Home / ಕವನ / ಕವಿತೆ / ಜಾತ್ರೆಯಲ್ಲಿ ಶಿವ

ಜಾತ್ರೆಯಲ್ಲಿ ಶಿವ


ಅದೇ ಆ ಶಿವನ ವೇಷಧಾರಿ
ನಾನಿದ್ದ ಬಸ್ಸಿನಲ್ಲಿಯೇ ಇದ್ದ
ನನ್ನೊಂದಿಗೆ ಬಸ್ಸಿನಿಂದಿಳಿದ

ತೇಗದ ಮರದ ಹಾಗೆ
ಉದ್ದಕೆ ಸಪೂರ
ಮೋಡದ ಮೈ ಬಣ್ಣ, ಮಿಂಚಿನ ನಗು
ಮುಡಿಗೆ ತಗಡಿನ ಚಂದ್ರನನು ಮುಡಿದಿದ್ದ
ತೋಳಿಗೆ ಕಣಗಿಲೆಯ ಹೂವು
ಕೊರಳಲ್ಲಿ ಪ್ಲಾಸ್ಟಿಕ್ ಹಾವು
ಹುಲಿ ಚರ್ಮದ ಚಿತ್ರವಿರುವ
ಮಾಸಿದ ಹಳದಿ ಬಣ್ಣದ ಅರ್ಧ ಲುಂಗಿ
ಹವಾಯಿ ಚಪ್ಪಲಿ ಧರಿಸಿದ್ದ…

ನನ್ನ ಬೆರಗಿಗೆ ಉತ್ತರ
ನೀಡುವವನಂತೆ
ಡಮರುಗ ನುಡಿಸಿ
ತ್ರಿಶೂಲ ಆಡಿಸಿ
ಕಾಲ್ಗೆಜ್ಜೆ ಗಲಗಲ ಕುಣಿಸಿ
ನ…ಶಿವ ಎಂದ


ನಾ…ಮುಂದೆ ಅವ…ಹಿಂದೆ
ಜಾತ್ರೆಯ ಕೌಂಟರಿನಲ್ಲಿ
ಟಿಕೀಟು ಕೊಳ್ಳುವಾಗಲೂ
ಬೆನ್ನ ಹಿಂದೆಯೇ ಇದ್ದ
ಗಿಲೀಟು ಒಡವೆಯಂಗಡಿಯಲ್ಲಿ

ಕಣ್ಣ ಮುಂದೆಯೇ ಬಂದ
ಫಳಫಳ ಹೊಳೆಯುವ
ಮೂಗುತಿಯನು ಅಂಗೈಯೊಳಗೆ
ಹೊರಳಾಡಿಸಿ
ಈ ವಜ್ರಕ್ಕೆಷ್ಟಪ್ಪಾ ಬೆಲೆ
ಎಂದು ಅಂಗಡಿಯಾತನ ಛೇಡಿಸಿದ

ಪುಗ್ಗೆಯಂಗಡಿಯಲ್ಲಿ ಒಂದೊಂದೂ
ಪುಗ್ಗೆಯ ಮೇಲೂ ಮೃದುವಾಗಿ ಕೈಯಾಡಿಸಿ
ಪರಪರ ಶಬ್ದಕ್ಕೆ ಕಿವಿಯಾನಿಸಿ
ಬಾಗಿಲು ದಾಟುವುದರೊಳಗೆ
ಠುಸ್ಸೆನ್ನುವುದೀ ಪುಗ್ಗೆ, ಜೊತೆಗೆ
ಹಿಗ್ಗಿನ ಬಗ್ಗೆ ಎಂದು ಅಲ್ಲೇ ಪದ ಕಟ್ಟಿ ಹಾಡಿ
ಒಂದು ಪೀಪಿ, ಒಂದು ವಾಚು ಪುಕ್ಕಟೆ ಪಡೆದ

