Home / ಕವನ / ಕವಿತೆ / ಜಾತ್ರೆಯಲ್ಲಿ ಶಿವ

ಜಾತ್ರೆಯಲ್ಲಿ ಶಿವ


ಅದೇ ಆ ಶಿವನ ವೇಷಧಾರಿ
ನಾನಿದ್ದ ಬಸ್ಸಿನಲ್ಲಿಯೇ ಇದ್ದ
ನನ್ನೊಂದಿಗೆ ಬಸ್ಸಿನಿಂದಿಳಿದ

ತೇಗದ ಮರದ ಹಾಗೆ
ಉದ್ದಕೆ ಸಪೂರ
ಮೋಡದ ಮೈ ಬಣ್ಣ, ಮಿಂಚಿನ ನಗು
ಮುಡಿಗೆ ತಗಡಿನ ಚಂದ್ರನನು ಮುಡಿದಿದ್ದ
ತೋಳಿಗೆ ಕಣಗಿಲೆಯ ಹೂವು
ಕೊರಳಲ್ಲಿ ಪ್ಲಾಸ್ಟಿಕ್ ಹಾವು
ಹುಲಿ ಚರ್ಮದ ಚಿತ್ರವಿರುವ
ಮಾಸಿದ ಹಳದಿ ಬಣ್ಣದ ಅರ್ಧ ಲುಂಗಿ
ಹವಾಯಿ ಚಪ್ಪಲಿ ಧರಿಸಿದ್ದ…

ನನ್ನ ಬೆರಗಿಗೆ ಉತ್ತರ
ನೀಡುವವನಂತೆ
ಡಮರುಗ ನುಡಿಸಿ
ತ್ರಿಶೂಲ ಆಡಿಸಿ
ಕಾಲ್ಗೆಜ್ಜೆ ಗಲಗಲ ಕುಣಿಸಿ
ನ…ಶಿವ ಎಂದ


ನಾ…ಮುಂದೆ ಅವ…ಹಿಂದೆ
ಜಾತ್ರೆಯ ಕೌಂಟರಿನಲ್ಲಿ
ಟಿಕೀಟು ಕೊಳ್ಳುವಾಗಲೂ
ಬೆನ್ನ ಹಿಂದೆಯೇ ಇದ್ದ
ಗಿಲೀಟು ಒಡವೆಯಂಗಡಿಯಲ್ಲಿ

ಕಣ್ಣ ಮುಂದೆಯೇ ಬಂದ
ಫಳಫಳ ಹೊಳೆಯುವ
ಮೂಗುತಿಯನು ಅಂಗೈಯೊಳಗೆ
ಹೊರಳಾಡಿಸಿ
ಈ ವಜ್ರಕ್ಕೆಷ್ಟಪ್ಪಾ ಬೆಲೆ
ಎಂದು ಅಂಗಡಿಯಾತನ ಛೇಡಿಸಿದ

ಪುಗ್ಗೆಯಂಗಡಿಯಲ್ಲಿ ಒಂದೊಂದೂ
ಪುಗ್ಗೆಯ ಮೇಲೂ ಮೃದುವಾಗಿ ಕೈಯಾಡಿಸಿ
ಪರಪರ ಶಬ್ದಕ್ಕೆ ಕಿವಿಯಾನಿಸಿ
ಬಾಗಿಲು ದಾಟುವುದರೊಳಗೆ
ಠುಸ್ಸೆನ್ನುವುದೀ ಪುಗ್ಗೆ, ಜೊತೆಗೆ
ಹಿಗ್ಗಿನ ಬಗ್ಗೆ ಎಂದು ಅಲ್ಲೇ ಪದ ಕಟ್ಟಿ ಹಾಡಿ
ಒಂದು ಪೀಪಿ, ಒಂದು ವಾಚು ಪುಕ್ಕಟೆ ಪಡೆದ

