Home / ಕವನ / ಕವಿತೆ / ಗುಣಾಕಾರಿ

ಗುಣಾಕಾರಿ

ಯಾವುದು ಇಲ್ಲವೆಂದು ನಾನು ಕೂಗಿದ್ದು?
ಪಬ್ಲಿಕ್ಕಾಗಿ ಕೂಗಿ, ರಣಾರಣ ರೇಗಿ
ಎಲ್ಲರೆದುರು ಬೀಗಿದ್ದು?
“ನನ್ನ ಬುದ್ಧಿ ನನ್ನ ಉತ್ತರ ಮುಖಿ,
ಅಳೆದ ಸತ್ಯ ದಡ ದೂರದ ಮುಳುಗು ತತ್ವವಾದರೂ ಸರಿ
ಅದರಲ್ಲೇ ಪೂರ್ತಿ ಸುಖಿ,
ನೋವಿಗೊಂದು ರಕ್ಷಯೆಂದು ನಂಬಿ ಬಾಳಲೇ” ಎಂದು
ಯಾಕಾಗಿ ನಂಬುವವರನ್ನು ಗುದ್ದಿ ಬಂದದ್ದು?
ತರ್ಕದಲ್ಲಿ ನೆಲ ಹೊರಳಿಸುತ್ತೇನೆ,
ಹೂವರಳಿಸುತ್ತೇನೆ
ನದಿ ಮರಳಿಸುತ್ತೇನೆ
ಏನು ಅಂಕೆ ತಪ್ಪಿತಾ ಎಲ್ಲ?” –
ಎಂದು ಅಬ್ಬರಿಸಿ ಮಲಗಿದ್ದು?

ನಡುರಾತ್ರಿ ಏನೋ ಮಂಪರ
ದೀಪಕಚ್ಚಿದ ರೂಮಿನಲ್ಲಿ ಕಿರಿಬೆಳಕಿನೆಚ್ಚರ;
ಸುತ್ತ ನೀರು
ನಡುಗಡ್ಡೆ ಮನೆ
ತಳಸೇರಿದ್ದ ದೆವ್ವಭೂತ ಏಣಿಹತ್ತುವ ಶಬ್ದ
ಕಿಲಕಿಲಲಹೋ ಕೇಕೆ
ಮೂಳೆ ಕೈ ಕಾಲುಗಳ ತಾಳಲಯದಲ್ಲಿ ತೂಗಿ
ಸದ್ಯಕ್ಕೇ ಬಂದುವು;
ಎದೆ ಕಲ್ಲುಮಾಡಿ
‘ಗೊತ್ತು ಹೋಗಿ ಪ್ರಾಚೀನಗಳೆ’ ಎಂದು ನಕ್ಕೆ
ಬಂದವರು
‘ಬಂದಿದ್ದೇವೆ ನಾವು
ಪಿತಾಮಹರು’ – ಎಂದರು.

ತಿಥಿ ಮಾಡಿದ್ದೇನೆ
ಜನಿವಾರ ಎಡಕ್ಕೆ ಹಾಕಿ ಸ್ತುತಿಮಾಡಿದ್ದೇನೆ. ಆದರೂ
ಮುಖದಲ್ಲಿ ನೀರೊಡೆಯುವ ದೈನ್ಯ
‘ಇಟ್ಟುಕೋ’ ಎಂದು ಕರುಳಬಳ್ಳಿಯಲ್ಲಿ ಬರೆದರು.
ತರ್ಕಶಾಸ್ತ್ರ ತೋರಿಸಿ
‘ಯಾಕೆ ಕಾಡುತ್ತೀರಿ ಹೀಗೆ? ಎಲ್ಲಿದೆ ಶ್ರದ್ದೆ?
ಗುಣಾಕಾರ ತಿಳಿಯದ? ಮನೆ ಬಿಡಿ’ ಎಂದು
ಅಟ್ಟಿ ಅಗುಳಿ ಹಾಕಿದೆ.
ಅಂತೂ ಸಾಲ ತೀರಿತೋ ಸದ್ಯಕ್ಕೆ?
ಈಗ ನಾನೇ ಪಾಯ
ನಾನೇ ಕಂಬ
ನಾನೇ ಶಿಖರ
ಸಾಗಲಿ ಎಂದೆನೋ-

ದೀಪದ ಕೊಚ್ಚೆಬೆಳಕು ಫಳಾರನೆ ಮಿಂಚಿ
ಎದುರಿನ ಕನ್ನಡಿಯಲ್ಲಿ ಚಿತ್ರ ಉರಿದವು.
ಸೃಷ್ಟಿ-ಪ್ರಳಯ
ಪ್ರಪಂಚದ ಮರಗಳೆಲ್ಲ ಮತ್ತೆ ಮತ್ತೆ ಒಣಗಿ ಚಿಗುರಿದವು
ಪಕ್ಷಿಲೋಕ ಹುಟ್ಟಿ ಸತ್ತು ಹುಟ್ಟಿ ಸತ್ತು ಹುಟ್ಟಿ
ಪ್ರಾಣಿಗಳೆಲ್ಲ ಒಡಲು ಮಗುಚಿದವು
ಎದ್ದು ಅರಚಿದವು.
ನಾಟಿ ಕೊಯಿಲು ಭೇಟಿಯಾಗಿ
ಕೈಕೈ ಹಿಡಿದು
ಕಣ್ಣು ಹೊಡೆದು
ನನ್ನ ಕಡೆ ತಿರುಗಿ ಕೇಳಿದವು
‘ಹೌದಾ, ಎಲ್ಲ ಗುಣಾಕಾರವಾ?’

ಸಮುದ್ರ ತರೆ ತರೆಗೂ ಬಾಯಿ ತೆರೆದು
ಒಡಲೊಳಗಿನ ಅಗಾಧಲೋಕ ಮೈ ಮುರಿದು
ಮಂದರದಂಥ ದನಿ ಮೇಲೆದ್ದು ಅಬ್ಬರಿಸಿತು
‘ಹೌದಾ, ಎಲ್ಲ ಗುಣಾಕಾರವಾ’?

ಗ್ರಹಗಳೆಲ್ಲ ಗತಿಗೆಟ್ಟು ಹಾಯುತ್ತ
ನಕ್ಷತ್ರ ಗಂಗೆಗಳು ಭೀಕರವಾಗಿ ತೂಗುತ್ತ
ಪರ್‍ವತ ಕಕ್ಕಿದ ಉರಿಹೊಳೆ ದಿಕ್ಕು ದಿಕ್ಕಿಂದ ಹರಿದು
ಕಾಲ ಬಳಿಗೆ ಬಂದು ಮೊರೆಯುವ ಮೊದಲೇ
ಚೀರಿ ಎದ್ದು ಓಡಿದೆ,
ಗೂಡೆಲ್ಲ ಕೆದಕಾಡಿ
ಹಾಳು ಸ್ಕೇಲನ್ನು ತಂದು
ನೀರೊಲೆಗೆ ಹಾಕಿದೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...