ಬಣ್ಣ ಬಣ್ಣದ ಪರಕಾರಗಳ ತೆಗೆಸಿ
ಪೂರ ಅಂಗಡಿಯನೆ ಎಳೆದಾಡಿಸಿ
ಚೌಕಾಸಿ ಬೆಲೆಯಲ್ಲೇ
ಒಂದು ಗಜ ರವಿಕೆಯ ಬಟ್ಟೆ ಕೊಂಡ

ಕೆಂಪು ನೀರಿನ ಶರಬತ್ತಿನಂಗಡಿಯಲ್ಲಿ
ಗಿಣಿ ಶಾಸ್ತ್ರದವನೊಡನೆ ಹರಕು
ಛತ್ರಿಯ ಅಡಿಯಲ್ಲಿ…
ಕರಡಿ ಮಜಲು ಕುಣಿತದ
ಕರಡಿಯಾಸದವನೊಡನೆ
ಅಲ್ಲಿ…ಇಲ್ಲಿ…ಇಲ್ಲಿ…ಅಲ್ಲಿ
ಜಾತ್ರೆಯ ಉದ್ದಗಲ ಹಬ್ಬಿ ನಿಂತವನು
ಮೋಟು ಬೀಡಿಯ ಸೇದುತ್ತ
ಕಡಲೆಯ-ಪುರಿಯ
ಗುಡ್ಡವ ದಾಟಿ ಹೋದ


ಹೋದ ಎನ್ನುವಷ್ಟರಲ್ಲಿಯೇ
ಬತ್ತಾಸಿನ ಅಂಗಡಿಯಲ್ಲಿ
ಪರಿಚಿತ ನಗೆಯೊಡನೆ ಪ್ರತ್ಯಕ್ಷ!

ಮೆಲ್ಲನೆ ಬಳಿ ಸರಿ ಗೋಣ ಬಗ್ಗಿಸಿ
ಮಗ ಹಸಿದಿದ್ದಾನೆ-
ಹೆಂಡತಿಗೆ ಕಾಯಿಲೆ ಅಂದ
ಬಾಡಿದ ಮುಖ, ಬಸಿದಿತ್ತು ದುಃಖ

ಗಣಪ ಹಸಿದಿದ್ದಾನೆ
ಗಿರಿಜೆಗೆ ಕಾಯಿಲೆ…
ಹೆಂಡತಿ-ಮಕ್ಕಳಿಗಾಗಿ
ಶಿವನಲ್ಲದೆ ಭವಿ ಅಳುವನೆ?!

ಪುಟ್ಟ ಪರ್ಸಿನ ಮೂಲೆ ಮೂಲೆಯನು ತಡವಿ
ರುದ್ರನೊಡ್ಡಿದ ಬೊಗಸೆಗೆ
ಐದರ ನೋಟಿರಿಸಿ ಇಷ್ಟೇ ಅಂದೆ!

ಮಿಂಚಂತ ಹೊಳೆದು
ತಳಾಂಗು ತದಿಗಿಣ ತೋಂ ಎಂದು
ನಾಟ್ಯದ ಮಟ್ಟಿನಲಿ ಕುಣಿದು
ಅರ್ಧ ನಿಮೀಲಿತ ನೇತ್ರವಾಗಿ
ನಟರಾಜನ ಭಂಗಿಯಲ್ಲಿ ನಿಂತುಬಿಟ್ಟ!

ಬಿಟ್ಟ ಬಾಯಿ ಬಿಟ್ಟಂತೆಯೇ
ನೆಟ್ಟ ಕಣ್ಣು ನೆಟ್ಟಂತೆಯೇ
ಎರಡೂ ಕೈ ಜೋಡಿಸಿ
ಮೈದುಂಬಿ ನುಡಿದು ಬಿಟ್ಟೆ…

ಸಾಕ್ಷಾತ್ ಶಿವ…
ಸಾಕ್ಷಾತ್ ಶಿವ!!
*****

Tagged:

One Comment

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...