ಬಣ್ಣ ಬಣ್ಣದ ಪರಕಾರಗಳ ತೆಗೆಸಿ
ಪೂರ ಅಂಗಡಿಯನೆ ಎಳೆದಾಡಿಸಿ
ಚೌಕಾಸಿ ಬೆಲೆಯಲ್ಲೇ
ಒಂದು ಗಜ ರವಿಕೆಯ ಬಟ್ಟೆ ಕೊಂಡ

ಕೆಂಪು ನೀರಿನ ಶರಬತ್ತಿನಂಗಡಿಯಲ್ಲಿ
ಗಿಣಿ ಶಾಸ್ತ್ರದವನೊಡನೆ ಹರಕು
ಛತ್ರಿಯ ಅಡಿಯಲ್ಲಿ…
ಕರಡಿ ಮಜಲು ಕುಣಿತದ
ಕರಡಿಯಾಸದವನೊಡನೆ
ಅಲ್ಲಿ…ಇಲ್ಲಿ…ಇಲ್ಲಿ…ಅಲ್ಲಿ
ಜಾತ್ರೆಯ ಉದ್ದಗಲ ಹಬ್ಬಿ ನಿಂತವನು
ಮೋಟು ಬೀಡಿಯ ಸೇದುತ್ತ
ಕಡಲೆಯ-ಪುರಿಯ
ಗುಡ್ಡವ ದಾಟಿ ಹೋದ


ಹೋದ ಎನ್ನುವಷ್ಟರಲ್ಲಿಯೇ
ಬತ್ತಾಸಿನ ಅಂಗಡಿಯಲ್ಲಿ
ಪರಿಚಿತ ನಗೆಯೊಡನೆ ಪ್ರತ್ಯಕ್ಷ!

ಮೆಲ್ಲನೆ ಬಳಿ ಸರಿ ಗೋಣ ಬಗ್ಗಿಸಿ
ಮಗ ಹಸಿದಿದ್ದಾನೆ-
ಹೆಂಡತಿಗೆ ಕಾಯಿಲೆ ಅಂದ
ಬಾಡಿದ ಮುಖ, ಬಸಿದಿತ್ತು ದುಃಖ

ಗಣಪ ಹಸಿದಿದ್ದಾನೆ
ಗಿರಿಜೆಗೆ ಕಾಯಿಲೆ…
ಹೆಂಡತಿ-ಮಕ್ಕಳಿಗಾಗಿ
ಶಿವನಲ್ಲದೆ ಭವಿ ಅಳುವನೆ?!

ಪುಟ್ಟ ಪರ್ಸಿನ ಮೂಲೆ ಮೂಲೆಯನು ತಡವಿ
ರುದ್ರನೊಡ್ಡಿದ ಬೊಗಸೆಗೆ
ಐದರ ನೋಟಿರಿಸಿ ಇಷ್ಟೇ ಅಂದೆ!

ಮಿಂಚಂತ ಹೊಳೆದು
ತಳಾಂಗು ತದಿಗಿಣ ತೋಂ ಎಂದು
ನಾಟ್ಯದ ಮಟ್ಟಿನಲಿ ಕುಣಿದು
ಅರ್ಧ ನಿಮೀಲಿತ ನೇತ್ರವಾಗಿ
ನಟರಾಜನ ಭಂಗಿಯಲ್ಲಿ ನಿಂತುಬಿಟ್ಟ!

ಬಿಟ್ಟ ಬಾಯಿ ಬಿಟ್ಟಂತೆಯೇ
ನೆಟ್ಟ ಕಣ್ಣು ನೆಟ್ಟಂತೆಯೇ
ಎರಡೂ ಕೈ ಜೋಡಿಸಿ
ಮೈದುಂಬಿ ನುಡಿದು ಬಿಟ್ಟೆ…

ಸಾಕ್ಷಾತ್ ಶಿವ…
ಸಾಕ್ಷಾತ್ ಶಿವ!!
*****

Tagged:

One Comment

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...