೆದು ನಕ್ಕರು:
ತಿವಿಯುವಂತೆ ನಕ್ಕು ನೋಡಿ ‘ರಸಿಕರಪ್ಪಾ’ ಎಂದರು
“ಹೇಳಿ ಯಾಕೆ ಸಂಕೋಚ?
ಇಂಥದೆಲ್ಲ ಇದ್ದದ್ದೇ
ಋಷಿಗಳೇನು ನಾವು ನೀವು ?
ಕೆರೆಗೆ ಅವರೂ ಬಿದ್ದದ್ದೇ !
ಉಪ್ಪು ಕಾರ ತಿನ್ನುವಂಥ ದೇಹ ತಾನೆ ನಮ್ಮದೂ ?
ನನಗೂ ಹಿಂದೆ ಬಳ್ಳಿಯೊಂದು ಕಾಲ್ಕಟ್ಟಿದ್ದುಂಟು
ಹೂ ಬಿಡಿಸಲು ಕೆರೆಗಿಳಿದರೆ
ಮಂಡಿತನಕ ಕಾಲು ಹೂತು ಒದ್ದಾಡಿದ್ದುಂಟು!
ಹೇಗೋ ಬಳ್ಳಿ ಕಳಚಿಕೊಂಡೆ
ಕಾಲು ಮೇಲೆ ಎಳೆದುಕೊಂಡೆ
ಮನ್ಮಥನಿಗೆ ಜಯವಾಗಲಿ, ಬದುಕಿಕೊಂಡೆ!” ಎಂದರು

ಕವಿಯ ಮಾತು ಕೇಳಿ ನನಗೆ
ನಗು ಉಕ್ಕಿತು ಒಳಗೆ
“ಅಯ್ಯೋ ಹುಚ್ಚು ಬ್ರಾಹ್ಮಣ !
ನಿಮ್ಮ ಥರದ್ದಲ್ಲ ನಂದು, ಎಂಥದೋ ಪುರಾಣ,
ಬಲು ವಿಚಿತ್ರ ಸಂಗತಿ.
ಕೇಳಿದವರು ನಂಬಲೂ
ಶಂಕೆ ಪಡುವ ಸಂಗತಿ.
ಈಚೆಗೆರಡು ತಿಂಗಳಿಂದ
ಎಂಟು ಹತ್ತು ದಿನಕ್ಕೊಮ್ಮೆ
ಭೂತವೊಂದು ಬರುತ್ತಿದೆ
ಈ ರೂಮಿಗೆ ಗೊತ್ತೆ ?”
ನೋಡಿದೆ ಕವಿಯತ್ತ.

ಗಾಬರಿಯಾದರು ಕವಿ
ದಿಟ್ಟಸಿ ನೋಡಿದರು
“ಏನು ನೀವು ಹೇಳೋದು!
ಇದು ಕವಿತೆಗೆ ಸೇರೋದು
ಏನೋ ನೋಡಿ ಭೂತ ಅಂತ
ಗಾಬರಿಗೊಂಡಿಲ್ಲ ತಾನೆ ?
ಫ್ಯಾಂಟಸಿ ಕಥೆ ಏನನ್ನೋ ಬರೆಯುವ ಪ್ಲಾನಿಲ್ಲ ತಾನೆ ?
ಪಿತ್ಥ ಗಿತ್ಥ ಇದ್ದೀತು
ಜ್ವರದ ಸನ್ನಿ ಇದ್ದೀತು
ಬೇಗ ತಾಪ ಆರೀತು ಹೆದರಬೇಡಿ” ಎಂದರು
ಕೈಯ ಮುಟ್ಟಿ ಹಣೆಯ ಮುಟ್ಟಿ
ಖಾತ್ರಿ ಮಾಡಿಕೊಂಡರು
ಶಂಕೆ, ಆತಂಕ ಅವರ ಕಣ್ಣಿನಲ್ಲಿ ಹೊಳೆಯುತ್ತಿತ್ತು
ಕವಿತೆ ಬರೆದ ಅಭಯಹಸ್ತ
ನನ್ನ ಬೆನ್ನ ಸವರುತ್ತಿತ್ತು.

“ನಿಮ್ಮ ಆಣೆ, ನನ್ನ ಆಣೆ ಕವಿತೆಯಾಣೆ” ಎಂದೆ.
“ಮಕ್ಕೀ ಕಾ ಮಕ್ಕಿ ಘಟನೆ ನುಡಿದೆ ನಿಮ್ಮ ಮುಂದೆ
ನಿಜವಾಗಿಯೂ ಭೂತ ಇದೆ,
ನಾನೇ ಖುದ್ದು ನೋಡಿರುವೆ,
ರೂಬು ರೂಬು ಕೂತು ಎಷ್ಟೋ ಮಾತನ್ನಾಡಿರುವೆ
ಕಾಳರಾತ್ರಿ ಗಾಳಿಯೇರಿ ಭಗ್ಗನೆ ನುಗ್ಗುತ್ತದೆ
ನೀವು ಕೂತ ಕುರ್ಚಿಯಲ್ಲಿ ಧಿಮ್ಮನೆ ಕೂರುತ್ತದೆ
ಭಾಷೆ, ತರ್ಕ, ಮುಂಡೇದಕ್ಕೆ ಕಾವ್ಯ ಕೂಡ ಗೊತ್ತಿದೆ
ಕಂಡ ದಿವಸದಿಂದ ನನ್ನ ನೆಮ್ಮದಿಯೇ ಸತ್ತಿದೆ”

“ಹೇಗಿದೆ ?” ಎಂದರು ಕವಿ.
“ಅದೆ ವಿಚಿತ್ರ ನೋಡಿ
ನನ್ನನೆ ಕಡೆದಿಟ್ಟಂತಿದೆ ಎಲ್ಲ ಅಳತೆ ಮಾಡಿ.
ದೇಹವಷ್ಟೇ ಅಲ್ಲ,
ನಿಲುವು ಮಾತು ಧಾಟಿಯನ್ನೂ ಕದ್ದಂತಿದೆ ಕಳ್ಳ.
ಮನಸಿನಾಳದಲ್ಲಿ ಮಿಂಚಿ ತಳಕಿಳಿದದ್ದನ್ನೂ
ಗಾಳ ಹಾಕಿ ಎತ್ತುತ್ತದೆ
ಉರಿ ಉರಿಯುವ ಕಣ್ಣು!”

ಇರಲಿ ಬಿಡಿ, ಚಿಂತೆ ಬೇಡ
ಸ್ವಲ್ಪ ದಿವಸ ಬಿಡೋಣ,
ಕೆಟ್ಟದ್ದವಂತೂ ಇರಲಾರದು
ಅದರ ಆಟ ನೋಡೋಣ.
ಮೈ ಮುಟ್ಟುವುದಿಲ್ಲವಲ್ಲ ಬೇರೇನೇ ಆದರೂ
ಬರುತ್ತೇನೆ ಮತ್ತೆ ಎಂದು
ನಾಡಿಗ ಮೇಲೆದ್ದರು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...